ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಹರಿದ್ವಾರ ಜಿಲ್ಲೆಯ ಪೀರನ್ ಕಲಿಯಾರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಅಹಮದ್, ತಾವು ವಾರ್ಡ್ ಸಂಖ್ಯೆ 126 ರಲ್ಲಿ ನೋಂದಾಯಿತ ಮತದಾರರಾಗಿದ್ದೇನೆ. ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ತೆಗೆದುಹಾಕುವಂತೆ ಕೋರಿ ಮೊಹಮ್ಮದ್ ಫುರ್ಕಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ‘ಫಾರ್ಮ್ 7’ ಆಕ್ಷೇಪಣೆಯನ್ನು ಸಲ್ಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಆಕ್ಷೇಪಣೆಯ ಬಗ್ಗೆ ತಿಳಿದ ನಂತರ ನಾನು ಮೊಹಮ್ಮದ್ ಫುರ್ಕಾನ್ ಅವರನ್ನು ಸಂಪರ್ಕಿಸಿದೆ. ಆದರೆ, ಶಾಸಕ ಅಹಮದ್ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಕೋರಿ ನಾನು ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂದು ಆ ವ್ಯಕ್ತಿ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಬಳಿಕ, ಆ ವ್ಯಕ್ತಿಯು ತಾವು ಯಾವುದೇ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ಪ್ರಮಾಣಪತ್ರ (ಅಫಿಡವಿಟ್) ಸಿದ್ಧಪಡಿಸಿಕೊಟ್ಟಿದ್ದು, ಅದನ್ನು ಜಿಲ್ಲಾ ಚುನಾವಣಾಧಿಕಾರಿಗೆ ಸಲ್ಲಿಸಲಾಗಿದೆ ಎಂದು ಅಹಮದ್ ಹೇಳಿದ್ದಾರೆ.
ಈ ಘಟನೆಯು ಪೀರನ್ ಕಲಿಯಾರ್ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಮೇಲ್ವಿಚಾರಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡಿದ್ದು, ಚುನಾವಣಾ ಆಯೋಗ ಮತ್ತು ಸ್ಥಳೀಯ ಆಡಳಿತ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
‘ಪೀರನ್ ಕಲಿಯಾರ್ನಲ್ಲಿ 1,700 ಕ್ಕೂ ಹೆಚ್ಚು ಆಕ್ಷೇಪಣೆಗಳು’
ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಸಮಯದಲ್ಲಿ ತಮ್ಮ ಕ್ಷೇತ್ರದಲ್ಲಿ 1,700 ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ ಎಂದು ಅಹಮದ್ ಪ್ರತಿಪಾದಿಸಿದ್ದಾರೆ.
ಹೆಚ್ಚಿನ ಸಂಖ್ಯೆಯ ಜನರ ವಿರುದ್ಧ ಆಕ್ಷೇಪಣೆಗಳನ್ನು ಸಲ್ಲಿಸಲು ವೈಯಕ್ತಿಕ ಮತದಾರರ ಹೆಸರುಗಳನ್ನು ಬಳಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕೆಲವು ಪ್ರಕರಣಗಳಲ್ಲಿ, ಒಬ್ಬನೇ ವ್ಯಕ್ತಿಯ ಹೆಸರಿನಲ್ಲಿ 50 ಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಹಾಲಿ ಶಾಸಕರೊಬ್ಬರ ಪ್ರಕರಣವೇ ಇದಕ್ಕೆ ಉದಾಹರಣೆಯಾಗಿದ್ದು, ಪರಿಷ್ಕರಣೆ ಪ್ರಕ್ರಿಯೆಯಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಜನಪ್ರತಿನಿಧಿಯೊಬ್ಬರ ಹೆಸರನ್ನು ತೆಗೆದುಹಾಕಲು ಕೋರಿ ಮತ್ತೊಬ್ಬರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಾದರೆ, ಆ ವ್ಯಕ್ತಿಯು ನಂತರ ಅದನ್ನು ನಿರಾಕರಿಸುವುದಾದರೆ, ಇಂತಹ ಆಕ್ಷೇಪಣೆಗಳನ್ನು ಹೇಗೆ ಸ್ವೀಕರಿಸಲಾಯಿತು? ಅರ್ಜಿಯನ್ನು ಪರಿಶೀಲನೆ ಇಲ್ಲದೆ ಹೇಗೆ ಪ್ರಕ್ರಿಯೆಗೊಳಿಸಲಾಯಿತು ಎಂಬುದರ ಕುರಿತು ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ತನಿಖೆ ನಡೆಸಬೇಕು ಎಂದು ಪಕ್ಷ ವಾದಿಸಿದೆ.
ಕಾಂಗ್ರೆಸ್ನಿಂದ ಕಾನೂನು ಹೋರಾಟದ ಎಚ್ಚರಿಕೆ
ಉತ್ತರಾಖಂಡ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಗೋಡಿಯಾಲ್ ಕೂಡ ಈ ಆರೋಪಗಳ ಕುರಿತು ಆಡಳಿತಾರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡೆಹ್ರಾಡೂನ್ನಲ್ಲಿ ಮಾತನಾಡಿದ ಗೋಡಿಯಾಲ್, ಆಡಳಿತ ಪಕ್ಷವು ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳಲು ತನ್ನ ಅಧಿಕಾರವನ್ನು ಬಳಸುತ್ತಿದೆ. ಇದು ಸಂವಿಧಾನದ ಮೇಲಿನ ದಾಳಿ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಚುನಾವಣಾ ಆಯೋಗ ಮತ್ತು ಆಡಳಿತ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಹಾಲಿ ಶಾಸಕರ ಹೆಸರಿನ ವಿರುದ್ಧವೇ ಆಕ್ಷೇಪಣೆ ಎತ್ತಲು ಸಾಧ್ಯವಾದರೆ, ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಪ್ರಮಾಣ ಎಷ್ಟಿರಬಹುದು ಎಂಬ ದೊಡ್ಡ ಪ್ರಶ್ನೆ ಮೂಡುತ್ತದೆ ಎಂದು ಗೋಡಿಯಾಲ್ ಹೇಳಿದರು.
ಜನರ ಗುರುತನ್ನು ಬಳಸಿ ಹೆಚ್ಚಿನ ಸಂಖ್ಯೆಯ ಮತದಾರರ ವಿರುದ್ಧ ಆಕ್ಷೇಪಣೆಗಳನ್ನು ಸಲ್ಲಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಉತ್ತರಾಖಂಡ್ನಲ್ಲಿ ಎಸ್ಐಆರ್ ಪ್ರಕ್ರಿಯೆಯ ಕುರಿತು ರಾಜಕೀಯ ಗದ್ದಲ ತೀವ್ರಗೊಂಡಿದೆ.


