ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಇಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
“ಕೊರೋನಾ ಹಾಗೂ ನಂತರದ ಸಮಯದಲ್ಲಿ ಬಿಜೆಪಿ ನಾಯಕರು ಶಾಂತಿಭಂಗದ ಹೇಳಿಕೆ ಕೊಟ್ಟಿದ್ದರೂ ಈ ಸರ್ಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಆಗಲೂ ಅಧಿಕಾರ ದುರುಪಯೋಗ ಮಾಡಿಕೊಂಡು ಸರ್ಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದನ್ನು ನಾವು ಬಯಲು ಮಾಡಿದರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ನಮ್ಮ ಶಾಸಕರು, ಮುಖಂಡರು, ಕಾರ್ಯಕರ್ತರ ಮೇಲೆ ನೂರಾರು ಕೇಸ್ ಹಾಕುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಮಧ್ಯೆ ನಮ್ಮ ಪಕ್ಷದ ಶಾಸಕ ಸಂಗಮೇಶ್, ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಲಾಗಿದೆ. ಹಾಗಾಗಿಯೇ ಈ ಪ್ರತಿಭಟನೆ” ಎಂದು ಡಿ.ಕೆ ಶಿವಕುಮಾರ್ ಈ ಹಿಂದೆ ಹೇಳಿದ್ದರು.
“ಸಂಗಮೇಶ್ ಅವರನ್ನು ಬಿಜೆಪಿಗೆ ಸೆಳೆಯಲು ಬಹಳ ಒತ್ತಡ ಹೇರಿದ್ದರು. ಆದರೂ ಇವರು ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್ಐಆರ್ ಹಾಕಿಸಿ, ತೊಂದರೆ ನೀಡುತ್ತಿದ್ದಾರೆ. ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರೆ ಅವರಿಗೆ ಅವಕಾಶ ನೀಡಲಿಲ್ಲ. ಆಗ ನೋವಿನಿಂದ ನಮ್ಮ ಶಾಸಕ ತಮ್ಮ ಶರ್ಟ್ ಬಿಚ್ಚಿ ಮೈಮೇಲಾಗಿರುವ ಗಾಯ ತೋರಿಸಲು ಮುಂದಾದಾಗ, ಅದನ್ನು ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭೆ ಕಲಾಪದಿಂದ ಅಮಾನತು ಮಾಡಲಾಗಿದೆ. ಆ ಮೂಲಕ ಅವರ ಹಕ್ಕಿಗೆ ಧಕ್ಕೆ ತರಲಾಗಿದೆ. ಈ ಬಗ್ಗೆ ನಾವು ಪ್ರತಿಭಟನೆಯನ್ನೂ ಮಾಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಶನಿವಾರ ಕಾಂಗ್ರೆಸ್ ನಡೆಸಿದ ಬೃಹತ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ