ಕೃಷಿ ಕಾನೂನುಗಳ ಕುರಿತು ಪ್ರತಿಭಟನಾ ನಿರತ ರೈತರು ಮತ್ತು ಸರ್ಕಾರದ ನಡುವೆ ಇಂದು ನಡೆದ ಏಳನೇ ಸುತ್ತಿನ ಮಾತುಕತೆ ವಿಫಲವಾಗಿದ್ದು, ಜನವರಿ 8 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಪ್ರತಿನಿಧಿಗಳೊಂದಿಗೆ ಕೇಂದ್ರ ಸರ್ಕಾರ ಸೋಮವಾರ ನಡೆಸಿರುವ ಏಳನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿದ್ದು, ರೈತರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಹಾಗಾಗಿ ಮತ್ತೊಂದು ಸುತ್ತಿನ ಮಾತುಕತೆ ಅವಶ್ಯವಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
ಈ ಕುರಿತು ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, “ಜನವರಿ 8 ರಂದು ಮತ್ತೆ ಚರ್ಚೆ ನಡೆಸುತ್ತೇವೆ. ಇಂದಿನ ಸಭೆಯಲ್ಲಿ ಕಾನೂನು ಹಿಂಪಡೆಯುವ ಬಗ್ಗೆ ಚರ್ಚೆ ಆಗಿಲ್ಲ. ಪರ್ಯಾಯ ಮಾರ್ಗ ಹುಡುಕಬೇಕೆಂದು ರೈತರು ಬಯಸುತ್ತಿದ್ದಾರೆ. ಆದರೆ ಎರಡೂ ಕೈ ಕೂಡಿದರೆ ಚಪ್ಪಾಳೆ ಆಗಲಿದೆ” ಎಂದು ಹೇಳಿದರು.
ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?
ತಮ್ಮ ಬೇಡಿಕೆಗಳು ಈಡೇರದಿದ್ದರೆ ಜನವರಿ 26 ರ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ರ್ಯಾಲಿ ನಡೆಸುವುದಾಗಿ ರೈತರು ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ನಡೆದಿದ್ದ ಸಭೆಯಲ್ಲಿ ರೈತರ ನಾಲ್ಕು ಬೇಡಿಕೆಗಳಲ್ಲಿ ಎರಡು ಬೇಡಿಕೆಗಳಾಗಿರುವ ವಿದ್ಯುತ್ ತಿದ್ದುಪಡಿ ಮಸೂದೆ ಹಾಗೂ ಕೃಷಿ ತ್ಯಾಜ್ಯ ಸುಡುವಿಕೆ ನಿಬಂಧನೆಗಳ ಆದೇಶವನ್ನು ಹಿಂಪಡೆಯಲು ಒಪ್ಪಿಗೆ ನೀಡಲಾಗಿತ್ತು.
ಸಭೆಯಲ್ಲಿ ಪ್ರತಿಭಟನೆಯ ವೇಳೆ ಸಾವನ್ನಪ್ಪಿರುವ ರೈತರಿಗೆ, ರೈತ ಪ್ರತಿನಿಧಿಗಳು ಮತ್ತು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಷ್ ಗೋಯಲ್ ಹಾಗೂ ಸೋಮ್ ಪ್ರಕಾಶ್, ಸರ್ಕಾರಿ ಅಧಿಕಾರಿಗಳು ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು.
ಇದನ್ನೂ ಓದಿ: ಸಮುದ್ರದ ಅಲೆ ರಾಜಾಜ್ಞೆಗಾಗಿ ಕಾಯುವುದಿಲ್ಲ – ಅಮಿತ್ ಭಾದುರಿ