ಹಲವಾರು ರೈತ ಗುಂಪುಗಳು ಮತ್ತು ಖಾಪ್ ಪಂಚಾಯತ್ ಸದಸ್ಯರು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ತಮ್ಮ ಬೆಂಬಲವನ್ನು ಭಾನುವಾರ ನೀಡಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಅಥ್ಲೀಟ್ಗಳು ಏಪ್ರಿಲ್ 23ರಿಂದ ಧರಣಿ ನಡೆಸುತ್ತಿದ್ದಾರೆ. ಹಲವಾರು ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿರುವ ಕುಸ್ತಿಪಟುಗಳು, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶದ ಬಿಜೆಪಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ಸಿಂಗ್, ಆರೋಪಗಳನ್ನು ಅಲ್ಲಗಳೆದಿದ್ದು, ಕುಸ್ತಿ ಸಂಸ್ಥೆಯ ತಮ್ಮ ಸ್ಥಾನದಿಂದ ಕೆಳಗಿಳಿಯಲು ನಿರಾಕರಿಸಿದ್ದಾರೆ.
ಏಪ್ರಿಲ್ 28 ರಂದು, ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಸುಮಾರು ನಾಲ್ಕು ತಿಂಗಳ ನಂತರ ಕುಸ್ತಿಪಟುಗಳು ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದ್ದಾರೆ.
ರೈತ ನಾಯಕ ರಾಕೇಶ್ ಟಿಕಾಯತ್ ಅವರು ಪ್ರತಿಕ್ರಿಯಿಸಿ, ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
“ಎಫ್ಐಆರ್ ದಾಖಲಿಸಲಾಗಿದ್ದು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕು” ಎಂದು ಅವರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಕುಸ್ತಿಪಟುಗಳಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಖಾಪ್ ಅಧ್ಯಕ್ಷ (ಪಾಲಂ) ಚೌಧರಿ ಸುರೇಂದರ್ ಸೋಲಂಕಿ ಹೇಳಿದ್ದಾರೆ. “ಪ್ರತಿಭಟನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದನ್ನು ನಾವೆಲ್ಲರೂ ನಿರ್ಧರಿಸುತ್ತೇವೆ” ಎಂದು ತಿಳಿಸಿದ್ದಾರೆ.
“ಸಿಂಘು ಗಡಿಯ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎಲ್ಲಾ ವಾಹನಗಳನ್ನು ನಿಲ್ಲಿಸಿ ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಇತರ ಅರೆಸೇನಾ ಪಡೆಗಳ 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ” ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
“ನಾವು ಹೆಚ್ಚಿನ ಕ್ಯಾಮೆರಾಗಳು ಮತ್ತು ಸಿಸಿಟಿವಿಗಳನ್ನು ಸ್ಥಳದಲ್ಲಿ ಇರಿಸಿದ್ದೇವೆ” ಎಂದು ಹೆಸರು ಹೇಳಲಿಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಅಧಿಕಾರಿಗಳು ಕ್ಯಾಮೆರಾಗಳೊಂದಿಗೆ ಶಸ್ತ್ರಸಜ್ಜಿತರಾಗುತ್ತಾರೆ. ಪಂಜಾಬ್ ಮತ್ತು ಹರಿಯಾಣದಿಂದ ಬರುವ ಪ್ರಯಾಣಿಕರಿಗೆ, ಇತರ ಪ್ರತಿಭಟನಾಕಾರರಿಗೆ ಸಹಾಯ ಮಾಡಲು ನಾವು ಸಾಕಷ್ಟು ಸಂಚಾರ ವ್ಯವಸ್ಥೆಗಳನ್ನು ಮಾಡಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ
ಇದರ ನಡುವೆ ಬ್ರಿಜ್ ಭೂಷನ್ ಸಿಂಗ್ ಮತ್ತೆ ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ.
“ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ವಿಡಿಯೋ ಸಂದೇಶದಲ್ಲಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
“ನಾನು ಮೊದಲ ದಿನದಿಂದಲೂ ಹೇಳುತ್ತಿದ್ದೇನೆ, ಈ ಕುಸ್ತಿಪಟುಗಳು ನನ್ನ ವಿರುದ್ಧ ಯಾವುದೇ ವೀಡಿಯೊ, ಸಾಕ್ಷ್ಯವನ್ನು ಹೊಂದಿದ್ದಾರೆಯೇ? ನಾನು ತಪ್ಪು ಮಾಡಿದ್ದೇನೆಯೇ ಎಂದು ಪ್ರತಿಭಟಿಸುತ್ತಿರುವ ಕುಸ್ತಿಪಟುಗಳನ್ನು ಹೊರತುಪಡಿಸಿ ಯಾರನ್ನಾದರೂ ಕೇಳಿ” ಎಂದಿದ್ದಾರೆ.