ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ಭಾನುವಾರ (ಮೇ 5) ರಾತ್ರಿ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಪಾಂಡವಪುರದ ಆರೋಗ್ಯ ಇಲಾಖೆಯ ಕ್ವಾಟ್ರಸ್ನಲ್ಲೇ ಭ್ರೂಣ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿದ್ದ ಬಗ್ಗೆ ಆಘಾತಕಾರಿ ಮಾಹಿತಿ ಬಯಲಾಗಿದೆ.
ವರದಿಗಳ ಪ್ರಕಾರ, ಭಾನುವಾರ ರಾತ್ರಿ ಪಾಂಡವಪುರದ ಆರೋಗ್ಯ ಇಲಾಖೆಯ ಕ್ವಾಟ್ರಸ್ ಮೇಲೆ ಜಂಟಿ ದಾಳಿ ನಡೆಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಅರವಿಂದ್ ಮತ್ತು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ದುಷ್ಕೃತ್ಯಕ್ಕೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ಜಪ್ತಿ ಮಾಡಿದ್ದಾರೆ. ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಿಸಿದ್ದಾರೆ.
ಪಾಂಡವಪುರ ತಾಲೂಕು ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಆನಂದ್, ಅದೇ ಆಸ್ಪತ್ರೆಯ ಹೊರಗುತ್ತಿಗೆ ಡಿ ದರ್ಜೆ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬರು ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಆನಂದ್ಗೆ ನೀಡಲಾಗಿದ್ದ ಸರ್ಕಾರಿ ವಸತಿ ಗೃಹದಲ್ಲಿಯೇ ಈ ಕೃತ್ಯ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.
ಡಿಸೆಂಬರ್ 2023ರಲ್ಲಿ ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೈಸೂರು, ಮಂಡ್ಯ ಭಾಗದಲ್ಲಿ ಭ್ರೂಣದ ಲಿಂಗ ಪತ್ತೆ ಹಚ್ಚಿ ಹತ್ಯೆ ಮಾಡುತ್ತಿದ್ದ ಆಘಾತಕಾರಿ ವಿಷಯ ಬಹಿರಂಗಗೊಂಡಿತ್ತು. ಪ್ರಕರಣದ ಗಂಭೀರತೆ ಅರಿತ ಸರ್ಕಾರ ತನಿಖೆಯ ಜವಬ್ದಾರಿಯನ್ನು ಸಿಐಡಿಗೆ ವಹಿಸಿದೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ