Homeಮುಖಪುಟಗುಲ್ಜಾರ್ ಅವರ ಪದ್ಯಗಳು

ಗುಲ್ಜಾರ್ ಅವರ ಪದ್ಯಗಳು

- Advertisement -
- Advertisement -

1.

ಯಾವ ಹೊಲದಿಂದ ರೈತನಿಗೆ ರೊಟ್ಟಿಯ ಅದೃಷ್ಟವಿಲ್ಲವೋ
ಆ ಹೊಲದ ಗೋಧಿಯ ತೆನೆಗಳನ್ನು
ಹುಡುಕಿ ಹುಡುಕಿ ಸುಟ್ಟುಬಿಡಿ

ಅಲ್ಲಮ ಇಕ್ಬಾಲ್

ಯಾರಾದರೂ ಹೋಗಿ ’ಅಲ್ಲಮ’ನಿಗೆ ಸುದ್ದಿ ಮುಟ್ಟಿಸಿ
ಯಾವ ಹೊಲದಿಂದ ರೈತನ ಮನೆಯ
ಹೊಟ್ಟೆ ತುಂಬಲಿಲ್ಲವೋ
ಯಾರೂ ಆ ಹೊಲಕ್ಕೆ ಹೋಗಿ ಬೆಂಕಿ ಹಚ್ಚಲಿಲ್ಲ
ಯಾರೂ ಒಂದು ಹೆಜ್ಜೆಯನ್ನೂ ಮುಂದಿಡಲಿಲ್ಲ
ಯಾವ ಕ್ರಾಂತಿಯ ಘೋಷಣೆಗಳೂ ಮೊಳಗಲಿಲ್ಲ.

ಶವಯಾತ್ರೆಗಳು ಹೊರಟಿವೆ
ಹಳ್ಳಿಗಳ ಮನೆಮನೆಯಿಂದ
ಪ್ರತಿ ಮೆರವಣಿಗೆಯೂ ಅನ್ನದಾತರದು
ಸಾಲದ ಹಂಗಿಗೆ ಧಿಕ್ಕಾರ ಹೇಳಿ ಅಮರರಾದ ಹುತಾತ್ಮರದು.

ಅಲ್ಲಮ – ಪ್ರಸಿದ್ಧ ಉರ್ದು ಕವಿ, ಅಲ್ಲಮ ಮೊಹಮ್ಮದ್ ಇಕ್ಬಾಲ್

***

2.

ಯಾರು ಈ ಮೂಕ?
ಎಷ್ಟೊಂದು ಕೆಮ್ಮುತ್ತಾನೆ?
ಪ್ರತೀ ಬಾರಿ ಕೆಮ್ಮಿದಾಗಲೂ
ಸಹಸ್ರಾರು ಶಬ್ದಗಳು.
ಬೇಸತ್ತು ಹೋಗಿದ್ದಾರೆ
ಊರು ಸ್ವಚ್ಛ ಮಾಡುವ
ಗುತ್ತಿಗೆ ತೆಗೆದುಕೊಂಡವರು.

ಚೌಕಿನಲ್ಲಿ ಜನ ಮಾತಾಡುತ್ತಿದ್ದರು
ಅವನು ಕವಿಯಂತೆ,

ಯಾರೋ ಪ್ರಶ್ನೆ ಕೇಳಿ
ಉತ್ತರ ಕೊಡುವುದಕ್ಕಿಂತ ಮುಂಚೆ
ಕತ್ತರಿಸಿಬಿಟ್ಟಿದ್ದಾರೆ ಅವನ
ನಾಲಿಗೆ.

***

3.

ಭಗವಂತ- 1

ನಾನು,
ಗೋಡೆಯ ಈ ಬದಿಯಲ್ಲಿದ್ದೇನೆ.
ಇಲ್ಲಿ ಬಿಸಿಲು ಬೀಳುತ್ತದೆ
ಹಸಿರು ಹಾಡುತ್ತದೆ.
ಎಲೆಗಳ ಮೇಲೆ
ಇಬ್ಬನಿ ಸವಾರಿ ಮಾಡುತ್ತದೆ,
ಸೋಮಾರಿ ಮಂಜು
ಠಿಕಾಣಿ ಹಾಕಿದರೆ
ಟೊಂಗೆಯ ಮೇಲೆ ಕುಳಿತು
ಗಂಟೆಗಟ್ಟಲೆ ತೂಕಡಿಸುತ್ತದೆ.

ಮಳೆ
ಹರೆಯದ ಹುಡುಗಿಯಂತೆ
ಕುಣಿದಾಡುತ್ತ ಬಂದು
ಕೈಚಾಚುತ್ತಿದ್ದಂತೆಯೇ
ಜಾರಿ ಹೋಗುತ್ತದೆ.
ಬಂದ ಪ್ರತಿ ಮಾಸವೂ
ಮೋಸ ಮಾಡದೇ
ಕಚಗುಳಿಯಿಡುತ್ತದೆ.

ಆದರೆ
ಈ ಹಸೀ ಗೋಡೆಯ
ಆ ಬದಿಯಲ್ಲಿ
ಯಾಕಿಷ್ಟು ನೀರವ ಮೌನ?
ಯಾರವರು?
ಸದ್ದು ಮಾಡದೇ
ಸುಮ್ಮನೇ ಕುಳಿತು
ಗೋಡೆಗೆ ಕಿವಿ ಹಚ್ಚಿರುವವರು?

***

4.

ಭಗವಂತ- 2

ಇಡೀ ಆಕಾಶ ಸುತ್ತಿ
ನೀನು ರಚಿಸಿರುವ ವ್ಯೂಹವನ್ನೊಮ್ಮೆ
ಜಾಗರೂಕತೆಯಿಂದ ಗಮನಿಸಿದೆ.

ಕಪ್ಪು ಮನೆಯಲ್ಲಿ
ಸೂರ್ಯನನ್ನು ಇಟ್ಟು
ನನ್ನ ಸೈನ್ಯವನ್ನು ಕಂಗೆಡಿಸಬೇಕೆಂದು
ಲೆಕ್ಕ ಹಾಕಿದ್ದಿಯಲ್ಲವೆ?
ನಾನು, ಒಂದು ಸಣ್ಣ ದೀಪ ಹಚ್ಚಿ
ನನ್ನ ದಾರಿ ಹುಡುಕಿಕೊಂಡೆ.

ನೀನು, ಸಮುದ್ರವನ್ನೆತ್ತಿ
ನನ್ನ ಮುಖದ ಮೇಲೆ ಅಪ್ಪಳಿಸಿದೆ.
ನಾನು ನಂಬಿಕೆಯ
ದೋಣಿಯನ್ನೇರಿ ಪಾರಾಗಿಬಿಟ್ಟೆ.

ನೀನು, ಕಾಲವನ್ನು
ಆಟದ ಅಂಗಳಕ್ಕಿಳಿಸಿ
ತೋಳು ಮೇಲಿರಿಸಿದೆ.
ನಾನು ಕಾಲವನ್ನು
ತುಂಡು ತುಂಡು ಮಾಡಿ
ಕ್ಷಣಗಳಲ್ಲಿ ಬದುಕುವುದನ್ನು
ರೂಢಿ ಮಾಡಿಕೊಂಡೆ.

ಕೆಲ ಚಮತ್ಕಾರಗಳನ್ನು ಮಾಡಿ
ನನ್ನ ಅಭಿಮಾನವನ್ನು ಕೊಲ್ಲಲು
ನೀನು ಶತಪ್ರಯತ್ನ ಮಾಡಿದೆ.
ನನ್ನ ಒಬ್ಬ ಸಣ್ಣ ಸೈನಿಕ ಮುಂದೆ ಬಂದು
ನಿನ್ನ ಅಸ್ತಿತ್ವಕ್ಕೇ ಸವಾಲು ಹಾಕಿದ.

ಸಾವನ್ನು ಎದುರು ನಿಲ್ಲಿಸಿ
ನನ್ನ ಆಟ ಮುಗಿಸಲು
ನೀನು ಹೊಂಚು ಹಾಕಿದೆ.
ದೇಹವನ್ನು ಪಣಕ್ಕಿಟ್ಟು
ನಾನು ಆತ್ಮ ಉಳಿಸಿಕೊಂಡೆ.

ಇಡೀ ಆಕಾಶ ಸುತ್ತಿ
ಮತ್ತೊಂದಿಷ್ಟು ಸಂಚು ಕಲಿತು ಬಾ
ನನ್ನ ಸೋಲಿಸುವುದು
ಅಷ್ಟು ಸುಲಭವಲ್ಲ ಭಗವಂತ.

***

5.

ಭಗವಂತ- 3

ಕಳೆದ ಬಾರಿ
ಭೆಟ್ಟಿಯಾದಾಗ ನೀನು
ಒಂದು ಭಯಂಕರ ಯುದ್ಧದಲ್ಲಿ
ಮಗ್ನನಾಗಿದ್ದೆ.
ಹೊಸ ಹೊಸ ಆಯುಧಗಳ
ಹೊಳಪಿಗೆ ತುಂಬ ಖುಷಿಯಾಗಿದ್ದೆ.
ಅದಕ್ಕೂ ಮೊದಲು
ಹಸಿವಿನಿಂದ ಸತ್ತ ಮಕ್ಕಳ
ಹೆಣಗಳನ್ನ ಹೂಳುವಾಗ
ನಿನ್ನ ನೋಡಿದ್ದೆ.
ಮತ್ತೊಮ್ಮೆ
ಭೂಮಿಯನ್ನು ನಡುಗಿಸಿ
ಇಡೀ ಊರಿಗೆ ಊರನ್ನೇ
ನೆಲಸಮ ಮಾಡಿ
ಇನ್ನೊಂದು ಕಡೆ
ಕೈ ಝಾಡಿಸಿಕೊಂಡು ಹೋಗುವಾಗ
ನಿನ್ನ ನೋಡಿದ್ದೆ.

ಸುತ್ತಮುತ್ತಲಿನ ನಕ್ಷತ್ರಗಳ ಮೇಲೆ
ಧೂಳು ಹಾರಿಸುತ್ತಾ
ಆಕಾಶದಿಂದ ಇಳಿದು ಬರುವಾಗಲೂ
ನಿನ್ನ ನೋಡಿದ್ದೆ.
ಬೇರೆ ಬೇರೆ ವಿಶ್ವಗಳ
ಆಕಾಶಗಳನ್ನು ಹಾಳುಗೆಡವಿ
ಉನ್ಮಾದದಿಂದ ನೀನು
ನೆಲಕ್ಕಿಳಿದು ಬರುತ್ತಿದ್ದರೆ
ಭೂಮಿ ನಡುಗುತ್ತದೆ
ಸಮುದ್ರ ಉಕ್ಕುತ್ತದೆ
ಆಗ ತುಂಬ ಇರ್ರಾಟಿಕ್ ಆಗಿ ಕಾಣಿಸುತ್ತಿ.

ನಿನ್ನ ಊರಿನಲ್ಲಿ ಎಂತೆಂಥವರ
ಸಹವಾಸದಲ್ಲಿರುತ್ತೀಯೋ ಏನೋ
ನನಗಂತೂ ಒಂದೂ ಗೊತ್ತಾಗುತ್ತಿಲ್ಲ.

***

6.

ಈಗ ನನಗೆ ರೂಢಿಯಾಗಿಬಿಟ್ಟಿದೆ.
ಪ್ರತೀಬಾರಿ ರಸ್ತೆ ದಾಟುವಾಗಲೂ
ಒಮ್ಮೆ ಆಕಾಶದತ್ತ ತಲೆ ಎತ್ತಿ ನೋಡಿ
ಖಾತ್ರಿ ಮಾಡಿಕೊಳ್ಳುತ್ತೇನೆ.
ಉರಿಯುತ್ತ, ಆರುತ್ತ
ಮಾರ್ಸ್, ಮರ್ಕ್ಯುರಿ, ವೀನಸ್ ಮುಂತಾದ
ಸೊಕ್ಕಿನ ಶ್ರೀಮಂತರು, ಆಕಾಶದಲ್ಲಿ
ಡೌಲಿನಿಂದ ಮೆರೆದಾಡುತ್ತಿರುತ್ತಾರೆ.

ಕಳೆದ ವಾರವಷ್ಟೇ,
ಬೇಕಾಬಿಟ್ಟಿಯಾಗಿ ಹಾರಾಡುತ್ತಿದ
ನಮ್ಮದೇ ಊರಿನ
ಉಡಾಳ ಕಾಮೆಟ್ ’ಲೇವಿ ಶೂಮಾಕರ್’
ಜ್ಯುಪಿಟರ್‌ನ ಎದೆಗೆ
ಬಲವಾಗಿ ಢಿಕ್ಕಿ ಹೊಡೆದಿದ್ದ.

ಬೆಂಕಿಯ ತುಣುಕುಗಳು
ಸಾವಿರಾರು ಮೈಲಿ ಚಿಮ್ಮಿ ಹೋಗಿದ್ದವು.
ನೀವೇ ಹೇಳಿ
ಜ್ಯುಪಿಟರ್‌ನ ಗಾಯ ಮಾಯಲು
ಎಷ್ಟು ಶತಮಾನಗಳು ಬೇಕಾಗಬಹುದು.

***

7.

ಒಂದಿಷ್ಟು ತಲೆ ಬೋಳಿಸಿದ ದನಿಗಳು
ಮೇಲಿಂದ ಮೇಲೆ
ದೇವರಮನೆಯ ಹಿತ್ತಲಿಗೆ ಬಂದು
ಇಟ್ಟಿಗೆಯ ಗೋಡೆಗೆ ಒರಗಿ
ಕಲ್ಲಾಗಿರುವ ಕಿವಿಗಳ ಮೇಲೆ,
ತಮ್ಮ ತುಟಿಗಳನ್ನಿಟ್ಟು
ಮನುಷ್ಯ ಜಾತಿಯ ಪೀಳಿಗೆಯನ್ನು
ತಮ್ಮ ಮಡಿಲಲ್ಲಿ ಹಾಕಿ
ನಿಶ್ಚಿಂತೆಯಿಂದ ಹೋಗಿ ಗೋರಿಯಲ್ಲಿ ಅಡ್ಡಾಗಿರುವ
ಒಬ್ಬ ಮುದುಕ ದೇವರಿಗೆ ಸಂತಾಪ ಹೇಳುತ್ತವೆ!!

***

8.

ಈ ದೃಶ್ಯವನ್ನು ಮೊದಲೂ ನೋಡಿದ್ದೆ.
ಬಂದೂಕನ್ನು ಎದೆಗೆ ನಾಟಿಸಿಕೊಂಡ
ಸೈನಿಕರ ದಂಡು
ಮತ್ತು ಎದುರಿಗೆ
ಎದೆ ಸೆಟೆಸಿ, ಘೋಷಣೆ ಕೂಗುತ್ತಿದ್ದ
ಜನಸಮೂಹ.
ಬಹುಶಃ ಅದು 1919ರ ವರ್ಷ
ಅಮೃತಸರ್‌ನ ಜಲಿಯನ್‌ವಾಲಾ ಬಾಗ್.

ಅಥವಾ 1936ರ
ಲಾಹೋರ್‌ನ ಒಂದು ಬೀದಿಯ ದೃಶ್ಯ,
ಸ್ವತಂತ್ರ ಹೋರಾಟದ ವರ್ಷಾಚರಣೆಯ
ಮಾರನೆಯ ರಾತ್ರಿ.

ಈ ಚಿತ್ರಗಳಲ್ಲಿ
ಎಷ್ಟು ಸಾಮ್ಯತೆ ಇದೆ ನೋಡಿ
ಇದರಲ್ಲಿನ ಜನರು,
ಅವರ ಮುಖದಲ್ಲಿನ ನೋವು,
ಎದೆಯಲ್ಲಿನ ಸಿಟ್ಟು,
ಆ ಹರೆಯ, ಆ ಭಾವನೆಗಳು
ಯಾವದೂ ನನಗೆ
ಅನಿಸುವುದಿಲ್ಲ ಅಪರಿಚಿತ.

ಅದು 1942ರ ವರ್ಷ ಇರಬಹುದು
ಅಲಹಾಬಾದ್‌ನ
ಒಂದು ಚೌಕದ ನಟ್ಟನಡುವೆ,
ಜನಸಾಗರವನ್ನು ಸುತ್ತುವರಿದಿದ್ದ
ಬ್ರಿಟಿಷ್ ಸೈನಿಕರು
ಅವರ ಕೈಯಲ್ಲಿ ಮತ್ತೆ ಅದೇ ಬಂದೂಕು
ಎದುರಿಗೆ ಮತ್ತೆ ಅದೇ ಜನ
ಅದೇ ಘೋಷಣೆಗಳು
ಅದೇ ಬಿಗಿದ ಮುಷ್ಟಿಗಳು,
ಅವತ್ತೂ ಜನರ ಕೈಯಲ್ಲಿ ಅದೇ ಧ್ವಜ.

ಇಂದೂ ಕೂಡ ಬಂದೂಕು
ಬೆಂಕಿ ಉಗುಳಿತು, ಜನ ಹಾಗೆ ಸತ್ತರು
ಮತ್ತೆ ಅದೇ ರಕ್ತ ಬೀದಿಯ ಮೇಲೆಲ್ಲ.
ಹೌದು, ಅದೇ ಚೌಕದ ನಟ್ಟನಡುವೆ
ಕಬ್ಬಿಣ, ಕಾಂಕ್ರೀಟುಗಳ ಕಾಡಿನಲ್ಲಿ.

ಮೊದಲೇನೋ ಇಲ್ಲೊಂದು
ಬ್ರಿಟಿಷ್ ಅಧಿಕಾರಿಯ ಮೂರ್ತಿ ಇತ್ತಂತೆ
ಇವತ್ತು ಗಾಂಧಿಯ ಮೂರ್ತಿ ಇದೆ
ಆದರೆ ಇದು
1992ರ ವರ್ಷ.
ನನಗೆ
ಯಾವದೂ ಅನಿಸುವುದಿಲ್ಲ ಅಪರಿಚಿತ.

***

9.

ದೇವರೆ,
ಪ್ರಾರ್ಥನೆ ಮಾಡುವಾಗ
ನಾನು ಆಕಳಿಸಿದ್ದನ್ನು ನೋಡಿ
ನಿನಗೆ ಸಿಟ್ಟು ಬಂದಿರಬೇಕಲ್ಲ?
ಈ ಕಾಟಾಚಾರ ಮಾಡಿ ಮಾಡಿ
ಬೇಜಾರಾಗಿಬಿಟ್ಟಿದೆ ನನಗಂತೂ.

ಬುದ್ಧಿ ಬಂದಾಗಿನಿಂದ
ಇದನ್ನೇ ಕೇಳುತ್ತಿದ್ದೇನೆ ನಾನು,
ಹಗಲು ರಾತ್ರಿ ಅವನ ದಯೆ,
ಒಳ್ಳೆಯದು ಕೆಟ್ಟದ್ದು ಎಲ್ಲ
ಅವನ ಕೈಯಲ್ಲೇ ಇದೆ.
ಪ್ರಾರ್ಥನೆ ಮಾಡು!

ಒಳ್ಳೆ ಗ್ರಹಚಾರ ಇದು.
ವಿಚಿತ್ರ ಸುಳ್ಳಿನ ಸಂಭಾಷಣೆ
ಅದೂ ಒಂದೇ ಕಡೆಯಿಂದ.
ಹೀಗೆ ಗುದ್ದಾಡುವುದಾದರೂ
ಯಾರೊಂದಿಗೆ?
ಅವನ ಮುಖ ಅಷ್ಟೇ ಅಲ್ಲ
ಅಸ್ತಿತ್ವವನ್ನೂ ಕೂಡ
ನಾವು
ಕಲ್ಪಿಸಿಕೊಳ್ಳಬೇಕಷ್ಟೆ.

***

10.

ತಂಗಳು ಉಸಿರಿಗೆ
ಜಾಗ ಕೊಡಬೇಡ ಎದೆಯಲ್ಲಿ,
ಉಸಿರು ದೀರ್ಘವಾದಷ್ಟು
ಸರಾಗವಂತೆ
ಸರ್ಪಗಳಿಗೆ ಬದುಕು.
ಇಂಥದೇ ಒಂದು ಉಸಿರು
ಒಮ್ಮೆ ಕಚ್ಚಿತ್ತು
ಕ್ಲಿಯೋಪಾತ್ರಾಳ ನಗೆಯನ್ನು.

ನನ್ನ ತುಟಿ ಮೇಲೊಮ್ಮೆ
ನಿನ್ನ ತುಟಿಗಳನ್ನಿಟ್ಟು
ಭುಸುಗುಟ್ಟಿಬಿಡು ಗೆಳತಿ.

ವಿಷ ಕುಡಿಯುವುದು
ಅಭ್ಯಾಸವಾಗಿಬಿಟ್ಟಿದೆ ನನಗೆ.

***

11.

ಒಬ್ಬ ಹಳ್ಳಿಯ ಹುಡುಗ
ತಲೆಯ ಮೇಲೆ
ಬೆಲ್ಲದ ಪೆಂಟಿಯನ್ನು ಹೊತ್ತು
ಹೊಲದಂಚಿನಲ್ಲಿ ನಡೆಯುತ್ತಾ
ಎಲ್ಲೋ ಹೋಗುತ್ತಿದ್ದಾನೆ.

ಬಿಸಿಲು ಏರಿದಂತೆಲ್ಲಾ
ಬೆಲ್ಲ ಕರಗಿ
ಹರಿಯತೊಡಗಿದೆ.

ಮುಗ್ಧ ಹಳ್ಳಿಯ ಹುಡುಗ
ಹಣೆಯಿಂದ
ಇಳಿಯುತ್ತಿರುವ
ಸಿಹಿ ರಸವನ್ನ
ಗಾಬರಿಯಿಂದ ಚಪ್ಪರಿಸುತ್ತಿದ್ದಾನೆ.

ನಾನೇ
ಆ ಹಳ್ಳಿಯ ಹುಡುಗ

ಯಾರು ನನ್ನ ತಲೆಯ ಮೇಲೆ
ಟಾಗೋರರ ಕವಿತೆಗಳ
ಗಂಟು ಇಟ್ಟದ್ದು?

***

12.

ಒಂದು ಹುಣ್ಣಿಮೆಯ ಸಂಜೆ
ಲಾಹೋರ್‌ನ ಸಣ್ಣಸಣ್ಣ ಗಲ್ಲಿಗಳಲ್ಲೆಲ್ಲ
ಅಮಾವಾಸ್ಯೆಯ ಭೀತಿ.

ಚಂದ್ರ
ಅವಸರದಿಂದ ಓಡುತ್ತಾ
ಜೈಲಿನ ಎತ್ತರದ ಗೋಡೆಗಳನ್ನ
ಕಮಾಂಡೊಗಳ ಥರ ಹಾರಿ
ಕತ್ತಲ ಸೆಲ್‌ನೊಳಗೆ ಪ್ರತ್ಯಕ್ಷನಾಗಿದ್ದಾನೆ.
ಒಂದಿಷ್ಟೂ ಸದ್ದಿಲ್ಲ
ಒಂದು ಹುಳಕ್ಕೂ ಗೊತ್ತಿಲ್ಲ.

ಚಂದ್ರ
ಫೈಜ್‌ನ ಭೆಟ್ಟಿಗೆ ಬಂದಿದ್ದಾನೆ.
ಒಂದೇ ಒಂದು ಹಾಡಿಗಾಗಿ
ಮನವಿ ಮಾಡಿಕೊಳ್ಳಲು.

ಕಾಲನ ನಾಡಿ ಮಿಡಿಯಬೇಕೆಂದರೆ
ಮತ್ತೆ ಫೈಜ್ ಹಾಡಲೇಬೇಕು.

***

ಗುಲ್ಜಾರ್
ಸಂಪೂರಣ್ ಸಿಂಗ ಕಾರ್ಲಾ, ಗುಲ್ಜಾರ್ ಅವರ ಮೂಲ ಹೆಸರು. ಉರ್ದುವಿನಲ್ಲಿ ಕವಿತೆಗಳನ್ನು ರಚಿಸಿ ಜನಪ್ರಿಯರಾಗಿದ್ದಾರೆ. ಹಿಂದಿ ಸಿನಿಮಾಗಳಿಗೆ ಚಿತ್ರಗೀತೆಗಳನ್ನು ಬರೆದು, ಸಿನಿಪ್ರೇಮಿಗಳ ನಡುವೆ ಮನೆಮಾತಾಗಿದ್ದಾರೆ. ಅನುವಾದಕರೂ ಅಗಿರುವ ಗುಲ್ಜಾರ್ ಅವರಿಗೆ 2024ರಲ್ಲಿ ಜ್ಞಾನಪೀಠ ಪ್ರಶಸ್ತಿಯನ್ನು ಘೋಷಿಸಲಾಯಿತು.

ಚಿದಂಬರ ನರೇಂದ್ರ

ಕನ್ನಡಕ್ಕೆ:ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...