Homeಮುಖಪುಟಗುಲ್ಜಾರ್ ಅವರ ಪದ್ಯಗಳು

ಗುಲ್ಜಾರ್ ಅವರ ಪದ್ಯಗಳು

- Advertisement -
- Advertisement -

1.

ಯಾವ ಹೊಲದಿಂದ ರೈತನಿಗೆ ರೊಟ್ಟಿಯ ಅದೃಷ್ಟವಿಲ್ಲವೋ
ಆ ಹೊಲದ ಗೋಧಿಯ ತೆನೆಗಳನ್ನು
ಹುಡುಕಿ ಹುಡುಕಿ ಸುಟ್ಟುಬಿಡಿ

ಅಲ್ಲಮ ಇಕ್ಬಾಲ್

ಯಾರಾದರೂ ಹೋಗಿ ’ಅಲ್ಲಮ’ನಿಗೆ ಸುದ್ದಿ ಮುಟ್ಟಿಸಿ
ಯಾವ ಹೊಲದಿಂದ ರೈತನ ಮನೆಯ
ಹೊಟ್ಟೆ ತುಂಬಲಿಲ್ಲವೋ
ಯಾರೂ ಆ ಹೊಲಕ್ಕೆ ಹೋಗಿ ಬೆಂಕಿ ಹಚ್ಚಲಿಲ್ಲ
ಯಾರೂ ಒಂದು ಹೆಜ್ಜೆಯನ್ನೂ ಮುಂದಿಡಲಿಲ್ಲ
ಯಾವ ಕ್ರಾಂತಿಯ ಘೋಷಣೆಗಳೂ ಮೊಳಗಲಿಲ್ಲ.

ಶವಯಾತ್ರೆಗಳು ಹೊರಟಿವೆ
ಹಳ್ಳಿಗಳ ಮನೆಮನೆಯಿಂದ
ಪ್ರತಿ ಮೆರವಣಿಗೆಯೂ ಅನ್ನದಾತರದು
ಸಾಲದ ಹಂಗಿಗೆ ಧಿಕ್ಕಾರ ಹೇಳಿ ಅಮರರಾದ ಹುತಾತ್ಮರದು.

ಅಲ್ಲಮ – ಪ್ರಸಿದ್ಧ ಉರ್ದು ಕವಿ, ಅಲ್ಲಮ ಮೊಹಮ್ಮದ್ ಇಕ್ಬಾಲ್

***

2.

ಯಾರು ಈ ಮೂಕ?
ಎಷ್ಟೊಂದು ಕೆಮ್ಮುತ್ತಾನೆ?
ಪ್ರತೀ ಬಾರಿ ಕೆಮ್ಮಿದಾಗಲೂ
ಸಹಸ್ರಾರು ಶಬ್ದಗಳು.
ಬೇಸತ್ತು ಹೋಗಿದ್ದಾರೆ
ಊರು ಸ್ವಚ್ಛ ಮಾಡುವ
ಗುತ್ತಿಗೆ ತೆಗೆದುಕೊಂಡವರು.

ಚೌಕಿನಲ್ಲಿ ಜನ ಮಾತಾಡುತ್ತಿದ್ದರು
ಅವನು ಕವಿಯಂತೆ,

ಯಾರೋ ಪ್ರಶ್ನೆ ಕೇಳಿ
ಉತ್ತರ ಕೊಡುವುದಕ್ಕಿಂತ ಮುಂಚೆ
ಕತ್ತರಿಸಿಬಿಟ್ಟಿದ್ದಾರೆ ಅವನ
ನಾಲಿಗೆ.

***

3.

ಭಗವಂತ- 1

ನಾನು,
ಗೋಡೆಯ ಈ ಬದಿಯಲ್ಲಿದ್ದೇನೆ.
ಇಲ್ಲಿ ಬಿಸಿಲು ಬೀಳುತ್ತದೆ
ಹಸಿರು ಹಾಡುತ್ತದೆ.
ಎಲೆಗಳ ಮೇಲೆ
ಇಬ್ಬನಿ ಸವಾರಿ ಮಾಡುತ್ತದೆ,
ಸೋಮಾರಿ ಮಂಜು
ಠಿಕಾಣಿ ಹಾಕಿದರೆ
ಟೊಂಗೆಯ ಮೇಲೆ ಕುಳಿತು
ಗಂಟೆಗಟ್ಟಲೆ ತೂಕಡಿಸುತ್ತದೆ.

ಮಳೆ
ಹರೆಯದ ಹುಡುಗಿಯಂತೆ
ಕುಣಿದಾಡುತ್ತ ಬಂದು
ಕೈಚಾಚುತ್ತಿದ್ದಂತೆಯೇ
ಜಾರಿ ಹೋಗುತ್ತದೆ.
ಬಂದ ಪ್ರತಿ ಮಾಸವೂ
ಮೋಸ ಮಾಡದೇ
ಕಚಗುಳಿಯಿಡುತ್ತದೆ.

ಆದರೆ
ಈ ಹಸೀ ಗೋಡೆಯ
ಆ ಬದಿಯಲ್ಲಿ
ಯಾಕಿಷ್ಟು ನೀರವ ಮೌನ?
ಯಾರವರು?
ಸದ್ದು ಮಾಡದೇ
ಸುಮ್ಮನೇ ಕುಳಿತು
ಗೋಡೆಗೆ ಕಿವಿ ಹಚ್ಚಿರುವವರು?

***

4.

ಭಗವಂತ- 2

ಇಡೀ ಆಕಾಶ ಸುತ್ತಿ
ನೀನು ರಚಿಸಿರುವ ವ್ಯೂಹವನ್ನೊಮ್ಮೆ
ಜಾಗರೂಕತೆಯಿಂದ ಗಮನಿಸಿದೆ.

ಕಪ್ಪು ಮನೆಯಲ್ಲಿ
ಸೂರ್ಯನನ್ನು ಇಟ್ಟು
ನನ್ನ ಸೈನ್ಯವನ್ನು ಕಂಗೆಡಿಸಬೇಕೆಂದು
ಲೆಕ್ಕ ಹಾಕಿದ್ದಿಯಲ್ಲವೆ?
ನಾನು, ಒಂದು ಸಣ್ಣ ದೀಪ ಹಚ್ಚಿ
ನನ್ನ ದಾರಿ ಹುಡುಕಿಕೊಂಡೆ.

ನೀನು, ಸಮುದ್ರವನ್ನೆತ್ತಿ
ನನ್ನ ಮುಖದ ಮೇಲೆ ಅಪ್ಪಳಿಸಿದೆ.
ನಾನು ನಂಬಿಕೆಯ
ದೋಣಿಯನ್ನೇರಿ ಪಾರಾಗಿಬಿಟ್ಟೆ.

ನೀನು, ಕಾಲವನ್ನು
ಆಟದ ಅಂಗಳಕ್ಕಿಳಿಸಿ
ತೋಳು ಮೇಲಿರಿಸಿದೆ.
ನಾನು ಕಾಲವನ್ನು
ತುಂಡು ತುಂಡು ಮಾಡಿ
ಕ್ಷಣಗಳಲ್ಲಿ ಬದುಕುವುದನ್ನು
ರೂಢಿ ಮಾಡಿಕೊಂಡೆ.

ಕೆಲ ಚಮತ್ಕಾರಗಳನ್ನು ಮಾಡಿ
ನನ್ನ ಅಭಿಮಾನವನ್ನು ಕೊಲ್ಲಲು
ನೀನು ಶತಪ್ರಯತ್ನ ಮಾಡಿದೆ.
ನನ್ನ ಒಬ್ಬ ಸಣ್ಣ ಸೈನಿಕ ಮುಂದೆ ಬಂದು
ನಿನ್ನ ಅಸ್ತಿತ್ವಕ್ಕೇ ಸವಾಲು ಹಾಕಿದ.

ಸಾವನ್ನು ಎದುರು ನಿಲ್ಲಿಸಿ
ನನ್ನ ಆಟ ಮುಗಿಸಲು
ನೀನು ಹೊಂಚು ಹಾಕಿದೆ.
ದೇಹವನ್ನು ಪಣಕ್ಕಿಟ್ಟು
ನಾನು ಆತ್ಮ ಉಳಿಸಿಕೊಂಡೆ.

ಇಡೀ ಆಕಾಶ ಸುತ್ತಿ
ಮತ್ತೊಂದಿಷ್ಟು ಸಂಚು ಕಲಿತು ಬಾ
ನನ್ನ ಸೋಲಿಸುವುದು
ಅಷ್ಟು ಸುಲಭವಲ್ಲ ಭಗವಂತ.

***

5.

ಭಗವಂತ- 3

ಕಳೆದ ಬಾರಿ
ಭೆಟ್ಟಿಯಾದಾಗ ನೀನು
ಒಂದು ಭಯಂಕರ ಯುದ್ಧದಲ್ಲಿ
ಮಗ್ನನಾಗಿದ್ದೆ.
ಹೊಸ ಹೊಸ ಆಯುಧಗಳ
ಹೊಳಪಿಗೆ ತುಂಬ ಖುಷಿಯಾಗಿದ್ದೆ.
ಅದಕ್ಕೂ ಮೊದಲು
ಹಸಿವಿನಿಂದ ಸತ್ತ ಮಕ್ಕಳ
ಹೆಣಗಳನ್ನ ಹೂಳುವಾಗ
ನಿನ್ನ ನೋಡಿದ್ದೆ.
ಮತ್ತೊಮ್ಮೆ
ಭೂಮಿಯನ್ನು ನಡುಗಿಸಿ
ಇಡೀ ಊರಿಗೆ ಊರನ್ನೇ
ನೆಲಸಮ ಮಾಡಿ
ಇನ್ನೊಂದು ಕಡೆ
ಕೈ ಝಾಡಿಸಿಕೊಂಡು ಹೋಗುವಾಗ
ನಿನ್ನ ನೋಡಿದ್ದೆ.

ಸುತ್ತಮುತ್ತಲಿನ ನಕ್ಷತ್ರಗಳ ಮೇಲೆ
ಧೂಳು ಹಾರಿಸುತ್ತಾ
ಆಕಾಶದಿಂದ ಇಳಿದು ಬರುವಾಗಲೂ
ನಿನ್ನ ನೋಡಿದ್ದೆ.
ಬೇರೆ ಬೇರೆ ವಿಶ್ವಗಳ
ಆಕಾಶಗಳನ್ನು ಹಾಳುಗೆಡವಿ
ಉನ್ಮಾದದಿಂದ ನೀನು
ನೆಲಕ್ಕಿಳಿದು ಬರುತ್ತಿದ್ದರೆ
ಭೂಮಿ ನಡುಗುತ್ತದೆ
ಸಮುದ್ರ ಉಕ್ಕುತ್ತದೆ
ಆಗ ತುಂಬ ಇರ್ರಾಟಿಕ್ ಆಗಿ ಕಾಣಿಸುತ್ತಿ.

ನಿನ್ನ ಊರಿನಲ್ಲಿ ಎಂತೆಂಥವರ
ಸಹವಾಸದಲ್ಲಿರುತ್ತೀಯೋ ಏನೋ
ನನಗಂತೂ ಒಂದೂ ಗೊತ್ತಾಗುತ್ತಿಲ್ಲ.

***

6.

ಈಗ ನನಗೆ ರೂಢಿಯಾಗಿಬಿಟ್ಟಿದೆ.
ಪ್ರತೀಬಾರಿ ರಸ್ತೆ ದಾಟುವಾಗಲೂ
ಒಮ್ಮೆ ಆಕಾಶದತ್ತ ತಲೆ ಎತ್ತಿ ನೋಡಿ
ಖಾತ್ರಿ ಮಾಡಿಕೊಳ್ಳುತ್ತೇನೆ.
ಉರಿಯುತ್ತ, ಆರುತ್ತ
ಮಾರ್ಸ್, ಮರ್ಕ್ಯುರಿ, ವೀನಸ್ ಮುಂತಾದ
ಸೊಕ್ಕಿನ ಶ್ರೀಮಂತರು, ಆಕಾಶದಲ್ಲಿ
ಡೌಲಿನಿಂದ ಮೆರೆದಾಡುತ್ತಿರುತ್ತಾರೆ.

ಕಳೆದ ವಾರವಷ್ಟೇ,
ಬೇಕಾಬಿಟ್ಟಿಯಾಗಿ ಹಾರಾಡುತ್ತಿದ
ನಮ್ಮದೇ ಊರಿನ
ಉಡಾಳ ಕಾಮೆಟ್ ’ಲೇವಿ ಶೂಮಾಕರ್’
ಜ್ಯುಪಿಟರ್‌ನ ಎದೆಗೆ
ಬಲವಾಗಿ ಢಿಕ್ಕಿ ಹೊಡೆದಿದ್ದ.

ಬೆಂಕಿಯ ತುಣುಕುಗಳು
ಸಾವಿರಾರು ಮೈಲಿ ಚಿಮ್ಮಿ ಹೋಗಿದ್ದವು.
ನೀವೇ ಹೇಳಿ
ಜ್ಯುಪಿಟರ್‌ನ ಗಾಯ ಮಾಯಲು
ಎಷ್ಟು ಶತಮಾನಗಳು ಬೇಕಾಗಬಹುದು.

***

7.

ಒಂದಿಷ್ಟು ತಲೆ ಬೋಳಿಸಿದ ದನಿಗಳು
ಮೇಲಿಂದ ಮೇಲೆ
ದೇವರಮನೆಯ ಹಿತ್ತಲಿಗೆ ಬಂದು
ಇಟ್ಟಿಗೆಯ ಗೋಡೆಗೆ ಒರಗಿ
ಕಲ್ಲಾಗಿರುವ ಕಿವಿಗಳ ಮೇಲೆ,
ತಮ್ಮ ತುಟಿಗಳನ್ನಿಟ್ಟು
ಮನುಷ್ಯ ಜಾತಿಯ ಪೀಳಿಗೆಯನ್ನು
ತಮ್ಮ ಮಡಿಲಲ್ಲಿ ಹಾಕಿ
ನಿಶ್ಚಿಂತೆಯಿಂದ ಹೋಗಿ ಗೋರಿಯಲ್ಲಿ ಅಡ್ಡಾಗಿರುವ
ಒಬ್ಬ ಮುದುಕ ದೇವರಿಗೆ ಸಂತಾಪ ಹೇಳುತ್ತವೆ!!

***

8.

ಈ ದೃಶ್ಯವನ್ನು ಮೊದಲೂ ನೋಡಿದ್ದೆ.
ಬಂದೂಕನ್ನು ಎದೆಗೆ ನಾಟಿಸಿಕೊಂಡ
ಸೈನಿಕರ ದಂಡು
ಮತ್ತು ಎದುರಿಗೆ
ಎದೆ ಸೆಟೆಸಿ, ಘೋಷಣೆ ಕೂಗುತ್ತಿದ್ದ
ಜನಸಮೂಹ.
ಬಹುಶಃ ಅದು 1919ರ ವರ್ಷ
ಅಮೃತಸರ್‌ನ ಜಲಿಯನ್‌ವಾಲಾ ಬಾಗ್.

ಅಥವಾ 1936ರ
ಲಾಹೋರ್‌ನ ಒಂದು ಬೀದಿಯ ದೃಶ್ಯ,
ಸ್ವತಂತ್ರ ಹೋರಾಟದ ವರ್ಷಾಚರಣೆಯ
ಮಾರನೆಯ ರಾತ್ರಿ.

ಈ ಚಿತ್ರಗಳಲ್ಲಿ
ಎಷ್ಟು ಸಾಮ್ಯತೆ ಇದೆ ನೋಡಿ
ಇದರಲ್ಲಿನ ಜನರು,
ಅವರ ಮುಖದಲ್ಲಿನ ನೋವು,
ಎದೆಯಲ್ಲಿನ ಸಿಟ್ಟು,
ಆ ಹರೆಯ, ಆ ಭಾವನೆಗಳು
ಯಾವದೂ ನನಗೆ
ಅನಿಸುವುದಿಲ್ಲ ಅಪರಿಚಿತ.

ಅದು 1942ರ ವರ್ಷ ಇರಬಹುದು
ಅಲಹಾಬಾದ್‌ನ
ಒಂದು ಚೌಕದ ನಟ್ಟನಡುವೆ,
ಜನಸಾಗರವನ್ನು ಸುತ್ತುವರಿದಿದ್ದ
ಬ್ರಿಟಿಷ್ ಸೈನಿಕರು
ಅವರ ಕೈಯಲ್ಲಿ ಮತ್ತೆ ಅದೇ ಬಂದೂಕು
ಎದುರಿಗೆ ಮತ್ತೆ ಅದೇ ಜನ
ಅದೇ ಘೋಷಣೆಗಳು
ಅದೇ ಬಿಗಿದ ಮುಷ್ಟಿಗಳು,
ಅವತ್ತೂ ಜನರ ಕೈಯಲ್ಲಿ ಅದೇ ಧ್ವಜ.

ಇಂದೂ ಕೂಡ ಬಂದೂಕು
ಬೆಂಕಿ ಉಗುಳಿತು, ಜನ ಹಾಗೆ ಸತ್ತರು
ಮತ್ತೆ ಅದೇ ರಕ್ತ ಬೀದಿಯ ಮೇಲೆಲ್ಲ.
ಹೌದು, ಅದೇ ಚೌಕದ ನಟ್ಟನಡುವೆ
ಕಬ್ಬಿಣ, ಕಾಂಕ್ರೀಟುಗಳ ಕಾಡಿನಲ್ಲಿ.

ಮೊದಲೇನೋ ಇಲ್ಲೊಂದು
ಬ್ರಿಟಿಷ್ ಅಧಿಕಾರಿಯ ಮೂರ್ತಿ ಇತ್ತಂತೆ
ಇವತ್ತು ಗಾಂಧಿಯ ಮೂರ್ತಿ ಇದೆ
ಆದರೆ ಇದು
1992ರ ವರ್ಷ.
ನನಗೆ
ಯಾವದೂ ಅನಿಸುವುದಿಲ್ಲ ಅಪರಿಚಿತ.

***

9.

ದೇವರೆ,
ಪ್ರಾರ್ಥನೆ ಮಾಡುವಾಗ
ನಾನು ಆಕಳಿಸಿದ್ದನ್ನು ನೋಡಿ
ನಿನಗೆ ಸಿಟ್ಟು ಬಂದಿರಬೇಕಲ್ಲ?
ಈ ಕಾಟಾಚಾರ ಮಾಡಿ ಮಾಡಿ
ಬೇಜಾರಾಗಿಬಿಟ್ಟಿದೆ ನನಗಂತೂ.

ಬುದ್ಧಿ ಬಂದಾಗಿನಿಂದ
ಇದನ್ನೇ ಕೇಳುತ್ತಿದ್ದೇನೆ ನಾನು,
ಹಗಲು ರಾತ್ರಿ ಅವನ ದಯೆ,
ಒಳ್ಳೆಯದು ಕೆಟ್ಟದ್ದು ಎಲ್ಲ
ಅವನ ಕೈಯಲ್ಲೇ ಇದೆ.
ಪ್ರಾರ್ಥನೆ ಮಾಡು!

ಒಳ್ಳೆ ಗ್ರಹಚಾರ ಇದು.
ವಿಚಿತ್ರ ಸುಳ್ಳಿನ ಸಂಭಾಷಣೆ
ಅದೂ ಒಂದೇ ಕಡೆಯಿಂದ.
ಹೀಗೆ ಗುದ್ದಾಡುವುದಾದರೂ
ಯಾರೊಂದಿಗೆ?
ಅವನ ಮುಖ ಅಷ್ಟೇ ಅಲ್ಲ
ಅಸ್ತಿತ್ವವನ್ನೂ ಕೂಡ
ನಾವು
ಕಲ್ಪಿಸಿಕೊಳ್ಳಬೇಕಷ್ಟೆ.

***

10.

ತಂಗಳು ಉಸಿರಿಗೆ
ಜಾಗ ಕೊಡಬೇಡ ಎದೆಯಲ್ಲಿ,
ಉಸಿರು ದೀರ್ಘವಾದಷ್ಟು
ಸರಾಗವಂತೆ
ಸರ್ಪಗಳಿಗೆ ಬದುಕು.
ಇಂಥದೇ ಒಂದು ಉಸಿರು
ಒಮ್ಮೆ ಕಚ್ಚಿತ್ತು
ಕ್ಲಿಯೋಪಾತ್ರಾಳ ನಗೆಯನ್ನು.

ನನ್ನ ತುಟಿ ಮೇಲೊಮ್ಮೆ
ನಿನ್ನ ತುಟಿಗಳನ್ನಿಟ್ಟು
ಭುಸುಗುಟ್ಟಿಬಿಡು ಗೆಳತಿ.

ವಿಷ ಕುಡಿಯುವುದು
ಅಭ್ಯಾಸವಾಗಿಬಿಟ್ಟಿದೆ ನನಗೆ.

***

11.

ಒಬ್ಬ ಹಳ್ಳಿಯ ಹುಡುಗ
ತಲೆಯ ಮೇಲೆ
ಬೆಲ್ಲದ ಪೆಂಟಿಯನ್ನು ಹೊತ್ತು
ಹೊಲದಂಚಿನಲ್ಲಿ ನಡೆಯುತ್ತಾ
ಎಲ್ಲೋ ಹೋಗುತ್ತಿದ್ದಾನೆ.

ಬಿಸಿಲು ಏರಿದಂತೆಲ್ಲಾ
ಬೆಲ್ಲ ಕರಗಿ
ಹರಿಯತೊಡಗಿದೆ.

ಮುಗ್ಧ ಹಳ್ಳಿಯ ಹುಡುಗ
ಹಣೆಯಿಂದ
ಇಳಿಯುತ್ತಿರುವ
ಸಿಹಿ ರಸವನ್ನ
ಗಾಬರಿಯಿಂದ ಚಪ್ಪರಿಸುತ್ತಿದ್ದಾನೆ.

ನಾನೇ
ಆ ಹಳ್ಳಿಯ ಹುಡುಗ

ಯಾರು ನನ್ನ ತಲೆಯ ಮೇಲೆ
ಟಾಗೋರರ ಕವಿತೆಗಳ
ಗಂಟು ಇಟ್ಟದ್ದು?

***

12.

ಒಂದು ಹುಣ್ಣಿಮೆಯ ಸಂಜೆ
ಲಾಹೋರ್‌ನ ಸಣ್ಣಸಣ್ಣ ಗಲ್ಲಿಗಳಲ್ಲೆಲ್ಲ
ಅಮಾವಾಸ್ಯೆಯ ಭೀತಿ.

ಚಂದ್ರ
ಅವಸರದಿಂದ ಓಡುತ್ತಾ
ಜೈಲಿನ ಎತ್ತರದ ಗೋಡೆಗಳನ್ನ
ಕಮಾಂಡೊಗಳ ಥರ ಹಾರಿ
ಕತ್ತಲ ಸೆಲ್‌ನೊಳಗೆ ಪ್ರತ್ಯಕ್ಷನಾಗಿದ್ದಾನೆ.
ಒಂದಿಷ್ಟೂ ಸದ್ದಿಲ್ಲ
ಒಂದು ಹುಳಕ್ಕೂ ಗೊತ್ತಿಲ್ಲ.

ಚಂದ್ರ
ಫೈಜ್‌ನ ಭೆಟ್ಟಿಗೆ ಬಂದಿದ್ದಾನೆ.
ಒಂದೇ ಒಂದು ಹಾಡಿಗಾಗಿ
ಮನವಿ ಮಾಡಿಕೊಳ್ಳಲು.

ಕಾಲನ ನಾಡಿ ಮಿಡಿಯಬೇಕೆಂದರೆ
ಮತ್ತೆ ಫೈಜ್ ಹಾಡಲೇಬೇಕು.

***

ಗುಲ್ಜಾರ್
ಸಂಪೂರಣ್ ಸಿಂಗ ಕಾರ್ಲಾ, ಗುಲ್ಜಾರ್ ಅವರ ಮೂಲ ಹೆಸರು. ಉರ್ದುವಿನಲ್ಲಿ ಕವಿತೆಗಳನ್ನು ರಚಿಸಿ ಜನಪ್ರಿಯರಾಗಿದ್ದಾರೆ. ಹಿಂದಿ ಸಿನಿಮಾಗಳಿಗೆ ಚಿತ್ರಗೀತೆಗಳನ್ನು ಬರೆದು, ಸಿನಿಪ್ರೇಮಿಗಳ ನಡುವೆ ಮನೆಮಾತಾಗಿದ್ದಾರೆ. ಅನುವಾದಕರೂ ಅಗಿರುವ ಗುಲ್ಜಾರ್ ಅವರಿಗೆ 2024ರಲ್ಲಿ ಜ್ಞಾನಪೀಠ ಪ್ರಶಸ್ತಿಯನ್ನು ಘೋಷಿಸಲಾಯಿತು.

ಚಿದಂಬರ ನರೇಂದ್ರ

ಕನ್ನಡಕ್ಕೆ:ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...