Homeಮುಖಪುಟಗುಲ್ಜಾರ್ ಅವರ ಪದ್ಯಗಳು

ಗುಲ್ಜಾರ್ ಅವರ ಪದ್ಯಗಳು

- Advertisement -
- Advertisement -

1.

ಯಾವ ಹೊಲದಿಂದ ರೈತನಿಗೆ ರೊಟ್ಟಿಯ ಅದೃಷ್ಟವಿಲ್ಲವೋ
ಆ ಹೊಲದ ಗೋಧಿಯ ತೆನೆಗಳನ್ನು
ಹುಡುಕಿ ಹುಡುಕಿ ಸುಟ್ಟುಬಿಡಿ

ಅಲ್ಲಮ ಇಕ್ಬಾಲ್

ಯಾರಾದರೂ ಹೋಗಿ ’ಅಲ್ಲಮ’ನಿಗೆ ಸುದ್ದಿ ಮುಟ್ಟಿಸಿ
ಯಾವ ಹೊಲದಿಂದ ರೈತನ ಮನೆಯ
ಹೊಟ್ಟೆ ತುಂಬಲಿಲ್ಲವೋ
ಯಾರೂ ಆ ಹೊಲಕ್ಕೆ ಹೋಗಿ ಬೆಂಕಿ ಹಚ್ಚಲಿಲ್ಲ
ಯಾರೂ ಒಂದು ಹೆಜ್ಜೆಯನ್ನೂ ಮುಂದಿಡಲಿಲ್ಲ
ಯಾವ ಕ್ರಾಂತಿಯ ಘೋಷಣೆಗಳೂ ಮೊಳಗಲಿಲ್ಲ.

ಶವಯಾತ್ರೆಗಳು ಹೊರಟಿವೆ
ಹಳ್ಳಿಗಳ ಮನೆಮನೆಯಿಂದ
ಪ್ರತಿ ಮೆರವಣಿಗೆಯೂ ಅನ್ನದಾತರದು
ಸಾಲದ ಹಂಗಿಗೆ ಧಿಕ್ಕಾರ ಹೇಳಿ ಅಮರರಾದ ಹುತಾತ್ಮರದು.

ಅಲ್ಲಮ – ಪ್ರಸಿದ್ಧ ಉರ್ದು ಕವಿ, ಅಲ್ಲಮ ಮೊಹಮ್ಮದ್ ಇಕ್ಬಾಲ್

***

2.

ಯಾರು ಈ ಮೂಕ?
ಎಷ್ಟೊಂದು ಕೆಮ್ಮುತ್ತಾನೆ?
ಪ್ರತೀ ಬಾರಿ ಕೆಮ್ಮಿದಾಗಲೂ
ಸಹಸ್ರಾರು ಶಬ್ದಗಳು.
ಬೇಸತ್ತು ಹೋಗಿದ್ದಾರೆ
ಊರು ಸ್ವಚ್ಛ ಮಾಡುವ
ಗುತ್ತಿಗೆ ತೆಗೆದುಕೊಂಡವರು.

ಚೌಕಿನಲ್ಲಿ ಜನ ಮಾತಾಡುತ್ತಿದ್ದರು
ಅವನು ಕವಿಯಂತೆ,

ಯಾರೋ ಪ್ರಶ್ನೆ ಕೇಳಿ
ಉತ್ತರ ಕೊಡುವುದಕ್ಕಿಂತ ಮುಂಚೆ
ಕತ್ತರಿಸಿಬಿಟ್ಟಿದ್ದಾರೆ ಅವನ
ನಾಲಿಗೆ.

***

3.

ಭಗವಂತ- 1

ನಾನು,
ಗೋಡೆಯ ಈ ಬದಿಯಲ್ಲಿದ್ದೇನೆ.
ಇಲ್ಲಿ ಬಿಸಿಲು ಬೀಳುತ್ತದೆ
ಹಸಿರು ಹಾಡುತ್ತದೆ.
ಎಲೆಗಳ ಮೇಲೆ
ಇಬ್ಬನಿ ಸವಾರಿ ಮಾಡುತ್ತದೆ,
ಸೋಮಾರಿ ಮಂಜು
ಠಿಕಾಣಿ ಹಾಕಿದರೆ
ಟೊಂಗೆಯ ಮೇಲೆ ಕುಳಿತು
ಗಂಟೆಗಟ್ಟಲೆ ತೂಕಡಿಸುತ್ತದೆ.

ಮಳೆ
ಹರೆಯದ ಹುಡುಗಿಯಂತೆ
ಕುಣಿದಾಡುತ್ತ ಬಂದು
ಕೈಚಾಚುತ್ತಿದ್ದಂತೆಯೇ
ಜಾರಿ ಹೋಗುತ್ತದೆ.
ಬಂದ ಪ್ರತಿ ಮಾಸವೂ
ಮೋಸ ಮಾಡದೇ
ಕಚಗುಳಿಯಿಡುತ್ತದೆ.

ಆದರೆ
ಈ ಹಸೀ ಗೋಡೆಯ
ಆ ಬದಿಯಲ್ಲಿ
ಯಾಕಿಷ್ಟು ನೀರವ ಮೌನ?
ಯಾರವರು?
ಸದ್ದು ಮಾಡದೇ
ಸುಮ್ಮನೇ ಕುಳಿತು
ಗೋಡೆಗೆ ಕಿವಿ ಹಚ್ಚಿರುವವರು?

***

4.

ಭಗವಂತ- 2

ಇಡೀ ಆಕಾಶ ಸುತ್ತಿ
ನೀನು ರಚಿಸಿರುವ ವ್ಯೂಹವನ್ನೊಮ್ಮೆ
ಜಾಗರೂಕತೆಯಿಂದ ಗಮನಿಸಿದೆ.

ಕಪ್ಪು ಮನೆಯಲ್ಲಿ
ಸೂರ್ಯನನ್ನು ಇಟ್ಟು
ನನ್ನ ಸೈನ್ಯವನ್ನು ಕಂಗೆಡಿಸಬೇಕೆಂದು
ಲೆಕ್ಕ ಹಾಕಿದ್ದಿಯಲ್ಲವೆ?
ನಾನು, ಒಂದು ಸಣ್ಣ ದೀಪ ಹಚ್ಚಿ
ನನ್ನ ದಾರಿ ಹುಡುಕಿಕೊಂಡೆ.

ನೀನು, ಸಮುದ್ರವನ್ನೆತ್ತಿ
ನನ್ನ ಮುಖದ ಮೇಲೆ ಅಪ್ಪಳಿಸಿದೆ.
ನಾನು ನಂಬಿಕೆಯ
ದೋಣಿಯನ್ನೇರಿ ಪಾರಾಗಿಬಿಟ್ಟೆ.

ನೀನು, ಕಾಲವನ್ನು
ಆಟದ ಅಂಗಳಕ್ಕಿಳಿಸಿ
ತೋಳು ಮೇಲಿರಿಸಿದೆ.
ನಾನು ಕಾಲವನ್ನು
ತುಂಡು ತುಂಡು ಮಾಡಿ
ಕ್ಷಣಗಳಲ್ಲಿ ಬದುಕುವುದನ್ನು
ರೂಢಿ ಮಾಡಿಕೊಂಡೆ.

ಕೆಲ ಚಮತ್ಕಾರಗಳನ್ನು ಮಾಡಿ
ನನ್ನ ಅಭಿಮಾನವನ್ನು ಕೊಲ್ಲಲು
ನೀನು ಶತಪ್ರಯತ್ನ ಮಾಡಿದೆ.
ನನ್ನ ಒಬ್ಬ ಸಣ್ಣ ಸೈನಿಕ ಮುಂದೆ ಬಂದು
ನಿನ್ನ ಅಸ್ತಿತ್ವಕ್ಕೇ ಸವಾಲು ಹಾಕಿದ.

ಸಾವನ್ನು ಎದುರು ನಿಲ್ಲಿಸಿ
ನನ್ನ ಆಟ ಮುಗಿಸಲು
ನೀನು ಹೊಂಚು ಹಾಕಿದೆ.
ದೇಹವನ್ನು ಪಣಕ್ಕಿಟ್ಟು
ನಾನು ಆತ್ಮ ಉಳಿಸಿಕೊಂಡೆ.

ಇಡೀ ಆಕಾಶ ಸುತ್ತಿ
ಮತ್ತೊಂದಿಷ್ಟು ಸಂಚು ಕಲಿತು ಬಾ
ನನ್ನ ಸೋಲಿಸುವುದು
ಅಷ್ಟು ಸುಲಭವಲ್ಲ ಭಗವಂತ.

***

5.

ಭಗವಂತ- 3

ಕಳೆದ ಬಾರಿ
ಭೆಟ್ಟಿಯಾದಾಗ ನೀನು
ಒಂದು ಭಯಂಕರ ಯುದ್ಧದಲ್ಲಿ
ಮಗ್ನನಾಗಿದ್ದೆ.
ಹೊಸ ಹೊಸ ಆಯುಧಗಳ
ಹೊಳಪಿಗೆ ತುಂಬ ಖುಷಿಯಾಗಿದ್ದೆ.
ಅದಕ್ಕೂ ಮೊದಲು
ಹಸಿವಿನಿಂದ ಸತ್ತ ಮಕ್ಕಳ
ಹೆಣಗಳನ್ನ ಹೂಳುವಾಗ
ನಿನ್ನ ನೋಡಿದ್ದೆ.
ಮತ್ತೊಮ್ಮೆ
ಭೂಮಿಯನ್ನು ನಡುಗಿಸಿ
ಇಡೀ ಊರಿಗೆ ಊರನ್ನೇ
ನೆಲಸಮ ಮಾಡಿ
ಇನ್ನೊಂದು ಕಡೆ
ಕೈ ಝಾಡಿಸಿಕೊಂಡು ಹೋಗುವಾಗ
ನಿನ್ನ ನೋಡಿದ್ದೆ.

ಸುತ್ತಮುತ್ತಲಿನ ನಕ್ಷತ್ರಗಳ ಮೇಲೆ
ಧೂಳು ಹಾರಿಸುತ್ತಾ
ಆಕಾಶದಿಂದ ಇಳಿದು ಬರುವಾಗಲೂ
ನಿನ್ನ ನೋಡಿದ್ದೆ.
ಬೇರೆ ಬೇರೆ ವಿಶ್ವಗಳ
ಆಕಾಶಗಳನ್ನು ಹಾಳುಗೆಡವಿ
ಉನ್ಮಾದದಿಂದ ನೀನು
ನೆಲಕ್ಕಿಳಿದು ಬರುತ್ತಿದ್ದರೆ
ಭೂಮಿ ನಡುಗುತ್ತದೆ
ಸಮುದ್ರ ಉಕ್ಕುತ್ತದೆ
ಆಗ ತುಂಬ ಇರ್ರಾಟಿಕ್ ಆಗಿ ಕಾಣಿಸುತ್ತಿ.

ನಿನ್ನ ಊರಿನಲ್ಲಿ ಎಂತೆಂಥವರ
ಸಹವಾಸದಲ್ಲಿರುತ್ತೀಯೋ ಏನೋ
ನನಗಂತೂ ಒಂದೂ ಗೊತ್ತಾಗುತ್ತಿಲ್ಲ.

***

6.

ಈಗ ನನಗೆ ರೂಢಿಯಾಗಿಬಿಟ್ಟಿದೆ.
ಪ್ರತೀಬಾರಿ ರಸ್ತೆ ದಾಟುವಾಗಲೂ
ಒಮ್ಮೆ ಆಕಾಶದತ್ತ ತಲೆ ಎತ್ತಿ ನೋಡಿ
ಖಾತ್ರಿ ಮಾಡಿಕೊಳ್ಳುತ್ತೇನೆ.
ಉರಿಯುತ್ತ, ಆರುತ್ತ
ಮಾರ್ಸ್, ಮರ್ಕ್ಯುರಿ, ವೀನಸ್ ಮುಂತಾದ
ಸೊಕ್ಕಿನ ಶ್ರೀಮಂತರು, ಆಕಾಶದಲ್ಲಿ
ಡೌಲಿನಿಂದ ಮೆರೆದಾಡುತ್ತಿರುತ್ತಾರೆ.

ಕಳೆದ ವಾರವಷ್ಟೇ,
ಬೇಕಾಬಿಟ್ಟಿಯಾಗಿ ಹಾರಾಡುತ್ತಿದ
ನಮ್ಮದೇ ಊರಿನ
ಉಡಾಳ ಕಾಮೆಟ್ ’ಲೇವಿ ಶೂಮಾಕರ್’
ಜ್ಯುಪಿಟರ್‌ನ ಎದೆಗೆ
ಬಲವಾಗಿ ಢಿಕ್ಕಿ ಹೊಡೆದಿದ್ದ.

ಬೆಂಕಿಯ ತುಣುಕುಗಳು
ಸಾವಿರಾರು ಮೈಲಿ ಚಿಮ್ಮಿ ಹೋಗಿದ್ದವು.
ನೀವೇ ಹೇಳಿ
ಜ್ಯುಪಿಟರ್‌ನ ಗಾಯ ಮಾಯಲು
ಎಷ್ಟು ಶತಮಾನಗಳು ಬೇಕಾಗಬಹುದು.

***

7.

ಒಂದಿಷ್ಟು ತಲೆ ಬೋಳಿಸಿದ ದನಿಗಳು
ಮೇಲಿಂದ ಮೇಲೆ
ದೇವರಮನೆಯ ಹಿತ್ತಲಿಗೆ ಬಂದು
ಇಟ್ಟಿಗೆಯ ಗೋಡೆಗೆ ಒರಗಿ
ಕಲ್ಲಾಗಿರುವ ಕಿವಿಗಳ ಮೇಲೆ,
ತಮ್ಮ ತುಟಿಗಳನ್ನಿಟ್ಟು
ಮನುಷ್ಯ ಜಾತಿಯ ಪೀಳಿಗೆಯನ್ನು
ತಮ್ಮ ಮಡಿಲಲ್ಲಿ ಹಾಕಿ
ನಿಶ್ಚಿಂತೆಯಿಂದ ಹೋಗಿ ಗೋರಿಯಲ್ಲಿ ಅಡ್ಡಾಗಿರುವ
ಒಬ್ಬ ಮುದುಕ ದೇವರಿಗೆ ಸಂತಾಪ ಹೇಳುತ್ತವೆ!!

***

8.

ಈ ದೃಶ್ಯವನ್ನು ಮೊದಲೂ ನೋಡಿದ್ದೆ.
ಬಂದೂಕನ್ನು ಎದೆಗೆ ನಾಟಿಸಿಕೊಂಡ
ಸೈನಿಕರ ದಂಡು
ಮತ್ತು ಎದುರಿಗೆ
ಎದೆ ಸೆಟೆಸಿ, ಘೋಷಣೆ ಕೂಗುತ್ತಿದ್ದ
ಜನಸಮೂಹ.
ಬಹುಶಃ ಅದು 1919ರ ವರ್ಷ
ಅಮೃತಸರ್‌ನ ಜಲಿಯನ್‌ವಾಲಾ ಬಾಗ್.

ಅಥವಾ 1936ರ
ಲಾಹೋರ್‌ನ ಒಂದು ಬೀದಿಯ ದೃಶ್ಯ,
ಸ್ವತಂತ್ರ ಹೋರಾಟದ ವರ್ಷಾಚರಣೆಯ
ಮಾರನೆಯ ರಾತ್ರಿ.

ಈ ಚಿತ್ರಗಳಲ್ಲಿ
ಎಷ್ಟು ಸಾಮ್ಯತೆ ಇದೆ ನೋಡಿ
ಇದರಲ್ಲಿನ ಜನರು,
ಅವರ ಮುಖದಲ್ಲಿನ ನೋವು,
ಎದೆಯಲ್ಲಿನ ಸಿಟ್ಟು,
ಆ ಹರೆಯ, ಆ ಭಾವನೆಗಳು
ಯಾವದೂ ನನಗೆ
ಅನಿಸುವುದಿಲ್ಲ ಅಪರಿಚಿತ.

ಅದು 1942ರ ವರ್ಷ ಇರಬಹುದು
ಅಲಹಾಬಾದ್‌ನ
ಒಂದು ಚೌಕದ ನಟ್ಟನಡುವೆ,
ಜನಸಾಗರವನ್ನು ಸುತ್ತುವರಿದಿದ್ದ
ಬ್ರಿಟಿಷ್ ಸೈನಿಕರು
ಅವರ ಕೈಯಲ್ಲಿ ಮತ್ತೆ ಅದೇ ಬಂದೂಕು
ಎದುರಿಗೆ ಮತ್ತೆ ಅದೇ ಜನ
ಅದೇ ಘೋಷಣೆಗಳು
ಅದೇ ಬಿಗಿದ ಮುಷ್ಟಿಗಳು,
ಅವತ್ತೂ ಜನರ ಕೈಯಲ್ಲಿ ಅದೇ ಧ್ವಜ.

ಇಂದೂ ಕೂಡ ಬಂದೂಕು
ಬೆಂಕಿ ಉಗುಳಿತು, ಜನ ಹಾಗೆ ಸತ್ತರು
ಮತ್ತೆ ಅದೇ ರಕ್ತ ಬೀದಿಯ ಮೇಲೆಲ್ಲ.
ಹೌದು, ಅದೇ ಚೌಕದ ನಟ್ಟನಡುವೆ
ಕಬ್ಬಿಣ, ಕಾಂಕ್ರೀಟುಗಳ ಕಾಡಿನಲ್ಲಿ.

ಮೊದಲೇನೋ ಇಲ್ಲೊಂದು
ಬ್ರಿಟಿಷ್ ಅಧಿಕಾರಿಯ ಮೂರ್ತಿ ಇತ್ತಂತೆ
ಇವತ್ತು ಗಾಂಧಿಯ ಮೂರ್ತಿ ಇದೆ
ಆದರೆ ಇದು
1992ರ ವರ್ಷ.
ನನಗೆ
ಯಾವದೂ ಅನಿಸುವುದಿಲ್ಲ ಅಪರಿಚಿತ.

***

9.

ದೇವರೆ,
ಪ್ರಾರ್ಥನೆ ಮಾಡುವಾಗ
ನಾನು ಆಕಳಿಸಿದ್ದನ್ನು ನೋಡಿ
ನಿನಗೆ ಸಿಟ್ಟು ಬಂದಿರಬೇಕಲ್ಲ?
ಈ ಕಾಟಾಚಾರ ಮಾಡಿ ಮಾಡಿ
ಬೇಜಾರಾಗಿಬಿಟ್ಟಿದೆ ನನಗಂತೂ.

ಬುದ್ಧಿ ಬಂದಾಗಿನಿಂದ
ಇದನ್ನೇ ಕೇಳುತ್ತಿದ್ದೇನೆ ನಾನು,
ಹಗಲು ರಾತ್ರಿ ಅವನ ದಯೆ,
ಒಳ್ಳೆಯದು ಕೆಟ್ಟದ್ದು ಎಲ್ಲ
ಅವನ ಕೈಯಲ್ಲೇ ಇದೆ.
ಪ್ರಾರ್ಥನೆ ಮಾಡು!

ಒಳ್ಳೆ ಗ್ರಹಚಾರ ಇದು.
ವಿಚಿತ್ರ ಸುಳ್ಳಿನ ಸಂಭಾಷಣೆ
ಅದೂ ಒಂದೇ ಕಡೆಯಿಂದ.
ಹೀಗೆ ಗುದ್ದಾಡುವುದಾದರೂ
ಯಾರೊಂದಿಗೆ?
ಅವನ ಮುಖ ಅಷ್ಟೇ ಅಲ್ಲ
ಅಸ್ತಿತ್ವವನ್ನೂ ಕೂಡ
ನಾವು
ಕಲ್ಪಿಸಿಕೊಳ್ಳಬೇಕಷ್ಟೆ.

***

10.

ತಂಗಳು ಉಸಿರಿಗೆ
ಜಾಗ ಕೊಡಬೇಡ ಎದೆಯಲ್ಲಿ,
ಉಸಿರು ದೀರ್ಘವಾದಷ್ಟು
ಸರಾಗವಂತೆ
ಸರ್ಪಗಳಿಗೆ ಬದುಕು.
ಇಂಥದೇ ಒಂದು ಉಸಿರು
ಒಮ್ಮೆ ಕಚ್ಚಿತ್ತು
ಕ್ಲಿಯೋಪಾತ್ರಾಳ ನಗೆಯನ್ನು.

ನನ್ನ ತುಟಿ ಮೇಲೊಮ್ಮೆ
ನಿನ್ನ ತುಟಿಗಳನ್ನಿಟ್ಟು
ಭುಸುಗುಟ್ಟಿಬಿಡು ಗೆಳತಿ.

ವಿಷ ಕುಡಿಯುವುದು
ಅಭ್ಯಾಸವಾಗಿಬಿಟ್ಟಿದೆ ನನಗೆ.

***

11.

ಒಬ್ಬ ಹಳ್ಳಿಯ ಹುಡುಗ
ತಲೆಯ ಮೇಲೆ
ಬೆಲ್ಲದ ಪೆಂಟಿಯನ್ನು ಹೊತ್ತು
ಹೊಲದಂಚಿನಲ್ಲಿ ನಡೆಯುತ್ತಾ
ಎಲ್ಲೋ ಹೋಗುತ್ತಿದ್ದಾನೆ.

ಬಿಸಿಲು ಏರಿದಂತೆಲ್ಲಾ
ಬೆಲ್ಲ ಕರಗಿ
ಹರಿಯತೊಡಗಿದೆ.

ಮುಗ್ಧ ಹಳ್ಳಿಯ ಹುಡುಗ
ಹಣೆಯಿಂದ
ಇಳಿಯುತ್ತಿರುವ
ಸಿಹಿ ರಸವನ್ನ
ಗಾಬರಿಯಿಂದ ಚಪ್ಪರಿಸುತ್ತಿದ್ದಾನೆ.

ನಾನೇ
ಆ ಹಳ್ಳಿಯ ಹುಡುಗ

ಯಾರು ನನ್ನ ತಲೆಯ ಮೇಲೆ
ಟಾಗೋರರ ಕವಿತೆಗಳ
ಗಂಟು ಇಟ್ಟದ್ದು?

***

12.

ಒಂದು ಹುಣ್ಣಿಮೆಯ ಸಂಜೆ
ಲಾಹೋರ್‌ನ ಸಣ್ಣಸಣ್ಣ ಗಲ್ಲಿಗಳಲ್ಲೆಲ್ಲ
ಅಮಾವಾಸ್ಯೆಯ ಭೀತಿ.

ಚಂದ್ರ
ಅವಸರದಿಂದ ಓಡುತ್ತಾ
ಜೈಲಿನ ಎತ್ತರದ ಗೋಡೆಗಳನ್ನ
ಕಮಾಂಡೊಗಳ ಥರ ಹಾರಿ
ಕತ್ತಲ ಸೆಲ್‌ನೊಳಗೆ ಪ್ರತ್ಯಕ್ಷನಾಗಿದ್ದಾನೆ.
ಒಂದಿಷ್ಟೂ ಸದ್ದಿಲ್ಲ
ಒಂದು ಹುಳಕ್ಕೂ ಗೊತ್ತಿಲ್ಲ.

ಚಂದ್ರ
ಫೈಜ್‌ನ ಭೆಟ್ಟಿಗೆ ಬಂದಿದ್ದಾನೆ.
ಒಂದೇ ಒಂದು ಹಾಡಿಗಾಗಿ
ಮನವಿ ಮಾಡಿಕೊಳ್ಳಲು.

ಕಾಲನ ನಾಡಿ ಮಿಡಿಯಬೇಕೆಂದರೆ
ಮತ್ತೆ ಫೈಜ್ ಹಾಡಲೇಬೇಕು.

***

ಗುಲ್ಜಾರ್
ಸಂಪೂರಣ್ ಸಿಂಗ ಕಾರ್ಲಾ, ಗುಲ್ಜಾರ್ ಅವರ ಮೂಲ ಹೆಸರು. ಉರ್ದುವಿನಲ್ಲಿ ಕವಿತೆಗಳನ್ನು ರಚಿಸಿ ಜನಪ್ರಿಯರಾಗಿದ್ದಾರೆ. ಹಿಂದಿ ಸಿನಿಮಾಗಳಿಗೆ ಚಿತ್ರಗೀತೆಗಳನ್ನು ಬರೆದು, ಸಿನಿಪ್ರೇಮಿಗಳ ನಡುವೆ ಮನೆಮಾತಾಗಿದ್ದಾರೆ. ಅನುವಾದಕರೂ ಅಗಿರುವ ಗುಲ್ಜಾರ್ ಅವರಿಗೆ 2024ರಲ್ಲಿ ಜ್ಞಾನಪೀಠ ಪ್ರಶಸ್ತಿಯನ್ನು ಘೋಷಿಸಲಾಯಿತು.

ಚಿದಂಬರ ನರೇಂದ್ರ

ಕನ್ನಡಕ್ಕೆ:ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....