Homeಮುಖಪುಟಗುಲ್ಜಾರ್ ಅವರ ಪದ್ಯಗಳು

ಗುಲ್ಜಾರ್ ಅವರ ಪದ್ಯಗಳು

- Advertisement -
- Advertisement -

1.

ಯಾವ ಹೊಲದಿಂದ ರೈತನಿಗೆ ರೊಟ್ಟಿಯ ಅದೃಷ್ಟವಿಲ್ಲವೋ
ಆ ಹೊಲದ ಗೋಧಿಯ ತೆನೆಗಳನ್ನು
ಹುಡುಕಿ ಹುಡುಕಿ ಸುಟ್ಟುಬಿಡಿ

ಅಲ್ಲಮ ಇಕ್ಬಾಲ್

ಯಾರಾದರೂ ಹೋಗಿ ’ಅಲ್ಲಮ’ನಿಗೆ ಸುದ್ದಿ ಮುಟ್ಟಿಸಿ
ಯಾವ ಹೊಲದಿಂದ ರೈತನ ಮನೆಯ
ಹೊಟ್ಟೆ ತುಂಬಲಿಲ್ಲವೋ
ಯಾರೂ ಆ ಹೊಲಕ್ಕೆ ಹೋಗಿ ಬೆಂಕಿ ಹಚ್ಚಲಿಲ್ಲ
ಯಾರೂ ಒಂದು ಹೆಜ್ಜೆಯನ್ನೂ ಮುಂದಿಡಲಿಲ್ಲ
ಯಾವ ಕ್ರಾಂತಿಯ ಘೋಷಣೆಗಳೂ ಮೊಳಗಲಿಲ್ಲ.

ಶವಯಾತ್ರೆಗಳು ಹೊರಟಿವೆ
ಹಳ್ಳಿಗಳ ಮನೆಮನೆಯಿಂದ
ಪ್ರತಿ ಮೆರವಣಿಗೆಯೂ ಅನ್ನದಾತರದು
ಸಾಲದ ಹಂಗಿಗೆ ಧಿಕ್ಕಾರ ಹೇಳಿ ಅಮರರಾದ ಹುತಾತ್ಮರದು.

ಅಲ್ಲಮ – ಪ್ರಸಿದ್ಧ ಉರ್ದು ಕವಿ, ಅಲ್ಲಮ ಮೊಹಮ್ಮದ್ ಇಕ್ಬಾಲ್

***

2.

ಯಾರು ಈ ಮೂಕ?
ಎಷ್ಟೊಂದು ಕೆಮ್ಮುತ್ತಾನೆ?
ಪ್ರತೀ ಬಾರಿ ಕೆಮ್ಮಿದಾಗಲೂ
ಸಹಸ್ರಾರು ಶಬ್ದಗಳು.
ಬೇಸತ್ತು ಹೋಗಿದ್ದಾರೆ
ಊರು ಸ್ವಚ್ಛ ಮಾಡುವ
ಗುತ್ತಿಗೆ ತೆಗೆದುಕೊಂಡವರು.

ಚೌಕಿನಲ್ಲಿ ಜನ ಮಾತಾಡುತ್ತಿದ್ದರು
ಅವನು ಕವಿಯಂತೆ,

ಯಾರೋ ಪ್ರಶ್ನೆ ಕೇಳಿ
ಉತ್ತರ ಕೊಡುವುದಕ್ಕಿಂತ ಮುಂಚೆ
ಕತ್ತರಿಸಿಬಿಟ್ಟಿದ್ದಾರೆ ಅವನ
ನಾಲಿಗೆ.

***

3.

ಭಗವಂತ- 1

ನಾನು,
ಗೋಡೆಯ ಈ ಬದಿಯಲ್ಲಿದ್ದೇನೆ.
ಇಲ್ಲಿ ಬಿಸಿಲು ಬೀಳುತ್ತದೆ
ಹಸಿರು ಹಾಡುತ್ತದೆ.
ಎಲೆಗಳ ಮೇಲೆ
ಇಬ್ಬನಿ ಸವಾರಿ ಮಾಡುತ್ತದೆ,
ಸೋಮಾರಿ ಮಂಜು
ಠಿಕಾಣಿ ಹಾಕಿದರೆ
ಟೊಂಗೆಯ ಮೇಲೆ ಕುಳಿತು
ಗಂಟೆಗಟ್ಟಲೆ ತೂಕಡಿಸುತ್ತದೆ.

ಮಳೆ
ಹರೆಯದ ಹುಡುಗಿಯಂತೆ
ಕುಣಿದಾಡುತ್ತ ಬಂದು
ಕೈಚಾಚುತ್ತಿದ್ದಂತೆಯೇ
ಜಾರಿ ಹೋಗುತ್ತದೆ.
ಬಂದ ಪ್ರತಿ ಮಾಸವೂ
ಮೋಸ ಮಾಡದೇ
ಕಚಗುಳಿಯಿಡುತ್ತದೆ.

ಆದರೆ
ಈ ಹಸೀ ಗೋಡೆಯ
ಆ ಬದಿಯಲ್ಲಿ
ಯಾಕಿಷ್ಟು ನೀರವ ಮೌನ?
ಯಾರವರು?
ಸದ್ದು ಮಾಡದೇ
ಸುಮ್ಮನೇ ಕುಳಿತು
ಗೋಡೆಗೆ ಕಿವಿ ಹಚ್ಚಿರುವವರು?

***

4.

ಭಗವಂತ- 2

ಇಡೀ ಆಕಾಶ ಸುತ್ತಿ
ನೀನು ರಚಿಸಿರುವ ವ್ಯೂಹವನ್ನೊಮ್ಮೆ
ಜಾಗರೂಕತೆಯಿಂದ ಗಮನಿಸಿದೆ.

ಕಪ್ಪು ಮನೆಯಲ್ಲಿ
ಸೂರ್ಯನನ್ನು ಇಟ್ಟು
ನನ್ನ ಸೈನ್ಯವನ್ನು ಕಂಗೆಡಿಸಬೇಕೆಂದು
ಲೆಕ್ಕ ಹಾಕಿದ್ದಿಯಲ್ಲವೆ?
ನಾನು, ಒಂದು ಸಣ್ಣ ದೀಪ ಹಚ್ಚಿ
ನನ್ನ ದಾರಿ ಹುಡುಕಿಕೊಂಡೆ.

ನೀನು, ಸಮುದ್ರವನ್ನೆತ್ತಿ
ನನ್ನ ಮುಖದ ಮೇಲೆ ಅಪ್ಪಳಿಸಿದೆ.
ನಾನು ನಂಬಿಕೆಯ
ದೋಣಿಯನ್ನೇರಿ ಪಾರಾಗಿಬಿಟ್ಟೆ.

ನೀನು, ಕಾಲವನ್ನು
ಆಟದ ಅಂಗಳಕ್ಕಿಳಿಸಿ
ತೋಳು ಮೇಲಿರಿಸಿದೆ.
ನಾನು ಕಾಲವನ್ನು
ತುಂಡು ತುಂಡು ಮಾಡಿ
ಕ್ಷಣಗಳಲ್ಲಿ ಬದುಕುವುದನ್ನು
ರೂಢಿ ಮಾಡಿಕೊಂಡೆ.

ಕೆಲ ಚಮತ್ಕಾರಗಳನ್ನು ಮಾಡಿ
ನನ್ನ ಅಭಿಮಾನವನ್ನು ಕೊಲ್ಲಲು
ನೀನು ಶತಪ್ರಯತ್ನ ಮಾಡಿದೆ.
ನನ್ನ ಒಬ್ಬ ಸಣ್ಣ ಸೈನಿಕ ಮುಂದೆ ಬಂದು
ನಿನ್ನ ಅಸ್ತಿತ್ವಕ್ಕೇ ಸವಾಲು ಹಾಕಿದ.

ಸಾವನ್ನು ಎದುರು ನಿಲ್ಲಿಸಿ
ನನ್ನ ಆಟ ಮುಗಿಸಲು
ನೀನು ಹೊಂಚು ಹಾಕಿದೆ.
ದೇಹವನ್ನು ಪಣಕ್ಕಿಟ್ಟು
ನಾನು ಆತ್ಮ ಉಳಿಸಿಕೊಂಡೆ.

ಇಡೀ ಆಕಾಶ ಸುತ್ತಿ
ಮತ್ತೊಂದಿಷ್ಟು ಸಂಚು ಕಲಿತು ಬಾ
ನನ್ನ ಸೋಲಿಸುವುದು
ಅಷ್ಟು ಸುಲಭವಲ್ಲ ಭಗವಂತ.

***

5.

ಭಗವಂತ- 3

ಕಳೆದ ಬಾರಿ
ಭೆಟ್ಟಿಯಾದಾಗ ನೀನು
ಒಂದು ಭಯಂಕರ ಯುದ್ಧದಲ್ಲಿ
ಮಗ್ನನಾಗಿದ್ದೆ.
ಹೊಸ ಹೊಸ ಆಯುಧಗಳ
ಹೊಳಪಿಗೆ ತುಂಬ ಖುಷಿಯಾಗಿದ್ದೆ.
ಅದಕ್ಕೂ ಮೊದಲು
ಹಸಿವಿನಿಂದ ಸತ್ತ ಮಕ್ಕಳ
ಹೆಣಗಳನ್ನ ಹೂಳುವಾಗ
ನಿನ್ನ ನೋಡಿದ್ದೆ.
ಮತ್ತೊಮ್ಮೆ
ಭೂಮಿಯನ್ನು ನಡುಗಿಸಿ
ಇಡೀ ಊರಿಗೆ ಊರನ್ನೇ
ನೆಲಸಮ ಮಾಡಿ
ಇನ್ನೊಂದು ಕಡೆ
ಕೈ ಝಾಡಿಸಿಕೊಂಡು ಹೋಗುವಾಗ
ನಿನ್ನ ನೋಡಿದ್ದೆ.

ಸುತ್ತಮುತ್ತಲಿನ ನಕ್ಷತ್ರಗಳ ಮೇಲೆ
ಧೂಳು ಹಾರಿಸುತ್ತಾ
ಆಕಾಶದಿಂದ ಇಳಿದು ಬರುವಾಗಲೂ
ನಿನ್ನ ನೋಡಿದ್ದೆ.
ಬೇರೆ ಬೇರೆ ವಿಶ್ವಗಳ
ಆಕಾಶಗಳನ್ನು ಹಾಳುಗೆಡವಿ
ಉನ್ಮಾದದಿಂದ ನೀನು
ನೆಲಕ್ಕಿಳಿದು ಬರುತ್ತಿದ್ದರೆ
ಭೂಮಿ ನಡುಗುತ್ತದೆ
ಸಮುದ್ರ ಉಕ್ಕುತ್ತದೆ
ಆಗ ತುಂಬ ಇರ್ರಾಟಿಕ್ ಆಗಿ ಕಾಣಿಸುತ್ತಿ.

ನಿನ್ನ ಊರಿನಲ್ಲಿ ಎಂತೆಂಥವರ
ಸಹವಾಸದಲ್ಲಿರುತ್ತೀಯೋ ಏನೋ
ನನಗಂತೂ ಒಂದೂ ಗೊತ್ತಾಗುತ್ತಿಲ್ಲ.

***

6.

ಈಗ ನನಗೆ ರೂಢಿಯಾಗಿಬಿಟ್ಟಿದೆ.
ಪ್ರತೀಬಾರಿ ರಸ್ತೆ ದಾಟುವಾಗಲೂ
ಒಮ್ಮೆ ಆಕಾಶದತ್ತ ತಲೆ ಎತ್ತಿ ನೋಡಿ
ಖಾತ್ರಿ ಮಾಡಿಕೊಳ್ಳುತ್ತೇನೆ.
ಉರಿಯುತ್ತ, ಆರುತ್ತ
ಮಾರ್ಸ್, ಮರ್ಕ್ಯುರಿ, ವೀನಸ್ ಮುಂತಾದ
ಸೊಕ್ಕಿನ ಶ್ರೀಮಂತರು, ಆಕಾಶದಲ್ಲಿ
ಡೌಲಿನಿಂದ ಮೆರೆದಾಡುತ್ತಿರುತ್ತಾರೆ.

ಕಳೆದ ವಾರವಷ್ಟೇ,
ಬೇಕಾಬಿಟ್ಟಿಯಾಗಿ ಹಾರಾಡುತ್ತಿದ
ನಮ್ಮದೇ ಊರಿನ
ಉಡಾಳ ಕಾಮೆಟ್ ’ಲೇವಿ ಶೂಮಾಕರ್’
ಜ್ಯುಪಿಟರ್‌ನ ಎದೆಗೆ
ಬಲವಾಗಿ ಢಿಕ್ಕಿ ಹೊಡೆದಿದ್ದ.

ಬೆಂಕಿಯ ತುಣುಕುಗಳು
ಸಾವಿರಾರು ಮೈಲಿ ಚಿಮ್ಮಿ ಹೋಗಿದ್ದವು.
ನೀವೇ ಹೇಳಿ
ಜ್ಯುಪಿಟರ್‌ನ ಗಾಯ ಮಾಯಲು
ಎಷ್ಟು ಶತಮಾನಗಳು ಬೇಕಾಗಬಹುದು.

***

7.

ಒಂದಿಷ್ಟು ತಲೆ ಬೋಳಿಸಿದ ದನಿಗಳು
ಮೇಲಿಂದ ಮೇಲೆ
ದೇವರಮನೆಯ ಹಿತ್ತಲಿಗೆ ಬಂದು
ಇಟ್ಟಿಗೆಯ ಗೋಡೆಗೆ ಒರಗಿ
ಕಲ್ಲಾಗಿರುವ ಕಿವಿಗಳ ಮೇಲೆ,
ತಮ್ಮ ತುಟಿಗಳನ್ನಿಟ್ಟು
ಮನುಷ್ಯ ಜಾತಿಯ ಪೀಳಿಗೆಯನ್ನು
ತಮ್ಮ ಮಡಿಲಲ್ಲಿ ಹಾಕಿ
ನಿಶ್ಚಿಂತೆಯಿಂದ ಹೋಗಿ ಗೋರಿಯಲ್ಲಿ ಅಡ್ಡಾಗಿರುವ
ಒಬ್ಬ ಮುದುಕ ದೇವರಿಗೆ ಸಂತಾಪ ಹೇಳುತ್ತವೆ!!

***

8.

ಈ ದೃಶ್ಯವನ್ನು ಮೊದಲೂ ನೋಡಿದ್ದೆ.
ಬಂದೂಕನ್ನು ಎದೆಗೆ ನಾಟಿಸಿಕೊಂಡ
ಸೈನಿಕರ ದಂಡು
ಮತ್ತು ಎದುರಿಗೆ
ಎದೆ ಸೆಟೆಸಿ, ಘೋಷಣೆ ಕೂಗುತ್ತಿದ್ದ
ಜನಸಮೂಹ.
ಬಹುಶಃ ಅದು 1919ರ ವರ್ಷ
ಅಮೃತಸರ್‌ನ ಜಲಿಯನ್‌ವಾಲಾ ಬಾಗ್.

ಅಥವಾ 1936ರ
ಲಾಹೋರ್‌ನ ಒಂದು ಬೀದಿಯ ದೃಶ್ಯ,
ಸ್ವತಂತ್ರ ಹೋರಾಟದ ವರ್ಷಾಚರಣೆಯ
ಮಾರನೆಯ ರಾತ್ರಿ.

ಈ ಚಿತ್ರಗಳಲ್ಲಿ
ಎಷ್ಟು ಸಾಮ್ಯತೆ ಇದೆ ನೋಡಿ
ಇದರಲ್ಲಿನ ಜನರು,
ಅವರ ಮುಖದಲ್ಲಿನ ನೋವು,
ಎದೆಯಲ್ಲಿನ ಸಿಟ್ಟು,
ಆ ಹರೆಯ, ಆ ಭಾವನೆಗಳು
ಯಾವದೂ ನನಗೆ
ಅನಿಸುವುದಿಲ್ಲ ಅಪರಿಚಿತ.

ಅದು 1942ರ ವರ್ಷ ಇರಬಹುದು
ಅಲಹಾಬಾದ್‌ನ
ಒಂದು ಚೌಕದ ನಟ್ಟನಡುವೆ,
ಜನಸಾಗರವನ್ನು ಸುತ್ತುವರಿದಿದ್ದ
ಬ್ರಿಟಿಷ್ ಸೈನಿಕರು
ಅವರ ಕೈಯಲ್ಲಿ ಮತ್ತೆ ಅದೇ ಬಂದೂಕು
ಎದುರಿಗೆ ಮತ್ತೆ ಅದೇ ಜನ
ಅದೇ ಘೋಷಣೆಗಳು
ಅದೇ ಬಿಗಿದ ಮುಷ್ಟಿಗಳು,
ಅವತ್ತೂ ಜನರ ಕೈಯಲ್ಲಿ ಅದೇ ಧ್ವಜ.

ಇಂದೂ ಕೂಡ ಬಂದೂಕು
ಬೆಂಕಿ ಉಗುಳಿತು, ಜನ ಹಾಗೆ ಸತ್ತರು
ಮತ್ತೆ ಅದೇ ರಕ್ತ ಬೀದಿಯ ಮೇಲೆಲ್ಲ.
ಹೌದು, ಅದೇ ಚೌಕದ ನಟ್ಟನಡುವೆ
ಕಬ್ಬಿಣ, ಕಾಂಕ್ರೀಟುಗಳ ಕಾಡಿನಲ್ಲಿ.

ಮೊದಲೇನೋ ಇಲ್ಲೊಂದು
ಬ್ರಿಟಿಷ್ ಅಧಿಕಾರಿಯ ಮೂರ್ತಿ ಇತ್ತಂತೆ
ಇವತ್ತು ಗಾಂಧಿಯ ಮೂರ್ತಿ ಇದೆ
ಆದರೆ ಇದು
1992ರ ವರ್ಷ.
ನನಗೆ
ಯಾವದೂ ಅನಿಸುವುದಿಲ್ಲ ಅಪರಿಚಿತ.

***

9.

ದೇವರೆ,
ಪ್ರಾರ್ಥನೆ ಮಾಡುವಾಗ
ನಾನು ಆಕಳಿಸಿದ್ದನ್ನು ನೋಡಿ
ನಿನಗೆ ಸಿಟ್ಟು ಬಂದಿರಬೇಕಲ್ಲ?
ಈ ಕಾಟಾಚಾರ ಮಾಡಿ ಮಾಡಿ
ಬೇಜಾರಾಗಿಬಿಟ್ಟಿದೆ ನನಗಂತೂ.

ಬುದ್ಧಿ ಬಂದಾಗಿನಿಂದ
ಇದನ್ನೇ ಕೇಳುತ್ತಿದ್ದೇನೆ ನಾನು,
ಹಗಲು ರಾತ್ರಿ ಅವನ ದಯೆ,
ಒಳ್ಳೆಯದು ಕೆಟ್ಟದ್ದು ಎಲ್ಲ
ಅವನ ಕೈಯಲ್ಲೇ ಇದೆ.
ಪ್ರಾರ್ಥನೆ ಮಾಡು!

ಒಳ್ಳೆ ಗ್ರಹಚಾರ ಇದು.
ವಿಚಿತ್ರ ಸುಳ್ಳಿನ ಸಂಭಾಷಣೆ
ಅದೂ ಒಂದೇ ಕಡೆಯಿಂದ.
ಹೀಗೆ ಗುದ್ದಾಡುವುದಾದರೂ
ಯಾರೊಂದಿಗೆ?
ಅವನ ಮುಖ ಅಷ್ಟೇ ಅಲ್ಲ
ಅಸ್ತಿತ್ವವನ್ನೂ ಕೂಡ
ನಾವು
ಕಲ್ಪಿಸಿಕೊಳ್ಳಬೇಕಷ್ಟೆ.

***

10.

ತಂಗಳು ಉಸಿರಿಗೆ
ಜಾಗ ಕೊಡಬೇಡ ಎದೆಯಲ್ಲಿ,
ಉಸಿರು ದೀರ್ಘವಾದಷ್ಟು
ಸರಾಗವಂತೆ
ಸರ್ಪಗಳಿಗೆ ಬದುಕು.
ಇಂಥದೇ ಒಂದು ಉಸಿರು
ಒಮ್ಮೆ ಕಚ್ಚಿತ್ತು
ಕ್ಲಿಯೋಪಾತ್ರಾಳ ನಗೆಯನ್ನು.

ನನ್ನ ತುಟಿ ಮೇಲೊಮ್ಮೆ
ನಿನ್ನ ತುಟಿಗಳನ್ನಿಟ್ಟು
ಭುಸುಗುಟ್ಟಿಬಿಡು ಗೆಳತಿ.

ವಿಷ ಕುಡಿಯುವುದು
ಅಭ್ಯಾಸವಾಗಿಬಿಟ್ಟಿದೆ ನನಗೆ.

***

11.

ಒಬ್ಬ ಹಳ್ಳಿಯ ಹುಡುಗ
ತಲೆಯ ಮೇಲೆ
ಬೆಲ್ಲದ ಪೆಂಟಿಯನ್ನು ಹೊತ್ತು
ಹೊಲದಂಚಿನಲ್ಲಿ ನಡೆಯುತ್ತಾ
ಎಲ್ಲೋ ಹೋಗುತ್ತಿದ್ದಾನೆ.

ಬಿಸಿಲು ಏರಿದಂತೆಲ್ಲಾ
ಬೆಲ್ಲ ಕರಗಿ
ಹರಿಯತೊಡಗಿದೆ.

ಮುಗ್ಧ ಹಳ್ಳಿಯ ಹುಡುಗ
ಹಣೆಯಿಂದ
ಇಳಿಯುತ್ತಿರುವ
ಸಿಹಿ ರಸವನ್ನ
ಗಾಬರಿಯಿಂದ ಚಪ್ಪರಿಸುತ್ತಿದ್ದಾನೆ.

ನಾನೇ
ಆ ಹಳ್ಳಿಯ ಹುಡುಗ

ಯಾರು ನನ್ನ ತಲೆಯ ಮೇಲೆ
ಟಾಗೋರರ ಕವಿತೆಗಳ
ಗಂಟು ಇಟ್ಟದ್ದು?

***

12.

ಒಂದು ಹುಣ್ಣಿಮೆಯ ಸಂಜೆ
ಲಾಹೋರ್‌ನ ಸಣ್ಣಸಣ್ಣ ಗಲ್ಲಿಗಳಲ್ಲೆಲ್ಲ
ಅಮಾವಾಸ್ಯೆಯ ಭೀತಿ.

ಚಂದ್ರ
ಅವಸರದಿಂದ ಓಡುತ್ತಾ
ಜೈಲಿನ ಎತ್ತರದ ಗೋಡೆಗಳನ್ನ
ಕಮಾಂಡೊಗಳ ಥರ ಹಾರಿ
ಕತ್ತಲ ಸೆಲ್‌ನೊಳಗೆ ಪ್ರತ್ಯಕ್ಷನಾಗಿದ್ದಾನೆ.
ಒಂದಿಷ್ಟೂ ಸದ್ದಿಲ್ಲ
ಒಂದು ಹುಳಕ್ಕೂ ಗೊತ್ತಿಲ್ಲ.

ಚಂದ್ರ
ಫೈಜ್‌ನ ಭೆಟ್ಟಿಗೆ ಬಂದಿದ್ದಾನೆ.
ಒಂದೇ ಒಂದು ಹಾಡಿಗಾಗಿ
ಮನವಿ ಮಾಡಿಕೊಳ್ಳಲು.

ಕಾಲನ ನಾಡಿ ಮಿಡಿಯಬೇಕೆಂದರೆ
ಮತ್ತೆ ಫೈಜ್ ಹಾಡಲೇಬೇಕು.

***

ಗುಲ್ಜಾರ್
ಸಂಪೂರಣ್ ಸಿಂಗ ಕಾರ್ಲಾ, ಗುಲ್ಜಾರ್ ಅವರ ಮೂಲ ಹೆಸರು. ಉರ್ದುವಿನಲ್ಲಿ ಕವಿತೆಗಳನ್ನು ರಚಿಸಿ ಜನಪ್ರಿಯರಾಗಿದ್ದಾರೆ. ಹಿಂದಿ ಸಿನಿಮಾಗಳಿಗೆ ಚಿತ್ರಗೀತೆಗಳನ್ನು ಬರೆದು, ಸಿನಿಪ್ರೇಮಿಗಳ ನಡುವೆ ಮನೆಮಾತಾಗಿದ್ದಾರೆ. ಅನುವಾದಕರೂ ಅಗಿರುವ ಗುಲ್ಜಾರ್ ಅವರಿಗೆ 2024ರಲ್ಲಿ ಜ್ಞಾನಪೀಠ ಪ್ರಶಸ್ತಿಯನ್ನು ಘೋಷಿಸಲಾಯಿತು.

ಚಿದಂಬರ ನರೇಂದ್ರ

ಕನ್ನಡಕ್ಕೆ:ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...