Homeಕರ್ನಾಟಕಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

- Advertisement -
- Advertisement -

• ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ
• ಅಕ್ರಮಗಳನ್ನು ಕಂಡು ಸರ್ಕಾರ ಸುಮ್ಮನೆ ಕೂರಲಾಗದು
• ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!
• ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪೆನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.

ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!

ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ ಸ್ವೀಕರಿಸುವಾಗ ಐದು ವರ್ಷಕ್ಕೆ ಮೇಲ್ಪಟ್ಟ 32777 ಪ್ರಕರಣಗಳಿದ್ದವು, ಈ ಸಂಖ್ಯೆಯನ್ನು 6,602ಕ್ಕೆ ಇಳಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಉಳಿದ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇದರಿಂದ ಜನರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.

ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!

ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...