ಉಪ್ಪಿನಂಗಡಿ ಅರಣ್ಯ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿರುವ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು, ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s-143,353,504,149)ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬೆಳ್ತಂಗಡಿಯ ಕಳೆಂಜ ಗ್ರಾಮದ ಸರ್ವೇ ನಂಬ್ರ 309ರಲ್ಲಿ ಲೋಲಾಕ್ಷ ಗೌಡ ಎಂಬವರು ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಣ ಮಾಡಿ ಮನೆ ನಿರ್ಮಿಸುತ್ತಿದ್ದರು. ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಅ.9ರಂದು ಬೆಳಗ್ಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮನೆ ನಿರ್ಮಿಸಲು ಫೌಂಡೇಶನ್ ಹಾಕಿದ್ದು ಕಂಡು ಬಂದಿದೆ. ಅದನ್ನು ತೆರವು ಮಾಡುವಂತೆ ಲೋಲಾಕ್ಷ ಗೌಡರಿಗೆ ಸೂಚಿಸಿದೆವು. ಆದರೆ ಅವರು ತೆರವುಗೊಳಿಸದ ಕಾರಣ ಮನೆ ಫೌಂಡೇಶನನ್ನು ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮುಖಾಂತರ ತೆರವುಗೊಳಿಸಲು ಮುಂದಾದೆವು. ಈ ವೇಳೆ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಬಂದು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅರಣ್ಯಾಧಿಕಾರಿ ಜೊತೆ ವಾಗ್ವಾದದ ವಿಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಘಟನೆಗೆ ಸಂಬಂಧಿಸಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನು ಓದಿ; ಪ್ಯಾಲೆಸ್ತೀನ್ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್ ಆಗುತ್ತಿದೆ?