ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ವಿರುದ್ದ ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ FIR ದಾಖಲಾಗಿತ್ತು. ಇದಕ್ಕೆ ರಾಜ್ಯಾದ್ಯಂತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಸರ್ಕಾರದ ವಿರುದ್ಧ ಕೆಂಡ ಕಾರಿದ್ದು, ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದು ಆಗ್ರಹಿಸಿದ್ದಾರೆ.
ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣದ ದಾಖಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, “ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು
"ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ," ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು.
2/2— H D Kumaraswamy (@hd_kumaraswamy) March 25, 2021
“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದಾರೆ.
ಬುಧವಾರ ಕೂಡ ಶಿವಮೊಗ್ಗ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ರೈತ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ದೂರು ಹಿಂಪಡೆಯಲು ಆಗ್ರಹಿಸಿದ್ದರು. ರಾಕೇಶ್ ಟಿಕಾಯತ್ ಅವರ ವಿರುದ್ಧ ರಾಜ್ಯದ ವಿವಿಧೆಡೆ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿದ್ದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಬಹಿರಂಗ ಪತ್ರ ಬರೆದಿರುವ ರೈತ ಮುಖಂಡರು, ಮಾರ್ಚ್ 20 ರಂದು ಶಿವಮೊಗ್ಗ ದ ಸೈನ್ಸ್ ಮೈದಾನದಲ್ಲಿ ನಡೆದ ರೈತ ಮಹಾಪಂಚಾಯತ್ ನಲ್ಲಿ ಭಾಗವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ತಮ್ಮ ಭಾಷಣದಲ್ಲಿ “ರಾಜ್ಯದ ರೈತರು ಬೆಂಗಳೂರಿಗೆ ದಿಗ್ಭಂಧನ ಹಾಕಬೇಕು. ಟ್ರಾಕ್ಟರ್ ಗಳನ್ನೇ ಅಸ್ತ್ರವಾಗಿ ಬಳಸಬೇಕು” ಎಂದು ಹೇಳಿದ್ದರೆನ್ನಲಾದ ಅಂಶವನ್ನು ಆಧರಿಸಿ ಐಪಿಸಿ ಕಲಂ 153 ರ ಅಡಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿರುತ್ತಾರೆ” ಈ ಪ್ರಕರಣ ವಾಪಸ್ ಪಡೆಯಬೇಕು ಎಂದಿದ್ದರು.
’ಪೊಲೀಸರು ಒಂದು ಪಕ್ಷದ ವಕ್ತಾರಿಕೆಯನ್ನು ವಹಿಸಿಕೊಂಡು ಪ್ರಭುತ್ವದ ವಿರುದ್ಧದ ಧ್ವನಿಯನ್ನು ಅಡಗಿಸಲು ಕೆಲಸ ಮಾಡುತ್ತಿರುವಂತೆ ತೋರುತ್ತಿದೆ. ಹಾಗಾಗಿ ಈ ಕೂಡಲೇ ಕರ್ನಾಟಕ ರಾಜ್ಯದಲ್ಲಿ ರಾಕೇಶ್ ಟಿಕಾಯತ್ ವಿರುದ್ಧ ದಾಖಲಿಸಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯಬೇಕೆಂದು ಈ ಮೂಲಕ ನಾಡಿನ ಸಮಸ್ತ ರೈತ ಕುಲದ ಪರವಾಗಿ ನಮ್ಮ ಹಕ್ಕೋತ್ತಾಯವನ್ನು ಮಂಡಿಸುತ್ತಿದ್ದೇವೆ’ ಎಂದು ಪತ್ರದಲ್ಲಿ ತಿಳಿಸಲಾಗಿತ್ತು.
ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಎಚ್.ಆರ್. ಬಸವರಾಜಪ್ಪ, ಕೋಡಿಹಳ್ಳಿ ಚಂದ್ರಶೇಖರ್, ವೀರಸಂಗಯ್ಯ, ಚಾಮರಸ ಮಾಲಿಪಾಟೀಲ, ಕುರುಬೂರು ಶಾಂತಕುಮಾರ್ ಮತ್ತು ಬಡಗಲಪುರ ನಾಗೇಂದ್ರ ಈ ಕುರಿತು ಬಹಿರಂಗ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್