ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಬೆಳಿಗ್ಗೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು 43 ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಜರುಗಿದೆ.
ಝಾನ್ಸಿ ರಾಣಿ ರಸ್ತೆಯ ಐದು ಅಂತಸ್ತಿನ ಕಟ್ಟಡದ ರಟ್ಟಿನ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವ್ಯಾಪಕವಾಗಿ ಹರಡಿದೆ. ಅಲ್ಲಿ ಮಲಗಿದ್ದ 60-70 ಜನರು ಬೆಂಕಿಗೆ ಆಹುತಿಯಾಗಿದ್ದಾರೆ. ಅವರಲ್ಲಿ 43 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಐದು ಅಂತಸ್ತಿನ ಕಟ್ಟಡದಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 60-70 ಜನರು ಮಲಗಿದ್ದರು. ಅವರಲ್ಲಿ ಹೆಚ್ಚಿನವರು ಗುತ್ತಿಗೆ ಕಾರ್ಮಿಕರು ಮತ್ತು ಕಾರ್ಖಾನೆಯ ಕಾರ್ಮಿಕರು ಎಂದು ದೆಹಲಿ ಅಗ್ನಿಶಾಮಕ ಸೇವಾ ನಿರ್ದೇಶಕ ಅತುಲ್ ಗರ್ಗ್ ಅವರು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುರ್ತು ಆಧಾರದ ಮೇಲೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಥಳಕ್ಕೆ ತಲುಪಿದ್ದು ಘಟನೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ.
ಎಎನ್ಐ ಪ್ರಕಾರ, ತನಿಖೆ ನಡೆಸಲಾಗುವುದು ಮತ್ತು ಬೆಂಕಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡೆಲ್ಹಿಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಇಮ್ರಾನ್ ಹುಸೇನ್ ಹೇಳಿದ್ದಾರೆ.