ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ಬುಧವಾರ (ಮಾರ್ಚ್ 22 ರಂದು) ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು (ಮಂಗಳವಾರ) ನಾಗಮಂಗಲ ತಾಲ್ಲೂಕು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು. ಆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”100ಕ್ಕೂ ಹೆಚ್ಚು ಜನರ ಮೊದಲ ಪಟ್ಟಿಯು ಬುಧವಾರ ಬಿಡುಗಡೆಯಾಗಲಿದೆ. ಈ ವರ್ಷ ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಕಾಲಭೈರವೇಶ್ವರನಿಗೆ ಪ್ರಾರ್ಥಿಸಿ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದೇನೆ” ಎಂದು ಹೇಳಿದರು.
ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶವಿದೆ. ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಕ್ಷೇತ್ರ ಯಾವುದಾದರೂ ಆಯ್ಕೆ ಮಾಡಿಕೊಳ್ಳಲಿ” ಎಂದರು.
ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್ಗೊ, ಜೆಡಿಎಸ್ಗೊ?
”ಇನ್ನು ಡಿ.ಕೆ.ಸುರೇಶ್ ಅವರಿಗೆ ಸಂಸದರಾಗಿಯೇ ಉಳಿಯುವ ಇಚ್ಛೆ ಇದೆ. ಯಾರೇ ಅಭ್ಯರ್ಥಿಯಾದರೂ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರೇ ಅಭ್ಯರ್ಥಿ ಎಂದು ಮತ ಕೇಳಿ ಗೆಲ್ಲಿಸಿಕೊಂಡು ಬರುತ್ತೇವೆ” ಎಂದು ಹೇಳಿದರು.
”ಚಿಂಚನಸೂರು ಸ್ವಲ್ಪ ಬದಲಾವಣೆಯಾಗಿ ಪಕ್ಷ ಬಿಟ್ಟಿದ್ದರು. ಈಗ ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಬೇಕಾದಷ್ಟು ಜನರು ನಮ್ಮ ಪಕ್ಷದಿಂದ ಬಿಜೆಪಿಗೆ ಹೋಗಿದ್ದಾರೆ, ಅಲ್ಲಿಂದ ನಮ್ಮಲ್ಲಿಗೆ ಬಂದಿದ್ದಾರೆ. ರಾಜಕೀಯದಲ್ಲಿ ಇವೆಲ್ಲ ಸರ್ವೇ ಸಾಮಾನ್ಯ” ಎಂದು ತಿಳಿಸಿದ್ದಾರೆ.
ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ. ನಾನು ಯಾರಿಗೂ ಪೊಲಿಟಿಕಲಿ ಡ್ಯಾಮೇಜ್ ಮಾಡಲ್ಲ. ಈ ಬಗ್ಗೆ ನಾರಾಯಣಗೌಡರನ್ನೇ ಕೇಳಬೇಕು ಎಂದು ಹೇಳಿದ್ದಾರೆ.