ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನೀಡುವುದನ್ನು ನಿಷೇಧ ಮಾಡಿದ್ದು, ಅವವುಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಕೃಷಿ ರೈತ ಸಂಘಟನೆಗಳು ಬೆಂಗಳೂರಿನ ಹೆಬ್ಬಾಳದ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದೆ.
ಕೊರೊನಾ ಸಂಕಷ್ಟದಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ರಾಜ್ಯ ಸರ್ಕಾರ ಗಧಾಪ್ರಹಾರ ಮಾಡಿದೆ ಎಂದು ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ ಎಂ ಅರವಿಂದ್ ಮಾತನಾಡಿ, “ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್ ಅವರು, ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಆದೇಶವನ್ನು ಹೊರಡಿಸಿದ್ದಾರೆ. ಇದು ರಾಜ್ಯದ 7500 ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ಜನ ರೈತರ ಕುಟುಂಬಗಳ ಮೇಲಿನ ಗಧಾಪ್ರಹಾರವಾಗಿದೆ. ಈ ನಿರ್ಧಾರದ ಹಿಂದೆ ಯಾವುದೇ ವೈಜ್ಞಾನಿಕ ಅಥವಾ ಸಂಶೋಧನಾತ್ಮ ಅಂಶಗಳ ಕಂಡು ಬರುತ್ತಿಲ್ಲ” ಎಂದು ಹೇಳಿದ್ದಾರೆ.
“ಈ ನಿಷೇಧದಿಂದಾಗಿ ಕೊರೊನಾ ಸಂಕಷ್ಟದಿಂದ ತೊಂದರೆಗೀಡಾಗಿರುವ ಪುಷ್ಪ ಬೆಳೆಗಾರರ ಚೇತರಿಕೆ ಮತ್ತಷ್ಟು ನಿಧಾನವಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿಯನ್ನು ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ” ಎಂದು ಹೇಳಿದ್ದಾರೆ.
ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್ ಬೊಲ್ಲಪಳ್ಳಿ ಮಾತನಾಡಿ, “ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7500 ಹೆಕ್ಟೇರ್ ನಷ್ಟು ಭೂಮಿಯಲ್ಲಿ ಗ್ರೀನ್ ಹೌಸ್ ಮೂಲಕ ಪುಷ್ಪ ಕೃಷಿಯನ್ನು ನಡೆಸಲಾಗುತ್ತಿದೆ. ಅಲ್ಲದೆ, ಇದನ್ನು ಹೊರಪಡಿಸಿ ಲಕ್ಷಾಂತರ ಎಕರೆಗಳಲ್ಲಿ ಹೂವನ್ನು ಬೆಳೆಯಲಾಗುತ್ತಿದೆ.
ಇದನ್ನೂ ಓದಿ: ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು
ಒಂದು ಎಕರೆಯಲ್ಲಿ ಸುಮಾರು ಆರು ಜನ ಒಂದು ಹೆಕ್ಟೇರ್ ನಲ್ಲಿ ಸುಮಾರು 15 ಜನರು ಕಾರ್ಯನಿರ್ವಹಿಸುತ್ತಾರೆ. ಬೆಂಗಳೂರು ನಗರ ದೇಶದ ಪುಷ್ಪೋದ್ಯಮದ ಪ್ರಮುಖ ಹಬ್ ಆಗಿದ್ದು, ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.
ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ನಡೆಸಿದ ಪ್ರತಿಭಟನೆಯಲ್ಲಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ರಾಜ್ಯದ ಹೂ ಬೆಳೆಗಾರ ರೈತರು ಹಾಗೂ ಪುಷ್ಪೋದ್ಯಮದಲ್ಲಿ ತೊಡಗಿಕೊಂಡಿರುವ ಲಕ್ಷಾಂತರ ಜನರ ಜೀವನ ಆಧಾರ ಉದ್ಯಮಕ್ಕೆ ಈ ರೀತಿ ಕೊಡಲಿ ಪೆಟ್ಟು ನೀಡುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ‘ಮಾಸ್ಟರ್ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ‘ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!