ಇಷ್ಟು ದಿನ ಉಪ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆಯೇ ಮಂಗಳವಾರ ಎಚ್.ಡಿ. ಕೋಟೆ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆ ಹಾಡಿಗೆ ಭೇಟಿ ನೀಡಿ, “ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು” ಎಂದು ಸೂಚಿಸಿದರು.
“ಆದಿವಾಸಿ-ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
“ಹಲವು ದಶಕಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಇದು ಗಂಭಿರವಾದುದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಎಲ್ಲ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಲಿದ್ದಾರೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

“ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2, 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವ ದೂರು ಬಂದಿದೆ. ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ. ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಇಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ” ಎಂದು ಹೇಳಿದ್ದಾರೆ.
ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆಗೆ ಕ್ರಮ
“ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ” ಎಂದಿದ್ದಾರೆ.
“ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.
ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ” ಎಂದರು.

ಒಳ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆ ಚರ್ಚೆ
“ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಸುಪ್ರೀಂ ಕೋರ್ಟ್ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.
ಇದನ್ನೂ ಓದಿ; ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ


