ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಇದರ ಜೊತೆಗೆ ಆದೇಶವನ್ನು ವಾಪಸ್ ಪಡೆಯುವವರೆಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಯಾವುದೇ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಪತ್ರದ ವಿವರ ಹೀಗಿದೆ:
ರಾಷ್ಟ್ರೀಯ ಶಿಕ್ಷಣ ನೀತಿ-202 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.
ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ..? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ.
ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ
ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ.
ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ.
ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ , ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ..?
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆ ಮಾಡಬಯಸಿದರೆ, ಕೂಡಲೆ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೇ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು, ಅಲ್ಲಿಯ ವರೆಗೆ ಈವಿಷಯದ ಮೇಲಿನ ಚರ್ಚೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಸಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್. ಅಶ್ವತನಾರಾಯಣ ಅವರಿಗೆ ಪತ್ರ ಬರೆದಿದ್ದೇನೆ.#Neweducationpolicy pic.twitter.com/wyagTnTzzH
— Siddaramaiah (@siddaramaiah) September 3, 2021
ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್: ಆರೋಪ


