ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಅಸಹಜವಾಗಿ ಬೆಂಗಳೂರಿನಲ್ಲಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವಿಗೆ ಶರಣಾಗಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ (30) ಅಸಹಜವಾಗಿ ಸಾವಿಗೀಡಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ತರಲಾಗಿದೆ.
2018ರಲ್ಲಿ ವೈದ್ಯ ಡಾ. ನೀರಜ್ ಅವರನ್ನು ಸೌಂದರ್ಯ ವಿವಾಹವಾಗಿದ್ದರು. ಡಾ.ನೀರಜ್ ಹಾಗೂ ಸೌಂದರ್ಯ ದಂಪತಿಗೆ ಒಂದು ಮಗೂ ಇದೆ. ಗಂಡ ಹೆಂಡತಿ ಇಬ್ಬರೂ ವೈದ್ಯರಾಗಿದ್ದಾರೆ.
ನೀರಜ್ ಅವರು ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಆ ಸಮಯದಲ್ಲಿ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಸೌಂದರ್ಯ ಅವರು ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಅವರ ಪತಿ ಡಾ. ನೀರಜ್ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಗಳಾಗಿವೆ.
ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ ಸುದ್ದಿ ಕೇಳಿಬರುತ್ತಿದ್ದಂತೆ ಬೆಂಗಳೂರಿನ ಕೆಕೆ ರಸ್ತೆಯಲ್ಲಿರುವ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಬಂದಿದ್ದಾರೆ.
(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:
ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ – 104)
ಇದನ್ನೂ ಓದಿರಿ: ಗಡಿಯಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ ಸೇನೆ