ವಿಧಾನಪರಿಷತ್ಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಕೆ. ರಘುಪತಿ ಭಟ್ ಘೋಷಿಸಿದ್ದಾರೆ.
ಉಡುಪಿಯ ಕರಂಬಳ್ಳಿಯ ನಿವಾಸದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪದವೀಧರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಪಕ್ಷದ ರಾಜ್ಯ ಮತ್ತು ರಾಷ್ಟ್ರ ನಾಯಕರು ಟಿಕೆಟ್ ನೀಡುವ ಭರವಸೆಯನ್ನೂ ಕೊಟ್ಟಿದ್ದರು. ಅದರಂತೆ ಕ್ಷೇತ್ರದಾದ್ಯಂತ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡು 20 ಸಾವಿರಕ್ಕೂ ಅಧಿಕ ಜನರ ನೋಂದಣಿ ಮಾಡಿಸಿದ್ದೇನೆ. ಆದರೆ, ಪಕ್ಷ ಟಿಕೆಟ್ ನೀಡಲು ನಿರಾಕರಿಸಿರುವುದರಿಂದ ಮನನೊಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ” ಎಂದಿದ್ದಾರೆ.
“ಪಕ್ಷಕ್ಕಾಗಿ ದಶಕಗಳ ಕಾಲ ದುಡಿದ ಹಿರಿಯರಿಗೆ ಟಿಕೆಟ್ ನೀಡಬಹುದಿತ್ತು. ಹಿರಿತನ ಹಾಗೂ ಪಕ್ಷನಿಷ್ಠೆ ಬದಿಗಿಟ್ಟು ವರ್ಷದ ಹಿಂದಷ್ಟೇ ಬಿಜೆಪಿ ಸೇರಿದವರಿಗೆ ಟಿಕೆಟ್ ನೀಡಿರುವುದು ಬೇಸರ ತಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದಾಗಲೂ ಬಂಡಾಯ ಪ್ರದರ್ಶಿಸದೆ ಪಕ್ಷದ ಗೆಲುವಿಗೆ ಶ್ರಮಿಸಿದ್ದೇನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೂ ದುಡಿದಿದ್ದೇನೆ. ಇಷ್ಟಾದರೂ ಟಿಕೆಟ್ ನಿರಾಕರಿಸಿರುವುದು ಅತೀವ ನೋವು ತಂದಿದೆ” ಎಂದು ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯ ಮನೆಗೆ ಜಿಲ್ಲಾ ಬಿಜೆಪಿಯ ತಂಡ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರ ನೇತೃತ್ವದಲ್ಲಿ ತೆರಳಿ ರಘುಪತಿ ಭಟ್ ಅವರನ್ನು ಸಮಾಧಾನಪಡಿಸಿ, ಮನವೊಲಿಸಲು ಪ್ರಯತ್ನಿಸಲಾಯಿತಾದರೂ, ಮಾತುಕತೆ ವಿಫಲವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ‘ಆಪರೇಶನ್ ಕಮಲ’ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ