ಕಾಂಗ್ರೆಸ್ನ ಹಿರಿಯ ಮುತ್ಸದ್ದಿ, ಮಾಜಿ ಸಂಸದ ಜಿ. ಮಾದೇಗೌಡ ಶನಿವಾರ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾರತೀನಗರದ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ: ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ
1962 ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಅವರು ಸಚಿವರಾಗಿದ್ದರು.
ಕಾವೇರಿ ನದಿ ನೀರಿನ ಹಕ್ಕಿನ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾದೇಗೌಡರು, ರೈತರ ಪ್ರಮುಖ ಬೆಳೆಯಾದ ಕಬ್ಬಿಗೆ ಸೂಕ್ತ ಬೆಲೆ ಕೊಡಿಸಲು ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಭಾರತೀನಗರದಲ್ಲಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಸ್ಥಾಪಿಸಿದ್ದರು.
ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ, ಆರೋಗ್ಯ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸಾಧನೆಗಾಗಿ ಮೈಸೂರು ವಿಶ್ವವಿದ್ಯಾನಿಲಯವು 2012 ರ ಜನವರಿಯಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿತ್ತು.
ಹಿರಿಯ ರಾಜಕಾರಣಿಯ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ನಾಯಕ ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ