Homeಅಂತರಾಷ್ಟ್ರೀಯಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ 

- Advertisement -
- Advertisement -

ಪ್ಯಾಲೆಸ್ತೀನ್/ಗಾಜಾ: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಜಾ ಮೂಲದ ಧೈರ್ಯಶಾಲಿ ಪತ್ರಕರ್ತ ಅನಾಸ್ ಅಲ್-ಶರೀಫ್ ಸೇರಿದಂತೆ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆಯಾಗಿದ್ದಾರೆ. ಗಾಜಾ ನರಮೇಧ ಆರಂಭವಾದಾಗಿನಿಂದಲೂ ನಿರಂತರವಾಗಿ ವರದಿ ಮಾಡುತ್ತಿದ್ದ ಅನಾಸ್ ಅಲ್-ಶರೀಫ್, ಅಲ್ ಜಝೀರಾ ಅರೇಬಿಕ್‌ನ ಪ್ರಮುಖ ಧ್ವನಿಯಾಗಿದ್ದರು. ಈ ದಾಳಿಯಲ್ಲಿ ಅಲ್-ಶರೀಫ್ ಅವರೊಂದಿಗೆ, ಕ್ಯಾಮರಾಮ್ಯಾನ್‌ಗಳಾದ ಇಬ್ರಾಹಿಂ ಝಾಹರ್ ಮತ್ತು ಮೊಹಮ್ಮದ್ ನೌಫಲ್ ಹಾಗೂ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಖ್ರೀಖೆ ಕೂಡ ಸಾವನ್ನಪ್ಪಿದ್ದಾರೆ.

ಅಲ್ ಜಝೀರಾ ವರದಿ ಪ್ರಕಾರ, ಈ ಘಟನೆ ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಹೊರಗೆ ಪತ್ರಕರ್ತರು ತಂಗಿದ್ದ ಡೇರೆಯ ಮೇಲೆ ನಡೆದ ಇಸ್ರೇಲಿ ದಾಳಿಯ ಪರಿಣಾಮವಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂದು ಅಲ್ ಜಝೀರಾ ಖಂಡಿಸಿದೆ. ಹತ್ಯೆಗೀಡಾದ ಅನಾಸ್ ಅಲ್-ಶರೀಫ್ (28) ಅವರು ಉತ್ತರ ಗಾಜಾದಲ್ಲಿ ವ್ಯಾಪಕವಾಗಿ ವರದಿ ಮಾಡಿದ್ದರಿಂದ ಅಲ್ಲಿ ಮನೆ ಮಾತಾಗಿದ್ದರು. ಇಸ್ರೇಲ್ ಪಡೆಗಳು ಈ ಪತ್ರಕರ್ತರ ವಿರುದ್ಧ, ವಿಶೇಷವಾಗಿ ಅಲ್-ಶರೀಫ್ ವಿರುದ್ಧ, “ಪ್ರಚೋದನೆಯ ಅಭಿಯಾನ” ನಡೆಸುತ್ತಿದ್ದವು ಎಂದು ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್ ಹೇಳಿದೆ.

ಆದರೆ, ಇಸ್ರೇಲ್ ಸೇನೆಯು ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಾ, ಅಲ್-ಶರೀಫ್ ಹಮಾಸ್ ಕೋಶದ ಮುಖ್ಯಸ್ಥನಾಗಿದ್ದ ಮತ್ತು “ಇಸ್ರೇಲಿ ನಾಗರಿಕರು ಮತ್ತು ಪಡೆಗಳ ವಿರುದ್ಧ ರಾಕೆಟ್ ದಾಳಿಗಳನ್ನು ಉತ್ತೇಜಿಸುತ್ತಿದ್ದ” ಎಂದು ಆರೋಪಿಸಿದೆ. ಈ ಆರೋಪಗಳನ್ನು ಅಲ್ ಜಝೀರಾ ಸಂಪೂರ್ಣವಾಗಿ ನಿರಾಕರಿಸಿದೆ.

ತಮ್ಮ ಹತ್ಯೆಯ ಕೆಲವು ಕ್ಷಣಗಳ ಮೊದಲು, ಅಲ್-ಶರೀಫ್ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಗಾಜಾ ನಗರದ ಪೂರ್ವ ಮತ್ತು ದಕ್ಷಿಣ ಭಾಗಗಳ ಮೇಲೆ ಇಸ್ರೇಲ್ ತೀವ್ರವಾದ ಮತ್ತು ಕೇಂದ್ರೀಕೃತ ಬಾಂಬ್ ದಾಳಿ ನಡೆಸುತ್ತಿದೆ ಎಂದು ಬರೆದಿದ್ದರು. ಈ ಬಾಂಬ್ ದಾಳಿಯನ್ನು “ಫೈರ್ ಬೆಲ್ಟ್‌ಗಳು” ಎಂದೂ ಕರೆಯಲಾಗುತ್ತದೆ. ಅವರ ಕೊನೆಯ ವೀಡಿಯೊದಲ್ಲಿ, ಹಿನ್ನೆಲೆಯಲ್ಲಿ ನಿರಂತರ ಬಾಂಬ್ ದಾಳಿಯ ಶಬ್ದಗಳು ಕೇಳಿಬರುತ್ತಿದ್ದು, ಕತ್ತಲೆ ಆಕಾಶ ಕಿತ್ತಳೆ ಬೆಳಕಿನಿಂದ ಮಿನುಗುತ್ತಿರುವುದು ಕಾಣುತ್ತದೆ. “ಕಳೆದ ಎರಡು ಗಂಟೆಗಳಿಂದ ಗಾಜಾ ನಗರದ ಮೇಲೆ ಇಸ್ರೇಲಿ ಆಕ್ರಮಣ ತೀವ್ರಗೊಂಡಿದೆ” ಎಂದು ಅವರು ಬರೆದಿದ್ದರು.

“ನಾನು ನಿಮಗೆ ಪ್ಯಾಲೆಸ್ಟೈನ್ ಅನ್ನು ಒಪ್ಪಿಸುತ್ತೇನೆ”: ಅನಾಸ್ ಅಲ್-ಶರೀಫ್ ಅವರ ಅಂತಿಮ ಸಂದೇಶ

ಅನಾಸ್ ಅಲ್-ಶರೀಫ್ ಅವರ ಹತ್ಯೆಯ ನಂತರ, ಅವರು ಈ ವರ್ಷದ ಆರಂಭದಲ್ಲಿ ಬರೆದಿದ್ದ ತಮ್ಮ ಅಂತಿಮ ಸಂದೇಶವನ್ನು ಅವರ ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಯಿತು. ಈ ಸಂದೇಶವು ಅವರ ನೋವು, ಕಷ್ಟಗಳು ಮತ್ತು ತಮ್ಮ ಜನರು ಹಾಗೂ ಮಾತೃಭೂಮಿಯ ಮೇಲಿದ್ದ ಪ್ರೀತಿಯನ್ನು ಪ್ರತಿಬಿಂಬಿಸುತ್ತದೆ.

ಅವರ ಅಂತಿಮ ಸಂದೇಶದ ಪೂರ್ಣ ಪಠ್ಯ ಇಲ್ಲಿದೆ:

“ನನ್ನ ಮಾತುಗಳು ನಿಮ್ಮನ್ನು ತಲುಪಿದರೆ, ಇಸ್ರೇಲ್ ನನ್ನನ್ನು ಕೊಲ್ಲುವಲ್ಲಿ ಮತ್ತು ನನ್ನ ಧ್ವನಿಯನ್ನು ಮೌನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಯಿರಿ. ಮೊದಲಿಗೆ, ನಿಮ್ಮೆಲ್ಲರ ಮೇಲೆ ಶಾಂತಿ, ಕರುಣೆ ಮತ್ತು ಆಶೀರ್ವಾದವಿರಲಿ.

ಜಬಾಲಿಯಾ ನಿರಾಶ್ರಿತರ ಶಿಬಿರದ ಗಲ್ಲಿಗಳಲ್ಲಿ ಮತ್ತು ಬೀದಿಗಳಲ್ಲಿ ನನ್ನ ಬದುಕು ಆರಂಭವಾದಾಗಿನಿಂದ, ನನ್ನ ಜನರಿಗೆ ಧ್ವನಿ ಮತ್ತು ಶಕ್ತಿಯಾಗಿ ನಿಲ್ಲಲು ನಾನು ನನ್ನ ಸರ್ವ ಪ್ರಯತ್ನವನ್ನೂ ಅರ್ಪಿಸಿದ್ದೇನೆ ಎಂದು ಅಲ್ಲಾಹನಿಗೆ ತಿಳಿದಿದೆ. ಅತಿಕ್ರಮಿತ ಭೂಮಿ, ನನ್ನ ಮೂಲ ಪಟ್ಟಣ ಅಸ್ಖಲಾನ್ (ಅಲ್-ಮಜ್ದಲ್)ಗೆ ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಹಿಂತಿರುಗುವ ಆಸೆಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೆ. ಆದರೆ ಅಲ್ಲಾಹನ ಇಚ್ಛೆಯು ಅನಿರೀಕ್ಷಿತವಾಗಿತ್ತು, ಮತ್ತು ಆತನ ತೀರ್ಮಾನವೇ ಅಂತಿಮ. ನೋವಿನ ಎಲ್ಲಾ ರೂಪಗಳನ್ನು ನಾನು ಅನುಭವಿಸಿದ್ದೇನೆ, ದುಃಖ ಮತ್ತು ನಷ್ಟವನ್ನು ಪದೇ ಪದೇ ಕಂಡಿದ್ದೇನೆ. ಆದರೂ, ಸತ್ಯವನ್ನು ಅದು ಇರುವಂತೆಯೇ, ಯಾವುದೇ ಬದಲಾವಣೆ ಅಥವಾ ಸುಳ್ಳಿಲ್ಲದೆ ಹೇಳಲು ನಾನು ಎಂದಿಗೂ ಹಿಂಜರಿಯಲಿಲ್ಲ. ನಮ್ಮ ಹತ್ಯೆಯನ್ನು ಒಪ್ಪಿಕೊಂಡ, ನಮ್ಮ ಉಸಿರುಗಳನ್ನು ಬಂಧಿಸಿದ, ನಮ್ಮ ಮಕ್ಕಳ ಮತ್ತು ಮಹಿಳೆಯರ ಛಿದ್ರಗೊಂಡ ದೇಹಗಳನ್ನು ನೋಡಿಯೂ ಹೃದಯ ಕರಗದ ಮತ್ತು ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ನಮ್ಮ ಜನರ ಮೇಲೆ ನಡೆಯುತ್ತಿರುವ ಈ ಮಾರಣಹೋಮವನ್ನು ನಿಲ್ಲಿಸದವರ ವಿರುದ್ಧ ಅಲ್ಲಾಹನು ಸಾಕ್ಷಿಯಾಗಿರುತ್ತಾನೆ ಎಂದು ನಾನು ನಂಬಿದ್ದೇನೆ.

ನಾನು ಪ್ಯಾಲೆಸ್ಟೈನ್ ಅನ್ನು ನಿಮ್ಮ ಕೈಗೆ ಒಪ್ಪಿಸುತ್ತೇನೆ. ಇದು ಮುಸ್ಲಿಂ ಪ್ರಪಂಚದ ಒಂದು ರತ್ನ ಮತ್ತು ಪ್ರತಿಯೊಬ್ಬ ಸ್ವತಂತ್ರ ಹೃದಯದ ಆಸೆಯಾಗಿದೆ. ಸಾವಿರಾರು ಟನ್‌ಗಳ ಇಸ್ರೇಲಿ ಬಾಂಬ್‌ಗಳಿಂದ ಹರಿದುಹೋದ ಅಮಾಯಕ ಮಕ್ಕಳ ದೇಹಗಳು ಮತ್ತು ಅಲ್ಲಿನ ಜನರ ಜವಾಬ್ದಾರಿಯನ್ನು ನಾನು ನಿಮಗೆ ವಹಿಸುತ್ತಿದ್ದೇನೆ. ಯಾವುದೇ ಬಂಧನಗಳು ನಿಮ್ಮನ್ನು ಮೌನವಾಗಿಸಬಾರದು. ನಮ್ಮ ನೆಲ ಮತ್ತು ಜನರಿಗೆ ಘನತೆ ಮತ್ತು ಸ್ವಾತಂತ್ರ್ಯ ದೊರೆಯುವವರೆಗೂ ಅವರನ್ನು ಬಿಡುಗಡೆಗೊಳಿಸುವ ಸೇತುವೆಯಾಗಿ ನೀವು ಇರಿ.

ನನ್ನ ಪ್ರೀತಿಯ ಕುಟುಂಬವನ್ನು ನಿಮಗೆ ಒಪ್ಪಿಸುತ್ತಿದ್ದೇನೆ. ನನ್ನ ಕಣ್ಣಿನ ದೃಷ್ಟಿಯಂತಿದ್ದ ಮಗಳು ಶಮ್ಳನ್ನು ನಿಮಗೆ ವಹಿಸುತ್ತಿದ್ದೇನೆ, ಅವಳು ಬೆಳೆಯುವುದನ್ನು ನೋಡುವ ಆಸೆ ನನಗೆ ಈಡೇರಲಿಲ್ಲ. ನನ್ನ ಮಗ ಸಲಾಹ್‌ನನ್ನು ನಿಮಗೆ ಒಪ್ಪಿಸುತ್ತೇನೆ, ಅವನು ನನ್ನ ಜವಾಬ್ದಾರಿಯನ್ನು ಹೊರುವಷ್ಟು ಶಕ್ತಿಯುತನಾಗುವವರೆಗೆ ನಾನು ಅವನ ಬೆಂಬಲಕ್ಕೆ ನಿಲ್ಲಬೇಕಿತ್ತು.

ನನ್ನ ಶಕ್ತಿಯಾಗಿದ್ದ ಪ್ರೀತಿಯ ತಾಯಿಯನ್ನು, ಅವರ ಪ್ರಾರ್ಥನೆಗಳು ನನ್ನನ್ನು ಕಾಪಾಡಿದವು, ನಿಮಗೆ ಒಪ್ಪಿಸುತ್ತೇನೆ. ಜೀವನದುದ್ದಕ್ಕೂ ನನ್ನ ಜೊತೆಗಿದ್ದ ನನ್ನ ಪತ್ನಿ ಬಯಾನ್ಳನ್ನು ನಿಮಗೆ ವಹಿಸುತ್ತೇನೆ. ಯುದ್ಧವು ನಮ್ಮನ್ನು ದೂರಮಾಡಿದರೂ, ಅವಳು ದೃಢವಾಗಿ ಮತ್ತು ನಿಷ್ಠೆಯಿಂದ ಕುಟುಂಬವನ್ನು ನೋಡಿಕೊಂಡಳು. ದಯವಿಟ್ಟು ನೀವು ಎಲ್ಲರೂ ಸೇರಿ, ಅವರಿಗೆ ಅಲ್ಲಾಹನ ನಂತರ ದೊಡ್ಡ ಬೆಂಬಲವಾಗಿರಿ.

ನನ್ನ ಅಂತ್ಯ ಸಂಭವಿಸಿದರೆ, ನನ್ನ ತತ್ವಗಳಿಗೆ ಬದ್ಧನಾಗಿ ಈ ಜಗತ್ತನ್ನು ಬಿಡುತ್ತೇನೆ. ಅಲ್ಲಾಹನ ಇಚ್ಛೆಯಿಂದ ನಾನು ತೃಪ್ತನಾಗಿದ್ದೇನೆ ಮತ್ತು ಆತನನ್ನು ಸೇರುವುದು ಶಾಶ್ವತ ಶಾಂತಿಯ ದಾರಿ ಎಂದು ನಾನು ನಂಬಿದ್ದೇನೆ.

ಓ ಅಲ್ಲಾಹ್, ನನ್ನನ್ನು ಹುತಾತ್ಮನಾಗಿ ಸ್ವೀಕರಿಸು. ನನ್ನ ಭೂತ ಮತ್ತು ಭವಿಷ್ಯದ ಪಾಪಗಳನ್ನು ಕ್ಷಮಿಸು. ನನ್ನ ರಕ್ತದ ಹನಿಯು ನನ್ನ ಜನ ಮತ್ತು ಕುಟುಂಬದ ಸ್ವಾತಂತ್ರ್ಯಕ್ಕಾಗಿ ಪ್ರಕಾಶಿಸುವ ಬೆಳಕಾಗಲಿ. ಒಂದು ವೇಳೆ ನಾನು ಎಲ್ಲಿಯಾದರೂ ತಪ್ಪು ಮಾಡಿದ್ದರೆ ನನ್ನನ್ನು ಕ್ಷಮಿಸು. ನನ್ನ ಒಡಂಬಡಿಕೆಗೆ ನಾನು ಸದಾ ನಿಷ್ಠನಾಗಿದ್ದೇನೆ. ಗಾಜಾವನ್ನು ಮರೆಯಬೇಡಿ… ಮತ್ತು ನಿಮ್ಮ ಒಳ್ಳೆಯ ಪ್ರಾರ್ಥನೆಗಳಲ್ಲಿ ನನ್ನನ್ನು ದಯೆಯಿಂದ ನೆನಪಿಸಿಕೊಳ್ಳಿ.

ಅನಾಸ್ ಅಲ್-ಶರೀಫ್

06.04.2025″

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...