Homeಮುಖಪುಟಸಿನಿಮಾ ವಿಮರ್ಶೆ; ಪೊಲೀಸ್ ವ್ಯವಸ್ಥೆಯ ಅಂತರಂಗಕ್ಕೆ ಚಿಕಿತ್ಸೆಯ ಅಗತ್ಯವನ್ನು ಮನಗಾಣಿಸುವ ‘ರೈಟರ್’

ಸಿನಿಮಾ ವಿಮರ್ಶೆ; ಪೊಲೀಸ್ ವ್ಯವಸ್ಥೆಯ ಅಂತರಂಗಕ್ಕೆ ಚಿಕಿತ್ಸೆಯ ಅಗತ್ಯವನ್ನು ಮನಗಾಣಿಸುವ ‘ರೈಟರ್’

- Advertisement -
- Advertisement -

ಈ ದೇಶದ ನಾಗರಿಕರನ್ನು ಅತಿ ಹೆಚ್ಚು ಬಾಧಿಸುವ, ಅವರ ದಿನನಿತ್ಯ ಜೀವನಕ್ಕೆ ಹತ್ತಿರದ ಸಂಬಂಧವಿರುವ ಪೊಲೀಸ್ ವ್ಯವಸ್ಥೆಯನ್ನು ಭಾರತದ ಚಿತ್ರೋದ್ಯಮಗಳು ನೈಜ ರೀತಿಯಲ್ಲಿ ಪ್ರತಿನಿಧಿಸಿದ್ದು ಬಹಳ ಕಡಿಮೆ. ಇರುವ ಸಮಸ್ಯೆಗಳನ್ನೆಲ್ಲಾ ತೋಳುಬಲದಿಂದ ಪರಿಹರಿಸುವ ಏಕವ್ಯಕ್ತಿ ಮ್ಯಾಸ್ಕುಲೈನ್ ಶಕ್ತಿಯಾಗಿ (ಸೂಪರ್ ಹೀರೋ) ಪೊಲೀಸ್ ಅಧಿಕಾರಿಯನ್ನು ಅತಿ ಸಾಮಾನ್ಯವೇನೋ ಎಂಬಂತೆ ಚಿತ್ರೀಕರಿಸಿದ ಅವಾಸ್ತವ ಒಂದು ಕಡೆಯಾದರೆ, ಭ್ರಷ್ಟಾಚಾರ ಮತ್ತು ಲಂಚಗುಳಿತನಗಳಿಗೆ ಪ್ರತಿಬಿಂಬ ಪೊಲೀಸರು ಮತ್ತು ಪೊಲೀಸ್ ವ್ಯವಸ್ಥೆ ಎಂಬ ಚಿತ್ರಣವನ್ನು ಇಲ್ಲಿನ ಬಹುತೇಕ ಸಿನಿಮಾ ರಂಗಗಳು ಕಟ್ಟಿಕೊಟ್ಟಿವೆ. ಸೂಪರ್ ಹೀರೋ ಚಿತ್ರಣಕ್ಕಂತೂ ವಾಸ್ತವಕ್ಕಿಂತ ಹೆಚ್ಚಾಗಿ ಕಪೋಲ ಕಲ್ಪಿತ ಸಂಗತಿಗಳೇ ವಸ್ತುವಾದರೆ, ಎರಡನೆಯ ಬಗೆಯ ಚಿತ್ರಣ ವಾಸ್ತವಕ್ಕೆ ಹತ್ತಿರವಿದ್ದರೂ ಅದಕ್ಕೆ ಕಾರಣಗಳನ್ನು ಶೋಧಿಸಿರುವ, ಅವಲೋಕಿಸಿರುವ, ವಿಶಾಲ ನೆಲೆಯಲ್ಲಿ ವಿಶ್ಲೇಷಿಸಲು ಪ್ರಯತ್ನಿಸಿರುವ ಸಿನಿಮಾಗಳು ವಿರಳವೇ.

ಇನ್ನು ಪೊಲೀಸ್ ವ್ಯವಸ್ಥೆಯಲ್ಲಿರುವ ವಿವಿಧ ಶೇಡ್‌ಗಳನ್ನು ಚಿತ್ರಿಸುವ, ಒಂದೊಳ್ಳೆ ಅಧ್ಯಯನದ ಮಾದರಿಯಲ್ಲಿ ಪೊಲೀಸ್ ಕಥೆಗಳನ್ನು ಹೇಳಿದ ಸಿನಿಮಾಗಳೂ ಕೂಡ ಬೆರೆಳೆಣಿಕೆಯಷ್ಟೇ. 2015ರಲ್ಲಿ ಬಿಡುಗಡೆಯಾದ ತಮಿಳು ಚಿತ್ರರಂಗದ ‘ವಿಸಾರಣೈ’ ಪೊಲೀಸ್ ದೌರ್ಜನ್ಯವನ್ನು ನೈಜತೆಗೆ ಹತ್ತಿರವಾಗಿ ಕಟ್ಟಿಕೊಟ್ಟ ಸಿನಿಮಾವಾಗಿ ಮೂಡಿಬಂದಿತ್ತು. ಅದೇ ರೀತಿಯಲ್ಲಿ ಇತ್ತೀಚೆಗೆ ತೆರೆಕಂಡ ‘ಜೈಭೀಮ್’ ಕೂಡ ಅಂತಹುದೇ ಒಂದು ಥೀಮ್ ಹೊಂದಿತ್ತು. ಪೊಲೀಸ್ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ ಎಂಬ ಪ್ರಾಥಮಿಕ ಸಂಗತಿಗಳನ್ನೂ ತಿಳಿಯದೆ ಓತಪ್ರೇತವಾಗಿ ಪೊಲೀಸ್ ಪಾತ್ರಗಳನ್ನು ಮೂಡಿಸಿ, (ಫಿಕ್ಷನ್ ಕೂಡ ನಂಬಿಕೆಗೆ ಅರ್ಹವಾಗಿರಬೇಕು ಅಲ್ಲವೇ), ಅದನ್ನು ಪ್ರತಿನಿಧಿಸುವ ಸಿನಿಮಾಗಳೇ ಹೆಚ್ಚಿರುವಾಗ ಈ ಬೆರಳೆಣಿಕೆಯ ಪ್ರಯೋಗಗಳ ಮಹತ್ವ ನಮಗೆ ಅರ್ಥವಾದೀತು. ಹಾಗೆಯೇ ಮಲಯಾಳಂ ಸಿನಿಮಾ ‘ತೊಂಡಿಮುಥಾಲಂ ದೃಕ್‌ಸಾಕ್ಷಿಯಂ’ನಲ್ಲಿ ಕೂಡ (2017) ಪೊಲೀಸರನ್ನು ಕಟ್ಟಿಕೊಟ್ಟ ರೀತಿ ವಾಸ್ತವಕ್ಕೆ ಹತ್ತಿರವಾಗಿತ್ತು.

ಈಗ 2021 ಡಿಸೆಂಬರ್‌ನಲ್ಲಿ ಥಿಯೇಟರ್‌ಗಳಲ್ಲಿ ತೆರೆಕಂಡ (ಈಗ ‘ಆಹಾ’ ಒಟಿಟಿ ವೇದಿಕೆಯಲ್ಲಿದೆ) ಫ್ರಾಂಕ್ಲಿನ್ ಜಾಕೋಬ್ ಅವರ ಚೊಚ್ಚಲ ಸಿನಿಮಾ ‘ರೈಟರ್’, ಪೊಲೀಸ್ ವ್ಯವಸ್ಥೆಯನ್ನು ಹೊಸದೊಂದು ನೆಲೆಯಲ್ಲಿ ಶೋಧಿಸಲು ಮುಂದಾಗಿದೆ. ಬ್ರಿಟಿಷ್ ವಸಾಹತಶಾಹಿ ಕಾಲದ, ಸಾಮಾನ್ಯ ಜನರ ‘ನಿಯಂತ್ರಣ ಮತ್ತು ದಮನ’ ಕಲ್ಪನೆಯನ್ನು ಉಳಿಸಿಕೊಂಡಿರುವ ಇಂದಿನ ಪೊಲೀಸ್ ವ್ಯವಸ್ಥೆ, ಇಲ್ಲಿನ ಸಮಾಜದ ಎಲ್ಲಾ ಪೂರ್ವಾಗ್ರಹಗಳನ್ನು ತನ್ನೊಳಗೆ ಸೇರಿಸಿಕೊಂಡು, ಜನಸ್ನೇಹಿಯಾಗದೆ, ಆಂತರಿಕವಾಗಿ ವಿಧೇಯತೆ-ಶ್ರೇಣೀಕರಣದ ಹಿಡಿತದಲ್ಲಿ ಬಳಲುತ್ತಿರುವುದರಿಂದ ಆಗುತ್ತಿರುವ ಅಪಾಯಗಳನ್ನು, ಈ ಸಿನಿಮಾ ತಂಗರಾಜು ಪಾತ್ರದ ಮೂಲಕ ಎಳೆಎಳೆಯಾಗಿ ಬಿಡಿಸುತ್ತಾ ಚಿತ್ರಿಸುತ್ತದೆ. ಕಥಾ ಸಂವಿಧಾನದ ರೋಚಕತೆಯ-ಕುತೂಹಲತೆಯ ಅವಶ್ಯಕತೆಯನ್ನು ಎಲ್ಲಿಯೂ ಬಿಟ್ಟುಕೊಡದೆ, ಸಮಾಜದ ಅವಿಭಾಜ್ಯ ಅಂಗವಾಗಿರುವ ಪೊಲೀಸ್ ವ್ಯವಸ್ಥೆ, ಅಧಿಕಾರವನ್ನು-ಅಧಿಕಾರಸ್ಥರನ್ನು ಕಾಯುವ ಸಂಸ್ಥೆಯಾಗಿಹೋಗಿರುವುದರ ವಿರುದ್ಧ ಬೋಲ್ಡ್ ಆದ ಸ್ಟೇಟ್‌ಮೆಂಟ್ ಮಾಡತ್ತೆ ರೈಟರ್.

ಪಾತ್ರವೊಂದನ್ನು ಗಹನವಾಗಿ ಕಟ್ಟಿಕೊಡುವ ಮೂಲಕವೇ ಒಂದು ಕಥೆ ಹೇಳುವುದನ್ನು ಫ್ರಾಂಕ್ಲಿನ್ ಜಾಕೋಬ್ ಅದ್ಭುತವಾಗಿ ನಿರ್ವಹಿಸಿದ್ದಾರೆ. ತಮಿಳುನಾಡಿನ ತ್ರಿಚಿಯ ಪೊಲೀಸ್ ಠಾಣೆಯೊಂದರಲ್ಲಿ ರೈಟರ್ ಕೆಲಸ ಮಾಡುತ್ತಿರುವ ತಂಗರಾಜು (ಸಮುದ್ರಕಣಿ) ಸಂಕೀರ್ಣ ಸ್ವಭಾವದ (ವೃತ್ತಿ ಮತ್ತು ವೈಯಕ್ತಿಕವಾಗಿ) ವ್ಯಕ್ತಿ. ತಾನು ಕೆಲಸ ಮಾಡುತ್ತಿರುವ ಪೊಲೀಸ್ ಠಾಣೆಯಲ್ಲಿ ಕ್ರೈಮ್ ರೇಟ್ 98%ಕ್ಕಿಂತಲೂ ಹೆಚ್ಚಾಗಲು ಬಿಡದಂತೆ, ಮೇಲಧಿಕಾರಿಯ ಆದೇಶವನ್ನು ಶಿರಸಾವಹಿಸಿ ಪಾಲಿಸಿ, ಪ್ರಕರಣಗಳನ್ನು (ಚಿನ್ನದ ಸರ-ಮೋಟಾರ್ ವೆಹಿಕಲ್ ಕಳ್ಳತನದ ತರಹದವು) ಸುಳ್ಳುಸುಳ್ಳೇ ಕ್ಲೋಸ್ ಮಾಡುವ, ಅದಕ್ಕಾಗಿ ದೂರುದಾರರನ್ನು ಕನ್ವಿನ್ಸ್ ಮಾಡುವ ಪ್ರಾಬ್ಲಂ ಸಾಲ್ವರ್ ಈತ. ಆದರೆ ಅದೇ ಸಮಯದಲ್ಲಿ ತನ್ನ ಸಹೋದ್ಯೋಗಿ ಪೊಲೀಸರನ್ನು ಅದರಲ್ಲೂ ತನ್ನ ಕೆಳಗಿನ ರ‍್ಯಾಂಕ್‌ನ ಪೊಲೀಸರನ್ನೂ ಪ್ರೀತಿಯಿಂದ ಕಾಣುವ ಅಂತಃಕರಣದ ವ್ಯಕ್ತಿ. ಅಲ್ಲದೆ ಎರಡು ದಶಕಗಳ ಕಾಲ ಪೊಲೀಸ್ ಯೂನಿಯನ್‌ಗಾಗಿ ಹೋರಾಟ ಮಾಡುತ್ತಿರುವ, ಅದಕ್ಕಾಗಿ ಪೊಲೀಸ್ ಇಲಾಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿರುವ ಮತ್ತು ಮೇಲಿನ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿರುವ ವ್ಯಕ್ತಿ. ತನ್ನ ಈ ಪ್ರಾಬ್ಲಂ ಸಾಲ್ವಿಂಗ್, ಕೆಲಸದಲ್ಲಿನ ದಕ್ಷತೆ ಹಾಗೂ ತನ್ನ ಆತ್ಮಸಾಕ್ಷಿಗೆ ಒಪ್ಪದೆ ಇದ್ದರೂ ವ್ಯವಸ್ಥೆಯ ಜೊತೆಗೆ ಹೊಂದಿಕೊಂಡು ಹೋಗುವ ಗುಣದ-ಕೆಲಸದ ಕಾರಣದಿಂದ, ಒಬ್ಬ ಯುವಕನನ್ನು ತಾನೂ ಊಹಿಸಲೂ ಇರದ ಸಂಕಷ್ಟಕ್ಕೆ ನೂಕಿದಾಗ, ತಂಗರಾಜುವಿನಲ್ಲಾಗುವ ಬದಲಾವಣೆಯೇ ಚಿತ್ರದ ಪ್ರಧಾನ ಕಥಾವಸ್ತು. ಇದರಿಂದ ತಂಗರಾಜುಗೆ ವಿಮೋಚನೆ ಸಾಧ್ಯವೇ? ಸಮಯ ಮೀರಿದ ಮೇಲೆ ಆ ವಿಮೋಚನೆ ರೂಪ ಯಾವುದಾಗಿರುತ್ತದೆ ಎಂಬುದು ಸಿನಿಮಾದ ಕ್ಲೈಮ್ಯಾಕ್ಸ್.

ತಂಗರಾಜು ಪಾತ್ರದ ವೃತ್ತಿ ಜೀವನದ ಚಿತ್ರಣದ ಜೊತೆಗೆ ಆತನ ವೈಯಕ್ತಿಕ ಜೀವನವನ್ನು ಕಟ್ಟಿಕೊಟ್ಟಿರುವುದು ಕೂಡ ಅಷ್ಟೇ ಸಂಕೀರ್ಣವಾಗಿದೆ. ಮೊದಲನೆಯ ಹೆಂಡತಿಯ ಜೊತೆಗೆ ಮಗುವಾಗಿಲ್ಲ ಎಂಬ ಕಾರಣಕ್ಕೆ ಎರಡನೇ ಮದುವೆಯಾಗಿದ್ದಾನೆ. ಮಗ, ಇಬ್ಬರು ಹೆಂಡತಿಯರ ಜೊತೆಗೆ ಒಟ್ಟಿಗೆ ಇದ್ದರೂ ತನಗಿಂತ ತುಂಬಾ ಕಿರಿಯಳಾದವಳನ್ನು ಮದುವೆಯಾದ ಬಗ್ಗೆ ಪಾಶ್ಚಾತ್ತಾಪದವಿದೆ. ‘ಯಾರೋ ಹೇಳಿದರು ಎಂದು ಯೋಚಿಸದೆ ಮದುವೆಯಾದೆ’ ಎಂಬ ಆತ್ಮನಿವೇದನೆ ಮಾಡಿಕೊಳ್ಳುತ್ತಾನೆ. ವೃತ್ತಿಯ ಜೀವನದಲ್ಲಿರುವಂತೆಯೇ ವೈಯಕ್ತಿಕ ಜೀವನದಲ್ಲಿಯೂ ವ್ಯವಸ್ಥೆಯ ಜೊತೆಗೆ ರಾಜಿ ಮಾಡಿಕೊಂಡು ಹೇಗೋ ಹೊಂದಿಕೊಂಡು ಹೋಗುವ ತಂಗರಾಜು ಗುಣವನ್ನು ಮುಖ್ಯ ಕತೆಗೆ ಬೆಸೆಯಲು ನಿರ್ದೇಶಕ ಪರಿಣಾಮಕಾರಿಯಾಗಿದ್ದಾರೆ.

ಸಿನಿಮಾದ ಎರಡನೇ ಮುಖ್ಯ ಎಳೆ ಮದ್ರಾಸ್ ಯೂನಿವರ್ಸಿಟಿಯಲ್ಲಿ ಕಲಿಯುತ್ತಿರುವ, ಪೊಲೀಸ್ ವ್ಯವಸ್ಥೆಯಲ್ಲಿ ಆತ್ಮಹತ್ಯೆಗಳ ಬಗ್ಗೆ ಅಧ್ಯಯನದಲ್ಲಿ ತೊಡಗಿಸಿಕೊಂಡಿರುವ ದೇವಕುಮಾರ್ (ಹರಿ ಕೃಷ್ಣನ್) ಕಥೆ. ಪೊಲೀಸ್ ವ್ಯವಸ್ಥೆ ಹೇಗೆ ದಮನಿತ ಸಮುದಾಯದ ವ್ಯಕ್ತಿಗಳನ್ನು ‘ಫಿಕ್ಸ್’ ಮಾಡುತ್ತದೆಂಬ ಕಥೆಯನ್ನು ಸ್ಕಿಲ್‌ಫುಲ್ ಆಗಿ ಪ್ರಧಾನ ಎಳೆಗೆ ಜೋಡಿಸುತ್ತಾರೆ ಜಾಕೋಬ್. ಕ್ರಿಶ್ಚಿಯನ್ ದಲಿತ ಸಮುದಾಯದ ಮೊದಲ ಪೀಳಿಗೆಯ ಅಕ್ಷರಸ್ಥ, ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಕಲಿಯಲು ಈಗ ಸಾಧ್ಯವಾಗಿದ್ದರೂ, ಹೇಗೆ ಪೊಲೀಸ್ ದೌರ್ಜನ್ಯದ ಎದುರು ಅಸಹಾಯಕನಾಗಿ ಒಬ್ಬಂಟಿಯಾಗುತ್ತಾನೆ ಎಂಬುದನ್ನು ಯಾರಿಗಾದರೂ ಕಾಡುವಂತೆ ಚಿತ್ರಿಸಲಾಗಿದೆ. ಅಧಿಕಾರಶಾಹಿ, ದಲಿತರನ್ನು ಕಾಣುವ ರೀತಿ, ಅದರಲ್ಲಿ ತಂಗರಾಜು ಅಂತಹವರು ದಾಳವಾಗುವುದು ಈ ಎಲ್ಲಾ ಅಂಶಗಳಿಂದ ಕಥೆ ಕುತೂಹಲವನ್ನು ಉಳಿಸಿಕೊಂಡು ಮುಂದುವರಿಯುತ್ತದೆ. ದೇವಕುಮಾರ್ ಊರಿನ ದೃಶ್ಯಗಳು, ತನ್ನ ಅಣ್ಣ ಕ್ಸೇವಿಯರ್ ಪ್ರೀತಿ, ಅತ್ತಿಗೆಯ ಹತಾಶೆ, ಅಣ್ಣ ಇಬ್ಬರನ್ನೂ ಬ್ಯಾಲೆನ್ಸ್ ಮಾಡಲು ಪ್ರಯತ್ನಿಸುವುದೆಲ್ಲಾ ಕಥೆಗೆ ಇನ್ನಷ್ಟು ತೀವ್ರತೆಯನ್ನು ತಂದುಕೊಡುತ್ತವೆ.

ಸುಮಾರು 15 ನಿಮಿಷಗಳ ಸಣ್ಣ ಅವಧಿಯಲ್ಲಿ ಮೂಡಿ ಬಂದಿದ್ದರೂ, ಅಷ್ಟೇ ಸಶಕ್ತವಾಗಿರುವ ಮೂರನೇ ಎಳೆ, ಪೊಲೀಸ್ ವ್ಯವಸ್ಥೆಯ ಶ್ರೇಣೀಕರಣದ ಸಮಸ್ಯೆ ಕೇವಲ ಆಫೀಸರ್ ರ‍್ಯಾಂಕಿಂಗ್‌ನ ಪ್ರತಿಷ್ಠೆಯಲ್ಲಿ ಮಾತ್ರ ಇರದೆ, ಅದರೊಳಗೆ ಅಸಹ್ಯಕರ ಜಾತಿ ವ್ಯವಸ್ಥೆ ಕೂಡ ಅಂತರ್ಗತವಾಗಿರುವುದನ್ನು ಪರಿಣಾಮಕಾರಿಯಾಗಿ ತೋರಿಸಿ ಮುಖ್ಯ ಕಥೆಗೆ ಜೋಡಿಸಲಾಗಿದೆ. ತಂದೆ ಜಟಕಾ ಗಾಡಿ ಹೊಂದಿದ್ದ ಕಾರಣದಿಂದ ಕುದುರೆ ಓಡಿಸುವುದನ್ನು ಕಲಿತಿರುವ ಶರಣ್ಯ (ಇನೆಯ) ಅಶ್ವಾರೋಹಿ ದಳಕ್ಕೆ ಅರ್ಜಿ ಹಾಕಿದರೂ ಜಾತಿಯ ಕಾರಣಕ್ಕಾಗಿ ಡಿಸಿ ತ್ರಿವೇದಿ ಶರ್ಮ (ಕವಿನ್ ಜೇ ಬಾಬು) ಆಕೆಯನ್ನು ತಿರಸ್ಕರಿಸುತ್ತಾನೆ. ‘ಪೊಲೀಸ್ ಇಲಾಖೆ ನನ್ನ ಅಪ್ಪನ ಕಾಲದಿಂದಲೂ ಇರುವುದೇ ಹೀಗೆ, ನಿನ್ನ ಕೋಪವನ್ನು ಕಡಿಮೆ ಮಾಡಿಕೋ’ ಎಂದು ತನ್ನ ಸಹೋದ್ಯೋಗಿ ತಿಳಿಹೇಳಿದರೂ ಕೇಳದೆ, ಡಿಸಿ ಕಾರು ಬರುವಾಗ ಕುದುರೆ ಏರಿ ಆತನ ಕಾರಿನ ಮುಂದೆ ಕುದುರೆಯನ್ನು ಜಿಗಿದು ನಿಲ್ಲಿಸುವ ದೃಶ್ಯ ಮೈನವಿರೇಳಿಸುವಂತಿದೆ. ಘನತೆಯ ಪ್ರತೀಕವಾಗಿದೆ. ನಂತರ ಅದು ಡಿಸಿಯ ಕ್ರೌರ್ಯಕ್ಕೆ ಕಾರಣವಾಗುತ್ತದೆ.

ಹೀಗೆ ಜಾತಿಯ ಕಾರಣದಿಂದ, ಅಧಿಕಾರದ ಮದದ ಕಾರಣದಿಂದ, ಸಾಮಾನ್ಯರ ಶೋಷಣೆಗೆ ನಿಂತು ಅಂತರಂಗ ಶಿಥಿಲವಾಗಿರುವ ಪೊಲೀಸ್ ವ್ಯವಸ್ಥೆಗೆ ಅಗತ್ಯವಿರುವ ಚಿಕಿತ್ಸೆಯನ್ನು ಮನಗಾಣಿಸಲೇನೋ ಎಂಬಂತೆ ಬಹಳ ‘ಕ್ರಿಟಿಕಲ್’ ಆದ ಸಮಯದಲ್ಲಿ ಜಾಕೋಬ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ತಂಗರಾಜು ಮಗನಿಗೆ ಊಟಕೊಡಲು ಹೆಂಡತಿಯ ಜೊತೆಗೆ ಶಾಲೆಗೆ ಹೋದಾಗ ಮಗ ಅಸಹನೆಯಿಂದ ಇವರನ್ನು ಏಕೆ ಕರೆದುಕೊಂಡು ಬಂದೆ ಎನ್ನುವ ದೃಶ್ಯ, ತಂಗರಾಜುವಿನ ಪಶ್ಚಾತಾಪವನ್ನು ತೋರಿಸಲು ಮಾಡಿದ್ದರೂ, ಇಡೀ ಸಿನಿಮಾದಲ್ಲಿ ಇದೊಂದೆ ಬಹಳ ಕ್ಲೀಷೆಯಾದ ಮತ್ತು ವೀಕ್ ಆದ ದೃಶ್ಯ ಅನ್ನಿಸುವುದು. ಅದೊಂದನ್ನು ಬಿಟ್ಟರೆ ಪ್ರತಿ ದೃಶ್ಯವನ್ನೂ, ಪ್ರತಿ ಸಂಭಾಷಣೆಯನ್ನು ಸಮಚಿತ್ತದಿಂದ ಬರೆದು, ನೋಡುಗನ ಮನಸ್ಸಿನೊಳಗೆ ನಿಧಾನಕ್ಕೆ ಇಳಿಯುವಂತೆ ಚಿತ್ರೀಕರಿಸುವ ಬಗೆ ಅಪ್ಯಾಯಮಾನವಾಗಿದೆ. ಜೈಲಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿರುವ ರಾಜನ ಪಾತ್ರ (ಹಿಂದೆ ಸಣ್ಣಪುಟ್ಟ ಕಳ್ಳತನ ಮಾಡಿ ಬದುಕುತ್ತಿದ್ದ) ಕೂಡ ಇಡೀ ಸಿನಿಮಾಕ್ಕೆ ಮುಖ್ಯವಾಗುತ್ತದೆ. ಸಿನಿಮಾ ನೋಡುಗರ ಅಂತಃಕರಣವನ್ನು ಬಡಿದೆಬ್ಬಿಸಿ ಇಡೀ ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕಿರುವ, ಸಾಮಾನ್ಯ ಜನರನ್ನು ಪ್ರೀತಿಯಿಂದ ಕಾಣಬೇಕಿರುವೆಡೆಗೆ ಕೆಲಸ ಮಾಡಲು ಪ್ರೇರೇಪಿಸುತ್ತದೆ.

ಕೊನೆಗೆ ಒಂದು ದುರಂತದ ಅಂತ್ಯವಿದ್ದರೂ, ಸಿನಿಮಾದ ಮೊದಲ ದೃಶ್ಯದಲ್ಲಿ ತಂಗರಾಜುವಿನ ಸಹಾಯಕನಾಗಿ ಪೊಲೀಸ್ ಠಾಣೆ ಸೇರಿಕೊಳ್ಳುವ ಅರಿವು (ದಿಲೀಪ್), ಕಟ್ಟಕಡೆಯ ದೃಶ್ಯದಲ್ಲಿ ತಂಗರಾಜುವಿನ ಯೂನಿಯನ್ ಪ್ರಕರಣವನ್ನು ಪ್ರತಿನಿಧಿಸಲು ಕೋರ್ಟ್‌ಗೆ ಹೋಗುವುದರಿಂದ ಪಾಸಿಟಿವ್ ನೋಟ್‌ನಲ್ಲಿ ಮುಗಿಯುತ್ತದೆೆ. ನಮ್ಮ ದಿನನಿತ್ಯದ ಜೀವನವನ್ನು ಬಾಧಿಸುವ ವ್ಯವಸ್ಥೆಗಳ ಜೊತೆಗೆ ಕೇವಲ ಹೊಂದಾಣಿಕೆ-ರಾಜಿ ಮಾಡಿಕೊಂಡಿರಷ್ಟೇ ಸಾಲದು, ಆ ವ್ಯವಸ್ಥೆಯ ಅನ್ಯಾಯಗಳ ಎದುರು ಹೋರಾಡಬೇಕಾದ ಅಗತ್ಯದ ಅರಿವನ್ನು ಬಡಿದೆಬ್ಬಿಸುವ ರೀತಿಯಲ್ಲಿ ಆ ದೃಶ್ಯ ಭಾಸವಾಗುತ್ತದೆ.

– ಗುರುಪ್ರಸಾದ್ ಡಿ ಎನ್
ನ್ಯಾಯಪಥ-ನಾನುಗೌರಿ ಸಂಪಾದಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...