ಅತ್ಯಾಚಾರ ಮತ್ತು ಮಹಿಳೆಯರ ಮೆಲಿನ ಹಿಂಸೆ ಪ್ರಕರಣಗಳು ಉತ್ತರಪ್ರದೇಶದಲ್ಲಿ ಮತ್ತೆ ಮತ್ತೆ ವರದಿಯಾಗುತ್ತಲೇ ಇವೆ. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ಮತ್ತೊಂದು ಅಮಾನುಷ ಘಟನೆ ಜರುಗಿದೆ. ರಾಜ್ಯದ ಬರಾಬಂಕಿ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಪೂರ್ವಾಂಚಲ್ ಎಕ್ಸ್ಪ್ರೆಸ್ ಹೆದ್ದಾರಿ ಬಳಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಶನಿವಾರ(ನ.21) ರಾತ್ರಿ ಸುಬೇಹಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ 19 ವರ್ಷದ ದಲಿತ ಹುಡುಗಿ ಬಹಿರ್ದೆಸೆಗೆಂದು ಹೊಲಕ್ಕೆ ಹೋಗುವ ಸಂದರ್ಭದಲ್ಲಿ, ದಾರಿಯಲ್ಲಿ ಮೊದಲೇ ಅಡಗಿಕುಳಿತಿದ್ದ ಆರೋಪಿಗಳು ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಆರೀಪ್ ಮತ್ತು ಮುದಾಸೀರ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾದ ನಂತರ ಮನೆ ತಲುಪಿದ ಸಂತ್ರಸ್ತ ಯುವತಿ, ಘಟನೆಯ ಬಗ್ಗೆ ಕುಟುಂಬಕ್ಕೆ ತಿಳಿಸಿದ್ದಾಳೆ. ನಂತರ, ಭಾನುವಾರ ಬೆಳಿಗ್ಗೆ ಸಂತ್ರಸ್ತೆ ತನ್ನ ಸಹೋದರನೊಂದಿಗೆ ಸುಬೆಹಾ ಪೊಲೀಸ್ ಠಾಣೆಗೆ ತಲುಪಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಭೂತ ಬಿಡಿಸುವ ನೆಪದಲ್ಲಿ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ!
ಸಂತ್ರಸ್ತೆ ಮತ್ತು ಸಂತ್ರಸ್ತೆಯ ಸಹೋದರನ ದೂರಿನ ಮೇಲೆ ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು, ಯುವತಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸ್ ಠಾಣೆ ಮುಖ್ಯಸ್ಥ ಸಂತೋಷ್ ಕುಮಾರ್ ತಿಳಿಸಿದ್ದಾರೆ.
“ಆರೋಪಿ ಯುವಕರು ಸುಬೇಹಾ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇ ನಿರ್ಮಾಣ ಕಾರ್ಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆರಿಫ್ ಚಾಲಕರಾಗಿದ್ದರೆ, ಮುದಾಸೀರ್ ಅವರ ಸಹಾಯಕರಾಗಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರತರಹದ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಆದರೂ ಕೂಡ ಸರ್ಕಾರ ಮಹಿಳೆಯರ ಸುರಕ್ಷತೆ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದಾರೆ.
ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಘಟನೆಗಳು ವರದಿಯಾಗುತ್ತಲೇ ಇವೆ. ಅಲ್ಲಿ ಮಹಿಳೆಯರಿಗೆ ಸುರಕ್ಷತೆ ಎಂಬುದು ಕನಸಿನ ಮಾತಾಗಿದೆ. ರಾಜ್ಯದ ಹಲವು ಕುಟುಂಬಗಳಿಗೆ ಶೌಚಾಲಯಗಳು ಇಲ್ಲ. ಎಲ್ಲ ಹಳ್ಳಿ ಹಳ್ಳಿಗಳಲ್ಲೂ ಬಯಲು ಶೌಚಾಲಯಗಳು ನಿರ್ಮಾಣವಾಗಿವೆ. ಈ ಕುರಿತು ಕ್ರಮ ಕೈಗೊಳ್ಳದ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.