ಬೆಂಗಳೂರಿನಿಂದ ತನ್ನ ಊರಾದ ಸಿಂಧನೂರಿಗೆ ಕಾಲ್ನಡಿಗೆಯಿಂದ ಹೊರಟು ಬಳಲಿ ಮೃತಪಟ್ಟ ಕಾರ್ಮಿಕ ಮಹಿಳೆ ಗಂಗಮ್ಮ ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದ್ವನಿಯೆತ್ತಿದ್ದಾರೆ.
ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಗಂಗಮ್ಮ ತನ್ನ ಊರಾದ ರಾಯಚೂರಿನ ಸಿಂಧನೂರಿಗೆ ಹೊರಟಿದ್ದರು. ಇವರನ್ನು ದುಡಿಸುತ್ತಿದ್ದ ಗುತ್ತಿಗೆಗಾರ ಅವರು ದುಡಿದ ಹಣವನ್ನು ಕೊಡದ ಹಿನ್ನಲೆಯಲ್ಲಿ ಅವರು ನಡೆದುಕೊಂಡೆ ಅನ್ನ ನೀರಿಲ್ಲದೆ ಮೂರು ದಿನಗಳ ಕಾಲ ತನ್ನ ಊರಿಗೆ ಹೊರಟಿದ್ದ ವೇಳೆ ಅವರು ಸಾವನಪ್ಪಿದ್ದಾರೆ.
ಈ ಕುರಿತು ಕುಮಾರಸ್ವಾಮಿ ಅವರು “ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು” ಎಂದು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?
“ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ. ಈ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ, ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ 8000 ಕೋಟಿ ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಗಂಗಮ್ಮರನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್ನಲ್ಲಿ ಇರಿಸಿತ್ತಂತೆ. ಕ್ಯಾಂಪ್ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
“ಲಾಕ್ಡೌನ್ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು” ಎಂದು ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
“ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಬಾಧಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಹೆಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.


