Homeಮುಖಪುಟಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು...

ಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು ಸರಿಯೆ?

- Advertisement -

(ಗಗವೃವಾ ಸಿನಿಮಾದಲ್ಲಿನ ಮಹದೇಶ್ವರ ಸ್ವಾಮಿಯ ಹಾಡು ಬಳಸಿರುವ ಹಿನ್ನೆಲೆ ಕುರಿತು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಬರೆದ ಬರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ)

- Advertisement -

ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಪುರಾಣದ ಐತಿಹ್ಯಗಳನ್ನು ಹೋಲಿಸಿ ಚಿತ್ರಕಥೆಯನ್ನು ರೂಪಿಸಲಾಗಿದೆ ಎಂದು ಕೇಳಿ ತಿಳಿದಿದ್ದೇವೆ. ಸಿನೆಮಾ ರಂಗಕ್ಕೆ ಇದೇನೂ ಹೊಸತಲ್ಲ. ಆದರೆ ಈ ಸಿನೆಮಾದ ಒಂದು ಕೊಲೆಯ ನಂತರದ ದೃಶ್ಯದ ಹಿನ್ನೆಲೆಯಾಗಿ ಕೊಲೆಗಾರನು ನರ್ತಿಸುವಾಗ “ಸೋಜುಗಾದ ಸೂಜು ಮಲ್ಲಿಗೆ” ಎಂಬ ಮಲೈ ಮಹದೇಶ್ವರ ಸ್ವಾಮಿ ಕುರಿತಾದ ಜಾನಪದ ಗೀತೆಯನ್ನು ಹೊಸದಾಗಿ ಸಂಯೋಜಿಸಿದ ಸಂಗೀತದ ಮೂಲಕ ಹಾಡಿಸಲಾಗಿದೆ.

ಯಾವುದೇ ಕಲಾತ್ಮಕ ಕೃತಿಗಳ ಹಾಗೆಯೇ ಸಿನೆಮಾ ರಂಗವೂ ರಚನಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ನಡೆದುಕೊಳ್ಳಬೇಕಾಗಿರುವುದು ಈ ಕಾಲದ ಅಗತ್ಯ. ಹೀಗೆ ಮಾಡುವಾಗ ಸೃಜನಶೀಲತೆಯು ಹಲವು ರೂಪಗಳನ್ನು ಪಡೆದುಕೊಳ್ಳುತ್ತದೆ. ಇದಕ್ಕೆ ಯಾರ ವಿರೋಧವೂ ಇರಕೂಡದು.

ಆದರೆ ಪ್ರಸ್ತುತ ಪ್ರಕರಣದಲ್ಲಿ ಸಿನೆಮಾ ನಿರ್ದೇಶಕರು ಮಂಗಳೂರಿನ ಸುತ್ತಮುತ್ತಲ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಒಂದು ಕ್ರೌರ್ಯದತ್ತ ವಾಲುವ ಕಥಾಹಂದರವನ್ನು ರೂಪಿಸಿ ಅದರಲ್ಲಿ ನಡೆಯುವ ಕೊಲೆಯೆಂಬ ಹೀನಕೃತ್ಯ ಮಾಡಿ ಸಂಭ್ರಮಿಸುವ ದೃಶ್ಯದ ಹಿನ್ನೆಲೆಯಾಗಿ ಮಾದೇವನನ್ನು ಪೂಜಿಸುವ, ಆರಾಧಿಸುವ ಜಾನಪದ ಹಾಡನ್ನು ಬಳಸಿರುವುದನ್ನು ನೋಡಿದಾಗ ನಿರ್ದೇಶಕರ ಮಾರುಕಟ್ಟೆ ಆಧಾರಿತ ಚಿಂತನೆಯ ಬಗ್ಗೆ ಅನುಕಂಪ ಮೂಡುತ್ತದೆ. ಮಂಗಳೂರಿನ ದಟ್ಟ ಅನುಭವ ಕೊಡುವ ಚಿತ್ರದಲ್ಲಿ ಮೈಸೂರು ಸೀಮೆಯಲ್ಲಿ ಅತಿಹೆಚ್ಚು ಜನಪ್ರಿಯವಾಗಿರುವ ಮಾದೇವನ ಸ್ತುತಿಸುವ, ಈಗ ಹಠಾತ್ತಾಗಿ ಜನಪ್ರಿಯವಾಗಿರುವ ಗೀತೆಯನ್ನು ಯಾವುದೇ ಕಾರಣವಿಲ್ಲದೆ ಸೃಜನಶೀಲತೆ ಎಂಬ ಕಾರಣ ನೀಡಿ ಬಳಸಿರುವುದು ಏಕೆ ಎಂಬುದನ್ನು ಕನ್ನಡ ನಾಡಿನ ಜನರೇ ನಿರ್ಧರಿಸಬೇಕು. ಮಂಗಳೂರು ಸೀಮೆಯಲ್ಲೂ ನೂರಾರು ಶೈವ ಸ್ಥಾನಗಳಿವೆ; ಶಿವನನ್ನು ಸ್ತುತಿಸುವ ನೂರಾರು ಜನಪ್ರಿಯ ಹಾಡುಗಳಿವೆ. ಹೀಗಿದ್ದೂ ದೂರದ ಮಲೈ ಮಹದೇಶ್ವರನ ಕುರಿತ ಹಾಡನ್ನು ಬಳಸುವ ಅನಿವಾರ್ಯತೆ ಅವರಿಗೆ ಏಕೆ ಬಂತು ಎಂಬುದನ್ನು ಕರ್ನಾಟಕದ ಜನತೆಯೇ ಪ್ರಶ್ನಿಸಿ ಉತ್ತರ ಕಂಡುಕೊಳ್ಳಬೇಕಿದೆ.

ಈ ಹಾಡಲ್ಲದೆ ದಾಸಶ್ರೇಷ್ಠ ಪುರಂದರದಾಸರ “ಚಂದ್ರಚೂಡ ಶಿವಶಂಕರ ಪಾರ್ವತಿ” ಹಾಡನ್ನೂ ಇದೇ ಸಿನೆಮಾದಲ್ಲಿ ಇನ್ನೊಂದು ಸನ್ನಿವೇಶಕ್ಕೆ ಬಳಸಿಕೊಂಡಿದ್ದಾರೆ ಎಂಬುದನ್ನೂ ತಿಳಿದಿದ್ದೇವೆ. ಪುರಂದರ ದಾಸರಾಗಲೀ, ಮನುಷ್ಯತ್ವದಿಂದ ದೈವತ್ವಕ್ಕೇರಿದ ಮಹಾಮಹಿಮ ಮಲೈ ಮಹದೇಶ್ವರ ಸ್ವಾಮಿಗಳಾಗಲೀ, ಭಕ್ತಿ ಪರವಶತೆಯಿಂದ ಪದ್ಯಗಳನ್ನು ರಚಿಸಿದ ಜನಪದರಾಗಲೀ ಈ ಹಾಡುಗಳ ಮೇಲೆ ಯಾವ ಹಕ್ಕುಗಳನ್ನೂ ಇಟ್ಟುಕೊಂಡಿಲ್ಲ. ತಮ್ಮ ಹಾಡುಗಳೆಲ್ಲವೂ ಸಮಾಜದ ಅಭ್ಯುದಯಕ್ಕಾಗಿ ಎಂದೇ ಅವರೆಲ್ಲ ಭಾವಿಸಿದ್ದರು; ಇಂದೇನಾದರೂ ಈ ಹಾಡುಗಳು ಕೃತಿಸ್ವಾಮ್ಯದಡಿ ಇದ್ದ ಪಕ್ಷದಲ್ಲಿ ಏನಾಗುತ್ತಿತ್ತು ಎಂಬುದನ್ನೂ ಈ ನಾಡಿನ ಚಿಂತಕರು, ಸಿನೆಮಾ ರಂಗದ ಅನುಭವಿಗಳು ಯೋಚಿಸಬೇಕಲ್ಲವೆ? ಶತಮಾನಗಳ ಕಾಲ ಉಳ್ಳವರು – ಬಡವರು ಎಂಬ ಭೇದ ಭಾವವಿಲ್ಲದೆ ಈ ಹಾಡುಗಳನ್ನು ಭಜಿಸುತ್ತ ಶಿವನ ಸಾನಿಧ್ಯ ಬಯಸುತ್ತ ಮೈಲುಗಟ್ಟಲೆ ಪಾದಯಾತ್ರೆ ಮಾಡಿ ಬರುವ ಅಸಂಖ್ಯ ಭಕ್ತರು ಮಹದೇಶ್ವರ ಬೆಟ್ಟವನ್ನು ಹತ್ತುವುದು ತಮ್ಮಲ್ಲಿರುವ ಎಲ್ಲ ಬಗೆಯ ಅರಿ ಷಡ್ವರ್ಗಗಳು ನಾಶವಾಗಲಿ ಎಂದೇ ಹೊರತು ಕ್ರೌರ್ಯದ ಮಾನಸಿಕತೆ ಬೆಳೆಯಲಿ ಎಂದು ಅಲ್ಲವೇ ಅಲ್ಲ.

ಶತಮಾನಗಳ ಕಾಲ ಬಾಳಿದ ಈ ಹಾಡುಗಳು, ಭಗವದ್ಗೀತೆ, ಶಿವಶರಣರ ವಚನಗಳು ಮುಂತಾದ ಸಂತ ಸಾಹಿತ್ಯ, ಜನಪದ ಸಾಹಿತ್ಯದ ಕೃತಿಗಳು ಈ ಎಲ್ಲ ಘಟನೆಗಳನ್ನೂ ಮೀರಿ ಇನ್ನೂ ನೂರಾರು ವರ್ಷಗಳ ಕಾಲ ಜನರ ಮನದಾಳದಲ್ಲಿ ಇದ್ದೇ ಇರುತ್ತವೆ. ಅದರೆ ಡಿಜಿಟಲ್‌ ವೇದಿಕೆಗಳಲ್ಲಿ ಹೆಚ್ಚು ಕಾಲ ಬಾಳುವ ಸಿನೆಮಾಗಳಲ್ಲಿ ಹೀಗೆ ಸಂಬಂಧವಿಲ್ಲದೆ, ಸತರ್ಕವಿಲ್ಲದೆ ಸೃಜನಶೀಲತೆಯ ಹೆಸರಿನಲ್ಲಿ ಹಾಡುಗಳನ್ನು ಬಳಸಿ, ಇನ್ನೊಬ್ಬರು ಹಾಡುವಾಗ ಈ ಕ್ರೌರ್ಯದ ಸನ್ನಿವೇಶಗಳೇ ನೆನಪಾಗುವ ಹಾಗೆ ಮಾಡುವ ಮಾನಸಿಕತೆಗೆ ಏನೆನ್ನಬೇಕು? ಜಾನಪದ, ತಾತ್ವಿಕ ಹಾಡುಗಳ ಸಾಂಸ್ಕೃತಿಕ ಮೌಲ್ಯವನ್ನು ಉಳಿಸಿ ಬೆಳೆಸುವುದು ಮುಖ್ಯವೋ, ಅವುಗಳನ್ನು ವಾಣಿಜ್ಯ ಉದ್ದೇಶದ ರೂಪಕಗಳನ್ನಾಗಿ ರೂಪಾಂತರಿಸುವುದು ಮುಖ್ಯವೋ? ಇದನ್ನೂ ಜನರೇ ತೀರ್ಮಾನಿಸಬೇಕು. ಸೃಜನಶೀಲತೆ ಎಂಬುದು ಸಾಂಸ್ಕೃತಿಕ ಪತನಕ್ಕೆ ಕಾರಣವಾಗದೆ, ಸಮಾಜದ ಉನ್ನತಿಗೆ ಬಳಕೆಯಾಗಲಿ ಎಂದಷ್ಟೆ ಅಂತಿಮವಾಗಿ ಹೇಳಬಹುದಾದ ಮಾತು.

ಅದ್ಭುತ ಪ್ರತಿಭೆಗಳ ಸಂಗಮ ಎಂದೇ ಸುದ್ದಿಯಾಗಿರುವ ಸಿನೆಮಾ ನಿರ್ಮಾಣ ತಂಡದ ಯಾರೊಬ್ಬರ ಕ್ಷಮೆ ಕೇಳಿ ಆಗಬೇಕಾದ್ದೇನೂ ಇಲ್ಲ. ಕ್ಷಮಾಭಾವವು ವ್ಯಕ್ತಿಯ ಅಂತರಂಗದಲ್ಲಿ ಅದಾಗೇ ಮೂಡಬೇಕೇ ವಿನಃ ಯಾವುದೇ ಒತ್ತಡಕ್ಕೆ ಕೃತಕವಾಗಿ ಹುಟ್ಟಬಾರದು. ಆತ್ಮಸಾಕ್ಷಿ ಇದ್ದವರಿಗೆ ಕ್ಷಮೆ ಕೇಳಬೇಕೇ ಬೇಡವೆ ಎಂದು ನಿರ್ಧರಿಸುವುದೂ ಕಷ್ಟವಾಗುವುದಿಲ್ಲ! ಕೊಲೆಗೆ ರೂಪಕವಾಗಿ ದೇವರ ಹಾಡನ್ನು, ದುರ್ಗಾಸ್ತುತಿಯನ್ನು ಬಳಸುವುದು ತುಂಬ ಹಳೆಯ ತಂತ್ರ. ಹಲವು ಟಿವಿ ಸೀರಿಯಲ್‌ಗಳಲ್ಲೂ ಹೀಗೆ ಮಾಡಿದ್ದಾರೆ ಎಂದು ಕೇಳಿದ್ದೇವೆ. ಇಂತಹ ಚರ್ವಿತಚರ್ವಣ ಸಿದ್ಧ ಮಾದರಿಗಳನ್ನು ಮೀರುವ ಸೃಜನಶೀಲತೆ ಇವರಿಗೆಲ್ಲ ಒದಗಲಿ ಎಂದು ಹಾರೈಸುತ್ತೇವೆ. ಶತಮಾನಗಳಿಂದ ಅರಳಿದ ಜನಪದ ಸೊಗಡಿನ ಹಾಡೊಂದರ ಮೌಲ್ಯವನ್ನು, ಅದರಿಂದ ದೊರಕುವ ಅಮೂಲ್ಯ ದೈವಿಕ ರೂಪಕಗಳನ್ನು ಒಂದು ಸಿನೆಮಾದ ವಾಣಿಜ್ಯ ಉದ್ದೇಶದ ರೂಪಕಕ್ಕಾಗಿ ಬಲಿ ಕೊಡುವುದು ಎಷ್ಟು ಸರಿ?

ಮಹದೇಶ್ವರರು ನೈಜ ವ್ಯಕ್ತಿಯಾಗಿದ್ದು ದೈವತ್ವಕ್ಕೆ ಬೆಳೆದವರು. ಅವರು ಜಾತಿ – ಪಂಥ ಭೇದವಿಲ್ಲದೆ ಲಕ್ಷಾಂತರ ಭಕ್ತರನ್ನು ಹೊಂದಿದ್ದಾರೆ. ಅವರು ಸಕಲಜೀವಿಗಳಿಗೂ ಲೇಸನ್ನೇ ಬಯಸುವವರು; ಅಲ್ಪಮತಿಗಳಿಗೆ ಜ್ಞಾನ ನೀಡಿ, ಅಂತಹವರ ಅಪಸವ್ಯಗಳನ್ನು ಕ್ಷಮಿಸಿ ನಸುನಗು ಬೀರಿದ ಮಹಾಯೋಗಿ. ಇಂತಹ ಮಹಾಮಹಿಮರ ಬಗ್ಗೆ ಇದ್ದ ಅದ್ಭುತ ಗೀತೆಯೊಂದನ್ನು ಹಾಡುವಾಗ ಯಾವುದೋ ಲೌಕಿಕ ಜಗತ್ತಿಗೆ ಸೇರಿದ ಹಿಂಸಾತ್ಮಕ ಕಥೆಯೊಳಗಿನ ಕ್ರೌರ್ಯವು ನೆನಪಾಗುವಂತೆ ಮಾಡಿದ ನಿರ್ದೇಶಕರನ್ನೂ ಮಹದೇಶ್ವರರು ಹರಸಲಿ; ಅವರಿಗೆ ಮುಂದೆಂದೂ ಇಂತಹ ಚಿಂತನೆಗಳು ಬರದಂತೆ ಸದ್ಬುದ್ಧಿ ನೀಡಲಿ.

ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು
ಪೀಠಾಧಿಪತಿಗಳು
ಶ್ರೀ ಸಾಲೂರು ಬೃಹನ್ಮಠ
ಶ್ರೀ ಮಲೆ ಮಹದೇಶ್ವರ ಬೆಟ್ಟ


ಇದನ್ನೂ ಓದಿ: ಕಾಣೆಯಾದ ಸಂಕೀರ್ಣತೆ, ವಿವರಗಳ ಕೊರತೆ, ಗ.ಗ.ವೃ.ವಾ.ದಲ್ಲಿ ಹಿಂಸೆಯೇ ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...