Homeಮುಖಪುಟಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು...

ಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು ಸರಿಯೆ?

- Advertisement -

(ಗಗವೃವಾ ಸಿನಿಮಾದಲ್ಲಿನ ಮಹದೇಶ್ವರ ಸ್ವಾಮಿಯ ಹಾಡು ಬಳಸಿರುವ ಹಿನ್ನೆಲೆ ಕುರಿತು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಬರೆದ ಬರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ)

- Advertisement -

ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಪುರಾಣದ ಐತಿಹ್ಯಗಳನ್ನು ಹೋಲಿಸಿ ಚಿತ್ರಕಥೆಯನ್ನು ರೂಪಿಸಲಾಗಿದೆ ಎಂದು ಕೇಳಿ ತಿಳಿದಿದ್ದೇವೆ. ಸಿನೆಮಾ ರಂಗಕ್ಕೆ ಇದೇನೂ ಹೊಸತಲ್ಲ. ಆದರೆ ಈ ಸಿನೆಮಾದ ಒಂದು ಕೊಲೆಯ ನಂತರದ ದೃಶ್ಯದ ಹಿನ್ನೆಲೆಯಾಗಿ ಕೊಲೆಗಾರನು ನರ್ತಿಸುವಾಗ “ಸೋಜುಗಾದ ಸೂಜು ಮಲ್ಲಿಗೆ” ಎಂಬ ಮಲೈ ಮಹದೇಶ್ವರ ಸ್ವಾಮಿ ಕುರಿತಾದ ಜಾನಪದ ಗೀತೆಯನ್ನು ಹೊಸದಾಗಿ ಸಂಯೋಜಿಸಿದ ಸಂಗೀತದ ಮೂಲಕ ಹಾಡಿಸಲಾಗಿದೆ.

ಯಾವುದೇ ಕಲಾತ್ಮಕ ಕೃತಿಗಳ ಹಾಗೆಯೇ ಸಿನೆಮಾ ರಂಗವೂ ರಚನಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ನಡೆದುಕೊಳ್ಳಬೇಕಾಗಿರುವುದು ಈ ಕಾಲದ ಅಗತ್ಯ. ಹೀಗೆ ಮಾಡುವಾಗ ಸೃಜನಶೀಲತೆಯು ಹಲವು ರೂಪಗಳನ್ನು ಪಡೆದುಕೊಳ್ಳುತ್ತದೆ. ಇದಕ್ಕೆ ಯಾರ ವಿರೋಧವೂ ಇರಕೂಡದು.

ಆದರೆ ಪ್ರಸ್ತುತ ಪ್ರಕರಣದಲ್ಲಿ ಸಿನೆಮಾ ನಿರ್ದೇಶಕರು ಮಂಗಳೂರಿನ ಸುತ್ತಮುತ್ತಲ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಒಂದು ಕ್ರೌರ್ಯದತ್ತ ವಾಲುವ ಕಥಾಹಂದರವನ್ನು ರೂಪಿಸಿ ಅದರಲ್ಲಿ ನಡೆಯುವ ಕೊಲೆಯೆಂಬ ಹೀನಕೃತ್ಯ ಮಾಡಿ ಸಂಭ್ರಮಿಸುವ ದೃಶ್ಯದ ಹಿನ್ನೆಲೆಯಾಗಿ ಮಾದೇವನನ್ನು ಪೂಜಿಸುವ, ಆರಾಧಿಸುವ ಜಾನಪದ ಹಾಡನ್ನು ಬಳಸಿರುವುದನ್ನು ನೋಡಿದಾಗ ನಿರ್ದೇಶಕರ ಮಾರುಕಟ್ಟೆ ಆಧಾರಿತ ಚಿಂತನೆಯ ಬಗ್ಗೆ ಅನುಕಂಪ ಮೂಡುತ್ತದೆ. ಮಂಗಳೂರಿನ ದಟ್ಟ ಅನುಭವ ಕೊಡುವ ಚಿತ್ರದಲ್ಲಿ ಮೈಸೂರು ಸೀಮೆಯಲ್ಲಿ ಅತಿಹೆಚ್ಚು ಜನಪ್ರಿಯವಾಗಿರುವ ಮಾದೇವನ ಸ್ತುತಿಸುವ, ಈಗ ಹಠಾತ್ತಾಗಿ ಜನಪ್ರಿಯವಾಗಿರುವ ಗೀತೆಯನ್ನು ಯಾವುದೇ ಕಾರಣವಿಲ್ಲದೆ ಸೃಜನಶೀಲತೆ ಎಂಬ ಕಾರಣ ನೀಡಿ ಬಳಸಿರುವುದು ಏಕೆ ಎಂಬುದನ್ನು ಕನ್ನಡ ನಾಡಿನ ಜನರೇ ನಿರ್ಧರಿಸಬೇಕು. ಮಂಗಳೂರು ಸೀಮೆಯಲ್ಲೂ ನೂರಾರು ಶೈವ ಸ್ಥಾನಗಳಿವೆ; ಶಿವನನ್ನು ಸ್ತುತಿಸುವ ನೂರಾರು ಜನಪ್ರಿಯ ಹಾಡುಗಳಿವೆ. ಹೀಗಿದ್ದೂ ದೂರದ ಮಲೈ ಮಹದೇಶ್ವರನ ಕುರಿತ ಹಾಡನ್ನು ಬಳಸುವ ಅನಿವಾರ್ಯತೆ ಅವರಿಗೆ ಏಕೆ ಬಂತು ಎಂಬುದನ್ನು ಕರ್ನಾಟಕದ ಜನತೆಯೇ ಪ್ರಶ್ನಿಸಿ ಉತ್ತರ ಕಂಡುಕೊಳ್ಳಬೇಕಿದೆ.

ಈ ಹಾಡಲ್ಲದೆ ದಾಸಶ್ರೇಷ್ಠ ಪುರಂದರದಾಸರ “ಚಂದ್ರಚೂಡ ಶಿವಶಂಕರ ಪಾರ್ವತಿ” ಹಾಡನ್ನೂ ಇದೇ ಸಿನೆಮಾದಲ್ಲಿ ಇನ್ನೊಂದು ಸನ್ನಿವೇಶಕ್ಕೆ ಬಳಸಿಕೊಂಡಿದ್ದಾರೆ ಎಂಬುದನ್ನೂ ತಿಳಿದಿದ್ದೇವೆ. ಪುರಂದರ ದಾಸರಾಗಲೀ, ಮನುಷ್ಯತ್ವದಿಂದ ದೈವತ್ವಕ್ಕೇರಿದ ಮಹಾಮಹಿಮ ಮಲೈ ಮಹದೇಶ್ವರ ಸ್ವಾಮಿಗಳಾಗಲೀ, ಭಕ್ತಿ ಪರವಶತೆಯಿಂದ ಪದ್ಯಗಳನ್ನು ರಚಿಸಿದ ಜನಪದರಾಗಲೀ ಈ ಹಾಡುಗಳ ಮೇಲೆ ಯಾವ ಹಕ್ಕುಗಳನ್ನೂ ಇಟ್ಟುಕೊಂಡಿಲ್ಲ. ತಮ್ಮ ಹಾಡುಗಳೆಲ್ಲವೂ ಸಮಾಜದ ಅಭ್ಯುದಯಕ್ಕಾಗಿ ಎಂದೇ ಅವರೆಲ್ಲ ಭಾವಿಸಿದ್ದರು; ಇಂದೇನಾದರೂ ಈ ಹಾಡುಗಳು ಕೃತಿಸ್ವಾಮ್ಯದಡಿ ಇದ್ದ ಪಕ್ಷದಲ್ಲಿ ಏನಾಗುತ್ತಿತ್ತು ಎಂಬುದನ್ನೂ ಈ ನಾಡಿನ ಚಿಂತಕರು, ಸಿನೆಮಾ ರಂಗದ ಅನುಭವಿಗಳು ಯೋಚಿಸಬೇಕಲ್ಲವೆ? ಶತಮಾನಗಳ ಕಾಲ ಉಳ್ಳವರು – ಬಡವರು ಎಂಬ ಭೇದ ಭಾವವಿಲ್ಲದೆ ಈ ಹಾಡುಗಳನ್ನು ಭಜಿಸುತ್ತ ಶಿವನ ಸಾನಿಧ್ಯ ಬಯಸುತ್ತ ಮೈಲುಗಟ್ಟಲೆ ಪಾದಯಾತ್ರೆ ಮಾಡಿ ಬರುವ ಅಸಂಖ್ಯ ಭಕ್ತರು ಮಹದೇಶ್ವರ ಬೆಟ್ಟವನ್ನು ಹತ್ತುವುದು ತಮ್ಮಲ್ಲಿರುವ ಎಲ್ಲ ಬಗೆಯ ಅರಿ ಷಡ್ವರ್ಗಗಳು ನಾಶವಾಗಲಿ ಎಂದೇ ಹೊರತು ಕ್ರೌರ್ಯದ ಮಾನಸಿಕತೆ ಬೆಳೆಯಲಿ ಎಂದು ಅಲ್ಲವೇ ಅಲ್ಲ.

ಶತಮಾನಗಳ ಕಾಲ ಬಾಳಿದ ಈ ಹಾಡುಗಳು, ಭಗವದ್ಗೀತೆ, ಶಿವಶರಣರ ವಚನಗಳು ಮುಂತಾದ ಸಂತ ಸಾಹಿತ್ಯ, ಜನಪದ ಸಾಹಿತ್ಯದ ಕೃತಿಗಳು ಈ ಎಲ್ಲ ಘಟನೆಗಳನ್ನೂ ಮೀರಿ ಇನ್ನೂ ನೂರಾರು ವರ್ಷಗಳ ಕಾಲ ಜನರ ಮನದಾಳದಲ್ಲಿ ಇದ್ದೇ ಇರುತ್ತವೆ. ಅದರೆ ಡಿಜಿಟಲ್‌ ವೇದಿಕೆಗಳಲ್ಲಿ ಹೆಚ್ಚು ಕಾಲ ಬಾಳುವ ಸಿನೆಮಾಗಳಲ್ಲಿ ಹೀಗೆ ಸಂಬಂಧವಿಲ್ಲದೆ, ಸತರ್ಕವಿಲ್ಲದೆ ಸೃಜನಶೀಲತೆಯ ಹೆಸರಿನಲ್ಲಿ ಹಾಡುಗಳನ್ನು ಬಳಸಿ, ಇನ್ನೊಬ್ಬರು ಹಾಡುವಾಗ ಈ ಕ್ರೌರ್ಯದ ಸನ್ನಿವೇಶಗಳೇ ನೆನಪಾಗುವ ಹಾಗೆ ಮಾಡುವ ಮಾನಸಿಕತೆಗೆ ಏನೆನ್ನಬೇಕು? ಜಾನಪದ, ತಾತ್ವಿಕ ಹಾಡುಗಳ ಸಾಂಸ್ಕೃತಿಕ ಮೌಲ್ಯವನ್ನು ಉಳಿಸಿ ಬೆಳೆಸುವುದು ಮುಖ್ಯವೋ, ಅವುಗಳನ್ನು ವಾಣಿಜ್ಯ ಉದ್ದೇಶದ ರೂಪಕಗಳನ್ನಾಗಿ ರೂಪಾಂತರಿಸುವುದು ಮುಖ್ಯವೋ? ಇದನ್ನೂ ಜನರೇ ತೀರ್ಮಾನಿಸಬೇಕು. ಸೃಜನಶೀಲತೆ ಎಂಬುದು ಸಾಂಸ್ಕೃತಿಕ ಪತನಕ್ಕೆ ಕಾರಣವಾಗದೆ, ಸಮಾಜದ ಉನ್ನತಿಗೆ ಬಳಕೆಯಾಗಲಿ ಎಂದಷ್ಟೆ ಅಂತಿಮವಾಗಿ ಹೇಳಬಹುದಾದ ಮಾತು.

ಅದ್ಭುತ ಪ್ರತಿಭೆಗಳ ಸಂಗಮ ಎಂದೇ ಸುದ್ದಿಯಾಗಿರುವ ಸಿನೆಮಾ ನಿರ್ಮಾಣ ತಂಡದ ಯಾರೊಬ್ಬರ ಕ್ಷಮೆ ಕೇಳಿ ಆಗಬೇಕಾದ್ದೇನೂ ಇಲ್ಲ. ಕ್ಷಮಾಭಾವವು ವ್ಯಕ್ತಿಯ ಅಂತರಂಗದಲ್ಲಿ ಅದಾಗೇ ಮೂಡಬೇಕೇ ವಿನಃ ಯಾವುದೇ ಒತ್ತಡಕ್ಕೆ ಕೃತಕವಾಗಿ ಹುಟ್ಟಬಾರದು. ಆತ್ಮಸಾಕ್ಷಿ ಇದ್ದವರಿಗೆ ಕ್ಷಮೆ ಕೇಳಬೇಕೇ ಬೇಡವೆ ಎಂದು ನಿರ್ಧರಿಸುವುದೂ ಕಷ್ಟವಾಗುವುದಿಲ್ಲ! ಕೊಲೆಗೆ ರೂಪಕವಾಗಿ ದೇವರ ಹಾಡನ್ನು, ದುರ್ಗಾಸ್ತುತಿಯನ್ನು ಬಳಸುವುದು ತುಂಬ ಹಳೆಯ ತಂತ್ರ. ಹಲವು ಟಿವಿ ಸೀರಿಯಲ್‌ಗಳಲ್ಲೂ ಹೀಗೆ ಮಾಡಿದ್ದಾರೆ ಎಂದು ಕೇಳಿದ್ದೇವೆ. ಇಂತಹ ಚರ್ವಿತಚರ್ವಣ ಸಿದ್ಧ ಮಾದರಿಗಳನ್ನು ಮೀರುವ ಸೃಜನಶೀಲತೆ ಇವರಿಗೆಲ್ಲ ಒದಗಲಿ ಎಂದು ಹಾರೈಸುತ್ತೇವೆ. ಶತಮಾನಗಳಿಂದ ಅರಳಿದ ಜನಪದ ಸೊಗಡಿನ ಹಾಡೊಂದರ ಮೌಲ್ಯವನ್ನು, ಅದರಿಂದ ದೊರಕುವ ಅಮೂಲ್ಯ ದೈವಿಕ ರೂಪಕಗಳನ್ನು ಒಂದು ಸಿನೆಮಾದ ವಾಣಿಜ್ಯ ಉದ್ದೇಶದ ರೂಪಕಕ್ಕಾಗಿ ಬಲಿ ಕೊಡುವುದು ಎಷ್ಟು ಸರಿ?

ಮಹದೇಶ್ವರರು ನೈಜ ವ್ಯಕ್ತಿಯಾಗಿದ್ದು ದೈವತ್ವಕ್ಕೆ ಬೆಳೆದವರು. ಅವರು ಜಾತಿ – ಪಂಥ ಭೇದವಿಲ್ಲದೆ ಲಕ್ಷಾಂತರ ಭಕ್ತರನ್ನು ಹೊಂದಿದ್ದಾರೆ. ಅವರು ಸಕಲಜೀವಿಗಳಿಗೂ ಲೇಸನ್ನೇ ಬಯಸುವವರು; ಅಲ್ಪಮತಿಗಳಿಗೆ ಜ್ಞಾನ ನೀಡಿ, ಅಂತಹವರ ಅಪಸವ್ಯಗಳನ್ನು ಕ್ಷಮಿಸಿ ನಸುನಗು ಬೀರಿದ ಮಹಾಯೋಗಿ. ಇಂತಹ ಮಹಾಮಹಿಮರ ಬಗ್ಗೆ ಇದ್ದ ಅದ್ಭುತ ಗೀತೆಯೊಂದನ್ನು ಹಾಡುವಾಗ ಯಾವುದೋ ಲೌಕಿಕ ಜಗತ್ತಿಗೆ ಸೇರಿದ ಹಿಂಸಾತ್ಮಕ ಕಥೆಯೊಳಗಿನ ಕ್ರೌರ್ಯವು ನೆನಪಾಗುವಂತೆ ಮಾಡಿದ ನಿರ್ದೇಶಕರನ್ನೂ ಮಹದೇಶ್ವರರು ಹರಸಲಿ; ಅವರಿಗೆ ಮುಂದೆಂದೂ ಇಂತಹ ಚಿಂತನೆಗಳು ಬರದಂತೆ ಸದ್ಬುದ್ಧಿ ನೀಡಲಿ.

ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು
ಪೀಠಾಧಿಪತಿಗಳು
ಶ್ರೀ ಸಾಲೂರು ಬೃಹನ್ಮಠ
ಶ್ರೀ ಮಲೆ ಮಹದೇಶ್ವರ ಬೆಟ್ಟ


ಇದನ್ನೂ ಓದಿ: ಕಾಣೆಯಾದ ಸಂಕೀರ್ಣತೆ, ವಿವರಗಳ ಕೊರತೆ, ಗ.ಗ.ವೃ.ವಾ.ದಲ್ಲಿ ಹಿಂಸೆಯೇ ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....