ಹಲವು ತಿಂಗಳಿನಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಖ್ಯಾತ ನಟಿ ಲೀಲಾವತಿ (86) ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹಲವು ತಿಂಗಳಿನಿಂದ ಲೀಲಾವತಿಯವರ ಆರೋಗ್ಯ ಕ್ಷೀಣಿಸಿತ್ತು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಟ ಶಿವರಾಜ್ಕುಮಾರ್ ಸೇರಿದಂತೆ ಚಿತ್ರರಂಗದ ಸಹೋದ್ಯೋಗಿಗಳು ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದರಿಂದ ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂಧಿಸಿದ ಅವರು ಕೊನೆಯುಸಿರೆಳೆದಿದ್ದಾರೆ.
ತೋಟದ ಮನೆಯಲ್ಲಿ ವಾಸ:
ಎಲ್ಲ ನಟರು ಬೆಂಗಳೂರಿನಲ್ಲಿ ವಾಸವಿದ್ದರೆ, ನಟಿ ಲೀಲಾವತಿ ಹಾಗೂ ಅವರ ಪುತ್ರ ವಿನೋದ್ ರಾಜ್ ಮಾತ್ರ ನೆಲಮಂಗಲದ ಸೋಲದೇವನಹಳ್ಳಿಯ ತೋಟದ ಮನೆಯಲ್ಲೇ ವಾಸವಿದ್ದರು. ತಮ್ಮ ಅಂತಿಮ ದಿನಗಳಲ್ಲಿ ಅವರು ತೋಟದ ಮನೆಯಲ್ಲೇ ಕಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇಷ್ಟು ದಿನ ಮನೆಯಲ್ಲೇ ಇಟ್ಟುಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು.
ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದು, ಕನ್ನಡ ಮಾತ್ರವಲ್ಲದೆ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿತ್ತು.
ಇದನ್ನೂ ಓದಿ; ‘ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು’ ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ