Homeಕರ್ನಾಟಕಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮದ ಗಾಯನ ತರಬೇತಿಗೆ ವಿದ್ಯಾರ್ಥಿನಿಯರು: ಪಿಯು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ!

- Advertisement -
- Advertisement -

ಹಾವೇರಿಯಲ್ಲಿ ನಡೆದ ‘ವಿಡಿ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮ’ದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದ ಪ್ರಾಂಶುಪಾಲರ ವಿರುದ್ಧ ಸರ್ಕಾರ ಶಿಸ್ತುಕ್ರಮ ಜರುಗಿಸಲು ಮುಂದಾಗಿದೆ ಎಂದು ‘ದಿ ಫೈಲ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಡಿಸೆಂಬರ್ 17ರಂದು ಹಾವೇರಿಯಲ್ಲಿ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮ ನಡೆದಿತ್ತು. ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಹಾವೇರಿ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆಈ ಕಾಂತೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದ ಪೂರ್ವ ಸಿದ್ಧತೆಗೆ ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದರು ಎನ್ನಲಾಗಿದೆ.

ಪ್ರಾಂಶುಪಾಲರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವ ದಾಖಲಾತಿಗಳು ‘ದಿ ಫೈಲ್’ಗೆ ಲಭ್ಯವಾಗಿವೆ ಎನ್ನಲಾಗಿದ್ದು, ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒ) ಡಿಸೆಂಬರ್ 12ರಂದು ಹಾವೇರಿ ತಾಲೂಕಿನ ಇಜಾರಿ ಲಕ್ಕಾಪುರದ ಸರ್ಕಾರಿ ಪಿಯು ಕಾಲೇಜಿಗೆ ಪರಿಶೀಲನೆಗೆಂದು ತೆರಳಿದ್ದಾಗ ಈ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ.

ಸಿಇಒ ಪರಿಶೀಲನೆಗೆ ತೆರಳಿದ್ದಾಗ, ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಹಿಯುಸಿ ವಿಭಾಗದ ವಿದ್ಯಾರ್ಥಿನಿಯರ ಹಾಜರಾತಿ ಕಡಿಮೆ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ಅತಿಥಿ ಉಪನ್ಯಾಸಕರಾದ ನಾಗರಾಜ ಬಣಕಾರ ಎಂಬುವವರನ್ನು ವಿಚಾರಿಸಿದಾಗ, ಸುಮಾರು 95 ವಿದ್ಯಾರ್ಥಿಗಳು ರಾಷ್ಟ್ರಭಕ್ತ ಬಳಗ ಹಾವೇರಿ ಘಟಕವು 2023ರ ಡಿಸೆಂಬರ್ 17ರಂದು ಹಮ್ಮಿಕೊಂಡಿರುವ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾಯನದ ಪೂರ್ವಭಾವಿ ತರಬೇತಿಗೆ ಹೋಗಿರುವುದಾಗಿ ತಿಳಿಸಿದ್ದಾರೆ ಎಂಬ ಅಂಶವನ್ನು ಸಿಇಒ ತಮ್ಮ ಟಿಪ್ಪಣಿಯಲ್ಲಿ ತಿಳಸಿದ್ದಾರೆ ಎಂದು ವರದಿಯಾಗಿದೆ.

‘ಸಾಲದ್ದಕ್ಕೆ, ಇದೇ ವಿದ್ಯಾರ್ಥಿನಿಯರು ತರಗತಿ ಅವಧಿಯಲ್ಲಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದ್ದು, ಈ ಎರಡೂ ಕಾರ್ಯಕ್ರಮಗಳಿಗೆ ಪ್ರಾಂಶುಪಾಲ ಕೆ. ಕೃಷ್ಣಪ್ಪ ಅನುಮತಿ ನೀಡಿದ್ದರು’ ಎಂದು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಂಶುಪಾಲ ಕೃಷ್ಣಪ್ಪ ಅವರು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಮತಿ ನೀಡುವ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಸಿಇಒಗೆ ವರದಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಇಲಾಖೆಯ ಅನುಮತಿ ಇಲ್ಲದೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ. ಶೈಕ್ಷಣಿಕ ಚಟುವಟಿಕೆಗಳ ಹೊರತುಪಡಿಸಿದ ಇತರೆ ರಾಜಕೀಯ ಮತ್ತು ಖಾಸಗಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿಸಲು ಅವಕಾಶವನ್ನೂ ನೀಡಬಾರದು ಎಂದು ಎಂದು ಸರ್ಕಾರದ ಸೂಚನೆ ಮತ್ತು ನಿರ್ದೇಶನಗಳಿವೆ. ಆದರೂ ಇವುಗಳನ್ನು ಪ್ರಾಂಶಪಾಲ ಕೃಷ್ಣಪ್ಪ ಅವರು ಉಲ್ಲಂಪಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅದೇ ರೀತಿ ‘ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾಲೇಜಿನ ವಿದ್ಯಾರ್ಥಿನಿಯರನ್ನು ಇಲಾಖೆಯಿಂದ ಆಯೋಜಿಸುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ರಾಜಕೀಯ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿನ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸದೇ ತೀವ್ರ ಸ್ವರೂಪದ ಕರ್ತವ್ಯಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಬೇಕು. ಹಾಗೆಯೇ, ಕೃಷ್ಣಪ್ಪ ಅವರ ವಿರುದ್ಧ ತಾವರೆಕೆರೆಯ ಸೀಗೇಹಳ್ಳಿಯ ಹಿಯು ಕಾಲೇಜಿನಲ್ಲಿಯೂ ಇಲಾಖೆ ವಿಚಾರಣೆ ಬಾಕಿ ಇತ್ತು. ಆದರೂ ತಮ್ಮ ವಿರುದ್ಧ ಯಾವುದೇ ವಿಚಾರಣೆ ಬಾಕಿ ಇಲ್ಲವೆಂದು ತಪ್ಪು ಮಾಹಿತಿ ನೀಡಿ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ಹೊಂದಿದ್ದರು. ಹೀಗಾಗಿ ಇವರ ಬಡ್ತಿಯನ್ನು ಹಿಂಪಡೆಯಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾವರ್ಕರ್ ಪಠ್ಯ-ಫೋಟೋ ವಿವಾದ: 

ಹಿಂದುತ್ವ ಸಂಘಟನೆಗಳು ಹಾಗೂ ಅದರ ಕಾರ್ಯಕರ್ತರ ನೆಚ್ಚಿನ ನಾಯಕ ವಿ.ಡಿ. ಸಾವರ್ಕರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ ವಿಜೃಂಭಿಸಿತ್ತು. ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣೆಯಲ್ಲಿ ಸಾವರ್ಕರ್ ಪಠ್ಯವನ್ನು ಸೇರಿಸಲಾಗಿತ್ತು. ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದರು. ಆಗ ವಿರೋಧಿಸಿದ್ದ ಕಾಂಗ್ರೆಸ್ ಮುಖಂಡರು ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಪಠ್ಯ ಕೈಬಿಟ್ಟು, ಸದನದಲ್ಲಿರುವ ಫೋಟೋ ತೆಗೆಸುವುದಾಗಿ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಾವರ್ಕರ್ ಹಾಗೂ ಸಂಘಪರಿವಾರದ ಪಠ್ಯಗಳನ್ನು ಕೈಬಿಡಲಾಗಿದೆ. ಸದನದಲ್ಲಿರುವ ಫೋಟೋ ತೆರವುಗೊಳಿಸುವ ಕುರಿತು ಚರ್ಚೆ ಜೋರಾಗಿರುವಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಸಾವರ್ಕರ್ ಫೋಟೋ ತೆಗೆಸುವ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಾವರ್ಕರ್ ಸಂಸ್ಮರಣಾ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಪಿಯು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮವು ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಲಾಯಿತಾದರೂ ಅವರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...