ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂದ ರಾಜ್ಯದ ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರೈತರ ನೆರವಿಗಿದ್ದೇವೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ಟೊಮೆಟೊ, ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ನಿಂಬೆ ಮೊದಲಾದ ಹಣ್ಣು ತರಕಾರಿಗಳು ದೊಡ್ಡ ಪ್ರಮಾಣದಲ್ಲಿ ಹೊರ ರಾಜ್ಯಗಳಿಗೆ ರಫ್ತಾಗುತ್ತಿದ್ದವು. ಈಗ ದೇಶದಾದ್ಯಂತ ಲಾಕ್ಡೌನ್ ಇರುವುದರಿಂದ ಸಾರಿಗೆ ಸಮಸ್ಯೆಯಿಂದ ಬೇಡಿಕೆ ಕುಸಿದಿದೆ. ಈ ನಿಟ್ಟಿನಲ್ಲಿ ಈ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: ಲಾಕ್ಡೌನ್ನಿಂದ ರೈತರಿಗೆ ಸಮಸ್ಯೆ: ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ತಜ್ಞರು
ಟೊಮೆಟೊ ಸಂಸ್ಕರಣಾ ಘಟಕಗಳ ಮೂಲಕ ಕೆಚಪ್ ತಯಾರಿಕೆ ಮಾಡಲು ಸೂಚಿಸಲಾಗಿದೆ. ಹಾಪ್ ಕಾಮ್ಸ್ ಮೂಲಕವೂ ತರಕಾರಿ ಪೂರೈಕೆಗೆ ಹಾಗೂ ಮೊಟ್ಟೆ ಮಾರಾಟಕ್ಕೆ ಸಹ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವಾಹನಗಳ ಮೂಲಕ ಪೂರೈಕೆಗೆ ಕೂಡ ಕ್ರಮ ವಹಿಸಿ, ಗ್ರಾಹಕರಿಗೂ ಸೂಕ್ತ ದರದಲ್ಲಿ ಹಣ್ಣು ತರಕಾರಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಹಣ್ಣು, ತರಕಾರಿ ದಿನಸಿ ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ದಿನವಿಡೀ ತೆರೆದಿಡಲು ಸೂಚಿಸಿದ್ದು, ಖರೀದಿದಾರರು ಸಾಮಾಜಿಕ ಅಂತರ ಕಾಯ್ದುಕೊಂಡು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಖರೀದಿಸುವಂತೆ ಕೋರಿದೆ.
ರೈಲುಗಳ ಮೂಲಕ ಹೊರ ರಾಜ್ಯಗಳಿಗೆ ಹಣ್ಣು-ತರಕಾರಿ ಮೊದಲಾದ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ದಿನಸಿ ಮತ್ತು ತರಕಾರಿಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ಪರವಾನಿಗೆ ರದ್ದು ಮಾಡುವ ಎಚ್ಚರಿಕೆ ನೀಡಿದೆ. ಅಡುಗೆ ಎಣ್ಣೆ ದಾಸ್ತಾನು ಲಭ್ಯವಿದ್ದು, ಪ್ಯಾಕೇಜಿಂಗ್ ವ್ಯವಸ್ಥೆ ಮಾಡಿ ಪೂರೈಕೆಗೆ ಕ್ರಮ ವಹಿಸಲು ಸೂಚಿಸಲಾಗಿದ್ದು, ಮಾರುಕಟ್ಟೆಗಳಲ್ಲಿ ದಾಸ್ತಾನು ಕೊರತೆ ಇಲ್ಲವಾದ್ದರಿಂದ ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಸರಕಾರ ಹೇಳಿದೆ.
ಬೆಳೆ ಕಟಾವಿಗೆ ನೆರೆಯ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಿ, ಕಟಾವಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿರುವ ಸರಕಾರ, ಮುಂದಿನ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಬಿತ್ತನೆಯಾಗಲಿದ್ದು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ ಹಾಗೂ 15 ಅಕ್ಕಿ ಮಿಲ್ಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
27 ರೇಷ್ಮೆ ಮಾರುಕಟ್ಟೆ ತೆರೆಯಲು ಕ್ರಮ ವಹಿಸಲಾಗಿದ್ದು 14 ಮಾರುಕಟ್ಟೆಗಳಲ್ಲಿ ತಂಡಗಳನ್ನು ರಚಿಸಿ, ರೈತರನ್ನು ನೇರವಾಗಿ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಏಜೆಂಟರನ್ನು ಮನೆಗೆ ಕಳುಹಿಸಿ ಕಡಿಮೆ ದರಕ್ಕೆ ಖರೀದಿ ಮಾಡುತ್ತಿರುವವರ ಬಗ್ಗೆ ಸರ್ಕಾರ ಎಚ್ಚರಿಸಿದ್ದು ಇಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದೆಯಲ್ಲದೆ, ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ರೇಷ್ಮೆ ಮಾರುಕಟ್ಟೆಯನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದಿದೆ.
ಕೆಎಂಎಫ್ ಮೂಲಕ 69 ಲಕ್ಷ ಲೀಟರ್ ಹಾಲು ಖರೀದಿಯಾಗುತ್ತಿದ್ದು, 42 ಲಕ್ಷ ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದೆ. 7.5 ಲಕ್ಷ ಲೀಟರ್ ಹಾಲು ಉಳಿತಾಯವಾಗುತ್ತಿದೆ ಎಂದಿರುವ ಸರಕಾರ ಇದನ್ನು ಲಾಕ್ಡೌನ್ ಮುಗಿಯುವ ವರೆಗೆ ಸರ್ಕಾರವೇ ಖರೀದಿಸಿ ಕೊಳೆಗೇರಿಗಳು ಮತ್ತು ಕಾರ್ಮಿಕರ ಬಡಾವಣೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗುವುದು ಎಂದಿದೆ.
ಲಾಕ್ಡೌನ್ನಿಂದ ನಗರದಲ್ಲಿ ಸಿಲುಕಿಕೊಂಡಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಿಲ್ಡರುಗಳೇ ಊಟ, ವಸತಿ ವ್ಯವಸ್ಥೆ ಒದಗಿಸುವಂತೆ ಸೂಚಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.