Homeಕರ್ನಾಟಕವಿಧಾನಸಭೆಯಲ್ಲಿ 'ಗೃಹಲಕ್ಷ್ಮಿ' ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

- Advertisement -
- Advertisement -

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು ಸಚಿವರ ಕ್ಷಮೆಯಾಚನೆಗೆ ಕಾರಣವಾಯಿತು.

ಬೆಳಿಗ್ಗೆ ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷ ನಾಯಕ ಆರ್‌. ಅಶೋಕ್, ಮೂರು ದಿನಗಳಿಂದ ಸಚಿವರು ಸದನಕ್ಕೆ ಬಂದಿಲ್ಲ. ನಮ್ಮ ಪ್ರಸ್ತಾಪಕ್ಕೆ ಉತ್ತರವನ್ನೂ ನೀಡಿಲ್ಲ. ಕೂಡಲೇ ಅವರನ್ನು ಸದನಕ್ಕೆ ಕರೆಸಿ ಉತ್ತರ ಕೊಡಿಸಬೇಕು. ಅಲ್ಲದೆ, ತಪ್ಪು ಉತ್ತರ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು, ಈಗಾಗಲೇ ಸಿಎಂ ಉತ್ತರ ನೀಡಿದ್ದು, ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಳ್ಳಿ ಎಂದು ಸ್ಪೀಕರ್‌ಗೆ ಆಗ್ರಹಿಸಿದರು.

ಈ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಗ್ವಾದ ಉಂಟಾಯಿತು. ಗದ್ದಲ ಹೆಚ್ಚಾದಾಗ ಸ್ಪೀಕರ್ ಖಾದರ್ ಕಲಾಪನ್ನು 10 ನಿಮಿಷ ಮುಂದೂಡಿದರು. ಮತ್ತೆ ಸಭೆ ಸೇರಿದಾಗ ಸಚಿವರ ಉತ್ತರ ಮತ್ತು ಕ್ಷಮೆಯಾಚನೆಗೆ ಆಗ್ರಹಿಸಿ ವಿಪಕ್ಷ ಸದಸ್ಯರು ಧರಣಿ ಮುಂದುವರಿಸಿದರು. ಈ ವೇಳೆ ಸ್ಪೀಕರ್ ಖಾದರ್ ವಿಪಕ್ಷ ಸದಸ್ಯರು ತಮ್ಮ ಆಸನಗಳಿಗೆ ತೆರಳಲು ಮನವಿ ಮಾಡಿದರು. ಸ್ಪೀಕರ್ ಮನವಿಗೆ ಸ್ಪಂದಿಸಿ ವಿಪಕ್ಷ ಸದಸ್ಯರು ಧರಣಿ ಹಿಂಪಡೆದರು.

ನಂತರ ಉತ್ತರ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಂದಿಲ್ಲ ಎಂದು ಬಿಜೆಪಿಯ ಮಹೇಶ್ ಟೆಂಗಿನಕಾಯಿ ತಿಳಿಸಿದ್ದಾರೆ. ಆದರೆ, ರಾಜ್ಯದ 1.26 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಒಟ್ಟು 52,416 ಕೋಟಿ ರೂ.ಗಳನ್ನು ಒಟ್ಟು 23 ಕಂತುಗಳಲ್ಲಿ ಪ್ರತಿ ಮನೆಗೆ ಈವರೆಗೆ 46 ಸಾವಿರ ರೂ.ಗಳನ್ನು ಪಾವತಿಸಲಾಗಿದೆ. ಆಗಸ್ಟ್ ತಿಂಗಳವರೆಗೆ ಹಣ ಪಾವತಿಸಲಾಗಿದೆ ಎಂದರು.

ನಾನು ಮೊದಲ ಬಾರಿಗೆ ಸಚಿವೆಯಾಗಿ ಪೂಜ್ಯ ಭಾವನೆಯಿಂದ ಕೆಲಸ ಮಾಡುತ್ತಿದ್ದೇನೆ. ಅಧಿಕಾರಿಗಳನ್ನು ವಿಚಾರಣೆ ಮಾಡಿದಾಗ 2 ತಿಂಗಳ ಹಣ ಪಾವತಿ ಆಗಿಲ್ಲ ಎಂದು ಗೊತ್ತಾಗಿದೆ. ಸದನಕ್ಕೆ ತಪ್ಪು ಮಾಹಿತಿ ನೀಡುವ ಉದ್ದೇಶವಿರಲಿಲ್ಲ. ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರದಲ್ಲೆ ಹಣ ಪಾವತಿಸಲಾಗುವುದು. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಣೆ ನೀಡಿದರು.

ಇದಕ್ಕೆ ಆಕ್ಷೇಪಿಸಿದ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಸಚಿವರು ಕ್ಷಮೆ ಕೇಳಿಲ್ಲ. ಸದನಕ್ಕೆ ತಪ್ಪು ಉತ್ತರ ನೀಡಿದ್ದು, ಕ್ಷಮೆ ಕೇಳಿದರೆ ಸಣ್ಣವರಾಗುತ್ತಾರಾ? ಪ್ರಶ್ನಿಸಿದರು

ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಇಲಾಖೆ ಅಧಿಕಾರಿಗಳಿಗೆ ಹಣ ಪಾವತಿ ಮಾಡದೆ ಇರುವುದು ಗೊತ್ತಿಲ್ಲವೇ? ಅಧಿಕಾರಿಗಳು ಸಚಿವರ ಬಾಯಲ್ಲಿ ಸುಳ್ಳು ಹೇಳಿಸಿದ್ದಾರೆ. ಅವರಿಗೆ ಶಿಕ್ಷೆ ಇಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿ ಸದಸ್ಯರ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಬೈರತಿ ಸುರೇಶ್, ರಾಜ್ಯದ ಜನರಿಗೆ ಒಂದು ರೂಪಾಯಿಯನ್ನು ಬಿಜೆಪಿಯವರು ನೀಡಿಲ್ಲ. ಬಡ ಜನರಿಗೆ ಒಂದು ಕೆಜಿ ಅಕ್ಕಿಯನ್ನು ಕೊಟ್ಟಿಲ್ಲ. ಇವರು ನಮಗೆ ಬುದ್ಧಿಹೇಳುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಜೆಪಿ ಅಧಿಕಾರದಲ್ಲಿದ್ದ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಹಣ ನೀಡುತ್ತೇವೆಂದು ಘೋಷಣೆ ಮಾಡಿ ಬಿಡಿಗಾಸು ಹಣವನ್ನು ನೀಡಲಿಲ್ಲ. ನರೇಗಾ, ಜಲಜೀವನ್ ಮಿಷನ್ ಸೇರಿದಂತೆ ಇನ್ನಿತರ ಯೋಜನೆಗಳ ಹಣವನ್ನು ಬಿಡುಗಡೆ ಮಾಡಿಲ್ಲ. ಹಾಗೆಂದು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆ ಎಂದು ಹೇಳಲು ಆಗುತ್ತದೆಯೇ?. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದರು.

ಮತ್ತೆ ಎದ್ದು ನಿಂತ ಸಚಿವೆ ಹೆಬ್ಬಾಳ್ಕರ್, 52,416 ಕೋಟಿ ಹಣವನ್ನು ನಾವು ಮಹಿಳೆಯರಿಗೆ ನೀಡಿದ್ದೇವೆ. ನಾನು ಈಗಾಗಲೇ ಹೇಳಿದಂತೆ ಹಣ ಪಾವತಿಯಾಗದ ವಿಚಾರಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ವಿಪಕ್ಷ ಸದಸ್ಯರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ಮಹಿಳೆ ಎಂದು ನನ್ನನ್ನು ಗುರಿಯಾಗಿಸಬೇಡಿ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ಸುರೇಶ್ ಕುಮಾರ್, ವಿಕ್ಟಿಮ್ ಕಾರ್ಡ್ ಬಳಸಬೇಡಿ. ನಾನು ಮಹಿಳೆ-ಪುರುಷ, ಆ ಜಾತಿ-ಈ ಜಾತಿ ಎನ್ನುವುದು ಇಲ್ಲಿ ಪ್ರಶ್ನೆಯಲ್ಲ. ಉತ್ತರ ಕೊಡುವ ಜವಾಬ್ದಾರಿ ಅವರ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ನೀವು (ಸುರೇಶ್ ಕುಮಾರ್) ಸಂಸದೀಯ ವ್ಯವಹಾರಗಳ ಸಚಿವರಾಗಿದ್ದವರು. ನಾವು ಮಂತ್ರಿಗಳು ತಪ್ಪು ಉತ್ತರ ಕೊಟ್ಟರೆ ಅದನ್ನು ತಿದ್ದಿಕೊಳ್ಳುವ ಅವಕಾಶ ಇದೆ, ಅದು ನಮ್ಮ ನಡಾವಳಿಯಲ್ಲಿ ಇದೆ. ಹೀಗಿರುವಾಗ ಆ ಅವಕಾಶ ಬಳಸಬಾರದು ಎಂದರೆ ಹೇಗೆ? ಅವರು ಮಹಿಳೆಯನ್ನು ಗುರಿಯಾಗಿಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಸುರೇಶ್ ಕುಮಾರ್, ಮಹಿಳೆ ಮಹಿಳೆ ಎಂದು ಹೇಳಬೇಡಿ. ಹೆಚ್.ಕೆ ಪಾಟೀಲ್ ಸಚಿವರಾಗಿದ್ರೂ ನಾವು ಈ ಪ್ರಶ್ನೆ ಕೇಳುತ್ತಿದ್ದೆವು. ಇದು ಲಿಂಗ, ಜಾತಿ, ಧರ್ಮದ ಪ್ರಶ್ನೆಯಲ್ಲ. ಇದು ಒಂದು ಕಾಲು ಕೋಟಿ ಜನರ ಹಣದ ಪ್ರಶ್ನೆ ಎಂದರು.

ಆಗ ಶರಣ್ ಪ್ರಕಾಶ್ ಪಾಟೀಲ್ ಮತ್ತು ಸುರೇಶ್ ಕುಮಾರ್ ನಡುವೆ ವಾಗ್ವಾದ ನಡೆಯಿತು. ಈ ನಡುವೆ ಎದ್ದು ನಿಂತ ಆರ್ ಅಶೋಕ್, ಇದು ವಿಷಯಾಂತರ ಆಗೋದು ಬೇಡ. ಸಚಿವರು ಮಹಿಳೆಯ ವಿಕ್ಟಿಮ್ ಕಾರ್ಡ್ ಬಳಸೋದು ಬೇಡ. ಅದು ನಿಯಮ ಪುಸ್ತಕದಲ್ಲಿ ಇಲ್ಲ. ನಿಯಮ ಪುಸ್ತಕದಲ್ಲಿ ಮಂತ್ರಿ ಎಂದು ಮಾತ್ರ ಇದೆ ಎಂದು ಹೇಳಿದರು.

ನಮ್ಮದು ಸಿಂಪಲ್ ಪ್ರಶ್ನೆ, ಸಿಂಪಲ್ ಉತ್ತರ. ನಮಗೆ ಸಚಿವರು ಉತ್ತರ ಕೊಟ್ಟಿರುವುದು ಸರಿಯಾಗಿಲ್ಲ. ಹಾಗಾಗಿ, ನಾವು ಸಭಾತ್ಯಾಗ ಮಾಡುತ್ತಿದ್ದೇವೆ ಎಂದರು.

ಈ ವೇಳೆ ಶರಣ್ ಪ್ರಕಾಶ್ ಪಾಟೀಲ್ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ಬಿಜೆಪಿಗರು ಮಹಿಳೆಯರ ವಿರೋಧಿಗಳು ಎಂದು ಘೋಷಣೆಗಳನ್ನು ಕೂಗಿದರು.

ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದ ಬಳಿಕ ಸ್ಪೀಕರ್ ಖಾದರ್ ಪ್ರಶ್ನೋತ್ತರ ಕಲಾಪ ಮುಂದುವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...