Homeಕರ್ನಾಟಕವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; 'ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ': ರಾಜ್ಯದ ಮಕ್ಕಳಿಗೆ ಸಿಎಂ...

ವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; ‘ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ’: ರಾಜ್ಯದ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಕಳೆದ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರವು ರೋಹಿತ್‌ ಚಕ್ರತೀರ್ಥ ಅವರ ಸಮಿತಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು, ಸಾಕಷ್ಟು ವಿವಾದಕ್ಕೀಡಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕದಲ್ಲಿನ ವಿವಾದಿತ ಪಾಠಗಳನ್ನು ಕೈಬಿಡಲು ದೃಢ ನಿರ್ಧಾರ ಮಾಡಿದ್ದು, ಪರಿಷ್ಕರಣೆಗಾಗಿ ತಜ್ಞರ ಸಮಿತಿಯನ್ನು ನೇಮಿಸಲೂ ತೀರ್ಮಾನಿಸಿದೆ.

ರೋಹಿತ್ ಚಕ್ರತೀರ್ಥ ಎನ್ನುವವರ ಮುಂದಾಳತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ಪಠ್ಯದಲ್ಲಿ ಅನೇಕ ಮುಖ್ಯವಾದ ವಿಚಾರಗಳನ್ನು ಕೈ ಬಿಟ್ಟು ಅನಗತ್ಯ ವಿಚಾರಗಳನ್ನು ಸೇರಿಸಲಾಗಿದೆ ಎಂದು ನಾಡಿನ ಸಾಹಿತಿಗಳು, ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ”ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳಲ್ಲಿ ತಂದಿರುವ ಬದಲಾವಣೆಗಳನ್ನು ಮರುಪರಿಶೀಲಿಸಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು” ಎಂದು ಭರವಸೆ ನೀಡಿತ್ತು. ಅದರಂತೆ ಕ್ರಮವಹಿಸಲು ಸರ್ಕಾರ ಮುಂದಾಗಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ನಧು ಬಂಗಾರಪ್ಪ ಮಾತನಾಡಿದ್ದು, ”ಪಠ್ಯಪುಸ್ತಕಗಳಲ್ಲಿ ವಿವಾದಿತ ಪಾಠಗಳನ್ನು ಕೈಬಿಡುವುದು ನಿಶ್ಚಿತ. ಅದಕ್ಕಾಗಿ ಶೀಘ್ರ ಪರಿಷ್ಕರಣಾ ಸಮಿತಿ ರಚಿಸಲಾಗುವುದು. ಮುಖ್ಯಮಂತ್ರಿ ಹಾಗೂ ತಜ್ಞರ ಜತೆ ಚರ್ಚಿಸಿದ ನಂತರ ಸಮಿತಿಯ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.

”ಸಮಿತಿಗೆ ವರದಿ ನೀಡಲು ಎರಡು ತಿಂಗಳ ಗಡುವು ನೀಡಲಾಗುವುದು. ಪಠ್ಯದಲ್ಲಿ ಕೆಲವು ಪಾಠಗಳಷ್ಟೆ ವಿವಾದಕ್ಕೆ ಒಳಗಾಗಿವೆ. ಅವುಗಳನ್ನು ಬಿಟ್ಟು ಉಳಿದ ಪಾಠಗಳನ್ನು ಬೋಧನೆ ಮಾಡಲಾಗುತ್ತದೆ. ಪೋಷಕರು, ಮಕ್ಕಳು ಅತಂಕ ಪಡುವ ಅಗತ್ಯವಿಲ್ಲ. ಈ ಕುರಿತು ಎಲ್ಲ ಶಾಲೆಗಳಿಗೂ ಸ್ಪಷ್ಟ ಸೂಚನೆ ನೀಡಲಾಗುತ್ತದೆ. ಸಮಿತಿಯ ವರದಿಯ ನಂತರ ಇದೇ ಪಠ್ಯಕ್ರಮಕ್ಕೆ ಹೊಸ ಪಾಠಗಳನ್ನು ಸೇರಿಸಲಾಗುವುದು” ಎಂದು ಮಾಹಿತಿ ನೀಡಿದರು.

ಈ ಬಗ್ಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮಾತನಾಡಿ, ”ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕಗಳಲ್ಲಿ ಆಗಿರುವ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ” ಎಂದಿದ್ದಾರೆ.

”ಇತಿಹಾಸ ಪುರುಷರನ್ನೇ ಅವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ಆ ತಪ್ಪು ತಿದ್ದಬೇಕಲ್ಲವೇ? ನಾವು ಚುನಾವಣೆಗೂ ಮುಂಚಿನಿಂದಲೇ ಅದನ್ನು ಹೇಳುತ್ತಿದ್ದೇವೆ. ಈಗ ಅದನ್ನು ಜಾರಿಗೊಳಿಸಲಿದ್ದೇವೆ. ವಾಸ್ತವವನ್ನು ಪಠ್ಯದಲ್ಲಿ ಸೇರಿಸಲಿದ್ದೇವೆ. ಸತ್ಯವಲ್ಲದ್ದನ್ನು ತೆಗೆದು ಹಾಕುತ್ತೇವೆ” ಎಂದು ಹೇಳಿದರು.

ಇನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳು ಇಂದು ಆರಂಭವಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಸ್ವಾಗತ ಕೋರಿ ಪತ್ರವೊಂದನ್ನು ಬರೆದಿದ್ದಾರೆ.

ನನ್ನ ಪ್ರೀತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರೇ,

ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ ಆನಂದದಿಂದ ಕಳೆದ ನಿಮ್ಮನ್ನು ಶಾಲೆಗಳು ಕೈಬೀಸಿ ಕರೆಯುತ್ತಿವೆ. ಕಳೆದ ಎರಡು -ಮೂರು ವರ್ಷಗಳಲ್ಲಿ ಕೊರೊನಾ ವೈರಾಣುವಿನಿಂದಾಗಿ ನೀವೆಲ್ಲ ವಿದ್ಯಾರ್ಥಿ ಜೀವನವನ್ನು ಸಂಪೂರ್ಣ ಅನುಭವಿಸಲಾಗದೆ ಅನೇಕ ಬಗೆಯ ಸಂಕಟ-ಸಂಕಷ್ಟಕ್ಕೆ ಈಡಾಗಿದ್ದೀರಿ. ಈಗ ನಾವು ಆ ಸವಾಲನ್ನು ಗೆದ್ದಿದ್ದೇವೆ, ಆರೋಗ್ಯದ ಪಾಠವನ್ನು ಕಲಿತಿದ್ದೇವೆ. ರಾಜ್ಯದ ಈ ಬಾರಿಯ ಶೈಕ್ಷಣಿಕ ವರ್ಷ ಇಂತಹ ಬದಲಾವಣೆಯ ತಂಗಾಳಿಯೊಂದಿಗೆ ಪ್ರಾರಂಭವಾಗಿದೆ. ಜ್ಞಾನ ದೇಗುಲಕ್ಕೆ ನಿಮಗೆಲ್ಲರಿಗೂ ಸ್ವಾಗತ. ಕೈಮುಗಿದು ಒಳಗೆ ಬನ್ನಿ…

ಶಾಲೆಯೆಂದರೆ ಬರೀ ಕಲ್ಲು ಕಟ್ಟಡವಲ್ಲ. ಅದೊಂದು ಜ್ಞಾನ ದೇಗುಲ. ಹೆತ್ತ ತಂದೆ-ತಾಯಿಗಳಂತೆ ಕಲಿಸುವ ಗುರುಗುಳು ಕೂಡಾ ವಿದ್ಯಾರ್ಥಿಗಳ ಪಾಲಿನ ದೇವರು. ಈ ಶ್ರದ್ಧೆ ಮತ್ತು ಗೌರವ ಸದಾ ನಿಮ್ಮಲ್ಲಿರಲಿ. ‘ಪ್ರತಿಯೊಬ್ಬರು ಹುಟ್ಟಿದಾಗ ವಿಶ್ವಮಾನವ, ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ’ ಎಂದು ರಾಷ್ಟ್ರಕವಿ ಕುವೆಂಪು ಎಚ್ಚರಿಸಿದ್ದರು. ಪರೀಕ್ಷೆ- ಫಲಿತಾಂಶ ಎಲ್ಲವೂ ಮುಖ್ಯವಾದರೂ ಶಿಕ್ಷಣ ಎಂದರೆ ಅಷ್ಟೇ ಅಲ್ಲ. ಶಿಕ್ಷಣ ಎನ್ನವುದು ನಮ್ಮಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಅರಿವು ಮೂಡಿಸಬೇಕು, ಸತ್ಯ ಹೇಳುವ ಧೈರ್ಯವನ್ನು,ನ್ಯಾಯದ ಮಾರ್ಗದಲ್ಲಿ ಮುನ್ನಡೆಯುವ ಶಕ್ತಿಯನ್ನು ನೀಡಬೇಕು. ಅಂತಹ ಶಿಕ್ಷಣ ನಿಮ್ಮ ಪಾಲಿಗೆ ಒದಗಿಬಂದು ನೀವೆಲ್ಲರೂ ಮಹಾಮಾನವರಾಗಿ ಎಂದು ಹಾರೈಸುತ್ತೇನೆ.

ನಾನು ಹಳ್ಳಿಯ ಸಾಮಾನ್ಯ ರೈತ ಕುಟುಂಬದಿಂದ ಬಂದ ವ್ಯಕ್ತಿ. ಈಗ ನಿಮಗೆ ಇರುವ ಕಲಿಕೆಯ ಅವಕಾಶ ನನ್ನಂತಹವನಿಗೆ ಇರಲಿಲ್ಲ. ಒಂದನೇ ತರಗತಿಯಿಂದಲೇ ಶಾಲೆಗೆ ಹೋಗಲಾಗದೆ ಮರಳ ಮೇಲೆ ಕೈಬೆರಳಗಳನ್ನೊತ್ತಿ ಅಕ್ಷರಾಭ್ಯಾಸ ಮಾಡಿ ನಾಲ್ಕನೇ ತರಗತಿಗೆ ನೇರವಾಗಿ ಸೇರಿದವನು ನಾನು. ಅಲ್ಲಿಂದ ಕಾನೂನು ವ್ಯಾಸಂಗ ಮುಗಿಸುವವರೆಗೆ ನನ್ನ ವಿದ್ಯಾರ್ಥಿ ಜೀವನ ಹೂವಿನ ಹಾದಿಯಾಗಿರಲಿಲ್ಲ. ಅಮಾಯಕರಾಗಿದ್ದ ಹೆತ್ತವರ ವಿರೋಧ, ಶೋಷಕರ ಅಡ್ಡಗಾಲು, ಹಣಕಾಸಿನ ಸಮಸ್ಯೆಗಳ ಜೊತೆ ಹೋರಾಡುತ್ತಲೇ ಬಂದವನು. ಕಠಿಣ ಶ್ರಮ ಮತ್ತು ಕಲಿಕೆಯ ಮೇಲೆ ಆಸಕ್ತಿ-ಶ್ರದ್ಧೆಗಳಿದ್ದರೆ ಸಾಮಾನ್ಯ ಕುಟುಂಬದಿಂದ ಬಂದ ಒಬ್ಬ ಬಾಲಕ ಕೂಡಾ ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿಯೂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ. ಇದೇ ರೀತಿ ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಿಗೇರಬೇಕೆಂದು ನನ್ನ ಆಸೆ.

ಇದೇ ಉದ್ದೇಶದಿಂದ ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ವಿದ್ಯಾಸಿರಿ,ವಿದ್ಯಾರ್ಥಿ ವೇತನ ಶೂ ಮತ್ತು ಸಾಕ್ಸ್ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಇವುಗಳಿಗೆ ಎದುರಾಗಿರುವ ಸಣ್ಣಪುಟ್ಟ ಅಡ್ಡಿ-ಆತಂಕಗಳನ್ನು ನಿವಾರಿಸಿ ಪುನರ್ ಚಾಲನೆ ನೀಡುವೆ.

ನೀವು ಪಡೆಯುವ ಶಿಕ್ಷಣ ನಿಮ್ಮನ್ನು ತಂದೆ-ತಾಯಿ ಹೆಮ್ಮೆ ಪಡುವಂತಹ ಮಕ್ಕಳನ್ನಾಗಿ ಮತ್ತು ಸಮಾಜ ಪ್ರೀತಿಸುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲಿ. ಮುಂದಿನ ಜನಾಂಗವಾಗಿರುವ ನಿಮ್ಮಿಂದ ರಾಜ್ಯದ ಸರ್ವಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ. ಪಠ್ಯಪುಸ್ತಕಗಳಿಗಷ್ಟೇ ನಿಮ್ಮ ಓದನ್ನು ಸೀಮಿತಗೊಳಿಸಬೇಡಿ.

ನಿಮಗೆಲ್ಲರಿಗೂ ಹೊಸ ಶೈಕ್ಷಣಿಕ ವರ್ಷಕ್ಕೆ ಮತ್ತೊಮ್ಮೆ ಸ್ವಾಗತ ಮತ್ತು ಶುಭಾಶಯಗಳು.

ನಿಮ್ಮೆಲ್ಲರ ಪ್ರೀತಿಯ ಮುಖ್ಯಮಂತ್ರಿ

ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...