Homeಮುಖಪುಟಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

ಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

- Advertisement -
- Advertisement -

ಸತತ 27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. 38 ಹಾಲಿ ಬಿಜೆಪಿ ಶಾಸಕರಿಗೆ ಅದು ಟಿಕೆಟ್ ನಿರಾಕರಿಸಿರಿವುದರಿಂದ ಬಂಡಾಯವೆದ್ದಿರುವ ಹಲವು ಶಾಸಕರು ಸಂಧಾನಕ್ಕೆ ಒಪ್ಪದೇ ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಗಾಂಧಿನಗರದ ಬಿಜೆಪಿ ಕಚೇರಿ ಕಮಲಂ ಎದರು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಗೃಹ ಸಚಿವ ಹರ್ಷ ಸಂಘ್ವಿ ನಾಲ್ವರು ಬಂಡಾಯ ಶಾಸಕರ ಜೊತೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ.

20 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಬಿಜೆಪಿಗೆ ಸೇರಿದ್ದೆ ಎಂದು ಹೇಳಿಕೊಂಡಿರುವ ಆರು ಬಾರಿ ಶಾಸಕರಾಗಿರುವ ಟಿಕೆಟ್ ವಂಚಿತ ಮಧುಭಾಯಿ ಶ್ರೀವಾಸ್ತವ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅತೃಪ್ತರ ಬಂಡಾಯ ಶಮನಗೊಳಿಸಲು ಗುಜರಾತ್‌ಗೆ ತೆರಳಿರುವ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ 5 ಗಂಟೆಗಳ ಸುದೀರ್ಘ ಸಭೆ ನಡೆಸಿದ್ದಾರೆ. ಬಂಡಾಯವೆದ್ದಿರುವವರು ಬಹಳ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರೊಂದಿಗೆ ಪ್ರೀತಿ ಮತ್ತು ಸಹಾನುಭೂತಿಯಿಂದ ಅವರೊಂದಿಗೆ ವ್ಯವಹರಿಸಿ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.

ಇದೇ ರೀತಿಯ ಬಂಡಾಯವನ್ನು ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಸಹ ಅನುಭವಿಸಿತ್ತು. ಅಲ್ಲಿನ 68 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಫೋನ್ ಕರೆ ಮಾಡಿ ಮಾತನಾಡಿದರೂ ಸಹ ಒಬ್ಬ ಬಂಡಾಯಗಾರನನ್ನು ಸಹ ಮನವೊಲಿಸಲು ಸಾಧ್ಯವಾಗಿರಲಿಲ್ಲ.

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ; ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...