ದೇಶದಲ್ಲಿ ಭಾರೀ ಸದ್ದು ಮಾಡಿರುವ, ರಾಜ್ಯದಲ್ಲಿ ಯಾರೂ ಊಹಿಸಲು ಸಾಧ್ಯವಾಗದ ಅತಿದೊಡ್ಡ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಹಾಸನ ಸಂಸದ, ಎನ್ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಆಗ್ರಹ ಕೇಳಿಬಂದಿದೆ.
ಬಿಜೆಪಿ ಜತೆಗಿನ ಮೈತ್ರಿ ಕಾರಣಕ್ಕೆ ಬಹಿರಂಗವಾಗಿಯೇ ಅಸಮಾಧಾಣ ಹೊರಹಾಕಿದ್ದ, ಗುರುಮಿಠಕಲ್ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರು ಅವರು, ಪಕ್ಷದ ಸರ್ವೋಚ್ಛ ನಾಯಕ ಎಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ‘ಕೂಡಲೇ ಪ್ರಜ್ವಲ್ ಅವರನ್ನು ಅಮಾನತು ಮಾಡಬೇಕು; ಎಂದು ಒತ್ತಾಯಿಸಿದ್ದಾರೆ.
ಪ್ರಜ್ವಲ್ ಅಶ್ಲೀಲ ವಿಡಿಯೋಗಳ ಪ್ರಕರಣದಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ; ರಾಜ್ಯದಲ್ಲಿ 2ನೇ ಹಂತದ ಮತದಾನ ಇನ್ನೂ ನಡೆಯಬೇಕಿದೆ. ಇದು ಚುನಾವಣೆ ಮೇಲೆ ಪ್ರಭಾವ ಬೀರಿ, ಪಕ್ಷಕ್ಕೂ ಹಾನಿಯಾಗಲಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಅಮಾನತುಪಡಿಸಬೇಕು’ ಎಂದು ಗುರುಮಿಠಕಲ್ ಶಾಸಕ ಶರಣಗೌಡ ಆಗ್ರಹಿಸಿದ್ದಾರೆ.
ಸರ್ಕಾರ ಈ ಪ್ರಕರಣವನ್ನು ಈಗಾಗಲೇ ಎಸ್ಐಟಿ ತನಿಖೆಗೆ ವಹಿಸಿದೆ. ಪ್ರಕರಣ ಇತ್ಯರ್ಥ ಆಗುವವರೆಗೂ ಅಮಾನತು ಮಾಡಿ ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಿ ಎಂದು ಅವರು ಕೋರಿದ್ದಾರೆ.
ಪೂರ್ವ ಯೋಜಿತವಾಗಿರಬೇಕು: ಬಸವರಾಜ ಬೊಮ್ಮಾಯಿ
ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ, “ಲೋಕಸಭೆ ಚುನಾವಣೆಯ ಸಮಯದಲ್ಲಿ ಈ ವಿಷಯವು ‘ಪೂರ್ವ ಯೋಜಿತ’ ಆಗಿರಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತ ಭಾವನೆ ಹೊಂದಿಲ್ಲ” ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, “ಘಟನೆಯ ಸಮಯವನ್ನು ಗಮನಿಸಿದರೆ, ಹಾಸನ ಲೈಂಗಿಕ ಹಗರಣವನ್ನು ಯಾರೋ ಮೊದಲೇ ಯೋಜಿಸಿದ್ದಾರೆ ಎಂದು ತೋರುತ್ತದೆ. ಕೆಲವು ವೀಡಿಯೋಗಳು ನಕಲಿ ಎಂದು ನಾನು ಕೇಳಿದೆ. ಇದೇ ರೀತಿಯ ಹಲವು ವಿಡಿಯೋಗಳು ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಎಸ್ಐಟಿ ತನಿಖೆ ಏಕೆ” ಎಂದು ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ‘ಅಶ್ಲೀಲ ವಿಡಿಯೋ’ಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಅಲ್ಲದೇ ಮಹಿಳಾ ಆಯೋಗದ ಅಧ್ಯಕ್ಷರು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಕಳೆದ ವಾರ, ಜನತಾ ದಳ (ಜಾತ್ಯತೀತ) ಮತ್ತು ಬಿಜೆಪಿಯ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಎಂಜಿ, ನವೀನ್ ಗೌಡ ಮತ್ತು ಇತರರು ಪ್ರಜ್ವಲ್ ರೇವಣ್ಣ ಅವರ ಇಮೇಜ್ಗೆ ಕಳಂಕ ತರಲು ಅಶ್ಲೀಲ ವೀಡಿಯೊಗಳನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಿದ್ದಾರೆ. ಆದರೆ, ಪ್ರಜ್ವಲ್ ಶನಿವಾರ ಬೆಳಗ್ಗೆ ಜರ್ಮನಿಗೆ ಫ್ರಾಂಕ್ಫರ್ಟ್ಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ; ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲು