Homeಮುಖಪುಟಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಶಾಸಕ ರಾಜಾ ಸಿಂಗ್‌ ಅವರನ್ನು ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್ ಮೂರು ಕಠಿಣ ಶರತ್ತುಗಳನ್ನು ವಿಧಿಸಿತ್ತು. 100ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ಗಳನ್ನು ಹೊಂದಿರುವ ರಾಜಾ ಸಿಂಗ್‌ ಅವರನ್ನು, ಹೈದರಾಬಾದ್‌ನಲ್ಲಿ ಕೋಮು ಸೌದಾರ್ದತೆ ಕದಡಿದಕ್ಕಾಗಿ 76 ದಿನ ಜೈಲಿಗೆ ಕಳುಹಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಎ. ಅಭಿಷೇಕ್ ರೆಡ್ಡಿ ಮತ್ತು ಜುವ್ವಾಡಿ ಶ್ರೀದೇವಿ ಅವರು ನವೆಂಬರ್ 9, 2022ರಂದು ನೀಡಿದ ಆದೇಶದಲ್ಲಿ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಿದರು. “ರಾಜಾಸಿಂಗ್‌ ಬಿಡುಗಡೆಯಾದ ನಂತರ ಯಾವುದೇ ಸಂಭ್ರಮಾಚರಣೆ ರ್‍ಯಾಲಿಗಳಲ್ಲಿ/ಸಭೆಗಳಲ್ಲಿ ಭಾಗವಹಿಸಬಾರದು ಅಥವಾ ನಡೆಸಬಾರದು; ಮುದ್ರಣ ಮಾಧ್ಯಮ ಸೇರಿದಂತೆ ಯಾವುದೇ ರೀತಿಯ ಮಾಧ್ಯಮ ಸಂಸ್ಥೆಗಳಿಗೆ ಯಾವುದೇ ಸಂದರ್ಶನಗಳನ್ನು ಭವಿಷ್ಯದಲ್ಲಿ ನೀಡಬಾರದು; ಯಾವುದೇ ಧರ್ಮದ ವಿರುದ್ಧ ಯಾವುದೇ ಪ್ರಚೋದನಕಾರಿ ಭಾಷಣಗಳನ್ನು ಮಾಡಬಾರದು ಅಥವಾ ಫೇಸ್ಬುಕ್, ಟ್ವಿಟರ್, ವಾಟ್ಸ್‌ಅಪ್‌, ಯೂಟ್ಯೂಬ್‌ ಇತ್ಯಾದಿ ಯಾವುದೇ  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದೇ ಅವಹೇಳನಕಾರಿ ಅಥವಾ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಬಾರದು” ಎಂದು ಕೋರ್ಟ್ ಸೂಚಿಸಿತ್ತು.

ಕೇವಲ ಮೂರು ತಿಂಗಳೊಳಗೆ ಎಲ್ಲಾ ಮೂರು ಷರತ್ತುಗಳನ್ನು ರಾಜಾ ಉಲ್ಲಂಘಿಸಿದ್ದಾರೆ. ತೀವ್ರಗಾಮಿ ಹಿಂದೂ ಗುಂಪು ಎಂದೇ ಗುರುತಿಸಿಕೊಂಡಿರುವ ‘ಸಕಲ್ ಹಿಂದೂ ಸಮಾಜ’ ಜನವರಿ 29ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ರಾಜಾ ಬಂದಿದ್ದರು. ಈ ಗುಂಪು ಆಯೋಜಿಸಿದ್ದ ‘ಹಿಂದೂ ಜನಕ್ರೋಶ್ ಮೋರ್ಚಾ’ದಲ್ಲಿ ಪಾಲ್ಗೊಂಡು, “ಮಹಾರಾಷ್ಟ್ರ ರಾಜ್ಯ ಸರ್ಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರದಿದ್ದರೆ, ಹಿಂದೂಗಳು ಶೀಘ್ರದಲ್ಲೇ ಶಸ್ತ್ರಸಜ್ಜಿತರಾಗುತ್ತಾರೆ” ಎಂದು ವಿಷಕಾರಿದರು.

ದೇಶದ ಅತ್ಯಂತ ವಿವಾದಾತ್ಮಕ ವಿಷಯಗಳಲ್ಲಿ ಒಂದಾದ ಮತಾಂತರ ವಿರೋಧಿ ಕಾನೂನು ಮೇಲ್ನೋಟಕ್ಕೆ ‘ಬಲವಂತದ ಮತಾಂತರ’ವನ್ನು ನಿರ್ಬಂಧಿಸುತ್ತದೆ, ಆದರೆ ಇದು ಧಾರ್ಮಿಕ ಹಕ್ಕಿನ ಮೇಲಿನ ಪ್ರಹಾರವಾಗಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ರಾಜಾ ಕೇವಲ ಹೊಸ ಕಾನೂನಿನ ಬಗ್ಗೆ ಪ್ರಚಾರ ಮಾಡಲಿಲ್ಲ. ಶಸ್ತ್ರಾಸ್ತ್ರಗಳನ್ನು ಎತ್ತಿಕೊಂಡು ಮುಸ್ಲಿಮರ ಮೇಲೆ ದಾಳಿ ಮಾಡುವಂತೆ ಸಭೆಯನ್ನು ಪ್ರಚೋದಿಸಿದರು. ನಿಂದನೀಯ, ಅವಹೇಳನಕಾರಿ ಪದಗಳನ್ನು ಬಳಸಿದರು. ಮುಸ್ಲಿಂ ಸಮುದಾಯದ ವಿರುದ್ಧ ನೇರ ಹಿಂಸಾಚಾರಕ್ಕೆ ಕರೆ ನೀಡಿದರು. ರಾಜಾ ಸಿಂಗ್‌ ಭಾಷಣವು ಕೇವಲ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಿಲ್ಲ. ಎರಡು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿತು. ಈ ರೀತಿಯ ದುರುದ್ದೇಶವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ ಮತ್ತು 295-ಎ ಉಲ್ಲಂಘನೆಯಾಗಿತ್ತು.

ರಾಜಾ ಸಿಂಗ್ ಅವರ ಭಾಷಣದ ನಂತರ, ಮತ್ತೊಬ್ಬ ಹಿಂದುತ್ವ ಮುಖಂಡ ಸಾಕ್ಷಿ ಗಾಯಕ್ವಾಡ್ ಅಷ್ಟೇ ಪ್ರಚೋದನಕಾರಿ ಭಾಷಣ ಮಾಡಿದರು. ಮುಸ್ಲಿಮರ ನರಮೇಧವನ್ನು ಪ್ರಸ್ತಾಪಿಸಿದರು.

‘ಹಿಂದೂ ಜನ ಆಕ್ರೋಶ ಮೋರ್ಚಾ’ ದಾದರ್‌ನ ಶಿವಾಜಿ ಪಾರ್ಕ್‌ನಿಂದ ಪ್ರಾರಂಭವಾಗಿ ಪರೇಲ್‌ನ ಕಾಮ್‌ಗರ್ ಮೈದಾನದವರೆಗೆ (ನಾಲ್ಕು ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ) ಕ್ರಮಿಸಿತು. ಆರ್‌ಎಸ್‌ಎಸ್‌, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನಂತಹ ಬಲಪಂಥೀಯ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರು ಈ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ರಾಜಾ ಸಿಂಗ್ ಮತ್ತು ಇತರರ ಭಾಷಣಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿವೆ. ಕೋಮು ದ್ವೇಷದ ಹೊರತಾಗಿಯೂ, ಮುಂಬೈ ಪೊಲೀಸರು ಭಾಷಣಕಾರರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ.

ಇದರ ನಡುವೆ, ಹೈದರಾಬಾದ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಿದರು. ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್‌ ವಿಧಿಸಿದ್ದ ಷರತ್ತುಗಳನ್ನು ಉಲ್ಲೇಖಿಸಿ ಕಳೆದ ನಾಲ್ಕು ದಿನಗಳಲ್ಲಿ ಹೈದರಾಬಾದ್‌ನ ಮಂಗಲ್‌ಹಟ್ ಪೊಲೀಸರು ಎರಡು ನೋಟಿಸ್‌ಗಳನ್ನು ರಾಜಾಸಿಂಗ್ ಅವರಿಗೆ ನೀಡಿದ್ದಾರೆ. ಭಾಷಣ ಮಾಡಿದ ಕೂಡಲೇ ಮೊದಲ ನೋಟೀಸ್ ಕಳುಹಿಸಲಾಗಿದೆ. ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಸೂಚನೆಯನ್ನೂ ರವಾನಿಸಲಾಗಿದೆ.

“ನಿಮ್ಮ ಭಾಷಣದಲ್ಲಿ ನಿರ್ದಿಷ್ಟ ಸಮುದಾಯವನ್ನು ಪ್ರಯೋಚನೆ ಮಾಡಲಾಗಿದೆ. ಲವ್ ಜಿಹಾದ್, ಗೋಹತ್ಯೆ, ಮತಾಂತರ ಮೊದಲಾದ ಕಾನೂನಿನ ಬಗ್ಗೆ ಮಾತನಾಡಿದ್ದೀರಿ” ಎಂದು ಮಂಗಲ್‌ಹಟ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೀಡಿದ್ದ ನೋಟಿಸ್‌ನಲ್ಲಿ ತಿಳಿಸಿದ್ದಾರೆ. “ನಿರ್ದಿಷ್ಟ ಧರ್ಮವನ್ನು ಕೆರಳಿಸುವ ನಿಮ್ಮ ಭಾಷಣವು ಹೈಕೋರ್ಟ್ ವಿಧಿಸಿರುವ ಷರತ್ತುಗಳ ಉಲ್ಲಂಘನೆಯಾಗಿದೆ” ಎಂದು ಎಚ್ಚರಿಸಲಾಗಿದೆ.

ಮುಂಬೈಗೆ ಭೇಟಿ ನೀಡುವ ಒಂದು ವಾರದ ಮೊದಲು, ಕಳೆದ ವರ್ಷ ಅಜ್ಮೀರ್ ದರ್ಗಾದಲ್ಲಿ ಇಷ್ಟೇ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್ ಅವರಿಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಉದ್ದೇಶಪೂರ್ವಕವಾಗಿ ಕೋಮು ಭಾವನೆಗಳನ್ನು ಕೆರಳಿಸುವುದು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಬಂಧನ ಮಾಡಲಾಗುವುದು ಎಂದು ಪೊಲೀಸರು ಆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಆದಾಗ್ಯೂ, ಪೊಲೀಸರು ಹೆಚ್ಚಿನ ನೋಟಿಸ್‌ಗಳನ್ನು ಮಾತ್ರ ನೀಡಿದ್ದಾರೆ, ರಾಜಾರನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ ಕ್ರಮ ಜರುಗಿಸಿಲ್ಲ.

ರಾಜಾ ಸಿಂಗ್ ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿದ್ದಾರೆ. ನೋಟಿಸ್ ನೀಡುವ ಪೊಲೀಸರ ನಿರ್ಧಾರವು ರಾಜಕೀಯ ಪ್ರೇರಿತವಾಗಿದೆ, ಮತ್ತೆ ಜೈಲಿಗೆ ಹೋಗುವ ಭಯವಿಲ್ಲ ಎಂದು ಸಿಂಗ್ ಹೇಳಿಕೊಂಡಿದ್ದಾರೆ. ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ಅವರನ್ನು ಆಗಸ್ಟ್‌ನಲ್ಲಿ ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು.

ಸಕಲ್ ಹಿಂದೂ ಸಮಾಜವು ಫೆಬ್ರವರಿ 5 ರಂದು ಮುಂಬೈ ನಗರದಲ್ಲಿ ಇದೇ ರೀತಿಯ ಮತ್ತೊಂದು ಸಾರ್ವಜನಿಕ ಕಾರ್ಯಕ್ರಮವನ್ನು ನಿಗದಿಪಡಿಸಿದೆ. ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ಈ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ ರೆಕಾರ್ಡಿಂಗ್ ಮಾಡಿ ಮತ್ತು ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠವು ಎಚ್ಚರಿಸಿದೆ. “ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದುತ್ವ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ‘ಸಕಲ್ ಹಿಂದೂ ಸಮಾಜ’ದ ಈ ಕಾರ್ಯಕ್ರಮವನ್ನು ನಿಷೇಧಿಸುವಂತೆ ಕೋರಿ ಶಹೀನ್ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಜನವರಿ 29ರಂದು ಒಕ್ಕೂಟವು ನಡೆಸಿದ ರ್‍ಯಾಲಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಲಾಗಿದೆ ಎಂದು ಅಬ್ದುಲ್ಲಾ ವಾದಿಸಿದರು.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಜನವರಿ 29 ರಂದು ನಡೆದ ರ್‍ಯಾಲಿಯಲ್ಲಿ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್, ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ ಮತ್ತು ಮನೋಜ್ ಕೋಟಕ್, ಮಾಜಿ ಸಂಸದ ಕಿರಿತ್ ಸೋಮಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಹಲವಾರು ನಾಯಕರು ಕೂಡ ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮದ ಭಾಷಣಕಾರರಲ್ಲಿ ಒಬ್ಬರಾದ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಅವರು, “ಮುಸ್ಲಿಮರು ನಡೆಸುವ ಅಂಗಡಿಗಳಿಂದ ವಸ್ತುಗಳನ್ನು ಹಿಂದೂಗಳು ಕೊಳ್ಳಬಾರದು” ಎಂದು ದ್ವೇಷ ಕಾರಿದ್ದರು. ಹಿಂದುತ್ವ ಗುಂಪಿನ ಪಿತೂರಿ ಸಿದ್ಧಾಂತವೆಂದೇ ಬಣ್ಣಿಸಲಾದ ‘ಲವ್ ಜಿಹಾದ್’ ಮತ್ತು ‘ಧಾರ್ಮಿಕ ಮತಾಂತರಗಳ ವಿರುದ್ಧ’ದ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವರು ಮಾತನಾಡಿದ್ದರು.

ಮಾಹಿತಿ ಕೃಪೆ: ‘ದಿ ವೈರ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...