Homeಮುಖಪುಟತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

- Advertisement -
- Advertisement -

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ “ಅನರ್ಹ” ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಮುಂಬರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಕಣಕ್ಕಿಳಿಯಲು ಅನುಕೂಲವಾಗುವಂತೆ, ಅವರ ಫಿಟ್‌ನೆಸ್ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ಪೀಠವು, “ತಾಯ್ತನದ ರಜೆಯ (Maternity Break) ನಂತರ ಕಣಕ್ಕೆ ಮರಳುತ್ತಿರುವ ಫೋಗಟ್ ಅವರನ್ನು ಸ್ಪರ್ಧಿಸದಂತೆ ತಡೆಯುತ್ತಿರುವುದು ಎಷ್ಟು ಸರಿ?” ಎಂದು ಒಕ್ಕೂಟವನ್ನು ಪ್ರಶ್ನಿಸಿದೆ. “ನಮ್ಮ ದೇಶದಲ್ಲಿ ತಾಯ್ತನವನ್ನು ಸಂಭ್ರಮಿಸಲಾಗುತ್ತದೆ, ಹಾಗಿರುವಾಗ ಅದು ಒಬ್ಬ ಕ್ರೀಡಾಪಟುವಿನ ವೃತ್ತಿಜೀವನಕ್ಕೆ ಮಾರಕವಾಗಬೇಕೇ?” ಎಂದು ಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಏಕಸದಸ್ಯ ಪೀಠದ ಆದೇಶದ ವಿರುದ್ಧ ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸುವಾಗ ಹೈಕೋರ್ಟ್ ಈ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೆ ಪ್ರಸಿದ್ಧ ಅಥ್ಲೀಟ್‌ಗಳಿಗೆ ನಿಯಮಗಳಲ್ಲಿ ವಿನಾಯಿತಿ ನೀಡುತ್ತಿದ್ದ ಕುಸ್ತಿ ಒಕ್ಕೂಟ, ಈಗ ವಿನೇಶ್ ಅವರ ವಿಷಯದಲ್ಲಿ ದಿಢೀರನೆ ನಿಯಮ ಬದಲಿಸಿರುವುದಕ್ಕೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಹಳೆಯ ನಿಯಮಗಳನ್ನು ಗಾಳಿಗೆ ತೂರಿ ಈ ರೀತಿ ನಡೆದುಕೊಳ್ಳುತ್ತಿರುವುದು ನಿಮ್ಮ ಉದ್ದೇಶವನ್ನು ಎದ್ದು ತೋರಿಸುತ್ತದೆ. ಕ್ರೀಡಾ ಸಂಸ್ಥೆಯಾಗಿ ಈ ರೀತಿ ವರ್ತಿಸಬೇಡಿ, ಇದು ಕ್ರೀಡಾ ಜಗತ್ತಿಗೆ ಒಳ್ಳೆಯದಲ್ಲ. ಒಕ್ಕೂಟವು ಯಾವುದೇ ಕ್ರೀಡಾಪಟುವಿನ ವಿರುದ್ಧ ‘ಸೇಡಿನ ರಾಜಕಾರಣ’ ಮಾಡಬಾರದು” ಎಂದು ನ್ಯಾಯಾಲಯ ಎಚ್ಚರಿಸಿದೆ.

ಮೇ 30 ಮತ್ತು 31 ರಂದು ನಡೆಯಲಿರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಿನೇಶ್ ಫೋಗಟ್ ಭಾಗವಹಿಸಲು ಅವಕಾಶ ಸಿಗುವಂತೆ ನೋಡಿಕೊಳ್ಳಿ ಎಂದು ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ, ಅವರ ದೈಹಿಕ ಸಾಮರ್ಥ್ಯ ಮತ್ತು ಸಿದ್ಧತೆಯನ್ನು ಅಳೆಯಲು ತಜ್ಞರ ಸಮಿತಿಯನ್ನು ರಚಿಸಲು ತಿಳಿಸಿದೆ. “ತಜ್ಞರ ಮೂಲಕ ಅವರ ಅವಕಾಶಗಳನ್ನು ಮರುಪರಿಶೀಲಿಸಿ… ಅವರು ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಿ” ಎಂದು ಪೀಠವು ಸರ್ಕಾರದ ಪರ ವಕೀಲರಿಗೆ ಸೂಚಿಸಿತು.

ವಿಶೇಷ ಸಂದರ್ಭಗಳಲ್ಲಿ ಅರ್ಹತಾ ನಿಯಮಗಳನ್ನು ಸಡಿಲಿಸಲು ‘ಭಾರತೀಯ ಕ್ರೀಡಾ ಪ್ರಾಧಿಕಾರ’ದ (SAI) ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದು ಇದೇ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತು.

ಕಣದಿಂದ ಹೊರದೂಡಲು ಸಂಚು?

ಜೂನ್ 26, 2026 ರವರೆಗೆ ತಮ್ಮನ್ನು ದೇಶೀಯ ಕೂಟಗಳಿಂದ ಅನರ್ಹಗೊಳಿಸಿರುವ ಕುಸ್ತಿ ಒಕ್ಕೂಟದ ನಿರ್ಧಾರವನ್ನು ವಿನೇಶ್ ಫೋಗಟ್ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ನಿವೃತ್ತಿ ಪಡೆದು ಮತ್ತೆ ಕಣಕ್ಕೆ ಮರಳುವ ಅಥ್ಲೀಟ್‌ಗಳು ಕಡ್ಡಾಯವಾಗಿ ಆರು ತಿಂಗಳ ಮುಂಚಿತವಾಗಿ ನೋಟಿಸ್ ನೀಡಬೇಕು” ಎಂಬ ಉದ್ದೀಪನ ಮದ್ದು ತಡೆ (Anti-doping) ನಿಯಮವನ್ನು ಒಕ್ಕೂಟ ನೆಪವಾಗಿ ಮುಂದಿಟ್ಟಿತ್ತು.

ಆದರೆ ವಿನೇಶ್ ಪರ ವಕೀಲರು, “ಇದು ವಿನೇಶ್ ಅವರು ಮತ್ತೆ ಕುಸ್ತಿ ಅಖಾಡಕ್ಕೆ ಇಳಿಯಬಾರದು ಎಂಬ ಏಕೈಕ ಉದ್ದೇಶದಿಂದ ಮಾಡಿರುವ ಸಂಚು” ಎಂದು ವಾದಿಸಿದರು. ಮೇ 10 ರಂದು ಗೊಂಡಾದಲ್ಲಿ ನಡೆದ ದೇಶೀಯ ಪಂದ್ಯಾವಳಿಯಲ್ಲಿ ವಿನೇಶ್ ಭಾಗವಹಿಸುವ ಕೇವಲ ಒಂದು ದಿನ ಮುಂಚೆ, ಅಂದರೆ ಮೇ 9 ರಂದು ಅವರಿಗೆ ಒಕ್ಕೂಟವು ಕಾರಣ ಕೇಳಿ ನೋಟಿಸ್ ನೀಡಿತ್ತು. ಇದನ್ನು ಉಲ್ಲೇಖಿಸಿದ ವಕೀಲರು, “ಅವರನ್ನು ಹೇಗಾದರೂ ಮಾಡಿ ಹೊರದಬ್ಬಲು ಯಾರೋ ಇಲ್ಲದ ಕಾರಣಗಳನ್ನು ಹುಡುಕುತ್ತಿದ್ದಾರೆ” ಎಂದು ವಾದ ಮಂಡಿಸಿದರು.

ಇನ್ನು, ಕುಸ್ತಿ ಒಕ್ಕೂಟ ನೀಡಿದ್ದ ನೋಟಿಸ್‌ನಲ್ಲಿ ಬಳಸಲಾಗಿದ್ದ ಪದಗಳ ಬಗ್ಗೆಯೂ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದನ್ನು ಒಕ್ಕೂಟವು ತನ್ನ ನೋಟಿಸ್‌ನಲ್ಲಿ “ರಾಷ್ಟ್ರೀಯ ಅವಮಾನ” ಎಂದು ಕರೆದಿತ್ತು. “ವಿನೇಶ್ ಅವರನ್ನೇ ಗುರಿಯಾಗಿಸಿಕೊಂಡು ನೀವು ನಿಯಮಗಳನ್ನು ಬದಲಾಯಿಸಿದ್ದೀರಿ ಎಂದು ನಾವು ಯಾಕೆ ಭಾವಿಸಬಾರದು?” ಎಂದು ಪೀಠವು ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡಿತು.

ಹೋರಾಟದ ಹಿನ್ನೆಲೆ

ಜುಲೈ 2025 ರಲ್ಲಿ ಮಗುವಿಗೆ ಜನ್ಮ ನೀಡಿದ್ದ ವಿನೇಶ್ ಫೋಗಟ್, ಇತ್ತೀಚೆಗಷ್ಟೇ ಮತ್ತೆ ತರಬೇತಿ ಆರಂಭಿಸಿದ್ದರು. ಒಕ್ಕೂಟದ ನಿಷೇಧದ ಆದೇಶದ ನಡುವೆಯೂ ಅವರು ಗೊಂಡಾದಲ್ಲಿ ನಡೆದ ನ್ಯಾಷನಲ್ ಓಪನ್ ರ‍್ಯಾಂಕಿಂಗ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿದ್ದರು.

ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿನೇಶ್ ಫೋಗಟ್ ಅತ್ಯಂತ ಪ್ರಭಾವಶಾಲಿ ಹೆಸರುಗಳಲ್ಲಿ ಒಂದು. 2023 ರಲ್ಲಿ ಭಾರತೀಯ ಕುಸ್ತಿ ಒಕ್ಕೂಟದ ಅಂದಿನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಮಹಿಳಾ ಕುಸ್ತಿಪಟುಗಳ ಪರವಾಗಿ ದೆಹಲಿಯ ರಸ್ತೆಯಲ್ಲಿ ಹೋರಾಟದ ಮುಂಚೂಣಿಯಲ್ಲಿದ್ದ ಧೀಮಂತ ಮಹಿಳೆ ಈ ವಿನೇಶ್.

ಕಳೆದ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಫೈನಲ್ ತಲುಪಿದ್ದ ವಿನೇಶ್, ಅಂತಿಮ ಪಂದ್ಯದ ದಿನ ಬೆಳಗ್ಗೆ ಕೇವಲ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣಕ್ಕೆ ದುರದೃಷ್ಟವಶಾತ್ ಅನರ್ಹಗೊಂಡಿದ್ದರು. ಇದು ಇಡೀ ದೇಶದ ಕ್ರೀಡಾಭಿಮಾನಿಗಳಿಗೆ ಭಾರಿ ಆಘಾತ ನೀಡಿತ್ತು. ಆದರೆ ಈಗ ಕೋರ್ಟ್ ನೀಡಿರುವ ಈ ಆದೇಶ ಅವರ ಮುಂದಿನ ಒಲಿಂಪಿಕ್ಸ್ ಮತ್ತು ಏಷ್ಯನ್ ಗೇಮ್ಸ್ ಕನಸಿಗೆ ಮತ್ತೆ ಮರುಜೀವ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...