Homeಮುಖಪುಟಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಕುಮಾರಸ್ವಾಮಿಗೆ ವಿಶ್ ಮಾಡಿದ ನರೇಂದ್ರ ಮೋದಿಯಿಂದ ಹಿಡಿದು ಬಹುತೇಕ ಬಿಜೆಪಿ ಮುಖಂಡರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರ ಜನ್ಮದಿನಕ್ಕೆ ವಿಶ್ ಮಾಡಿಲ್ಲ!

- Advertisement -
- Advertisement -

ಮೊನ್ನೆ ಡಿಸೆಂಬರ್ 16 ರಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ತಮ್ಮ 62 ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು. ಸಾಮಾನ್ಯವಾಗಿ ಗಣ್ಯ ವ್ಯಕ್ತಿಗಳ ಹುಟ್ಟುಹಬ್ಬವಿದ್ದಾಗ ಪಕ್ಷಬೇಧ ಮರೆತು ಎಲ್ಲರೂ ಅಭಿನಂದನೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಯಾರು ಯಾರು ಅಭಿನಂದನೆ ಸಲ್ಲಿಸಿದರು ಮತ್ತು ಯಾರು ಯಾರು ಅಭಿನಂದನೆ ಹೇಳಲಿಲ್ಲ ಎನ್ನುವುದನ್ನು ಗಮನಿಸಿದರೆ ವಾಡಿಕೆ ಮೀರಿ ಮತ್ತೇನೂ ನಡೆಯುತ್ತಿದೆ ಅನಿಸದೇ ಇರಲಾರದು.

ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕರ್ಯಾರೂ ಅಭಿನಂದನೆ ಸಲ್ಲಿಸಿಲ್ಲ. ಜೆಡಿಎಸ್‌ನ ಕೆಲವರು ಮಾತ್ರ ಅಭಿನಂದಿಸಿದರೆ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಬಹುತೇಕ ಸಚಿವರು, ಶಾಸಕರು ಮತ್ತು ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ. ಅಷ್ಟು ಮಾತ್ರವಲ್ಲದೆ, ಹೊರರಾಜ್ಯದ ಬಿಜೆಪಿ ಸಂಸದರು, ಬಿಜೆಪಿ ನಾಯಕರು ಸಹ ಮೊದಲ ಬಾರಿಗೆ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರೆ ಏನರ್ಥ? ಸರಿ ಯಾರು ಯಾರು ಅಭಿನಂದಿಸಿದ್ದಾರೆ ಮೊದಲು ನೋಡಿ ಬಿಡೋಣ.

ಬಿಜೆಪಿ ಪಕ್ಷವು 2018ರ ಮೇ ತಿಂಗಳಿನಿಂದ 2020ರ ಅಕ್ಟೋಬರ್‌ವರೆಗೂ ಕುಮಾರಸ್ವಾಮಿಯವರನ್ನು ಟೀಕಿಸುತ್ತಲೆ ಇದೆ. ಹಲವು ವಿಚಾರಗಳಿಗೆ ಟ್ರೋಲ್ ಮಾಡುತ್ತಲೆ ಇದೆ. ಅದೇ ಬಿಜೆಪಿ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿಗಳಾದ ಡಾ.ಅಶ್ವಥ್ ನಾರಾಯಣ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಡಾ.ಕೆ ಸುಧಾಕರ್, ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಸಿ.ಟಿ ರವಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಂತರ ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಚೆ, ಪಿ.ಸಿ ಮೋಹನ್, ಬಿ.ವೈ ರಾಘವೇಂದ್ರ, ಶಶಿಕಲಾ ಜೊಲ್ಲೆ ಅಭಿನಂದನೆ ತಿಳಿಸಿದ್ದಾರೆ.

ವಿಶೇಷವೆಂದರೆ ರಾಜಸ್ಥಾನದ ರಾಜ್‌ಸಮಂದ್‌ನ ಬಿಜೆಪಿ ಸಂಸದರಾದ ದಿಯಾ ಕುಮಾರಿ, ಹರಿಯಾಣದ ಬಿಜೆಪಿ ಸಂಸದ ಸಂಜಯ್ ಭಾಟಿಯಾ ಮತ್ತು ಮಹಾರಾಷ್ಟ್ರದ ಬಿಜೆಪಿ ರಾಜ್ಯಸಭಾ ಸದಸ್ಯ ಸುರೇಶ್ ಪ್ರಭುರವರು ಸಹ ಕರ್ನಾಟಕ ಮಾಜಿ ಸಿಎಂಗೆ ಟ್ವೀಟ್‌ ಮೂಲಕ ಶುಭ ಹಾರೈಸಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಜೆಡಿಎಸ್ ವತಿಯಿಂದ ಎಚ್.ಡಿ ರೇವಣ್ಣ, ಸಿ.ಎಸ್ ಪುಟ್ಟರಾಜು, ಬಂಡೆಪ್ಪ ಕಾಶೆಂಪೂರ್, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಸಾ.ರ ಮಹೇಶ್, ವೈಎಸ್‌ವಿ ದತ್ತ, ಡಿ.ಸಿ ಗೌರಿಶಂಕರ್, ಆರ್ ಮಂಜುನಾಥ್ ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ. ಆದರೆ ಒಂದು ವರ್ಷ ಜೆಡಿಎಸ್‌ ಜೊತೆ ಮೈತ್ರಿ ಸರ್ಕಾರ ನಡೆಸಿದ್ದ ಕಾಂಗ್ರೆಸ್‌ನ ಯಾವೊಬ್ಬ ಮುಖಂಡರು ಟ್ವೀಟ್ ಮೂಲಕ ಶುಭಾಶಯ ತಿಳಿಸಿಲ್ಲ.

ಇನ್ನು ತಮಗೆ ಹುಟ್ಟು ಹಬ್ಬದ ಶುಭಾಶಯ ಕೋರಿದವರಿಗೆ ಧನ್ಯವಾದ ತಿಳಿಸುತ್ತಾ ಕುಮಾರಸ್ವಾಮಿಯವರು “ತತ್ವ-ಸಿದ್ಧಾಂತಗಳೆಂಬುದು ಕ್ಲಿಷೆಯ ಮಾತಾಗಿರುವ ಈ ದಿನಗಳಲ್ಲಿ ನಾಡಿನ ಜನರ ಒಳಿತಿಗಾಗಿ ದುಡಿವುದಷ್ಟೆ ಒಂದು ಸಿದ್ಧಾಂತವಾಗಬೇಕು” ಎಂಬ ಮಾತುಗಳನ್ನಾಡಿದ್ದಾರೆ. ತಮ್ಮ ಪಕ್ಷ ಜಾತ್ಯಾತೀತ ಜನತಾದಳವೆಂದೂ, ತಾವು ರೈತಪರವೆಂದು ಘೋಷಿಸಿಕೊಂಡಿದ್ದ ಕುಮಾರಸ್ವಾಮಿಯವರು ನಿಧಾನವಾಗಿ ತಮ್ಮ ಸಿದ್ದಾಂತದ ಅರ್ಥವನ್ನು ಬದಲಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

ತನ್ನನ್ನು ಸಿಎಂ ಕುರ್ಚಿಯಿಂದ ಇಳಿಸಿದ ಬಿಜೆಪಿ ಬಗ್ಗೆ ಕುಮಾರಸ್ವಾಮಿಯವರಿಗೆ ಸಿಟ್ಟಿಲ್ಲ. ಕಳೆದ ಆರು ತಿಂಗಳುಗಳಿಂದ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸಖ್ಯವನ್ನು, ಅದೇ ಸಮಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆಯನ್ನು ಮುಂದುವರೆಸಿದ್ದಾರೆ. ನೇರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಪ್ರತಿದಿನ ಟೀಕಿಸುತ್ತಿದ್ದಾರೆ. ತಾನು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ದರಾಮಯ್ಯ ಕಾರಣ ಎಂದು ಇಂದೂ ಸಹ ಆರೋಪಿಸಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ತಮ್ಮ ಹುಟ್ಟು ಹಬ್ಬಕ್ಕೂ ಒಂದು ವಾರ ಮುಂಚಿತವಾಗಿ ಡಿಸೆಂಬರ್ 08 ರಂದು ರಾಜ್ಯ ವಿಧಾನ ಮಂಡಲದ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಕರ್ನಾಟಕ ಭೂಸುಧಾರಣೆ ತಿದ್ದುಪಡಿ ವಿಧೇಯಕ 2020 ಅನ್ನು ಮಂಡಿಸಿತು. ರೈತರ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ಮೂರು ತಿಂಗಳ ಹಿಂದೆ ತಾನೇ ಅದನ್ನು ವೀರಾವೇಷದಿಂದ ವಿರೋಧಿಸಿತ್ತು. ಆದರೆ ಡಿಸೆಂಬರ್ 08 ರಂದು ಮಾತ್ರ ಸದ್ದಿಲ್ಲದೆ ಭೂಸುಧಾರಣೆ ವಿಧೇಯಕದ ಪರವಾಗಿ ಮತಹಾಕಿ ಪರಿಷತ್‌ನಲ್ಲಿ ಅದು ಅಂಗೀಕಾರವಾಗಲು ಕಾರಣವಾಯಿತು! ಆ ಮೂಲಕ ಬಿಜೆಪಿಯೊಂದಿಗೆ ಬಹಿರಂಗ ದೋಸ್ತಿ ಘೋಷಿಸಿತು.

ಅದಾದ ಒಂದು ವಾರದ ನಂತರ ಒಂದು ದಿನದ ವಿಧಾನಪರಿಷತ್ ಅಧಿವೇಶನ ಕರೆಯಲಾಯಿತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆಗ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರನ್ನು ಪದಚ್ಯುತಿಗೊಳಿಸಲು ಕುಮಾರಸ್ವಾಮಿಯವರು ಬಿಜೆಪಿಗೆ ಬೇಷರತ್ ಬೆಂಬಲ ನೀಡಿದರು. ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿ ಭಾರೀ ಗದ್ದಲ ನಡೆಯಲು ಕಾರಣರಾದರು!

ಇನ್ನು ಕರ್ನಾಟಕದಲ್ಲಿ ದಿನೇ ದಿನೇ ಜೆಡಿಎಸ್ ಬಲ ಕುಗ್ಗುತ್ತಿರುವುದರಿಂದ ಕುಮಾರಸ್ವಾಮಿಯವರು ಬಿಜೆಪಿಯಲ್ಲಿ ತಮ್ಮ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಅದಕ್ಕೆ ಅನುಗುಣವಾಗಿಯೇ ಕುಮಾರಸ್ವಾಮಿಯವರು ಬಿಜೆಪಿಯವರೊಡನೆ ಸೌಮ್ಯವಾಗಿಯೂ, ಕಾಂಗ್ರೆಸ್‌ನವರೊಡನೆ ಉಗ್ರವಾಗಿಯೂ ನಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಪುಷ್ಠಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿಯ ರಾಜ್ಯದ ಎಲ್ಲಾ ಮುಖಂಡರು, ಹೊರರಾಜ್ಯದ ಸಂಸದರು, ಮುಖಂಡರು ಸಹ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಶುಭಾಶಯ ಕೋರಿ ಪಕ್ಷಕ್ಕೆ ಬರಮಾಡಿಕೊಳ್ಳಲು ಸಿದ್ದರಾಗಿದ್ದಾರೆ.

ಅಚ್ಚರಿಯ ಮತ್ತು ನೀವು ನಂಬಲೇಬೇಕಾದ ಮತ್ತೊಂದು ಅಂಶವೆಂದರೆ ಕುಮಾರಸ್ವಾಮಿಯವರ ಜನ್ಮದಿನದ ಎರಡು ದಿನದ ನಂತರ ಅಂದರೆ ಡಿಸೆಂಬರ್ 17ರಂದು ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಸಹ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿದ್ದ ಬಿಜೆಪಿಯ ನರೇಂದ್ರ ಮೋದಿ ಆದಿಯಾಗಿ ಸುರೇಶ್ ಪ್ರಭು, ದಿಯಾ ಕುಮಾರಿ, ಸಂಜಯ್ ಭಾಟಿಯಾ ಸೇರಿ ಬಹುತೇಕರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರಿಗೆ ಜನ್ಮದಿನದ ಶುಭಾಶಯ ತಿಳಿಸಲಿಲ್ಲ ಏಕೆ? ಈ ಪ್ರಶ್ನೆಗೆ ಉತ್ತರ ಸ್ಪಷ್ಟ. ಬಿಜೆಪಿಯು ಕುಮಾರಸ್ವಾಮಿಯವರನ್ನು ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಅವರ ಪಕ್ಷದ ನಿರ್ಣಯದಂತೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿ ಸಂಬಂಧ ವೃದ್ದಿಸಿಕೊಳ್ಳಲು ನೋಡುತ್ತಿದೆ. ಕುಮಾರಸ್ವಾಮಿಯವರಿಗೂ ಅದೇ ಬೇಕಿತ್ತು ಎನ್ನುವಂತೆ ವರ್ತಿಸುತ್ತಿದ್ದಾರೆ ಅಷ್ಟೇ.

ಇನ್ನು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರು ಬಸ್‌ ಸೇವೆ ನಿಲ್ಲಿಸಿ ಹೋರಾಟ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಯ ಪರವಾಗಿ ವಿಧಾನ ಪರಿಷತ್ತಿನಲ್ಲಿ ಮತ ಹಾಕಿದ ಜೆಡಿಎಸ್‌ ವಿರುದ್ಧ ಕೆಂಡಾಮಂಡಲವಾಗಿದ್ದರು. “ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡಲು” ಎಂದು ಕೋಡಿಹಳ್ಳಿ ಆಕ್ರೋಶ ಹೊರಹಾಕಿದ್ದರು. ಆಗ ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಪ್ರಕಟಣೆಯಲ್ಲಿ “ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್‌ರವರು ಲಘುವಾಗಿ ಮಾತನಾಡಿರುವುದು ಖಂಡನೀಯ” ಎಂದು ಬರೆದು ಎಚ್‌ಡಿಕೆ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದರು.

ಒಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಗೆ ಕಾಲ ಕೂಡಿಬರುತ್ತಿದೆಯೇ? ಅಥವಾ ಕುಮಾರಸ್ವಾಮಿಯವರೆ ಬಿಜೆಪಿಯತ್ತ ನಡೆಯುತ್ತಿದ್ದಾರೆಯೇ? ಈ ಪ್ರಶ್ನೆಗಳಿಗೆ ಕಾಲವೇ ಉತ್ತರಿಸಲಿದೆ.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...