Homeಮುಖಪುಟಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಕುಮಾರಸ್ವಾಮಿಗೆ ವಿಶ್ ಮಾಡಿದ ನರೇಂದ್ರ ಮೋದಿಯಿಂದ ಹಿಡಿದು ಬಹುತೇಕ ಬಿಜೆಪಿ ಮುಖಂಡರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರ ಜನ್ಮದಿನಕ್ಕೆ ವಿಶ್ ಮಾಡಿಲ್ಲ!

- Advertisement -
- Advertisement -

ಮೊನ್ನೆ ಡಿಸೆಂಬರ್ 16 ರಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ತಮ್ಮ 62 ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು. ಸಾಮಾನ್ಯವಾಗಿ ಗಣ್ಯ ವ್ಯಕ್ತಿಗಳ ಹುಟ್ಟುಹಬ್ಬವಿದ್ದಾಗ ಪಕ್ಷಬೇಧ ಮರೆತು ಎಲ್ಲರೂ ಅಭಿನಂದನೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಯಾರು ಯಾರು ಅಭಿನಂದನೆ ಸಲ್ಲಿಸಿದರು ಮತ್ತು ಯಾರು ಯಾರು ಅಭಿನಂದನೆ ಹೇಳಲಿಲ್ಲ ಎನ್ನುವುದನ್ನು ಗಮನಿಸಿದರೆ ವಾಡಿಕೆ ಮೀರಿ ಮತ್ತೇನೂ ನಡೆಯುತ್ತಿದೆ ಅನಿಸದೇ ಇರಲಾರದು.

ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕರ್ಯಾರೂ ಅಭಿನಂದನೆ ಸಲ್ಲಿಸಿಲ್ಲ. ಜೆಡಿಎಸ್‌ನ ಕೆಲವರು ಮಾತ್ರ ಅಭಿನಂದಿಸಿದರೆ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಬಹುತೇಕ ಸಚಿವರು, ಶಾಸಕರು ಮತ್ತು ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ. ಅಷ್ಟು ಮಾತ್ರವಲ್ಲದೆ, ಹೊರರಾಜ್ಯದ ಬಿಜೆಪಿ ಸಂಸದರು, ಬಿಜೆಪಿ ನಾಯಕರು ಸಹ ಮೊದಲ ಬಾರಿಗೆ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರೆ ಏನರ್ಥ? ಸರಿ ಯಾರು ಯಾರು ಅಭಿನಂದಿಸಿದ್ದಾರೆ ಮೊದಲು ನೋಡಿ ಬಿಡೋಣ.

ಬಿಜೆಪಿ ಪಕ್ಷವು 2018ರ ಮೇ ತಿಂಗಳಿನಿಂದ 2020ರ ಅಕ್ಟೋಬರ್‌ವರೆಗೂ ಕುಮಾರಸ್ವಾಮಿಯವರನ್ನು ಟೀಕಿಸುತ್ತಲೆ ಇದೆ. ಹಲವು ವಿಚಾರಗಳಿಗೆ ಟ್ರೋಲ್ ಮಾಡುತ್ತಲೆ ಇದೆ. ಅದೇ ಬಿಜೆಪಿ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿಗಳಾದ ಡಾ.ಅಶ್ವಥ್ ನಾರಾಯಣ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಡಾ.ಕೆ ಸುಧಾಕರ್, ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಸಿ.ಟಿ ರವಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಂತರ ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಚೆ, ಪಿ.ಸಿ ಮೋಹನ್, ಬಿ.ವೈ ರಾಘವೇಂದ್ರ, ಶಶಿಕಲಾ ಜೊಲ್ಲೆ ಅಭಿನಂದನೆ ತಿಳಿಸಿದ್ದಾರೆ.

ವಿಶೇಷವೆಂದರೆ ರಾಜಸ್ಥಾನದ ರಾಜ್‌ಸಮಂದ್‌ನ ಬಿಜೆಪಿ ಸಂಸದರಾದ ದಿಯಾ ಕುಮಾರಿ, ಹರಿಯಾಣದ ಬಿಜೆಪಿ ಸಂಸದ ಸಂಜಯ್ ಭಾಟಿಯಾ ಮತ್ತು ಮಹಾರಾಷ್ಟ್ರದ ಬಿಜೆಪಿ ರಾಜ್ಯಸಭಾ ಸದಸ್ಯ ಸುರೇಶ್ ಪ್ರಭುರವರು ಸಹ ಕರ್ನಾಟಕ ಮಾಜಿ ಸಿಎಂಗೆ ಟ್ವೀಟ್‌ ಮೂಲಕ ಶುಭ ಹಾರೈಸಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಜೆಡಿಎಸ್ ವತಿಯಿಂದ ಎಚ್.ಡಿ ರೇವಣ್ಣ, ಸಿ.ಎಸ್ ಪುಟ್ಟರಾಜು, ಬಂಡೆಪ್ಪ ಕಾಶೆಂಪೂರ್, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಸಾ.ರ ಮಹೇಶ್, ವೈಎಸ್‌ವಿ ದತ್ತ, ಡಿ.ಸಿ ಗೌರಿಶಂಕರ್, ಆರ್ ಮಂಜುನಾಥ್ ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ. ಆದರೆ ಒಂದು ವರ್ಷ ಜೆಡಿಎಸ್‌ ಜೊತೆ ಮೈತ್ರಿ ಸರ್ಕಾರ ನಡೆಸಿದ್ದ ಕಾಂಗ್ರೆಸ್‌ನ ಯಾವೊಬ್ಬ ಮುಖಂಡರು ಟ್ವೀಟ್ ಮೂಲಕ ಶುಭಾಶಯ ತಿಳಿಸಿಲ್ಲ.

ಇನ್ನು ತಮಗೆ ಹುಟ್ಟು ಹಬ್ಬದ ಶುಭಾಶಯ ಕೋರಿದವರಿಗೆ ಧನ್ಯವಾದ ತಿಳಿಸುತ್ತಾ ಕುಮಾರಸ್ವಾಮಿಯವರು “ತತ್ವ-ಸಿದ್ಧಾಂತಗಳೆಂಬುದು ಕ್ಲಿಷೆಯ ಮಾತಾಗಿರುವ ಈ ದಿನಗಳಲ್ಲಿ ನಾಡಿನ ಜನರ ಒಳಿತಿಗಾಗಿ ದುಡಿವುದಷ್ಟೆ ಒಂದು ಸಿದ್ಧಾಂತವಾಗಬೇಕು” ಎಂಬ ಮಾತುಗಳನ್ನಾಡಿದ್ದಾರೆ. ತಮ್ಮ ಪಕ್ಷ ಜಾತ್ಯಾತೀತ ಜನತಾದಳವೆಂದೂ, ತಾವು ರೈತಪರವೆಂದು ಘೋಷಿಸಿಕೊಂಡಿದ್ದ ಕುಮಾರಸ್ವಾಮಿಯವರು ನಿಧಾನವಾಗಿ ತಮ್ಮ ಸಿದ್ದಾಂತದ ಅರ್ಥವನ್ನು ಬದಲಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

ತನ್ನನ್ನು ಸಿಎಂ ಕುರ್ಚಿಯಿಂದ ಇಳಿಸಿದ ಬಿಜೆಪಿ ಬಗ್ಗೆ ಕುಮಾರಸ್ವಾಮಿಯವರಿಗೆ ಸಿಟ್ಟಿಲ್ಲ. ಕಳೆದ ಆರು ತಿಂಗಳುಗಳಿಂದ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸಖ್ಯವನ್ನು, ಅದೇ ಸಮಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆಯನ್ನು ಮುಂದುವರೆಸಿದ್ದಾರೆ. ನೇರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಪ್ರತಿದಿನ ಟೀಕಿಸುತ್ತಿದ್ದಾರೆ. ತಾನು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ದರಾಮಯ್ಯ ಕಾರಣ ಎಂದು ಇಂದೂ ಸಹ ಆರೋಪಿಸಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ತಮ್ಮ ಹುಟ್ಟು ಹಬ್ಬಕ್ಕೂ ಒಂದು ವಾರ ಮುಂಚಿತವಾಗಿ ಡಿಸೆಂಬರ್ 08 ರಂದು ರಾಜ್ಯ ವಿಧಾನ ಮಂಡಲದ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಕರ್ನಾಟಕ ಭೂಸುಧಾರಣೆ ತಿದ್ದುಪಡಿ ವಿಧೇಯಕ 2020 ಅನ್ನು ಮಂಡಿಸಿತು. ರೈತರ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ಮೂರು ತಿಂಗಳ ಹಿಂದೆ ತಾನೇ ಅದನ್ನು ವೀರಾವೇಷದಿಂದ ವಿರೋಧಿಸಿತ್ತು. ಆದರೆ ಡಿಸೆಂಬರ್ 08 ರಂದು ಮಾತ್ರ ಸದ್ದಿಲ್ಲದೆ ಭೂಸುಧಾರಣೆ ವಿಧೇಯಕದ ಪರವಾಗಿ ಮತಹಾಕಿ ಪರಿಷತ್‌ನಲ್ಲಿ ಅದು ಅಂಗೀಕಾರವಾಗಲು ಕಾರಣವಾಯಿತು! ಆ ಮೂಲಕ ಬಿಜೆಪಿಯೊಂದಿಗೆ ಬಹಿರಂಗ ದೋಸ್ತಿ ಘೋಷಿಸಿತು.

ಅದಾದ ಒಂದು ವಾರದ ನಂತರ ಒಂದು ದಿನದ ವಿಧಾನಪರಿಷತ್ ಅಧಿವೇಶನ ಕರೆಯಲಾಯಿತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆಗ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರನ್ನು ಪದಚ್ಯುತಿಗೊಳಿಸಲು ಕುಮಾರಸ್ವಾಮಿಯವರು ಬಿಜೆಪಿಗೆ ಬೇಷರತ್ ಬೆಂಬಲ ನೀಡಿದರು. ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿ ಭಾರೀ ಗದ್ದಲ ನಡೆಯಲು ಕಾರಣರಾದರು!

ಇನ್ನು ಕರ್ನಾಟಕದಲ್ಲಿ ದಿನೇ ದಿನೇ ಜೆಡಿಎಸ್ ಬಲ ಕುಗ್ಗುತ್ತಿರುವುದರಿಂದ ಕುಮಾರಸ್ವಾಮಿಯವರು ಬಿಜೆಪಿಯಲ್ಲಿ ತಮ್ಮ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಅದಕ್ಕೆ ಅನುಗುಣವಾಗಿಯೇ ಕುಮಾರಸ್ವಾಮಿಯವರು ಬಿಜೆಪಿಯವರೊಡನೆ ಸೌಮ್ಯವಾಗಿಯೂ, ಕಾಂಗ್ರೆಸ್‌ನವರೊಡನೆ ಉಗ್ರವಾಗಿಯೂ ನಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಪುಷ್ಠಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿಯ ರಾಜ್ಯದ ಎಲ್ಲಾ ಮುಖಂಡರು, ಹೊರರಾಜ್ಯದ ಸಂಸದರು, ಮುಖಂಡರು ಸಹ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಶುಭಾಶಯ ಕೋರಿ ಪಕ್ಷಕ್ಕೆ ಬರಮಾಡಿಕೊಳ್ಳಲು ಸಿದ್ದರಾಗಿದ್ದಾರೆ.

ಅಚ್ಚರಿಯ ಮತ್ತು ನೀವು ನಂಬಲೇಬೇಕಾದ ಮತ್ತೊಂದು ಅಂಶವೆಂದರೆ ಕುಮಾರಸ್ವಾಮಿಯವರ ಜನ್ಮದಿನದ ಎರಡು ದಿನದ ನಂತರ ಅಂದರೆ ಡಿಸೆಂಬರ್ 17ರಂದು ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಸಹ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿದ್ದ ಬಿಜೆಪಿಯ ನರೇಂದ್ರ ಮೋದಿ ಆದಿಯಾಗಿ ಸುರೇಶ್ ಪ್ರಭು, ದಿಯಾ ಕುಮಾರಿ, ಸಂಜಯ್ ಭಾಟಿಯಾ ಸೇರಿ ಬಹುತೇಕರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರಿಗೆ ಜನ್ಮದಿನದ ಶುಭಾಶಯ ತಿಳಿಸಲಿಲ್ಲ ಏಕೆ? ಈ ಪ್ರಶ್ನೆಗೆ ಉತ್ತರ ಸ್ಪಷ್ಟ. ಬಿಜೆಪಿಯು ಕುಮಾರಸ್ವಾಮಿಯವರನ್ನು ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಅವರ ಪಕ್ಷದ ನಿರ್ಣಯದಂತೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿ ಸಂಬಂಧ ವೃದ್ದಿಸಿಕೊಳ್ಳಲು ನೋಡುತ್ತಿದೆ. ಕುಮಾರಸ್ವಾಮಿಯವರಿಗೂ ಅದೇ ಬೇಕಿತ್ತು ಎನ್ನುವಂತೆ ವರ್ತಿಸುತ್ತಿದ್ದಾರೆ ಅಷ್ಟೇ.

ಇನ್ನು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರು ಬಸ್‌ ಸೇವೆ ನಿಲ್ಲಿಸಿ ಹೋರಾಟ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಯ ಪರವಾಗಿ ವಿಧಾನ ಪರಿಷತ್ತಿನಲ್ಲಿ ಮತ ಹಾಕಿದ ಜೆಡಿಎಸ್‌ ವಿರುದ್ಧ ಕೆಂಡಾಮಂಡಲವಾಗಿದ್ದರು. “ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡಲು” ಎಂದು ಕೋಡಿಹಳ್ಳಿ ಆಕ್ರೋಶ ಹೊರಹಾಕಿದ್ದರು. ಆಗ ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಪ್ರಕಟಣೆಯಲ್ಲಿ “ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್‌ರವರು ಲಘುವಾಗಿ ಮಾತನಾಡಿರುವುದು ಖಂಡನೀಯ” ಎಂದು ಬರೆದು ಎಚ್‌ಡಿಕೆ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದರು.

ಒಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಗೆ ಕಾಲ ಕೂಡಿಬರುತ್ತಿದೆಯೇ? ಅಥವಾ ಕುಮಾರಸ್ವಾಮಿಯವರೆ ಬಿಜೆಪಿಯತ್ತ ನಡೆಯುತ್ತಿದ್ದಾರೆಯೇ? ಈ ಪ್ರಶ್ನೆಗಳಿಗೆ ಕಾಲವೇ ಉತ್ತರಿಸಲಿದೆ.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...