2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿವೆ. ಇದೀಗ ಜೆಡಿಎಸ್ ಪಕ್ಷ ಬಿಜೆಪಿ ನೇತೃತ್ವದಲ್ಲಿ ಎನ್ಡಿಎನ ಭಾಗವಾಗಿದೆ. ಆದರೆ, ಮೈತ್ರಿ ಬೆನ್ನಲ್ಲಿಯೇ ಜೆಡಿಎಸ್ನಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು.
ಆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ”ಬಿಜೆಪಿ – ಜೆಡಿಎಸ್ನ ಮೈತ್ರಿಯನ್ನು ಸಹಿಸಿಕೊಳ್ಳಲು ಆಗದೇ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮೆಲ್ಲರಿಗೂ ಶುಭವಾಗಲಿ” ಎಂದರು.
”ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು?” ಎಂದು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಡಿಕೆಶಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್ಗೆ ಮರಳುವ ಸಾಧ್ಯತೆ