Homeಮುಖಪುಟಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

- Advertisement -
- Advertisement -

ಅದು 2006ರ ಸಮಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದರೆ, ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ, ಆಗತಾನೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದ ಹೆಚ್‌.ಡಿ. ಕುಮಾರಸ್ವಾಮಿ ನಾಡಿನ ಹಿರಿಯ ರಾಜಕಾರಣಿ ಧರ್ಮಸಿಂಗ್‌ ಪಾಲಿಗೆ ಅಕ್ಷರಶಃ ದುಸ್ವಪ್ನದಂತೆ ಕಾಡಿದ್ದರು. ಕೊನೆಗೆ ಮೈತ್ರಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಜೊತೆಗೆ ಕೈಜೋಡಿಸಿ ಅಪವಿತ್ರ ಮೈತ್ರಿಗೆ ನಾಂದಿ ಹಾಡಿದ್ದರು.

ಕರ್ನಾಟಕ ರಾಜಕಾರಣದ ಪಾಲಿಗೆ ಈಗಲೂ ಇದೊಂದು ಅಪವಿತ್ರ ಮೈತ್ರಿ ಮತ್ತು ಜೆಡಿಎಸ್‌ ರಾಜಕೀಯ ಹಾದಿಯ ಒಂದು ಪ್ರಮಾದ ಎಂದೇ ಬಣ್ಣಿಸಲಾಗುತ್ತದೆ. ಅಂದು ಈ ಮೈತ್ರಿಯನ್ನು ಸುಲಭಕ್ಕೆ ಮುರಿಯಬಹುದಾದ ಶಕ್ತಿ ಮಾಜಿ ಪ್ರಧಾನಿ ದೇವೇಗೌಡರಿಗೆ ಇತ್ತು. ಆದರೆ, ಪುತ್ರ ವ್ಯಾಮೋಹ ಅವರ ಕೈಯನ್ನು ಕಟ್ಟಿಹಾಕಿತ್ತು. ದಶಕದ ಹಿಂದೆ ಹೀಗೆ ನಡೆದುಹೋದ ಒಂದು ರಾಜಕೀಯ ಪ್ರಮಾದಕ್ಕೆ ಈಗಲೂ ಜೆಡಿಎಸ್‌ ಬೆಲೆ ತೆರುತ್ತಲೇ ಇದೆ.

ದಶಕದ ಹಿಂದಿನ ಈ ರಾಜಕೀಯ ಇತಿಹಾಸವನ್ನು ಈಗ ನೆನೆಪು ಮಾಡಿಕೊಳ್ಳುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಮಗ ಸೂಪರ್‌ ಸಿಎಂ ಖ್ಯಾತಿಯ ಬಿ.ವೈ. ವಿಜಯೇಂದ್ರ.

ಕುಟುಂಬ ರಾಜಕಾರಣ ಮತ್ತು ಪುತ್ರ ವ್ಯಾಮೋಹ ಇಂದು ಜೆಡಿಎಸ್‌ ಪಕ್ಷಕ್ಕೆ ಮುಳುವಾಗಿರುವಂತೆಯೇ, ಇದೇ ಪುತ್ರ ವ್ಯಾಮೋಹ ಮತ್ತು ತನ್ನ ರಾಜಕೀಯ ಉತ್ತರಾಧಿಕಾರಿಯನ್ನು ಬಿಜೆಪಿಯಲ್ಲಿ ಉಳಿಸಿಹೋಗಬೇಕು ಎಂಬ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಅವರ ರಾಜಕೀಯ ಹಾದಿಗೆ ಮುಳ್ಳಾಗಲಿದೆಯೇ? ಎಂಬ ಮಹತ್ವದ ಪ್ರಶ್ನೆಗಳು ಇಂದು ರಾಜ್ಯ ರಾಜಕೀಯದಲ್ಲಿ ತಲೆ ಎತ್ತುತ್ತಿವೆ. ಇದಕ್ಕೆ ಕಾರಣಗಳೂ ಇಲ್ಲದೆ ಏನಿಲ್ಲ.

ಈತ ಶಾಸಕನೇನಲ್ಲ ಅದರೂ ಸೂಪರ್‌ ಸಿಎಂ ಹೆಸರು ವಿಜಯೇಂದ್ರ!

ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿ ಆಯ್ಕೆಯಾದವರು. ಒಂದು ಬಾರಿಯೂ ಸಹ ಪೂರ್ಣ ಪ್ರಮಾಣದ ಸಿಎಂ ಆಗಿ ಅಧಿಕಾರ ನಡೆಸದಿದ್ದರೂ ಸಹ ಈಗಲೂ ಬಿಜೆಪಿಯಲ್ಲಿ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಸಹ ಸಿಎಂ ಸ್ಥಾನದಲ್ಲಿ ಕಲ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಬಿಜೆಪಿಯಲ್ಲಿ 75 ವಯಸ್ಸಿನ ಮೇಲ್ಪಟ್ಟವರಿಗೆ ರಾಜಕೀಯ ನಿವೃತ್ತಿ ನೀಡಲಾಗುತ್ತಿದ್ದರೂ ಬಿಎಸ್‌ವೈ ಅವರನ್ನು ಮಾತ್ರ  ಹೈಕಮಾಂಡ್‌ ಏನೂ ಮಾಡಲು ಸಾಧ್ಯವಾಗಿಲ್ಲ.

ಕಳೆದ ಮೂರು ಅವಧಿಯಲ್ಲೂ ಸಹ ಯಡಿಯೂರಪ್ಪನವರಿಗೆ ಮಗ ವಿಜಯೇಂದ್ರ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿಯಾಗಿ ಬೆಳೆಸುವ ಯಾವುದೇ ಇರಾದೆ ಇರಲಿಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಯಡಿಯೂರಪ್ಪನವರ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಇದ್ದರು. ಶೋಭ ಅವರನ್ನೇ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿತ್ತು. ಆದರೆ, ಸಿಎಂ ಕುಟುಂಬದಲ್ಲಿ ನಡೆದ ಬಿಕ್ಕಟ್ಟಿನ ಕಾರಣಕ್ಕೆ ಇಂದು ಶೋಭಾ ಕರಂದ್ಲಾಜೆ ಅವರ ಜಾಗಕ್ಕೆ ಮಗ ವಿಜಯೇಂದ್ರ ಬಂದು ನಿಂತಿದ್ದಾರೆ. ಮತ್ತು ಇವರೇ ಯಡಿಯೂರಪ್ಪವರ ರಾಜಕೀಯ ಉತ್ತರಾಧಿಕಾರಿ ಎಂಬುದರಲ್ಲಿ ಎರಡು ಮಾತಿಲ್ಲ.

ವಿಜಯೇಂದ್ರ

ಈ ಬೆಳವಣಿಗೆ ಇಷ್ಟಕ್ಕೆ ಸೀಮಿತವಾಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ಇದನ್ನೂ ದಾಟಿ ವಿಜಯೇಂದ್ರ ಇಂದು ಅಕ್ಷರಶಃ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ವಿಜಯೇಂದ್ರ ಮೂಲತಃ  ಶಾಸಕರಲ್ಲ, ಇನ್ನೂ ಪಕ್ಷದಲ್ಲೂ ಅವರಿಗೆ ದೊಡ್ಡ ಸ್ಥಾನಮಾನವೇನೂ ಇಲ್ಲ. ಕೆ.ಆರ್‌ ಪೇಟೆ ಉಪ ಚುನಾವಣೆ ಗೆಲುವನ್ನು ಹೊರತುಪಡಿಸಿ ಬೇರೆ ಯಾವ ದಾಖಲೆಯೂ ಅವರ ಬೆನ್ನಿಗಿಲ್ಲ. ಆದರೂ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಬೇಕು ಎಂಬಲ್ಲಿಂದ ಸರ್ಕಾರದ ಮಹತ್ವದ ಯೋಜನೆ-ಕಾಮಗಾರಿಗಳವರೆಗೆ ಎಲ್ಲವೂ ವಿಜಯೇಂದ್ರ ಅವರ ಅಂಕೆಯಲ್ಲೇ ನಡೆಯುತ್ತಿದೆ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ.

ಯಡಿಯೂರಪ್ಪನವರಿಗೆ ಕಾದಿದೆಯಾ ಕಂಟಕ?

ಮೊದಲೇ ಹೇಳಿದಂತೆ ಬಿ.ಎಸ್‌. ಯಡಿಯೂರಪ್ಪ ನಾಲ್ಕು ಬಾರಿ ಈ ರಾಜ್ಯದ ಸಿಎಂ ಆದರೂ ಸಹ ಪೂರ್ಣ ಅವಧಿಯ ಅಧಿಕಾರವನ್ನು ಪೂರೈಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರಿಗೆ ಮುಂದಿನ ಮೂರು ವರ್ಷ ಸಿಎಂ ಆಗಿ ಮುಂದುವರೆಯುವ ಅವಕಾಶ ಇದೆ. ಈ ನಡುವೆ ಇಂತಹ ಸವರ್ಣಾವಕಾಶವನ್ನು ಸ್ವತಃ ಅವರೇ ತಮ್ಮ ಕೈಯಾರೆ ಹಾಳು ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಕಾರಣ ಪುತ್ರ ವ್ಯಾಮೋಹ.

ಇಂದು ರಾಜ್ಯ ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಸಹ ಪಕ್ಷದೊಳಗಿನ ಒಳ ಬೇಗುದಿ ಇನ್ನೂ ತಣ್ಣಗಾಗಿಲ್ಲ. ಒಂದೆದೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಹಿಡಿದ ಪಟ್ಟು ಇನ್ನೂ ಸಡಿಲಿಸಿಲ್ಲ ಮತ್ತೊಂದೆಡೆ ಸಚಿವ ಸ್ಥಾನಾಕಾಂಕ್ಷಿಗಳಾದ ಉಮೇಶ್‌ ಕತ್ತಿ, ರೇಣುಕಾಚಾರ್ಯ, ಮುರುಗೇಶ್‌ ನಿರಾಣಿಯಂತಹ ಹಿರಿಯ ಶಾಸಕರು ಯಡಿಯೂರಪ್ಪ ವಿರುದ್ಧ ತೆರೆಯ ಮರೆಯಲ್ಲೇ ಕತ್ತಿ ಮಸೆಯುತ್ತಿರುವುದೇನೂ ಇಂದು ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಯಡಿಯೂರಪ್ಪನವರ ಪುತ್ರ ವ್ಯಾಮೋಹ ಮತ್ತು ವಿಜಯೇಂದ್ರ ಅವರ ಸೂಪರ್‌ ಸಿಎಂ ನಡವಳಿಕೆ ಭವಿಷ್ಯದಲ್ಲಿ ಯಡಿಯೂರಪ್ಪವರಿಗೆ ದುಬಾರಿಯಾಗುವ ಎಲ್ಲಾ ಲಕ್ಷಣಗಳನ್ನೂ ಕಣ್ಣೆದುರು ತೆರೆದಿಟ್ಟಿದೆ.

ಪಕ್ಷದ ಹಿರಿಯ ಶಾಸಕರು ತಮ್ಮ ಕ್ಷೇತ್ರದ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಬಂದರೂ ಸಹ ಯಡಿಯೂರಪ್ಪ ಎಲ್ಲರಿಗೂ ವಿಜಯೇಂದ್ರ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲಾ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸದ್ದಿಲ್ಲದೆ ಸಿಎಂ ವಿರುದ್ಧ ಒಂದು ಗುಂಪು ಧೃವೀಕರಣಗೊಳ್ಳುತ್ತಿದೆ. ಉಮೇಶ್‌ ಕತ್ತಿ ಇದರ ನಾಯಕ ಎನ್ನಲಾಗುತ್ತಿದೆ.

ಉಮೇಶ್‌ ಕತ್ತಿ

ಇದಲ್ಲದೆ ಮೊನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವತಃ 15ಕ್ಕೂ ಹೆಚ್ಚು ಲಿಂಗಾಯತ ಸಮುದಾಯದ ಶಾಸಕರು ಈ ವಿಚಾರವನ್ನು ಎತ್ತಿದ್ದಾರೆ, ಬಿಎಸ್‌ವೈ ನಡೆಯನ್ನು ಖಂಡಿಸಿದ್ದಾರೆ. ವಿಜಯಪುರದ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಹ, “ನಾನು ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವನಾಗಿದ್ದವನು. ನನ್ನಂತವನು ಅನುದಾಕ್ಕಾಗಿ ಕೋರಿ ಶಾಸಕನಾಗಿ ವಿಧಾನಸಭೆಯನ್ನೂ ಪ್ರವೇಶಿಸದ ವಿಜಯೇಂದ್ರನ ಎದುರು ನಿಲ್ಲಬೇಕೆ?” ಎಂದು ಕಟುವಾಗಿ ಟೀಕಿಸಿದ್ದಾರೆ ಎನ್ನಲಾಗುತ್ತಿದೆ.

ಬಸನಗೌಡ ಪಾಟೀಲ ಯತ್ನಾಳ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ರಾಜ್ಯದ ಹಿರಿಯ ಬಿಜೆಪಿ ಶಾಸಕರು ಈಗಾಗಲೇ ಈ ಕುರಿತ ದೂರನ್ನು ತಲುಪಿಸಿದ್ದಾರೆ. ಅಲ್ಲದೆ, ಬಿಎಸ್‌ವೈ ವಿರುದ್ದ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸದ್ದಿಲ್ಲದೆ ಒಂದು ಬಣ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ. ಒಂದು ವೇಳೆ ಇದು ನಿಜವಾದರೆ ಮುಂದಿನ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದು ಖಚಿತ. ಆದರೆ, ಬಿಎಸ್‌ವೈ ಸಿಎಂ ಸ್ಥಾನ ಅನಿಶ್ಚಿತ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಸ್ತುತ ರಾಜ್ಯ ರಾಜಕೀಯದ ಎಲ್ಲಾ ಸನ್ನಿವೇಶಗಳನ್ನೂ ಹಿಂದಿನ ರಾಜಕೀಯ ಇತಿಹಾಸದ ಜೊತೆಗೆ ತಾಳೆ ಹಾಕಿ ನೋಡಿದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...