ವರ್ತೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತಕ್ಕೆ ಒಳಗಾದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ನಿಧನರಾಗಿದ್ದಾರೆ.
ಟಿಕೆಟ್ ಆಕಾಂಕ್ಷಿಯಾಗಿದ್ದ 60 ವರ್ಷದ ಶ್ರೀಶೈಲಪ್ಪ ಅವರು ಸಭೆಯ ಆರಂಭದಲ್ಲೇ ಅಸ್ವಸ್ಥರಾಗಿ ಕುಸಿದುಬಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ರೋಣ ಮತ್ತು ಗದಗ ಕ್ಷೇತ್ರಗಳಿಂದ ಬಿಜೆಪಿಯಿಂದ ತಲಾ ಒಂದು ಬಾರಿ ಶಾಸಕರಾಗಿದ್ದ ಶ್ರೀಶೈಲಪ್ಪ ಅವರಿಗೆ 2018ರಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ 2019ರಲ್ಲಿ ಅವರು ಕಾಂಗ್ರೆಸ್ ಸೇರಿದ್ದು ಟಿಕೆಟ್ ಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಮೃತ ಶ್ರೀಶೈಲಪ್ಪ ಅವರಿಗೆ ಕಾಂಗ್ರೆಸ್ ಸಂತಾಸ ಸೂಚಿಸಿದೆ.
“ಶ್ರೀಶೈಲಪ್ಪ ಬಿದರೂರು ಅವರ ಅಕಾಲಿಕ ನಿಧನದ ಕಾರಣ ಇದೇ ನವೆಂಬರ್ 27ಕ್ಕೆ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಮುಂದೂಡಲಾಗಿದೆ. ಸಭೆಯು ಅಂದು ಜೂಮ್ ಮೀಟಿಂಗ್ ಮೂಲಕ ನಡೆಯಲಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಇಂದು ಬೆಳಿಗ್ಗೆಯಷ್ಟೆ ನಮ್ಮ ಜೊತೆ ಇದ್ದವರು ಕೆಲವೇ ಗಂಟೆಗಳಲ್ಲಿ ಅಗಲಿದ ಸುದ್ದಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಶ್ರೀಶೈಲಪ್ಪನವರನ್ನು ಕಳೆದುಕೊಂಡ ಕುಟುಂಬ ವರ್ಗದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ” ಎಂದಿದ್ದಾರೆ.