ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು ಅಸಮಾಧಾನ ವ್ಯಕ್ತಪಡಿಸಿದೆ.
ಪೋಕ್ಸೊ ಕಾಯ್ದೆಯ ಸೆಕ್ಷನ್ 4, 6, 8, 10 ಮತ್ತು 12ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಮೇ 2ರಂದು ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ದೂರುದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜಾಮೀನು ರದ್ದುಗೊಳಿಸಿ ಆದೇಶಿಸಿದೆ.
ಆದಾಗ್ಯೂ, ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಮೂರು ವಾರಗಳ ಒಳಗಾಗಿ ವಿಚಾರಣಾ ನ್ಯಾಯಾಲಯವನ್ನು (ಟ್ರಯಲ್ ಕೋರ್ಟ್) ಸಂಪರ್ಕಿಸಲು ಹೈಕೋರ್ಟ್ ವಚನಾನಂದ ಅವರಿಗೆ ಅವಕಾಶ ನೀಡಿದೆ.
ದೂರುದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಈಗಾಗಲೇ ಎಫ್ಐಆರ್ ದಾಖಲಾಗಿರುವುದರಿಂದ, ವಚನಾನಂದ ಸ್ವಾಮಿಗೆ ಕಠಿಣ ಷರತ್ತುಗಳನ್ನು ವಿಧಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.
ಆದರೆ, ತನ್ನ ಪ್ರಸ್ತುತ ಆದೇಶದಲ್ಲಿ ಮಾಡಿರುವ ಯಾವುದೇ ಅವಲೋಕನಗಳಿಂದ ಪ್ರಭಾವಿತವಾಗದೆ, ಸಂಬಂಧಪಟ್ಟ ನ್ಯಾಯಾಲಯವು ಅವರ ಜಾಮೀನು ಅರ್ಜಿಯ ಅರ್ಹತೆಯ ಆಧಾರದ ಮೇಲೆ ಪರಿಶೀಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಲೈವ್ ಲಾ ವರದಿಯ ಪ್ರಕಾರ, “ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತರ ವಾದವನ್ನು ವಿಚಾರಣಾ ನ್ಯಾಯಾಲಯ ಆಲಿಸಬೇಕಾಗಿತ್ತು ಎಂದು ಸರ್ಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್) ಬಿ.ಎನ್. ಜಗದೀಶ್ ವಾದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಹೈಕೋರ್ಟ್, “ಮೇಲೆ ತಿಳಿಸಲಾದ ಅಂಶಗಳ ಹೊರತಾಗಿ, ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ವಾದವನ್ನು ಆಲಿಸದಿರುವ ತಥ್ಯವೇ ಜಾಮೀನು ಮಂಜೂರು ಮಾಡಿದ ಆದೇಶವನ್ನು ರದ್ದುಗೊಳಿಸಲು ಪ್ರಮುಖ ಕಾರಣವಾಗುತ್ತದೆ” ಎಂದು ಹೇಳಿದೆ.


