ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್ಗಳ ತೆರವು ಕಾರ್ಯಾಚರಣೆ ವೇಳೆ ‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಏಕಸದಸ್ಯ ಪೀಠವು, ಮಹಿಳೆ ಒಮ್ಮೆ ‘ಜೈ ಬಾಂಗ್ಲಾ’ ಎಂದು ಹೇಳಿದ ನಂತರ ಮೂರು ಬಾರಿ ‘ಜೈ ಭಾರತ್ ಮಾತಾ ಕಿ ಜೈ’ ಎಂದು ಹೇಳಿದ್ದಾರೆ ಎಂದಿದೆ. ಒಬ್ಬ ವ್ಯಕ್ತಿ ಮೊದಲು ಮಹಿಳೆಯನ್ನು ‘ಜೈ ಭಾರತ್ ಮಾತಾ ಕಿ ಜೈ’ ಎಂದು ಕೂಗುವಂತೆ ಪ್ರಚೋದಿಸಿದ್ದ ಎಂಬುವುದಾಗಿ ಮಾರ್ಚ್ 11ರಂದು ಹೊರಡಿಸಿದ ಜಾಮೀನು ಆದೇಶದಲ್ಲಿ ನ್ಯಾಯಾಲಯ ಹೇಳಿದೆ ಎಂದು livelaw.in ವರದಿ ಮಾಡಿದೆ.
ಮಹಿಳೆಗೆ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಇಬ್ಬರು ಸಣ್ಣ ಮಕ್ಕಳಿದ್ದಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯದ ತೃಪ್ತಿಗೆ ಅನುಗುಣವಾಗಿ 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಒಬ್ಬ ಸ್ಥಳೀಯ ಜಾಮೀನುದಾರರನ್ನು ಒದಗಿಸುವ ಷರತ್ತಿನ ಮೇಲೆ ಆಕೆಗೆ ಜಾಮೀನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯವು ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.
2026ರ ಜನವರಿ 11ರಂದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ ತುಣುಕಿನ ಆಧಾರದ ಮೇಲೆ, ಶೆಡ್ಗಳ ತೆರವು ಕಾರ್ಯಾಚರಣೆಯ ಸ್ಥಳದಲ್ಲಿ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ ಮಹಿಳೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152,196,197(1) ಮತ್ತು 353(1) ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕ್ರೈಂ ಸಂಖ್ಯೆ 23/2026 ರಂತೆ ಪ್ರಕರಣ ದಾಖಲಾಗಿತ್ತು. ಭಾರತೀಯರ ಭಾವನೆಗಳಿಗೆ ಧಕ್ಕೆ ತರುವ ಮತ್ತು ರಾಷ್ಟ್ರೀಯ ಏಕತೆ ಹಾಗೂ ಸಾರ್ವಭೌಮತೆಗೆ ಕುಂದು ತರುವ ಉದ್ದೇಶದಿಂದಲೇ ಮಹಿಳೆ ಈ ಘೋಷಣೆ ಕೂಗಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿತ್ತು. ಮಹಿಳೆಯನ್ನು ಜನವರಿ 12 ರಂದು ಬಂಧಿಸಲಾಗಿದ್ದು, ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಇದಕ್ಕೂ ಮೊದಲು, ಆನೇಕಲ್ನ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಅರ್ಜಿದಾರರ ಪರ ವಕೀಲರು, ಆಕೆ ಹೆಬ್ಬಗೋಡಿಯಲ್ಲಿ ಮನೆಗೆಲಸ ಮಾಡುವ ಮಹಿಳೆಯಾಗಿದ್ದು, ಪ್ರಚೋದನೆಗೆ ಒಳಗಾಗಿ ಆ ಘೋಷಣೆಯನ್ನು ಕೂಗಿದ್ದಾರೆ ಎಂದು ವಾದಿಸಿದ್ದಾರೆ. ಆದರೆ, ಒಬ್ಬ ಭಾರತೀಯ ಪ್ರಜೆಯಾಗಿ ‘ಜೈ ಬಾಂಗ್ಲಾ’ ಘೋಷಣೆ ಕೂಗುವ ಮೂಲಕ ಭಾರತೀಯರ ಭಾವನೆಗಳಿಗೆ ಧಕ್ಕೆ ತರಬಾರದಿತ್ತು ಎಂದು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ ಎಂದು livelaw.in ವರದಿ ವಿವರಿಸಿದೆ.


