ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಅದರ ಚೆನ್ನೈ ಮೂಲದ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು blrpost.com ವರದಿ ಮಾಡಿದೆ.
ಸೌಜನ್ಯಳ ತಾಯಿ ಕುಸುಮಾವತಿಯವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಮುಖ್ಯವಾಗಿ ವಿಶೇಷ ಸಿಬಿಐ ನ್ಯಾಯಾಲಯವು ಜೂನ್ 16, 2023ರಂದು ನೀಡಿದ ತೀರ್ಪನ್ನು ಜಾರಿಗೊಳಿಸುವಂತೆ ಕೋರಿದ್ದಾರೆ. ಸಿಬಿಐ ನ್ಯಾಯಾಲಯವು ಸೌಜನ್ಯ ಪ್ರಕರಣದ “ದೋಷಪೂರಿತ ಮತ್ತು ಕಳಪೆ ತನಿಖೆ” ನಡೆಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತು. ಅಲ್ಲದೆ, ತನಿಖಾಧಿಕಾರಿಗಳು ಎಸಗಿರುವ ಲೋಪದೋಷಗಳು ಮತ್ತು ತಪ್ಪುಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಈ ವಿಷಯವನ್ನು ಖುಲಾಸೆ ಸಮಿತಿ ಮುಂದೆ ಮಂಡಿಸಬೇಕು ಎಂದು ನಿರ್ದೇಶನ ನೀಡಿತ್ತು. ಇದನ್ನು ಜಾರಿಗೆ ತರಬೇಕೆಂದು ಕುಸುಮಾವತಿ ಮನವಿ ಮಾಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಕುಸುಮಾವತಿ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರು, ರಾಜ್ಯ ಗೃಹ ಇಲಾಖೆ, ಪೊಲೀಸ್ ಮಹಾನಿರ್ದೇಶಕರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಅಪರಾಧ ಮತ್ತು ತಾಂತ್ರಿಕ ಸೇವೆಗಳು), ಪೊಲೀಸ್ ಮಹಾನಿರ್ದೇಶಕರು (ಪಶ್ಚಿಮ ವಲಯ), ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದೆಹಲಿ ಮತ್ತು ಚೆನ್ನೈನಲ್ಲಿರುವ ಸಿಬಿಐ ಘಟಕಗಳು ಸೇರಿದಂತೆ ಹಲವು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಈ ವಿಷಯವನ್ನು ಫೆಬ್ರವರಿ 23ಕ್ಕೆ ಮುಂದೂಡಲಾಗಿದೆ.
ಕುಸುಮಾವತಿ ಅವರ ಪರ ಹೈಕೋರ್ಟ್ಗೆ ಹಾಜರಾದ ವಕೀಲ ಎಂ.ಆರ್ ಬಾಲಕೃಷ್ಣ ಅವರು, ಸಿಬಿಐ ಚೌಕಟ್ಟಿನಡಿಯಲ್ಲಿ ಖುಲಾಸೆ ಸಮಿತಿ ಅಸ್ತಿತ್ವದಲ್ಲಿದೆಯೇ ಎಂಬುವುದು ಸ್ಪಷ್ಟವಾಗಿಲ್ಲ ಮತ್ತು ಇದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿರುವುದಾಗಿ blrpost.com ಉಲ್ಲೇಖಿಸಿದೆ.
ಪ್ರಕರಣದ ಹಿನ್ನೆಲೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ (ಎಸ್ಡಿಎಂ) ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ನಾಪತ್ತೆಯಾಗಿದ್ದರು. ಮರು ದಿನ ಆಕೆಯ ಮೃತದೇಹ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಮಣ್ಣಸಂಕ ಬಳಿ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬೆಳ್ತಂಗಡಿ ಠಾಣೆಯಲ್ಲಿ ಮೊದಲಿಗೆ ಸೌಜನ್ಯ ತಂದೆ ಚಂದ್ರಪ್ಪ ಗೌಡ ಅವರು ನಾಪತ್ತೆ ದೂರು ದಾಖಲಿಸಿದ್ದರು. ನಂತರ ಅದನ್ನು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿತ್ತು.
ಈ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ನಂತರ 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಬಿ ಸಂತೋಷ್ ಅವರು 2023ರಲ್ಲಿ ಆರೋಪಿ ಸಂತೋಷ ರಾವ್ ಅವರನ್ನು ಅತ್ಯಾಚಾರ (ಐಪಿಸಿ ಸೆಕ್ಷನ್ 376) ಮತ್ತು ಕೊಲೆ (ಐಪಿಸಿ ಸೆಕ್ಷನ್ 302) ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಅಲ್ಲದೇ, 11 ವರ್ಷಗಳಿಂದ ಜೈಲಿನಲ್ಲಿದ್ದ ಸಂತೋಷ್ ರಾವ್ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸಿದ್ದರು.
ಈ ವೇಳೆ ಪ್ರಕರಣದ ತನಿಖೆಯನ್ನು ತೀವ್ರವಾಗಿ ಟೀಕಿಸಿದ್ದ ನ್ಯಾಯಾಧೀಶರು, ವೈಜ್ಞಾನಿಕ ಪುರಾವೆಗಳ ವೈಫಲ್ಯ ಮತ್ತು ಗಂಭೀರ ಕಾರ್ಯವಿಧಾನದ ಲೋಪಗಳನ್ನು ಗಮನಿಸಿ, ತಪ್ಪು ಮಾಡಿದ ಅಧಿಕಾರಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸಬೇಕೆಂದು ನಿರ್ದೇಶಿಸಿದ್ದರು.
ಸಂತೋಷ್ ರಾವ್ ಖುಲಾಸೆಯನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ನಂತರ ಹೈಕೋರ್ಟ್ ವಜಾಗೊಳಿಸಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು.
ಈಗ ಸಲ್ಲಿಸಲಾಗಿರುವ ಹೊಸ ಅರ್ಜಿಯ ಮುಖ್ಯ ಉದ್ದೇಶವೆಂದರೆ, ವಿಶೇಷ ನ್ಯಾಯಾಲಯವು ಈ ಹಿಂದೆ ನೀಡಿದ್ದ ಹೊಣೆಗಾರಿಕೆಯ ಕ್ರಮಗಳು (ತನಿಖಾ ಲೋಪವೆಸಗಿದ ಅಧಿಕಾರಿಗಳ ಮೇಲೆ ಕ್ರಮ) ಕೇವಲ ಕಾಗದದ ಮೇಲೆ ಉಳಿಯಬಾರದು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂಬುದಾಗಿದೆ.


