ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕುರಿತಾದ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು ಮಾಡಿದೆ.
ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ಹಾಗೂ ರಾಜ್ಯ ಸರ್ಕಾರದ ಕ್ರಮ ಮತ್ತು ಲೋಕಾಯುಕ್ತ ತನಿಖೆಗೆ ಒಪ್ಪಿಸಿರುವುದಕ್ಕೆ ತಡೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿತು.
ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ, ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್ ಮತ್ತು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟ ವಾದ ಮಂಡಿಸಿದರು. ಒಂದು ತಾಸಿಗೂ ಹೆಚ್ಚು ಕಾಲ ವಾದ ಆಲಿಸಿದ ಪೀಠ, ಕರ್ನಾಟಕ ಹೈಕೋರ್ಟ್ ಕಾಯಿದೆ ಸೆಕ್ಷನ್ 8ರ ಪ್ರಕಾರ ತಮ್ಮ ಇಚ್ಛೆಯ ಪೀಠ ರಚಿಸಲು ಪ್ರಕರಣದ ದಾಖಲೆಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಮಂಡಿಸಬೇಕು. ಇದರಿಂದ ಏಕಕಾಲಕ್ಕೆ ಪ್ರಕರಣವು ಇತ್ಯರ್ಥವಾಗಲಿದೆ. ಮುಖ್ಯನ್ಯಾಯಮೂರ್ತಿಗಳಿಂದ ರಚಿಸಲ್ಪಟ್ಟ ಪೀಠವು ಯುದ್ದೋಪಾದಿಯಲ್ಲಿ ಪ್ರಕರಣವನ್ನು ನಿರ್ಧರಿಸಬೇಕು ಎಂಬುವುದಕ್ಕೆ ಉಭಯ ಪಕ್ಷಕಾರರ ಸಹಮತ ಇದೆ. ನ್ಯಾಯಾ ಪೀಠವೂ ಅದೇ ಅಭಿಪ್ರಾಯವನ್ನು ಹೊಂದಿದೆ ಎಂದು ಆದೇಶಿಸಿದೆ.
ವಿಸ್ತೃತ ಪೀಠ ಪ್ರಕರಣ ತೀರ್ಮಾನಿಸುವವರೆಗೆ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂಬ ಸಿಬಿಐ ವಕೀಲರ ಕೋರಿಕೆ ಮತ್ತು ಸಿಬಿಐ ಸಹ ಯಾವುದೇ ಕ್ರಮಕ್ಕೆ ಮುಂದಾಗುವಂತಿಲ್ಲ ಎಂಬ ಅಡ್ವೊಕೇಟ್ ಜನರಲ್ ಮನವಿಯನ್ನು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಯತ್ನಾಳ್ ಮತ್ತು ಸಿಬಿಐ ಎರಡೂ ಕಡೆಯವರು ಸಲ್ಲಿಸಿದ್ದ ಅರ್ಜಿಗಳನ್ನು ವಿರೋಧಿಸಿದ್ದು, ಎರಡೂ ಅರ್ಜಿಗಳ ಅರ್ಜಿದಾರರಿಗೆ ಅರ್ಜಿ ಸಲ್ಲಿಸುವ ಅಧಿಕಾರ ಇಲ್ಲ. 2013ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಮೂರನೇ ವ್ಯಕ್ತಿಯು ಕ್ರಿಮಿನಲ್ ಪ್ರಕ್ರಿಯೆಯಲ್ಲಿ ಮೂಗು ತೂರಿಸುವಂತಿಲ್ಲ” ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್ ಪರ ವಕೀಲ ದಳವಾಯಿ ಮತ್ತು ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್ ಅವರು “ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯಿದೆ (ಡಿಎಸ್ಪಿಇ) ಸೆಕ್ಷನ್ 6ರ ಅಡಿ ಒಮ್ಮೆ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದ ಮೇಲೆ, ಅದನ್ನು ಹಿಂಪಡೆಯಲಾಗದು. ಯಾವುದೇ ಸಂದರ್ಭದಲ್ಲೂ ಪೂರ್ವಾನ್ವಯವಾಗುವಂತೆ ಆದೇಶ ಹಿಂಪಡೆಯಲಾಗದು. ಸಿಬಿಐ ತನಿಖೆ ಮುಂದುವರಿಸಲು, ಕಾನೂನಿನ ಪ್ರಕಾರ ಅಂತಿಮ ವರದಿ ಸಲ್ಲಿಸಲು ಅನುಮತಿಸಬೇಕು” ಎಂದು ಕೋರಿದರು.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಡಿಕೆ ಶಿವಕುಮಾರ್ ವಿರುದ್ದ ದಾಖಲಿಸಿದ್ದ ಪ್ರಕರಣದ ತನಿಖೆ ನಡೆಸಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಇದನ್ನು 2023ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಹಿಂಪಡೆದಿತ್ತು.
ಸರ್ಕಾರ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಬೆನ್ನಲ್ಲೇ ಡಿ ಕೆ ಶಿವಕುಮಾರ್ ಅವರು ಮೇಲ್ಮನವಿ ಹಿಂಪಡೆದಿದ್ದರು. ಈ ಮಧ್ಯೆ, ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರವು 2023ರ ಡಿಸೆಂಬರ್ 24 ಮತ್ತು 26ರ ತಿದ್ದುಪಡಿ ಆದೇಶ ಮೂಲಕ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಇದನ್ನು ಸಿಬಿಐ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ.
ಇದನ್ನೂ ಓದಿ : ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!