ರಾಜ್ಯದಲ್ಲಿ ಹಿಜಾಬ್- ಕೇಸರಿ ಶಾಲು ವಿವಾದದ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹೇರಲಾಗಿರುವ ಸೆಕ್ಷನ್ 144 ಮುಂದುವರಿಸಲಾಗಿದೆ.
ನಗರದ ಯಾವುದೇ ಶಾಲೆ, ಕಾಲೇಜು ಮತ್ತು ಇತರ ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಸಭೆ, ಪ್ರತಿಭಟನೆ ಮತ್ತು ಧರಣಿ ನಡೆಸಬಾರದು ಎಂದು ಆದೇಶಿಸಲಾಗಿದ್ದು, ಈ ಆದೇಶವನ್ನು ಮಾರ್ಚ್ 8 ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಆದೇಶವನ್ನು ಹೊರಡಿಸಿದ್ದು, ಕೆಲವು ಸ್ಥಳಗಳಲ್ಲಿನ ಪ್ರತಿಭಟನೆಗಳು “ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ” ಯನ್ನು ಕದಡುತ್ತಿವೆ. ಆದ್ದರಿಂದ ಸರಿಯಾದ ಭದ್ರತಾ ಕ್ರಮಗಳನ್ನು ಅನುಸರಿಸಲು ನಿಷೇದಾಜ್ಞೆ ಅಗತ್ಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.
“ಈ ಸಮಸ್ಯೆ ಇನ್ನೂ ಜೀವಂತವಾಗಿರುವ ಕಾರಣ ಬೆಂಗಳೂರು ನಗರದಲ್ಲಿ ಅದರ ಪರವಾಗಿ ಮತ್ತು ವಿರೋಧವಾಗಿ ಪ್ರತಿಭಟನೆಗಳನ್ನು ನಡೆಯುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ಹೀಗಾಗಿ ನಿಷೇಧಾಜ್ಞೆಯನ್ನು ವಿಸ್ತರಿಸುವುದು ಸೂಕ್ತವೆಂದು ಪರಿಗಣಿಸಲಾಗಿದೆ” ಎಂದು ಇಂದು ಹೊರಡಿಸಿದ ಹೊಸ ಆದೇಶದಲ್ಲಿ ಸೇರಿಸಲಾಗಿದೆ.
ಎರಡು ದಿನಗಳ ಹಿಂದೆ, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಷೇಧಾಜ್ಞೆಗಳನ್ನು ಫೆಬ್ರವರಿ 26 ರವರೆಗೆ ವಿಸ್ತರಿಸಿದೆ.
ಕಳೆದ ಡಿಸೆಂಬರ್ನಲ್ಲಿ ಉಡುಪಿಯ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ನಿರ್ಬಮಧ ಹೇರಿದ ಬಳಿಕ ಇದು ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಬಳಿಕ ಕುಂದಾಪುರದ ಕಾಲೇಜಿನಲ್ಲೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಮೇಲೆ ನಿರ್ಬಂಧ ಹೇರಲಾಯಿತು. ಅಲ್ಲಿಂದ ಕೇಸರಿ ಶಾಲು ವಿವಾದ ಆರಂಭವಾಗಿ ಉಳಿದ ಜಿಲ್ಲೆಗಳಿಗೂ ಹಬ್ಬಿ ಅಂತರರಾಷ್ಟ್ರೀಯ ಸುದ್ದಿಯಾಗಿದೆ.
ಇದನ್ನೂ ಓದಿ: ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ