Homeಮುಖಪುಟಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು - ದೇವನೂರು ಮಹಾದೇವ

ಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು – ದೇವನೂರು ಮಹಾದೇವ

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಲಿ.

- Advertisement -
- Advertisement -

(ಹಿಜಾಬ್ ಮತ್ತು ಕೇಸರಿ ಶಾಲಿನ ಹೆಸರಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತಲೆದೋರಿರುವ ವಿವಾದ ಕುರಿತಂತೆ ನಾಡಿನ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಅತ್ಯಂತ ಕಳಕಳಿಯಿಂದ ತಮ್ಮ ಅಭಿಪ್ರಾಯಗಳನ್ನು ಟಿವಿ-9 ಚಾನಲ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರ ಸಹಜ ಹಾಗೂ ಚಿಂತನಾ ಅಭಿಪ್ರಾಯಗಳನ್ನು ನಮ್ಮ ಓದುಗರಿಗೆ ನೀಡುತ್ತಿದ್ದೇವೆ. – ಸಂಪಾದಕ)

ಈ ಬೆಳವಣಿಗೆ ತುಂಬಾ, ಅಂದರೆ ತುಂಬಾನೇ ದುಃಖವಾಗುತ್ತದೆ. ಈ ಹಿಂದೆ ಏನಾಗುತ್ತಿತ್ತು? ಹಿಜಾಬ್ ಅನ್ನು ಅಲ್ಲೊಬ್ಬರು ಇಲ್ಲೊಬ್ಬರು ಧರಿಸುತ್ತಿದ್ದರು. ಅದು ಸಹಜವಾಗಿ ನಡೆದುಕೊಂಡು ಹೋಗುತ್ತಿತ್ತು. ಎದ್ದು ಕಾಣಿಸುತ್ತಿರಲಿಲ್ಲ. ಯಾವಾಗ ಹಾಕಿಕೊಂಡು ಬರಬಾರದೆಂದು ನಿಷೇಧ ಹೇರಲಾಯಿತೋ ಆಗ ಪ್ರತಿರೋಧ ಆರಂಭವಾಯಿತು. ಜೊತೆಗೆ ಹಿಜಾಬ್ ಧರಿಸುವುದು ಹೆಚ್ಚೇ ಆಯಿತು.

ಈ ಹೆಚ್ಚಾಗುವುದರ ಹಿಂದೆ ಅಲ್ಪಸ್ವಲ್ಪ ಪಟ್ಟಭದ್ರರ ಹಿತಾಸಕ್ತಿ ಇದ್ದೇ ಇದೆ ಎನ್ನಿಸುತ್ತೆ. ಆದರೆ ಯಾವಾಗ ಕೇಸರಿ ಬಣ್ಣವು ಹಿಜಾಬ್ ವಿರುದ್ಧ ಪ್ರತಿಕ್ರಿಯೆಯಾಗಿ ಬಂತೋ, ಆ ಕೇಸರಿ ಬಣ್ಣದ ಅದ್ಧೂರಿತನ ನೋಡಿದರೆ, ಆ ಕೇಸರಿ ಪೇಟ ನೋಡಿದರೆ, ಅದರ ವ್ಯಾಪಕತೆ ನೋಡಿದರೆ, ಇದೆಲ್ಲಾ ವಿದ್ಯಾರ್ಥಿಗಳದ್ದಲ್ಲಾ ಎಂದು ಹೆಚ್ಚು ಸ್ಪಷ್ಟವಾಗುತ್ತೆ. ಹಣ ಉಳ್ಳವರು, ಪಟ್ಟಭದ್ರ ಹಿತಾಸಕ್ತಿಗಳು ಚೆಲ್ಲಾಟ ನಡೆಸುತ್ತಿದ್ದಾರೆ ಎನ್ನಿಸುತ್ತದೆ.

ಇದರ ಜೊತೆಗೆ ರಾಜಕಾರಣಿಗಳದ್ದೂ ಕೈವಾಡ ಇದೆ. ಏಕೆಂದರೆ ಈ ಗಲಾಟೆ ಉಲ್ಬಣ ಮಾಡಿಕೊಂಡು ತಮ್ಮ ಸೋಲು-ಗೆಲುವನ್ನು ಇದರಲ್ಲಿ ನಿರ್ಧರಿಸಿಕೊಳ್ಳಬೇಕು. ಚಾನ್ಸ್ ಇದು. ಬಳಸಿಕೊಳ್ಳಬೇಕೆನ್ನುವ ದುರಾಸೆ ಅಥವಾ ಕೆಟ್ಟ ದುಷ್ಟತನ ಇದರಲ್ಲಿ ಕಂಡು ಬರುತ್ತಿದೆ. ಒಟ್ಟಿನಲ್ಲಿ ಇದರಲ್ಲಿ ಬಡಿದಾಡುತ್ತಿರುವವರು ಯಾರು ಎಂದು ನೋಡಿದರೆ, ಎರಡೂ ಕಡೆಯ ವಿದ್ಯಾರ್ಥಿಗಳೇ. ಅವರೇ ಬಲಿಪಶುಗಳು.

ಇದೇ ರೀತಿಯಾದರೆ, ಇದು ಎಲ್ಲಿಗೆ ಕರೆದೊಯ್ಯುತ್ತದೆ ಎಂದರೆ, ನಾಳೆ ಮಹಿಳೆಯರು ಪಿಂಕ್ ಗುಲಾಬಿ ಬಣ್ಣದ ವಸ್ತ್ರ ಧರಿಸಿ ಬರಬಹುದು. ಹಾಗೆಯೇ ದಲಿತರು ನೀಲಿ, ರೈತರು ಹಸಿರು ಟವೆಲ್, ಮತ್ತೆ ದುಡಿಯುವ ವರ್ಗ ಕೆಂಪು, ದ್ರಾವಿಡರು ಕಪ್ಪು, ಹಿಂದುಳಿದ ವರ್ಗ ಹಳದಿ, ಆಮೇಲೆ ಅದರೊಳಗಡೆನೇ ಮದಕರಿ ಬಣ್ಣವಾಗಿ ಮೆರೂನ್… ಹೀಗೆ ಬಣ್ಣ ಬಣ್ಣಗಳಲ್ಲಿ ಬರಲು ಈ ಗಲಾಟೆ ಉಲ್ಬಣಗೊಂಡರೆ ಪ್ರೇರಣೆಯಾಗಲಿದೆ.
ಸುಸ್ತು ಆದ ಮೇಲೆ ಶಾಂತಿ ಬೇಕೆನ್ನುವ ಬಿಳಿಬಣ್ಣ ಕೂಡ ಬರುತ್ತೆ.

ಈಗ ನಾವು ಯೋಚಿಸಬೇಕಿರುವುದು ಇದೆಲ್ಲಾ ನಮಗೆ ಬೇಕಿತ್ತಾ? ಎನ್ನುವುದಾಗಿದೆ. ಈಗ ತಾಯಂದಿರು, ಎಲ್ಲಾ ಜಾತಿ-ಧರ್ಮದ ತಾಯಂದಿರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಆದರೆ ತಮ್ಮ ಮಕ್ಕಳು ಪಟ್ಟಭದ್ರ ಹಿತಾಸಕ್ತಿಗೆ ಮತ್ತು ರಾಜಕಾರಣಿಗಳ ಚೆಲ್ಲಾಟಕ್ಕೆ ಈ ತರ ದಾಳವಾಗುತ್ತಿದ್ದಾರೆ ಎಂದರೆ, ಅವರ ಆತಂಕ ಹೆಚ್ಚಾಗುವುದಿಲ್ಲವೇ? ಇದು ಬಹುಸಂಖ್ಯಾತ ಮಹಿಳೆಯರು, ತಾಯಂದಿರಲ್ಲಿ ಆತಂಕ ಹೆಚ್ಚು ಮಾಡಿದೆ ಎಂದು ನನಗೆ ಅನ್ನಿಸುತ್ತೆ. ಇದೇ ರೀತಿ ಉಲ್ಬಣವಾದರೆ ಒಂದಲ್ಲಾ ಒಂದು ದಿನ ಈ ತಾಯಂದಿರ ಆತಂಕವು ಆಕ್ರೋಶ ಆಗಬಹುದು. ಅದು ಸಹಜ. ನೆನಪಿರಲಿ.

ನಾನು ವಿದ್ಯಾರ್ಥಿಗಳಲ್ಲಿ ಗಮನಕ್ಕೆ ತರುವುದು ಒಂದೇ ವಿಚಾರ. ಈ ರೀತಿಯ ಭಾವನಾತ್ಮಕ ವಿಚಾರಗಳನ್ನು ಉಂಡು, ತಿಂದು, ಕುಣಿದು ಕುಪ್ಪಳಿಸುತ್ತ ಗದ್ದಲ ಮಾಡುತ್ತಿದ್ದೀರಲ್ಲಾ ನೀವು, ನಿಮಗೆ ನನ್ನ ಪ್ರಶ್ನೆ ಇಷ್ಟು: ನಾಳೆ ಬದುಕಿ ಬಾಳಬೇಕಾದ ನಿಮಗೆ ಈ ಭಾವನಾತ್ಮಕ ವಿಷಯಗಳು, ಈ ಭ್ರಮೆಗಳು ನಿಮ್ಮ ಭವಿಷ್ಯವನ್ನು ಮತ್ತು ನಾಳಿನ ಜೀವನವನ್ನು ರೂಪಿಸುತ್ತಾ? ಈ ಪ್ರಶ್ನೆಯನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮಲ್ಲಿ ತಾವು ಕೇಳಿಕೊಳ್ಳಬೇಕಾಗಿದೆ ಈಗ.

ಈಗ ಎಲ್ಲರಿಗೂ ಗೊತ್ತು ನಿರುದ್ಯೋಗ ಹೆಚ್ಚುತ್ತಿದೆ. ಕಳೆದ 50 ವರ್ಷಗಳಲ್ಲೆ ಈಗ ಉದ್ಯೋಗ ಕಡಿಮೆ ಆಗಿದೆ. ಶಿಕ್ಷಣಕ್ಕೆ ಬಜೆಟ್‌ನಲ್ಲಿ ಕಮ್ಮಿ ಹಣ ನಿಗದಿ ಮಾಡಿದರು. ಶಿಕ್ಷಣ ಉಳಿಯುತ್ತದಾ? ಇದರ ಉದ್ದೇಶವೇನು? ಶಿಕ್ಷಣ ಕೊಡಬೇಕು ಅಂತಾನೋ? ನಿಧಾನವಾಗಿ ನಿಲ್ಲಿಸಬೇಕು ಅಂತಾನೋ? ಮತ್ತು ಪ್ರಾಥಮಿಕ ಆರೋಗ್ಯಕ್ಕೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಮಾಡಿದ್ದಾರೆ. ಇದನ್ನೆಲ್ಲಾ ವಿದ್ಯಾರ್ಥಿಗಳು ಪ್ರಶ್ನೆ ಮಾಡಬೇಕಿತ್ತು. ಏಕೆಂದರೆ ಶಿಕ್ಷಣ, ಉದ್ಯೋಗ ನಿಮ್ಮದೇ ಸಮಸ್ಯೆಯಲ್ಲವೆ? ನಾಳೆ ಬದುಕಿ ಉಳಿಯಬೇಕಾದ ವಿದ್ಯಾರ್ಥಿ ಯುವಜನರಿಗೆ ಈ ಪ್ರಶ್ನೆ ಕೇಳುತ್ತಿದ್ದೇನೆ.

ಇಂದು ಪೆಟ್ರೋಲ್, ಗ್ಯಾಸ್ ಬೆಲೆ ಜಾಸ್ತಿಯಾಗುತ್ತಿದೆ. ಈ ಬೆಲೆ ಏರಿಕೆ ಸಿಕ್ಕಾಪಟ್ಟೆ ಕಂಟ್ರೋಲ್ ತಪ್ಪಿ ಹೆಚ್ಚುತ್ತಿದೆ. ಇದನ್ನು ಪ್ರಶ್ನೆ ಮಾಡಬೇಕಾದವರು ವಿದ್ಯಾರ್ಥಿಗಳಲ್ಲವೇ? ಈ ಎಚ್ಚರ ಎಲ್ಲಾ ಜಾತಿಯ, ಎಲ್ಲಾ ಧರ್ಮೀಯರ ವಿದ್ಯಾರ್ಥಿಗಳಲ್ಲೂ ಇರಬೇಕಾಗಿದೆ. ಇದನ್ನೂ ವಿದ್ಯಾರ್ಥಿಗಳು ಯೋಚನೆ ಮಾಡಬೇಕು.

ಈ ನೋಟ್ ಬ್ಯಾನ್ ಆವಾಂತರ, ಜಿಎಸ್‌ಟಿ ಅವಿವೇಕಿತನವು ದೇಶವನ್ನು ದಿಕ್ಕೆಡಿಸಿದೆ. ಗಮನಿಸಿ, ಇವತ್ತು ಮಧ್ಯಮ ವರ್ಗವು ಬಡತನದ ಕಡೆಗೆ ಹೋಗುತ್ತಿದೆ. ಮತ್ತು ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದ್ದು. ಕೆಲವೇ ಜನ ಕಾರ್ಪೊರೇಟ್ ಕಂಪನಿ ಮಾಲೀಕರು, ಅವರ ಸಂಪತ್ತು ದೇಶದ ಸಂಪತ್ತಿನಲ್ಲಿ ಅರ್ಧ ಭಾಗವಿದೆ. ಅಂದರೆ ಕೆಲವೇ ಜನ ಕಾರ್ಪೋರೇಟ್ ಕುಟುಂಬಗಳ ಕೈಯಲ್ಲಿ ದೇಶದ ಅರ್ಧ ಭಾಗದ ಸಂಪತ್ತಿದೆ. ಕೊರೊನಾ, ಜಿಎಸ್‌ಟಿ, ನೋಟ್ ಬ್ಯಾನ್ ಆಗಿ ಜನರು ತತ್ತರಿಸುವಾಗ ಕಾರ್ಪೋರೇಟ್ ಕಂಪನಿಗಳ ಆದಾಯ ಹೆಚ್ಚಾಗಿದೆ. ಇದಕ್ಕೆ ಕಾರಣವೇನು? ಲೂಟಿ ಎಲ್ಲಿ ಆಗುತ್ತಿದೆ. ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ಆ ಜವಾಬ್ದಾರಿ ಯುವ ಜನಾಂಗದ ಮೇಲಿದೆ.

ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿದ್ದಾರೆ. ಅದೇನೆಂದರೆ, ಕಾರ್ಪೊರೇಟ್ ಕಂಪನಿಗಳ ಸಂಪತ್ತಿನ ಮೇಲೆ ಶೇ.2ರಷ್ಟು ತೆರಿಗೆ ವಿಧಿಸಿದರೆ, ನಮ್ಮ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗುತ್ತದೆ, ಪ್ರಾಥಮಿಕ ಆರೋಗ್ಯ ಸುಧಾರಣೆ ಆಗುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರ ಶೇ.2ರಷ್ಟು ತೆರಿಗೆಯನ್ನು ಅವರಿಗೆ ವಿಧಿಸಲಿಲ್ಲ. ಬದಲಾಗಿ ಅವರಿಗೆ ತೆರಿಗೆ ಕಮ್ಮಿ ಮಾಡಿತು. ಉಳ್ಳವರಿಗೆ ಎಲ್ಲವನ್ನೂ ನೀಡುತ್ತದೆ. ಆದರೆ ರೈತರು, ದುಡಿಯುವ ವರ್ಗಕ್ಕೆ ಕೇಳಿದರೂ ಇಲ್ಲ. ಅವರಿಗೆ (ಉಳ್ಳವರು/ಕಾರ್ಪೊರೇಟ್ ಕಂಪನಿಗಳು) ಭೂಮಿ, ನೀರು, ವಿದ್ಯುತ್ ರಿಯಾಯಿತಿ. ಇಲ್ಲದವರಿಗೆ ಇಲ್ಲ. ಇದು ಯಾವ ನೀತಿ ಅಂತ ಸರ್ಕಾರವನ್ನು ಪ್ರಶ್ನಿಸಬೇಕಾದ ಹೊಣೆ ಹೊತ್ತುಕೊಳ್ಳಲು ವಿದ್ಯಾರ್ಥಿಗಳಲ್ಲಿ ಪ್ರಾರ್ಥನೆ ಮಾಡುತ್ತೇನೆ.

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಿರಿ ಎಂದು ವಿದ್ಯಾರ್ಥಿ ಯುವಜನರಲ್ಲಿ ಕೇಳಿಕೊಳ್ಳುತ್ತೇನೆ.

ಆಯ್ತು, ಸಮವಸ್ತ್ರದ ಜೊತೆಗೆ ಹಿಜಾಬ್ ಹಾಕಿಕೊಂಡರೆ ಏನು ತೊಂದರೆ? ಬೇಕಾದರೆ ನಿಮಗೆ ಇಷ್ಟವಾದರೆ ನಿಮ್ಮಗಿಷ್ಟವಾದ ಬಣ್ಣದ ಹಿಜಾಬ್ ಅನ್ನು ನೀವೂ ಹಾಕಿಕೊಳ್ಳಿರಿ. ಇಂದು ಕುಂಕುಮ, ಬಳೆಗಳನ್ನು ಎಲ್ಲರೂ ಹಾಕಿಕೊಳ್ಳುವುದಿಲ್ಲವೇ? ಇಂತವೆಲ್ಲವೂ ದಿನಕಳೆದಂತೆ ಅಲಂಕಾರವೇ ಆಗಿ ಬಿಡಬಹುದು. ಆದ್ದರಿಂದ ಇದನ್ನೊಂದು ವಿವಾದ ಮಾಡಿಕೊಳ್ಳಬೇಕಾಗಿರಲಿಲ್ಲ. ಆದರೆ ಇಲ್ಲಿ ಅಹಂಕಾರ ಅವಿತುಕುಳಿತಿದೆ. ದ್ವೇಷ ಬಚ್ಚಿಟ್ಟುಕೊಂಡಿದೆ. ರಾಜಕಾರಣವೂ ಇದ್ದೇಇದೆ. ಪಟ್ಟಭದ್ರ ಹಿತಾಸಕ್ತಿಗಳೂ ಗುಡುರು ಹಾಕುತ್ತಿವೆ. ಹಾಗಾಗಿ ಸಹಜವಾಗಿ ನಡೆದುಕೊಂಡು ಹೋಗುತ್ತಿದ್ದುದು ಇಂದು ವಿವಾದವಾಗಿ ಉಲ್ಬಣಿಸಿದೆ. ನನ್ನ ವಿನಂತಿ ಹಿಜಾಬ್ ಇರಲಿ ಬಿಡಿ, ಅದನ್ನು ಏಕೆ ದೊಡ್ಡದು ಮಾಡುತ್ತೀರಿ? ಅದು ತನ್ನಷ್ಟಕ್ಕೆ ತಾನೇ ಕಮ್ಮಿ ಆಗುತ್ತಾ ಹೋಗಲೂ ಬಹುದು. ನಿಷೇಧ ಮಾಡಿದರೆ ಇದು ಹೆಚ್ಚುತ್ತಾ ಪ್ರತಿಭಟನೆಯ ಜೊತೆಗೆ ಬೇರೆಯವರೂ ಬಳಸಿಕೊಳ್ಳುವುದೂ ಹೆಚ್ಚಬಹುದು. ಈ ಎಚ್ಚರ ನಮಗಿರಲಿ.

ಈಗ ಈ ವಿವಾದ ನ್ಯಾಯಾಲಯದ ಮುಂದಿದೆ. ಅವರು ತಕ್ಷಣ ಇದಕ್ಕೆ ಪರಿಹಾರ ನೀಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ. ಇಲ್ಲಿ ಒಂದು ತುಂಬಾ ನೋವಿನ ಸಂಗತಿಯೆಂದರೆ, ಹಿಜಾಬ್ ವಿವಾದ ಎಲ್ಲಿ ಹುಟ್ಟಿತೊ, ಆ ಒಂದೆರಡು ಶಾಲೆಗಳಲ್ಲೇ ಆಯಾಯ ಜನಾಂಗಗಳ ವಿವೇಕಿ ನಾಯಕರ ಸಮ್ಮುಖದಲ್ಲಿ ಶಾಂತಿ ಸಮಾಧಾನ ಮಾಡಿದ್ದರೆ, ಈ ವಿವಾದ ಬೆಳೆಯುತ್ತಿರಲಿಲ್ಲವೇನೋ. ಯಾವಾಗ ಈ ವಿವಾದವನ್ನು ಬಗೆಹರಿಸುವ ನೆಪದಲ್ಲಿ ಶಿಕ್ಷಣ ಸಚಿವರು ಸುತ್ತೋಲೆ ಹೊರಡಿಸಿದರೋ ಆವಾಗ ಇದು ರಾಜ್ಯವ್ಯಾಪ್ತಿ ಹಬ್ಬಿತು. ಇದಾಗಬಾರದಿತ್ತು. ಇಲ್ಲಿ ವಿವೇಕ, ವಿವೇಚನೆ ಅಗತ್ಯವಿತ್ತು. ಇದನ್ನು ನೆನಸಿಕೊಂಡರೆ ನೋವುಂಟಾಗುತ್ತದೆ.

ದೇವನೂರು ಮಹಾದೇವ

(ಹಿರಿಯ ಸಾಹಿತಿಗಳು ಮತ್ತು ಚಿಂತಕರು, ಮೈಸೂರು)


ಇದನ್ನೂ ಓದಿ: ಅಧ್ಯಾಪನದ ಧರ್ಮ: ನಮ್ಮ ವಿವೇಕದ ಮೇಲೆ, ಧರ್ಮದ ಮರ್ಮದ ಮೇಲೆ ನಡೀತಿರೋ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...