Homeಮುಖಪುಟಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು - ದೇವನೂರು ಮಹಾದೇವ

ಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು – ದೇವನೂರು ಮಹಾದೇವ

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಲಿ.

- Advertisement -
- Advertisement -

(ಹಿಜಾಬ್ ಮತ್ತು ಕೇಸರಿ ಶಾಲಿನ ಹೆಸರಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತಲೆದೋರಿರುವ ವಿವಾದ ಕುರಿತಂತೆ ನಾಡಿನ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಅತ್ಯಂತ ಕಳಕಳಿಯಿಂದ ತಮ್ಮ ಅಭಿಪ್ರಾಯಗಳನ್ನು ಟಿವಿ-9 ಚಾನಲ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರ ಸಹಜ ಹಾಗೂ ಚಿಂತನಾ ಅಭಿಪ್ರಾಯಗಳನ್ನು ನಮ್ಮ ಓದುಗರಿಗೆ ನೀಡುತ್ತಿದ್ದೇವೆ. – ಸಂಪಾದಕ)

ಈ ಬೆಳವಣಿಗೆ ತುಂಬಾ, ಅಂದರೆ ತುಂಬಾನೇ ದುಃಖವಾಗುತ್ತದೆ. ಈ ಹಿಂದೆ ಏನಾಗುತ್ತಿತ್ತು? ಹಿಜಾಬ್ ಅನ್ನು ಅಲ್ಲೊಬ್ಬರು ಇಲ್ಲೊಬ್ಬರು ಧರಿಸುತ್ತಿದ್ದರು. ಅದು ಸಹಜವಾಗಿ ನಡೆದುಕೊಂಡು ಹೋಗುತ್ತಿತ್ತು. ಎದ್ದು ಕಾಣಿಸುತ್ತಿರಲಿಲ್ಲ. ಯಾವಾಗ ಹಾಕಿಕೊಂಡು ಬರಬಾರದೆಂದು ನಿಷೇಧ ಹೇರಲಾಯಿತೋ ಆಗ ಪ್ರತಿರೋಧ ಆರಂಭವಾಯಿತು. ಜೊತೆಗೆ ಹಿಜಾಬ್ ಧರಿಸುವುದು ಹೆಚ್ಚೇ ಆಯಿತು.

ಈ ಹೆಚ್ಚಾಗುವುದರ ಹಿಂದೆ ಅಲ್ಪಸ್ವಲ್ಪ ಪಟ್ಟಭದ್ರರ ಹಿತಾಸಕ್ತಿ ಇದ್ದೇ ಇದೆ ಎನ್ನಿಸುತ್ತೆ. ಆದರೆ ಯಾವಾಗ ಕೇಸರಿ ಬಣ್ಣವು ಹಿಜಾಬ್ ವಿರುದ್ಧ ಪ್ರತಿಕ್ರಿಯೆಯಾಗಿ ಬಂತೋ, ಆ ಕೇಸರಿ ಬಣ್ಣದ ಅದ್ಧೂರಿತನ ನೋಡಿದರೆ, ಆ ಕೇಸರಿ ಪೇಟ ನೋಡಿದರೆ, ಅದರ ವ್ಯಾಪಕತೆ ನೋಡಿದರೆ, ಇದೆಲ್ಲಾ ವಿದ್ಯಾರ್ಥಿಗಳದ್ದಲ್ಲಾ ಎಂದು ಹೆಚ್ಚು ಸ್ಪಷ್ಟವಾಗುತ್ತೆ. ಹಣ ಉಳ್ಳವರು, ಪಟ್ಟಭದ್ರ ಹಿತಾಸಕ್ತಿಗಳು ಚೆಲ್ಲಾಟ ನಡೆಸುತ್ತಿದ್ದಾರೆ ಎನ್ನಿಸುತ್ತದೆ.

ಇದರ ಜೊತೆಗೆ ರಾಜಕಾರಣಿಗಳದ್ದೂ ಕೈವಾಡ ಇದೆ. ಏಕೆಂದರೆ ಈ ಗಲಾಟೆ ಉಲ್ಬಣ ಮಾಡಿಕೊಂಡು ತಮ್ಮ ಸೋಲು-ಗೆಲುವನ್ನು ಇದರಲ್ಲಿ ನಿರ್ಧರಿಸಿಕೊಳ್ಳಬೇಕು. ಚಾನ್ಸ್ ಇದು. ಬಳಸಿಕೊಳ್ಳಬೇಕೆನ್ನುವ ದುರಾಸೆ ಅಥವಾ ಕೆಟ್ಟ ದುಷ್ಟತನ ಇದರಲ್ಲಿ ಕಂಡು ಬರುತ್ತಿದೆ. ಒಟ್ಟಿನಲ್ಲಿ ಇದರಲ್ಲಿ ಬಡಿದಾಡುತ್ತಿರುವವರು ಯಾರು ಎಂದು ನೋಡಿದರೆ, ಎರಡೂ ಕಡೆಯ ವಿದ್ಯಾರ್ಥಿಗಳೇ. ಅವರೇ ಬಲಿಪಶುಗಳು.

ಇದೇ ರೀತಿಯಾದರೆ, ಇದು ಎಲ್ಲಿಗೆ ಕರೆದೊಯ್ಯುತ್ತದೆ ಎಂದರೆ, ನಾಳೆ ಮಹಿಳೆಯರು ಪಿಂಕ್ ಗುಲಾಬಿ ಬಣ್ಣದ ವಸ್ತ್ರ ಧರಿಸಿ ಬರಬಹುದು. ಹಾಗೆಯೇ ದಲಿತರು ನೀಲಿ, ರೈತರು ಹಸಿರು ಟವೆಲ್, ಮತ್ತೆ ದುಡಿಯುವ ವರ್ಗ ಕೆಂಪು, ದ್ರಾವಿಡರು ಕಪ್ಪು, ಹಿಂದುಳಿದ ವರ್ಗ ಹಳದಿ, ಆಮೇಲೆ ಅದರೊಳಗಡೆನೇ ಮದಕರಿ ಬಣ್ಣವಾಗಿ ಮೆರೂನ್… ಹೀಗೆ ಬಣ್ಣ ಬಣ್ಣಗಳಲ್ಲಿ ಬರಲು ಈ ಗಲಾಟೆ ಉಲ್ಬಣಗೊಂಡರೆ ಪ್ರೇರಣೆಯಾಗಲಿದೆ.
ಸುಸ್ತು ಆದ ಮೇಲೆ ಶಾಂತಿ ಬೇಕೆನ್ನುವ ಬಿಳಿಬಣ್ಣ ಕೂಡ ಬರುತ್ತೆ.

ಈಗ ನಾವು ಯೋಚಿಸಬೇಕಿರುವುದು ಇದೆಲ್ಲಾ ನಮಗೆ ಬೇಕಿತ್ತಾ? ಎನ್ನುವುದಾಗಿದೆ. ಈಗ ತಾಯಂದಿರು, ಎಲ್ಲಾ ಜಾತಿ-ಧರ್ಮದ ತಾಯಂದಿರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಆದರೆ ತಮ್ಮ ಮಕ್ಕಳು ಪಟ್ಟಭದ್ರ ಹಿತಾಸಕ್ತಿಗೆ ಮತ್ತು ರಾಜಕಾರಣಿಗಳ ಚೆಲ್ಲಾಟಕ್ಕೆ ಈ ತರ ದಾಳವಾಗುತ್ತಿದ್ದಾರೆ ಎಂದರೆ, ಅವರ ಆತಂಕ ಹೆಚ್ಚಾಗುವುದಿಲ್ಲವೇ? ಇದು ಬಹುಸಂಖ್ಯಾತ ಮಹಿಳೆಯರು, ತಾಯಂದಿರಲ್ಲಿ ಆತಂಕ ಹೆಚ್ಚು ಮಾಡಿದೆ ಎಂದು ನನಗೆ ಅನ್ನಿಸುತ್ತೆ. ಇದೇ ರೀತಿ ಉಲ್ಬಣವಾದರೆ ಒಂದಲ್ಲಾ ಒಂದು ದಿನ ಈ ತಾಯಂದಿರ ಆತಂಕವು ಆಕ್ರೋಶ ಆಗಬಹುದು. ಅದು ಸಹಜ. ನೆನಪಿರಲಿ.

ನಾನು ವಿದ್ಯಾರ್ಥಿಗಳಲ್ಲಿ ಗಮನಕ್ಕೆ ತರುವುದು ಒಂದೇ ವಿಚಾರ. ಈ ರೀತಿಯ ಭಾವನಾತ್ಮಕ ವಿಚಾರಗಳನ್ನು ಉಂಡು, ತಿಂದು, ಕುಣಿದು ಕುಪ್ಪಳಿಸುತ್ತ ಗದ್ದಲ ಮಾಡುತ್ತಿದ್ದೀರಲ್ಲಾ ನೀವು, ನಿಮಗೆ ನನ್ನ ಪ್ರಶ್ನೆ ಇಷ್ಟು: ನಾಳೆ ಬದುಕಿ ಬಾಳಬೇಕಾದ ನಿಮಗೆ ಈ ಭಾವನಾತ್ಮಕ ವಿಷಯಗಳು, ಈ ಭ್ರಮೆಗಳು ನಿಮ್ಮ ಭವಿಷ್ಯವನ್ನು ಮತ್ತು ನಾಳಿನ ಜೀವನವನ್ನು ರೂಪಿಸುತ್ತಾ? ಈ ಪ್ರಶ್ನೆಯನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮಲ್ಲಿ ತಾವು ಕೇಳಿಕೊಳ್ಳಬೇಕಾಗಿದೆ ಈಗ.

ಈಗ ಎಲ್ಲರಿಗೂ ಗೊತ್ತು ನಿರುದ್ಯೋಗ ಹೆಚ್ಚುತ್ತಿದೆ. ಕಳೆದ 50 ವರ್ಷಗಳಲ್ಲೆ ಈಗ ಉದ್ಯೋಗ ಕಡಿಮೆ ಆಗಿದೆ. ಶಿಕ್ಷಣಕ್ಕೆ ಬಜೆಟ್‌ನಲ್ಲಿ ಕಮ್ಮಿ ಹಣ ನಿಗದಿ ಮಾಡಿದರು. ಶಿಕ್ಷಣ ಉಳಿಯುತ್ತದಾ? ಇದರ ಉದ್ದೇಶವೇನು? ಶಿಕ್ಷಣ ಕೊಡಬೇಕು ಅಂತಾನೋ? ನಿಧಾನವಾಗಿ ನಿಲ್ಲಿಸಬೇಕು ಅಂತಾನೋ? ಮತ್ತು ಪ್ರಾಥಮಿಕ ಆರೋಗ್ಯಕ್ಕೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಮಾಡಿದ್ದಾರೆ. ಇದನ್ನೆಲ್ಲಾ ವಿದ್ಯಾರ್ಥಿಗಳು ಪ್ರಶ್ನೆ ಮಾಡಬೇಕಿತ್ತು. ಏಕೆಂದರೆ ಶಿಕ್ಷಣ, ಉದ್ಯೋಗ ನಿಮ್ಮದೇ ಸಮಸ್ಯೆಯಲ್ಲವೆ? ನಾಳೆ ಬದುಕಿ ಉಳಿಯಬೇಕಾದ ವಿದ್ಯಾರ್ಥಿ ಯುವಜನರಿಗೆ ಈ ಪ್ರಶ್ನೆ ಕೇಳುತ್ತಿದ್ದೇನೆ.

ಇಂದು ಪೆಟ್ರೋಲ್, ಗ್ಯಾಸ್ ಬೆಲೆ ಜಾಸ್ತಿಯಾಗುತ್ತಿದೆ. ಈ ಬೆಲೆ ಏರಿಕೆ ಸಿಕ್ಕಾಪಟ್ಟೆ ಕಂಟ್ರೋಲ್ ತಪ್ಪಿ ಹೆಚ್ಚುತ್ತಿದೆ. ಇದನ್ನು ಪ್ರಶ್ನೆ ಮಾಡಬೇಕಾದವರು ವಿದ್ಯಾರ್ಥಿಗಳಲ್ಲವೇ? ಈ ಎಚ್ಚರ ಎಲ್ಲಾ ಜಾತಿಯ, ಎಲ್ಲಾ ಧರ್ಮೀಯರ ವಿದ್ಯಾರ್ಥಿಗಳಲ್ಲೂ ಇರಬೇಕಾಗಿದೆ. ಇದನ್ನೂ ವಿದ್ಯಾರ್ಥಿಗಳು ಯೋಚನೆ ಮಾಡಬೇಕು.

ಈ ನೋಟ್ ಬ್ಯಾನ್ ಆವಾಂತರ, ಜಿಎಸ್‌ಟಿ ಅವಿವೇಕಿತನವು ದೇಶವನ್ನು ದಿಕ್ಕೆಡಿಸಿದೆ. ಗಮನಿಸಿ, ಇವತ್ತು ಮಧ್ಯಮ ವರ್ಗವು ಬಡತನದ ಕಡೆಗೆ ಹೋಗುತ್ತಿದೆ. ಮತ್ತು ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದ್ದು. ಕೆಲವೇ ಜನ ಕಾರ್ಪೊರೇಟ್ ಕಂಪನಿ ಮಾಲೀಕರು, ಅವರ ಸಂಪತ್ತು ದೇಶದ ಸಂಪತ್ತಿನಲ್ಲಿ ಅರ್ಧ ಭಾಗವಿದೆ. ಅಂದರೆ ಕೆಲವೇ ಜನ ಕಾರ್ಪೋರೇಟ್ ಕುಟುಂಬಗಳ ಕೈಯಲ್ಲಿ ದೇಶದ ಅರ್ಧ ಭಾಗದ ಸಂಪತ್ತಿದೆ. ಕೊರೊನಾ, ಜಿಎಸ್‌ಟಿ, ನೋಟ್ ಬ್ಯಾನ್ ಆಗಿ ಜನರು ತತ್ತರಿಸುವಾಗ ಕಾರ್ಪೋರೇಟ್ ಕಂಪನಿಗಳ ಆದಾಯ ಹೆಚ್ಚಾಗಿದೆ. ಇದಕ್ಕೆ ಕಾರಣವೇನು? ಲೂಟಿ ಎಲ್ಲಿ ಆಗುತ್ತಿದೆ. ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ಆ ಜವಾಬ್ದಾರಿ ಯುವ ಜನಾಂಗದ ಮೇಲಿದೆ.

ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿದ್ದಾರೆ. ಅದೇನೆಂದರೆ, ಕಾರ್ಪೊರೇಟ್ ಕಂಪನಿಗಳ ಸಂಪತ್ತಿನ ಮೇಲೆ ಶೇ.2ರಷ್ಟು ತೆರಿಗೆ ವಿಧಿಸಿದರೆ, ನಮ್ಮ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗುತ್ತದೆ, ಪ್ರಾಥಮಿಕ ಆರೋಗ್ಯ ಸುಧಾರಣೆ ಆಗುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರ ಶೇ.2ರಷ್ಟು ತೆರಿಗೆಯನ್ನು ಅವರಿಗೆ ವಿಧಿಸಲಿಲ್ಲ. ಬದಲಾಗಿ ಅವರಿಗೆ ತೆರಿಗೆ ಕಮ್ಮಿ ಮಾಡಿತು. ಉಳ್ಳವರಿಗೆ ಎಲ್ಲವನ್ನೂ ನೀಡುತ್ತದೆ. ಆದರೆ ರೈತರು, ದುಡಿಯುವ ವರ್ಗಕ್ಕೆ ಕೇಳಿದರೂ ಇಲ್ಲ. ಅವರಿಗೆ (ಉಳ್ಳವರು/ಕಾರ್ಪೊರೇಟ್ ಕಂಪನಿಗಳು) ಭೂಮಿ, ನೀರು, ವಿದ್ಯುತ್ ರಿಯಾಯಿತಿ. ಇಲ್ಲದವರಿಗೆ ಇಲ್ಲ. ಇದು ಯಾವ ನೀತಿ ಅಂತ ಸರ್ಕಾರವನ್ನು ಪ್ರಶ್ನಿಸಬೇಕಾದ ಹೊಣೆ ಹೊತ್ತುಕೊಳ್ಳಲು ವಿದ್ಯಾರ್ಥಿಗಳಲ್ಲಿ ಪ್ರಾರ್ಥನೆ ಮಾಡುತ್ತೇನೆ.

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಿರಿ ಎಂದು ವಿದ್ಯಾರ್ಥಿ ಯುವಜನರಲ್ಲಿ ಕೇಳಿಕೊಳ್ಳುತ್ತೇನೆ.

ಆಯ್ತು, ಸಮವಸ್ತ್ರದ ಜೊತೆಗೆ ಹಿಜಾಬ್ ಹಾಕಿಕೊಂಡರೆ ಏನು ತೊಂದರೆ? ಬೇಕಾದರೆ ನಿಮಗೆ ಇಷ್ಟವಾದರೆ ನಿಮ್ಮಗಿಷ್ಟವಾದ ಬಣ್ಣದ ಹಿಜಾಬ್ ಅನ್ನು ನೀವೂ ಹಾಕಿಕೊಳ್ಳಿರಿ. ಇಂದು ಕುಂಕುಮ, ಬಳೆಗಳನ್ನು ಎಲ್ಲರೂ ಹಾಕಿಕೊಳ್ಳುವುದಿಲ್ಲವೇ? ಇಂತವೆಲ್ಲವೂ ದಿನಕಳೆದಂತೆ ಅಲಂಕಾರವೇ ಆಗಿ ಬಿಡಬಹುದು. ಆದ್ದರಿಂದ ಇದನ್ನೊಂದು ವಿವಾದ ಮಾಡಿಕೊಳ್ಳಬೇಕಾಗಿರಲಿಲ್ಲ. ಆದರೆ ಇಲ್ಲಿ ಅಹಂಕಾರ ಅವಿತುಕುಳಿತಿದೆ. ದ್ವೇಷ ಬಚ್ಚಿಟ್ಟುಕೊಂಡಿದೆ. ರಾಜಕಾರಣವೂ ಇದ್ದೇಇದೆ. ಪಟ್ಟಭದ್ರ ಹಿತಾಸಕ್ತಿಗಳೂ ಗುಡುರು ಹಾಕುತ್ತಿವೆ. ಹಾಗಾಗಿ ಸಹಜವಾಗಿ ನಡೆದುಕೊಂಡು ಹೋಗುತ್ತಿದ್ದುದು ಇಂದು ವಿವಾದವಾಗಿ ಉಲ್ಬಣಿಸಿದೆ. ನನ್ನ ವಿನಂತಿ ಹಿಜಾಬ್ ಇರಲಿ ಬಿಡಿ, ಅದನ್ನು ಏಕೆ ದೊಡ್ಡದು ಮಾಡುತ್ತೀರಿ? ಅದು ತನ್ನಷ್ಟಕ್ಕೆ ತಾನೇ ಕಮ್ಮಿ ಆಗುತ್ತಾ ಹೋಗಲೂ ಬಹುದು. ನಿಷೇಧ ಮಾಡಿದರೆ ಇದು ಹೆಚ್ಚುತ್ತಾ ಪ್ರತಿಭಟನೆಯ ಜೊತೆಗೆ ಬೇರೆಯವರೂ ಬಳಸಿಕೊಳ್ಳುವುದೂ ಹೆಚ್ಚಬಹುದು. ಈ ಎಚ್ಚರ ನಮಗಿರಲಿ.

ಈಗ ಈ ವಿವಾದ ನ್ಯಾಯಾಲಯದ ಮುಂದಿದೆ. ಅವರು ತಕ್ಷಣ ಇದಕ್ಕೆ ಪರಿಹಾರ ನೀಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ. ಇಲ್ಲಿ ಒಂದು ತುಂಬಾ ನೋವಿನ ಸಂಗತಿಯೆಂದರೆ, ಹಿಜಾಬ್ ವಿವಾದ ಎಲ್ಲಿ ಹುಟ್ಟಿತೊ, ಆ ಒಂದೆರಡು ಶಾಲೆಗಳಲ್ಲೇ ಆಯಾಯ ಜನಾಂಗಗಳ ವಿವೇಕಿ ನಾಯಕರ ಸಮ್ಮುಖದಲ್ಲಿ ಶಾಂತಿ ಸಮಾಧಾನ ಮಾಡಿದ್ದರೆ, ಈ ವಿವಾದ ಬೆಳೆಯುತ್ತಿರಲಿಲ್ಲವೇನೋ. ಯಾವಾಗ ಈ ವಿವಾದವನ್ನು ಬಗೆಹರಿಸುವ ನೆಪದಲ್ಲಿ ಶಿಕ್ಷಣ ಸಚಿವರು ಸುತ್ತೋಲೆ ಹೊರಡಿಸಿದರೋ ಆವಾಗ ಇದು ರಾಜ್ಯವ್ಯಾಪ್ತಿ ಹಬ್ಬಿತು. ಇದಾಗಬಾರದಿತ್ತು. ಇಲ್ಲಿ ವಿವೇಕ, ವಿವೇಚನೆ ಅಗತ್ಯವಿತ್ತು. ಇದನ್ನು ನೆನಸಿಕೊಂಡರೆ ನೋವುಂಟಾಗುತ್ತದೆ.

ದೇವನೂರು ಮಹಾದೇವ

(ಹಿರಿಯ ಸಾಹಿತಿಗಳು ಮತ್ತು ಚಿಂತಕರು, ಮೈಸೂರು)


ಇದನ್ನೂ ಓದಿ: ಅಧ್ಯಾಪನದ ಧರ್ಮ: ನಮ್ಮ ವಿವೇಕದ ಮೇಲೆ, ಧರ್ಮದ ಮರ್ಮದ ಮೇಲೆ ನಡೀತಿರೋ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....