Homeಮುಖಪುಟಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು - ದೇವನೂರು ಮಹಾದೇವ

ಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು – ದೇವನೂರು ಮಹಾದೇವ

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಲಿ.

- Advertisement -
- Advertisement -

(ಹಿಜಾಬ್ ಮತ್ತು ಕೇಸರಿ ಶಾಲಿನ ಹೆಸರಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತಲೆದೋರಿರುವ ವಿವಾದ ಕುರಿತಂತೆ ನಾಡಿನ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಅತ್ಯಂತ ಕಳಕಳಿಯಿಂದ ತಮ್ಮ ಅಭಿಪ್ರಾಯಗಳನ್ನು ಟಿವಿ-9 ಚಾನಲ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರ ಸಹಜ ಹಾಗೂ ಚಿಂತನಾ ಅಭಿಪ್ರಾಯಗಳನ್ನು ನಮ್ಮ ಓದುಗರಿಗೆ ನೀಡುತ್ತಿದ್ದೇವೆ. – ಸಂಪಾದಕ)

ಈ ಬೆಳವಣಿಗೆ ತುಂಬಾ, ಅಂದರೆ ತುಂಬಾನೇ ದುಃಖವಾಗುತ್ತದೆ. ಈ ಹಿಂದೆ ಏನಾಗುತ್ತಿತ್ತು? ಹಿಜಾಬ್ ಅನ್ನು ಅಲ್ಲೊಬ್ಬರು ಇಲ್ಲೊಬ್ಬರು ಧರಿಸುತ್ತಿದ್ದರು. ಅದು ಸಹಜವಾಗಿ ನಡೆದುಕೊಂಡು ಹೋಗುತ್ತಿತ್ತು. ಎದ್ದು ಕಾಣಿಸುತ್ತಿರಲಿಲ್ಲ. ಯಾವಾಗ ಹಾಕಿಕೊಂಡು ಬರಬಾರದೆಂದು ನಿಷೇಧ ಹೇರಲಾಯಿತೋ ಆಗ ಪ್ರತಿರೋಧ ಆರಂಭವಾಯಿತು. ಜೊತೆಗೆ ಹಿಜಾಬ್ ಧರಿಸುವುದು ಹೆಚ್ಚೇ ಆಯಿತು.

ಈ ಹೆಚ್ಚಾಗುವುದರ ಹಿಂದೆ ಅಲ್ಪಸ್ವಲ್ಪ ಪಟ್ಟಭದ್ರರ ಹಿತಾಸಕ್ತಿ ಇದ್ದೇ ಇದೆ ಎನ್ನಿಸುತ್ತೆ. ಆದರೆ ಯಾವಾಗ ಕೇಸರಿ ಬಣ್ಣವು ಹಿಜಾಬ್ ವಿರುದ್ಧ ಪ್ರತಿಕ್ರಿಯೆಯಾಗಿ ಬಂತೋ, ಆ ಕೇಸರಿ ಬಣ್ಣದ ಅದ್ಧೂರಿತನ ನೋಡಿದರೆ, ಆ ಕೇಸರಿ ಪೇಟ ನೋಡಿದರೆ, ಅದರ ವ್ಯಾಪಕತೆ ನೋಡಿದರೆ, ಇದೆಲ್ಲಾ ವಿದ್ಯಾರ್ಥಿಗಳದ್ದಲ್ಲಾ ಎಂದು ಹೆಚ್ಚು ಸ್ಪಷ್ಟವಾಗುತ್ತೆ. ಹಣ ಉಳ್ಳವರು, ಪಟ್ಟಭದ್ರ ಹಿತಾಸಕ್ತಿಗಳು ಚೆಲ್ಲಾಟ ನಡೆಸುತ್ತಿದ್ದಾರೆ ಎನ್ನಿಸುತ್ತದೆ.

ಇದರ ಜೊತೆಗೆ ರಾಜಕಾರಣಿಗಳದ್ದೂ ಕೈವಾಡ ಇದೆ. ಏಕೆಂದರೆ ಈ ಗಲಾಟೆ ಉಲ್ಬಣ ಮಾಡಿಕೊಂಡು ತಮ್ಮ ಸೋಲು-ಗೆಲುವನ್ನು ಇದರಲ್ಲಿ ನಿರ್ಧರಿಸಿಕೊಳ್ಳಬೇಕು. ಚಾನ್ಸ್ ಇದು. ಬಳಸಿಕೊಳ್ಳಬೇಕೆನ್ನುವ ದುರಾಸೆ ಅಥವಾ ಕೆಟ್ಟ ದುಷ್ಟತನ ಇದರಲ್ಲಿ ಕಂಡು ಬರುತ್ತಿದೆ. ಒಟ್ಟಿನಲ್ಲಿ ಇದರಲ್ಲಿ ಬಡಿದಾಡುತ್ತಿರುವವರು ಯಾರು ಎಂದು ನೋಡಿದರೆ, ಎರಡೂ ಕಡೆಯ ವಿದ್ಯಾರ್ಥಿಗಳೇ. ಅವರೇ ಬಲಿಪಶುಗಳು.

ಇದೇ ರೀತಿಯಾದರೆ, ಇದು ಎಲ್ಲಿಗೆ ಕರೆದೊಯ್ಯುತ್ತದೆ ಎಂದರೆ, ನಾಳೆ ಮಹಿಳೆಯರು ಪಿಂಕ್ ಗುಲಾಬಿ ಬಣ್ಣದ ವಸ್ತ್ರ ಧರಿಸಿ ಬರಬಹುದು. ಹಾಗೆಯೇ ದಲಿತರು ನೀಲಿ, ರೈತರು ಹಸಿರು ಟವೆಲ್, ಮತ್ತೆ ದುಡಿಯುವ ವರ್ಗ ಕೆಂಪು, ದ್ರಾವಿಡರು ಕಪ್ಪು, ಹಿಂದುಳಿದ ವರ್ಗ ಹಳದಿ, ಆಮೇಲೆ ಅದರೊಳಗಡೆನೇ ಮದಕರಿ ಬಣ್ಣವಾಗಿ ಮೆರೂನ್… ಹೀಗೆ ಬಣ್ಣ ಬಣ್ಣಗಳಲ್ಲಿ ಬರಲು ಈ ಗಲಾಟೆ ಉಲ್ಬಣಗೊಂಡರೆ ಪ್ರೇರಣೆಯಾಗಲಿದೆ.
ಸುಸ್ತು ಆದ ಮೇಲೆ ಶಾಂತಿ ಬೇಕೆನ್ನುವ ಬಿಳಿಬಣ್ಣ ಕೂಡ ಬರುತ್ತೆ.

ಈಗ ನಾವು ಯೋಚಿಸಬೇಕಿರುವುದು ಇದೆಲ್ಲಾ ನಮಗೆ ಬೇಕಿತ್ತಾ? ಎನ್ನುವುದಾಗಿದೆ. ಈಗ ತಾಯಂದಿರು, ಎಲ್ಲಾ ಜಾತಿ-ಧರ್ಮದ ತಾಯಂದಿರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಆದರೆ ತಮ್ಮ ಮಕ್ಕಳು ಪಟ್ಟಭದ್ರ ಹಿತಾಸಕ್ತಿಗೆ ಮತ್ತು ರಾಜಕಾರಣಿಗಳ ಚೆಲ್ಲಾಟಕ್ಕೆ ಈ ತರ ದಾಳವಾಗುತ್ತಿದ್ದಾರೆ ಎಂದರೆ, ಅವರ ಆತಂಕ ಹೆಚ್ಚಾಗುವುದಿಲ್ಲವೇ? ಇದು ಬಹುಸಂಖ್ಯಾತ ಮಹಿಳೆಯರು, ತಾಯಂದಿರಲ್ಲಿ ಆತಂಕ ಹೆಚ್ಚು ಮಾಡಿದೆ ಎಂದು ನನಗೆ ಅನ್ನಿಸುತ್ತೆ. ಇದೇ ರೀತಿ ಉಲ್ಬಣವಾದರೆ ಒಂದಲ್ಲಾ ಒಂದು ದಿನ ಈ ತಾಯಂದಿರ ಆತಂಕವು ಆಕ್ರೋಶ ಆಗಬಹುದು. ಅದು ಸಹಜ. ನೆನಪಿರಲಿ.

ನಾನು ವಿದ್ಯಾರ್ಥಿಗಳಲ್ಲಿ ಗಮನಕ್ಕೆ ತರುವುದು ಒಂದೇ ವಿಚಾರ. ಈ ರೀತಿಯ ಭಾವನಾತ್ಮಕ ವಿಚಾರಗಳನ್ನು ಉಂಡು, ತಿಂದು, ಕುಣಿದು ಕುಪ್ಪಳಿಸುತ್ತ ಗದ್ದಲ ಮಾಡುತ್ತಿದ್ದೀರಲ್ಲಾ ನೀವು, ನಿಮಗೆ ನನ್ನ ಪ್ರಶ್ನೆ ಇಷ್ಟು: ನಾಳೆ ಬದುಕಿ ಬಾಳಬೇಕಾದ ನಿಮಗೆ ಈ ಭಾವನಾತ್ಮಕ ವಿಷಯಗಳು, ಈ ಭ್ರಮೆಗಳು ನಿಮ್ಮ ಭವಿಷ್ಯವನ್ನು ಮತ್ತು ನಾಳಿನ ಜೀವನವನ್ನು ರೂಪಿಸುತ್ತಾ? ಈ ಪ್ರಶ್ನೆಯನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮಲ್ಲಿ ತಾವು ಕೇಳಿಕೊಳ್ಳಬೇಕಾಗಿದೆ ಈಗ.

ಈಗ ಎಲ್ಲರಿಗೂ ಗೊತ್ತು ನಿರುದ್ಯೋಗ ಹೆಚ್ಚುತ್ತಿದೆ. ಕಳೆದ 50 ವರ್ಷಗಳಲ್ಲೆ ಈಗ ಉದ್ಯೋಗ ಕಡಿಮೆ ಆಗಿದೆ. ಶಿಕ್ಷಣಕ್ಕೆ ಬಜೆಟ್‌ನಲ್ಲಿ ಕಮ್ಮಿ ಹಣ ನಿಗದಿ ಮಾಡಿದರು. ಶಿಕ್ಷಣ ಉಳಿಯುತ್ತದಾ? ಇದರ ಉದ್ದೇಶವೇನು? ಶಿಕ್ಷಣ ಕೊಡಬೇಕು ಅಂತಾನೋ? ನಿಧಾನವಾಗಿ ನಿಲ್ಲಿಸಬೇಕು ಅಂತಾನೋ? ಮತ್ತು ಪ್ರಾಥಮಿಕ ಆರೋಗ್ಯಕ್ಕೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಮಾಡಿದ್ದಾರೆ. ಇದನ್ನೆಲ್ಲಾ ವಿದ್ಯಾರ್ಥಿಗಳು ಪ್ರಶ್ನೆ ಮಾಡಬೇಕಿತ್ತು. ಏಕೆಂದರೆ ಶಿಕ್ಷಣ, ಉದ್ಯೋಗ ನಿಮ್ಮದೇ ಸಮಸ್ಯೆಯಲ್ಲವೆ? ನಾಳೆ ಬದುಕಿ ಉಳಿಯಬೇಕಾದ ವಿದ್ಯಾರ್ಥಿ ಯುವಜನರಿಗೆ ಈ ಪ್ರಶ್ನೆ ಕೇಳುತ್ತಿದ್ದೇನೆ.

ಇಂದು ಪೆಟ್ರೋಲ್, ಗ್ಯಾಸ್ ಬೆಲೆ ಜಾಸ್ತಿಯಾಗುತ್ತಿದೆ. ಈ ಬೆಲೆ ಏರಿಕೆ ಸಿಕ್ಕಾಪಟ್ಟೆ ಕಂಟ್ರೋಲ್ ತಪ್ಪಿ ಹೆಚ್ಚುತ್ತಿದೆ. ಇದನ್ನು ಪ್ರಶ್ನೆ ಮಾಡಬೇಕಾದವರು ವಿದ್ಯಾರ್ಥಿಗಳಲ್ಲವೇ? ಈ ಎಚ್ಚರ ಎಲ್ಲಾ ಜಾತಿಯ, ಎಲ್ಲಾ ಧರ್ಮೀಯರ ವಿದ್ಯಾರ್ಥಿಗಳಲ್ಲೂ ಇರಬೇಕಾಗಿದೆ. ಇದನ್ನೂ ವಿದ್ಯಾರ್ಥಿಗಳು ಯೋಚನೆ ಮಾಡಬೇಕು.

ಈ ನೋಟ್ ಬ್ಯಾನ್ ಆವಾಂತರ, ಜಿಎಸ್‌ಟಿ ಅವಿವೇಕಿತನವು ದೇಶವನ್ನು ದಿಕ್ಕೆಡಿಸಿದೆ. ಗಮನಿಸಿ, ಇವತ್ತು ಮಧ್ಯಮ ವರ್ಗವು ಬಡತನದ ಕಡೆಗೆ ಹೋಗುತ್ತಿದೆ. ಮತ್ತು ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದ್ದು. ಕೆಲವೇ ಜನ ಕಾರ್ಪೊರೇಟ್ ಕಂಪನಿ ಮಾಲೀಕರು, ಅವರ ಸಂಪತ್ತು ದೇಶದ ಸಂಪತ್ತಿನಲ್ಲಿ ಅರ್ಧ ಭಾಗವಿದೆ. ಅಂದರೆ ಕೆಲವೇ ಜನ ಕಾರ್ಪೋರೇಟ್ ಕುಟುಂಬಗಳ ಕೈಯಲ್ಲಿ ದೇಶದ ಅರ್ಧ ಭಾಗದ ಸಂಪತ್ತಿದೆ. ಕೊರೊನಾ, ಜಿಎಸ್‌ಟಿ, ನೋಟ್ ಬ್ಯಾನ್ ಆಗಿ ಜನರು ತತ್ತರಿಸುವಾಗ ಕಾರ್ಪೋರೇಟ್ ಕಂಪನಿಗಳ ಆದಾಯ ಹೆಚ್ಚಾಗಿದೆ. ಇದಕ್ಕೆ ಕಾರಣವೇನು? ಲೂಟಿ ಎಲ್ಲಿ ಆಗುತ್ತಿದೆ. ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ಆ ಜವಾಬ್ದಾರಿ ಯುವ ಜನಾಂಗದ ಮೇಲಿದೆ.

ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿದ್ದಾರೆ. ಅದೇನೆಂದರೆ, ಕಾರ್ಪೊರೇಟ್ ಕಂಪನಿಗಳ ಸಂಪತ್ತಿನ ಮೇಲೆ ಶೇ.2ರಷ್ಟು ತೆರಿಗೆ ವಿಧಿಸಿದರೆ, ನಮ್ಮ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗುತ್ತದೆ, ಪ್ರಾಥಮಿಕ ಆರೋಗ್ಯ ಸುಧಾರಣೆ ಆಗುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರ ಶೇ.2ರಷ್ಟು ತೆರಿಗೆಯನ್ನು ಅವರಿಗೆ ವಿಧಿಸಲಿಲ್ಲ. ಬದಲಾಗಿ ಅವರಿಗೆ ತೆರಿಗೆ ಕಮ್ಮಿ ಮಾಡಿತು. ಉಳ್ಳವರಿಗೆ ಎಲ್ಲವನ್ನೂ ನೀಡುತ್ತದೆ. ಆದರೆ ರೈತರು, ದುಡಿಯುವ ವರ್ಗಕ್ಕೆ ಕೇಳಿದರೂ ಇಲ್ಲ. ಅವರಿಗೆ (ಉಳ್ಳವರು/ಕಾರ್ಪೊರೇಟ್ ಕಂಪನಿಗಳು) ಭೂಮಿ, ನೀರು, ವಿದ್ಯುತ್ ರಿಯಾಯಿತಿ. ಇಲ್ಲದವರಿಗೆ ಇಲ್ಲ. ಇದು ಯಾವ ನೀತಿ ಅಂತ ಸರ್ಕಾರವನ್ನು ಪ್ರಶ್ನಿಸಬೇಕಾದ ಹೊಣೆ ಹೊತ್ತುಕೊಳ್ಳಲು ವಿದ್ಯಾರ್ಥಿಗಳಲ್ಲಿ ಪ್ರಾರ್ಥನೆ ಮಾಡುತ್ತೇನೆ.

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಿರಿ ಎಂದು ವಿದ್ಯಾರ್ಥಿ ಯುವಜನರಲ್ಲಿ ಕೇಳಿಕೊಳ್ಳುತ್ತೇನೆ.

ಆಯ್ತು, ಸಮವಸ್ತ್ರದ ಜೊತೆಗೆ ಹಿಜಾಬ್ ಹಾಕಿಕೊಂಡರೆ ಏನು ತೊಂದರೆ? ಬೇಕಾದರೆ ನಿಮಗೆ ಇಷ್ಟವಾದರೆ ನಿಮ್ಮಗಿಷ್ಟವಾದ ಬಣ್ಣದ ಹಿಜಾಬ್ ಅನ್ನು ನೀವೂ ಹಾಕಿಕೊಳ್ಳಿರಿ. ಇಂದು ಕುಂಕುಮ, ಬಳೆಗಳನ್ನು ಎಲ್ಲರೂ ಹಾಕಿಕೊಳ್ಳುವುದಿಲ್ಲವೇ? ಇಂತವೆಲ್ಲವೂ ದಿನಕಳೆದಂತೆ ಅಲಂಕಾರವೇ ಆಗಿ ಬಿಡಬಹುದು. ಆದ್ದರಿಂದ ಇದನ್ನೊಂದು ವಿವಾದ ಮಾಡಿಕೊಳ್ಳಬೇಕಾಗಿರಲಿಲ್ಲ. ಆದರೆ ಇಲ್ಲಿ ಅಹಂಕಾರ ಅವಿತುಕುಳಿತಿದೆ. ದ್ವೇಷ ಬಚ್ಚಿಟ್ಟುಕೊಂಡಿದೆ. ರಾಜಕಾರಣವೂ ಇದ್ದೇಇದೆ. ಪಟ್ಟಭದ್ರ ಹಿತಾಸಕ್ತಿಗಳೂ ಗುಡುರು ಹಾಕುತ್ತಿವೆ. ಹಾಗಾಗಿ ಸಹಜವಾಗಿ ನಡೆದುಕೊಂಡು ಹೋಗುತ್ತಿದ್ದುದು ಇಂದು ವಿವಾದವಾಗಿ ಉಲ್ಬಣಿಸಿದೆ. ನನ್ನ ವಿನಂತಿ ಹಿಜಾಬ್ ಇರಲಿ ಬಿಡಿ, ಅದನ್ನು ಏಕೆ ದೊಡ್ಡದು ಮಾಡುತ್ತೀರಿ? ಅದು ತನ್ನಷ್ಟಕ್ಕೆ ತಾನೇ ಕಮ್ಮಿ ಆಗುತ್ತಾ ಹೋಗಲೂ ಬಹುದು. ನಿಷೇಧ ಮಾಡಿದರೆ ಇದು ಹೆಚ್ಚುತ್ತಾ ಪ್ರತಿಭಟನೆಯ ಜೊತೆಗೆ ಬೇರೆಯವರೂ ಬಳಸಿಕೊಳ್ಳುವುದೂ ಹೆಚ್ಚಬಹುದು. ಈ ಎಚ್ಚರ ನಮಗಿರಲಿ.

ಈಗ ಈ ವಿವಾದ ನ್ಯಾಯಾಲಯದ ಮುಂದಿದೆ. ಅವರು ತಕ್ಷಣ ಇದಕ್ಕೆ ಪರಿಹಾರ ನೀಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ. ಇಲ್ಲಿ ಒಂದು ತುಂಬಾ ನೋವಿನ ಸಂಗತಿಯೆಂದರೆ, ಹಿಜಾಬ್ ವಿವಾದ ಎಲ್ಲಿ ಹುಟ್ಟಿತೊ, ಆ ಒಂದೆರಡು ಶಾಲೆಗಳಲ್ಲೇ ಆಯಾಯ ಜನಾಂಗಗಳ ವಿವೇಕಿ ನಾಯಕರ ಸಮ್ಮುಖದಲ್ಲಿ ಶಾಂತಿ ಸಮಾಧಾನ ಮಾಡಿದ್ದರೆ, ಈ ವಿವಾದ ಬೆಳೆಯುತ್ತಿರಲಿಲ್ಲವೇನೋ. ಯಾವಾಗ ಈ ವಿವಾದವನ್ನು ಬಗೆಹರಿಸುವ ನೆಪದಲ್ಲಿ ಶಿಕ್ಷಣ ಸಚಿವರು ಸುತ್ತೋಲೆ ಹೊರಡಿಸಿದರೋ ಆವಾಗ ಇದು ರಾಜ್ಯವ್ಯಾಪ್ತಿ ಹಬ್ಬಿತು. ಇದಾಗಬಾರದಿತ್ತು. ಇಲ್ಲಿ ವಿವೇಕ, ವಿವೇಚನೆ ಅಗತ್ಯವಿತ್ತು. ಇದನ್ನು ನೆನಸಿಕೊಂಡರೆ ನೋವುಂಟಾಗುತ್ತದೆ.

ದೇವನೂರು ಮಹಾದೇವ

(ಹಿರಿಯ ಸಾಹಿತಿಗಳು ಮತ್ತು ಚಿಂತಕರು, ಮೈಸೂರು)


ಇದನ್ನೂ ಓದಿ: ಅಧ್ಯಾಪನದ ಧರ್ಮ: ನಮ್ಮ ವಿವೇಕದ ಮೇಲೆ, ಧರ್ಮದ ಮರ್ಮದ ಮೇಲೆ ನಡೀತಿರೋ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...