ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಭಾನುವಾರ (ಮಾ.15) ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರ ಬೀಳಲಿದೆ.
ಚುನಾವಣೆ ದಿನಾಂಕ ಘೋಷಣೆಯಾಗಿ 24 ಗಂಟೆ ಪೂರ್ಣಗೊಳ್ಳುವ ಮುನ್ನ ಪ್ರಮುಖ ಅಧಿಕಾರಿಗಳನ್ನು ಚುನಾವಣಾ ಆಯೋಗ ಬದಲಾಯಿಸಿರುವುದು, ಈಗಾಗಲೇ ಆಯೋಗ ಮತ್ತು ಟಿಎಂಸಿ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ.
ಚುನಾವಣಾ ಆಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಯಾದ ನಂದಿನಿ ಚಕ್ರವರ್ತಿ ಅವರ ಬದಲಿಗೆ 1993ರ ಬ್ಯಾಚ್ ಐಎಎಸ್ ಅಧಿಕಾರಿ ದುಷ್ಯಂತ್ ನರಿಯಾಲಾ ಅವರನ್ನು ನೇಮಿಸಿದೆ. ಜಗದೀಶ್ ಪ್ರಸಾದ್ ಮೀನಾ ಅವರ ಬದಲಿಗೆ ಸಂಘಮಿತ್ರ ಘೋಷ್ ಅವರನ್ನು ಹೊಸ ಗೃಹ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. 1997ರ ಬ್ಯಾಚ್ ಐಎಎಸ್ ಅಧಿಕಾರಿಯಾದ ಸಂಘಮಿತ್ರ ಘೋಷ್, ಬಂಗಾಳದ ಮೊದಲ ಮಹಿಳಾ ಗೃಹ ಕಾರ್ಯದರ್ಶಿ ಎನಿಸಿಕೊಳ್ಳಲಿದ್ದಾರೆ.
ಭಾನುವಾರ ತಡರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರಿಗೆ ಬರೆದ ಪತ್ರದಲ್ಲಿ ಚುನಾವಣಾ ಆಯೋಗದ ಕಾರ್ಯದರ್ಶಿ ಸುರ್ಜೀತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳ ಬದಲಾವಣೆ ಕುರಿತು ನಿರ್ದೇಶಿಸಿದ್ದಾರೆ ಎಂದು ವರದಿಯಾಗಿದೆ.
ವಿಧಾನಸಭೆ ಚುನಾವಣೆ ಮುಗಿಯುವವರೆಗೆ ನಂದಿನಿ ಚಕ್ರವರ್ತಿ ಮತ್ತು ಜಗದೀಶ್ ಪ್ರಸಾಸ್ ಮೀನಾ ಇಬ್ಬರಿಗೂ ಚುನಾವಣೆಗೆ ಸಂಬಂಧಿಸಿದ ಯಾವುದೇ ಹುದ್ದೆಯನ್ನು ನೀಡಲಾಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪಶ್ಚಿಮ ಬಂಗಾಳದ ಡಿಜಿಪಿ ಪಿಯೂಷ್ ಪಾಂಡೆ ಮತ್ತು ಕೋಲ್ಕತ್ತಾ ನಗರದ ಪೊಲೀಸ್ ಆಯುಕ್ತ ಸುಪ್ರತಿಮ್ ಸರ್ಕಾರ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಆಯೋಗ ವರ್ಗಾಯಿಸಿದೆ.
ಸಿದ್ಧ್ ನಾಥ್ ಗುಪ್ತಾ ಅವರನ್ನು ಪೊಲೀಸ್ ಮಹಾನಿರ್ದೇಶಕ (ಪ್ರಭಾರಿ) ಆಗಿ ನೇಮಿಸುವಂತೆ ಆಯೋಗ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ನಟರಾಜನ್ ರಮೇಶ್ ಬಾಬು ಅವರನ್ನು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹುದ್ದೆಗೆ ಅಜಯ್ ಮುಕುಂದ್ ರಾನಡೆ ಹಾಗೂ ಕೋಲ್ಕತ್ತಾ ಪೊಲೀಸ್ ಕಮಿಷನರ್ ಆಗಿ ಅಜಯ್ ಕುಮಾರ್ ನಂದ್ ಅವರನ್ನು ನೇಮಕ ಮಾಡಲು ಆಯೋಗ ಆದೇಶಿಸಿದೆ.
ಆದೇಶಗಳನ್ನು ತಕ್ಷಣವೇ ಜಾರಿಗೆ ತರುವಂತೆ ಚುನಾವಣಾ ಆಯೋಗ ನಿರ್ದೇಶಿಸಿದ್ದು, ಸೋಮವಾರ (ಮಾ.16) ಮಧ್ಯಾಹ್ನ 3 ಗಂಟೆಯೊಳಗೆ ಅನುಸರಣಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಸ್ವಾತಂತ್ರ್ಯದ ನಂತರದ ಪಶ್ಚಿಮ ಬಂಗಾಳದ ಇತಿಹಾಸದಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಈ ರೀತಿ ಹುದ್ದೆಯಿಂದ ಬದಲಾಯಿಸಿರುವುದು ಅಪರೂಪದ ಬೆಳವಣಿಗೆ ಎಂದು ರಾಜ್ಯದ ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.


