Homeಕರ್ನಾಟಕಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

“ಮಿಷನ್ ಪ್ರಜಾತಾಂತ್ರಿಕ ಮುಖ್ಯವಾಹಿನಿ” ಎಂಬ ಶೀರ್ಷಿಕೆಯಲ್ಲಿ ನಡೆದ ಕಾರ್ಯಾಚರಣೆಯ ಕುರಿತು ಶಾಂತಿಗಾಗಿ ನಾಗರಿಕ ವೇದಿಕೆಯ ನೂರ್ ಶ್ರೀಧರ್ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ.

- Advertisement -
- Advertisement -

ದಬ್ಬಾಳಿಕೆ, ದೌರ್ಜನ್ಯದಿಂದ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಶಸಸ್ತ್ರ ಹೋರಾಟದ ಹಾದಿ ಹಿಡಿದಿದ್ದ 6 ಮಂದಿ ನಕ್ಸಲರು, ತಮ್ಮ ಪಥ ಬದಲಿಸಿ ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಜನವರಿ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದಿದ್ದಾರೆ

ಹಲವು ವರ್ಷಗಳಿಂದ ಕಾಡನ್ನೇ ತಮ್ಮ ಹೋರಾಟದ ಕೇಂದ್ರವಾಗಿಸಿದ್ದ ಈ 6 ಮಂದಿಯನ್ನು ಮನವೊಲಿಸಿ ಅಲ್ಲಿಂದ ಹೊರ ಕರೆತರುವಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆ, ಚಿಕ್ಕಮಗಳೂರು ಜಿಲ್ಲಾಡಳಿತ, ಗುಪ್ತಚರ ಇಲಾಖೆ, ನಕ್ಸಲ್ ಪುನರ್ವಸತಿ ಸಮಿತಿ ಮತ್ತು ಶಾಂತಿಗಾಗಿ ನಾಗರಿಕ ವೇದಿಕೆ ಸೇರಿದಂತೆ ಹಲವರು ಸುಮಾರು 40 ದಿನಗಳ ಕಾಲ ಜಂಟಿ ಪ್ರಯತ್ನ ನಡೆಸಿದ್ದರು.

ಮಿಷನ್ ಪ್ರಜಾತಾಂತ್ರಿಕ ಮುಖ್ಯವಾಹಿನಿ” ಎಂಬ ಶೀರ್ಷಿಕೆಯಲ್ಲಿ ನಡೆದ ಈ ಕಾರ್ಯಾಚರಣೆಯ ಕುರಿತು ಶಾಂತಿಗಾಗಿ ನಾಗರಿಕ ವೇದಿಕೆಯ ನೂರ್ ಶ್ರೀಧರ್ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅದು ಹೀಗಿದೆ..(ಅವರದ್ದೇ ಮಾತಿನಲ್ಲಿ)..

ನವೆಂಬರ್ 20,2024ರಂದು ‘ಶಾಂತಿಗಾಗಿ ನಾಗರಿಕ ವೇದಿಕೆ’ ಪತ್ರಿಕಾಗೋಷ್ಠಿ ನಡೆಸಿ ವಿಕ್ರಂ ಗೌಡ ಹತ್ಯೆಯನ್ನು ಖಂಡಿಸುತ್ತದೆ, ತನಿಖೆಗೆ ಆಗ್ರಹಿಸುತ್ತದೆ. ಮುಖ್ಯವಾಹಿನಿಗೆ ಬರುವಂತೆ ಉಳಿದ ನಕ್ಸಲರಿಗೆ ಮನವಿ ಮಾಡಿಕೊಳ್ಳುತ್ತದೆ.

ಡಿಸೆಂಬರ್‌ 1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗ ಕೂಂಬಿಂಗ್ ಕಾರ್ಯಾಚರಣೆ ನಿಲ್ಲಿಸಲು ಒತ್ತಾಯಿಸುತ್ತದೆ ಮತ್ತು ಸರ್ಕಾರ ಸರಿಯಾಗಿ ಸ್ಪಂದಿಸಿದಲ್ಲಿ ನಕ್ಸಲರನ್ನು ಸಂಪರ್ಕಿಸಿ ಮನವೊಲಿಸುತ್ತೇವೆ ಎಂದು ತಿಳಿಸಲಾಗುತ್ತದೆ. ಮುಖ್ಯಮಂತ್ರಿ “ಮಾಡಿ, ನಮ್ಮ ಸಂಪೂರ್ಣ ಸಹಕಾರವಿರುತ್ತದೆ” ಎನ್ನುತ್ತಾರೆ.

• ಶಾಂತಿಗಾಗಿ ನಾಗರಿಕ ವೇದಿಕೆಯು ಮಲೆನಾಡಿನ ಆದಿವಾಸಿ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಜನಪರ ಸಂಘಟನೆಗಳ ಮಿತ್ರರ ಜೊತೆ ಮಾತನಾಡಿ, ನಿಮ್ಮ ಯಾವುದೇ ಕಾರ್ಯಕರ್ತರ ಸಂಪರ್ಕಕ್ಕೆ ನಕ್ಸಲಿಯರು ಬಂದರೂ, ಅವರ ಜೊತೆ ಮಾತನಾಡಲು ಹೇಳಿ, ಸಂಪರ್ಕ ಉಳಿಸಿಕೊಳ್ಳಲು ಹೇಳಿ, ನಮ್ಮನ್ನು ಸಂಪರ್ಕಿಸಲು ಹೇಳಿ ಎಂದು ಮನವಿ ಮಾಡಿಕೊಳ್ಳುತ್ತೇವೆ. ಅವರೆಲ್ಲರೂ ಸಹ ಕಾಳಜಿಯೊಂದಿಗೆ ಪ್ರತಿಕ್ರಿಯಿಸುತ್ತಾರೆ.

ಡಿಸೆಂಬರ್ ಮೊದಲ ವಾರದಲ್ಲಿ ನಕ್ಸಲ್ ತಂಡದವರು ಹಳ್ಳಿಯೊಂದಕ್ಕೆ ಬಂದಾಗ, ಅಲ್ಲಿನ ಜನಪರ ಕಾರ್ಯಕರ್ತರು ಶಾಂತಿಗಾಗಿ ನಾಗರಿಕರ ವೇದಿಕೆಯ ನಿಲುವನ್ನು ಅವರ ಗಮನಕ್ಕೆ ತರುತ್ತಾರೆ. “ದಯವಿಟ್ಟು ಆಲೋಚಿಸಿ ಮರ‍್ರೇ” ಎಂದು ಕೇಳಿಕೊಳ್ಳುತ್ತಾರೆ. “ಇದೆಲ್ಲ ಅಷ್ಟು ಸುಲಭವಿಲ್ಲ, ನಮ್ಮ ಷರತ್ತುಗಳಿಗೆ ಸರ್ಕಾರ ಒಪ್ಪಲು ಸಾಧ್ಯವಿಲ್ಲ. ತಲೆತಗ್ಗಿಸಿ ನಿಲ್ಲಲು ಅಥವಾ ಜೈಲಲ್ಲಿ ಕೂರಲು ನಾವು ಸಿದ್ಧರಿಲ್ಲ” ಎಂದು ಅವರು ಹೇಳುತ್ತಾರೆ. ಪ್ರಯತ್ನ ಮಾಡುವುದರಲ್ಲಿ ತಪ್ಪೇನು ಎಂದು ಕಾರ್ಯಕರ್ತರು ಪ್ರಶ್ನಿಸಿ ಚರ್ಚೆ ಮಾಡುತ್ತಾರೆ. ನೋಡೋಣ ಎಂದು ಅವರು ಹೇಳುವ ಮೂಲಕ ಚರ್ಚೆ ಮುಕ್ತಾಯವಾಗುತ್ತದೆ.

ಡಿಸೆಂಬರ್ 15ರಂದು ನಕ್ಸಲಿಯರು ಆದಿವಾಸಿ ಹಿರಿಯ ಮಹಿಳೆಯೊಬ್ಬರ ಮೂಲಕ ಒಂದು ಸಣ್ಣ ಚೀಟಿಯನ್ನು ಅಲ್ಲಿನ ಸಂಘಟನೆಯ ಕಾರ್ಯಕರ್ತರೊಬ್ಬರಿಗೆ ಕಳಿಸಿಕೊಡುತ್ತಾರೆ. ಅದರಲ್ಲಿ “ಒಂದು ವೇಳೆ ಸರ್ಕಾರ ನಮ್ಮ ಷರತ್ತುಗಳಿಗೆ ಒಪ್ಪುವುದಾದರೆ ನಾವು ತೀರ್ಮಾನ ತೆಗೆದುಕೊಳ್ಳಲು ಸಿದ್ಧರಿದ್ದೇವೆ” ಎಂದು ಬರೆದಿರುತ್ತದೆ. ಸಾಧ್ಯತೆ ಇದ್ದಲ್ಲಿ ಈ ಆದಿವಾಸಿ ಹಿರಿಯ ಮಹಿಳೆಯೊಬ್ಬರ ಮೂಲಕ ಸುದ್ದಿ ಕಳಿಸಿದರೆ ತಮಗೆ ತಲುಪುತ್ತದೆ ಎಂಬ ಸೂಚನೆಯನ್ನು ಕೊಡುತ್ತಾರೆ. ಈ ಮಾಹಿತಿಯನ್ನು ಕಾರ್ಯಕರ್ತರು ಕೂಡಲೇ ಶಾಂತಿಗಾಗಿ ನಾಗರಿಕ ವೇದಿಕೆಗೆ ತಿಳಿಸುತ್ತಾರೆ.

ಡಿಸೆಂಬರ್ 18ರಂದು ವೇದಿಕೆಯ ತಂಡ ಇಂಟಲಿಜೆನ್ಸ್ ವಿಭಾಗದ ಮುಖ್ಯಸ್ಥರಾದ ಹೇಮಂತ್ ನಿಂಬಾಳ್ಕರ್ ಅವರನ್ನು ಭೇಟಿಯಾಗುತ್ತದೆ. ನಮಗೆ ಹೀಗೊಂದು ಸಕರಾತ್ಮಕ ಪ್ರತಿಕ್ರಿಯೆ ಬಂದಿದೆ. ನಾವು ಕಾಡಿಗೆ ಹೋಗಿ ಬರಲು ಸಿದ್ಧರಿದ್ದೇವೆ. ನಾವು ಕಾಡಿಗೆ ಹೋಗಬೇಕಾದರೆ ಎಎನ್ಎಫ್ ಕಾರ್ಯಾಚರಣೆ ನಿಲ್ಲಬೇಕು, ನಮ್ಮ ಸುರಕ್ಷತೆ ಖಾತ್ರಿಯಾಗಬೇಕು ಮತ್ತು ಒಂದು ವೇಳೆ ಅವರು ಕಾಡಿನಿಂದ ಹೊರಬಂದಲ್ಲಿ ಅವರು ಜೈಲಲ್ಲಿ ಕೊಳೆಯುವಂತೆ ಮಾಡುವುದಿಲ್ಲ ಎಂಬ ಖಚಿತ ಭರವಸೆ ನಮಗೆ ಸಿಗಬೇಕು ಎಂದು ಕೇಳುತ್ತೇವೆ. ಸಾಕಷ್ಟು ಚರ್ಚೆ ನಡೆಯುತ್ತದೆ. ಈ ಸಮಸ್ಯೆಯನ್ನು ಬಗೆಹರಿಸಲು ನಮ್ಮಿಂದ ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡೋಣ. ನೀವು ಅವರನ್ನು ಮನವೊಲಿಸಿ ಎಂದು ಅವರು (ನಿಂಬಾಳ್ಕರ್) ತಿಳಿಸುತ್ತಾರೆ.

ಡಿಸೆಂಬರ್‌ 19 ರಂದು ನಾವು ಮುಖ್ಯಮಂತ್ರಿಯನ್ನು ಭೇಟಿ ಮಾಡುತ್ತೇವೆ. ವಿಚಾರ ತಿಳಿಸಿ, “ನೀವು ನಮಗೆ ಸಂಪೂರ್ಣ ವಿಶ್ವಾಸ ನೀಡಿದರೆ ಮಾತ್ರ ನಾವು ಕಾಡಿಗೆ ಹೋಗಿ ನಕ್ಸಲರಿಗೆ ವಿಶ್ವಾಸ ನೀಡುತ್ತೇವೆ” ಎನ್ನುತ್ತೇವೆ. ಅವರು ನಮ್ಮ ಕಡೆಯಿಂದ ಖಂಡಿತ ಸಂಪೂರ್ಣ ಸಹಕಾರವಿರುತ್ತದೆ ಎಂದು ಹೇಳುತ್ತಾರೆ. ಆದರೂ, ಇದು ಸರ್ಕಾರವಾಗಿ ತೆಗೆದುಕೊಳ್ಳಬೇಕಾದ ತೀರ್ಮಾನವಾದ್ದರಿಂದ ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರ ಇಬ್ಬರ ಗಮನಕ್ಕೂ ತಂದು ಖಚಿತ ಅಭಿಪ್ರಾಯ ತಿಳಿಸುತ್ತೇನೆ ಎನ್ನುತ್ತಾರೆ.

ಡಿಸೆಂಬರ್ 28ರಂದು “ಮಾತನಾಡಿದ್ದೇನೆ, ಮುಂದುವರೆಯಿರಿ” ಎಂಬ ಸಂದೇಶವನ್ನೂ ಮುಖ್ಯಮಂತ್ರಿಗಳು ಕಳಿಸುತ್ತಾರೆ. ಡಿಸೆಂಬರ್ 29ರಂದು ಪತ್ರಿಕಾ ಹೇಳಿಕೆಯನ್ನೂ ಕೊಟ್ಟು ನಕ್ಸಲಿಯರಿಗೆ ಮುಖ್ಯವಾಹಿನಿಗೆ ಬರುವಂತೆ ಆಹ್ವಾನಿಸುತ್ತಾರೆ.

• ಜನವರಿ 1ರಂದು ಅದೇ ಆದಿವಾಸಿ ಹಿರಿಯ ಮಹಿಳೆ ಮೂಲಕ ನಕ್ಸಲಿಯರು ನಮ್ಮವರನ್ನು ಸಂಪರ್ಕಿಸುತ್ತಾರೆ. “ಮುಖ್ಯಮಂತ್ರಿಯವರ ಹೇಳಿಕೆ ನೋಡಿದೆವು. ನೀವು ಬರುವುದಾದರೆ ನಾವು ಸಿಗುತ್ತೇವೆ” ಎಂದು ತಿಳಿಸುತ್ತಾರೆ. ಜನವರಿ 2ರ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಬಂದ ಜನಪರ ಸಂಘಟನೆ ಕಾರ್ಯಕರ್ತರು ಈ ವಿಷಯವನ್ನು ಶಾಂತಿಗಾಗಿ ನಾಗರಿಕ ವೇದಿಕೆಗೆ ಮುಟ್ಟಿಸುತ್ತಾರೆ.

ಜನವರಿ 2ರ ರಾತ್ರಿಯೆಲ್ಲ ಪ್ರಯಾಣ ಮಾಡಿ ಜನವರಿ 3ರ ಮುಂಜಾನೆ ನಸುಗತ್ತಲಲ್ಲಿ ನಾವು ಕಾಡಿನ ಅಂಚಿಗೆ ತಲುಪುತ್ತೇವೆ. ಅಲ್ಲಿಂದ ಒಳಗೆ ನಡೆದು ನಕ್ಸಲ್ ತಂಡವನ್ನು ಭೇಟಿಯಾಗುತ್ತೇವೆ. ಈ ಇಡೀ ದಿನ ಬೆಳಿಗ್ಗೆ 8ರಿಂದ ಪ್ರಾರಂಭವಾಗಿ ಸಂಜೆ 7ರ ತನಕ ಅವಿರತ ಚರ್ಚೆಗಳು ನಡೆಯುತ್ತವೆ. ಸಾರಾಂಶದಲ್ಲಿ ಅವರು ಕೆಲ ವಿಚಾರಗಳನ್ನು ಒಂದು ರೀತಿಯ ಷರತ್ತಿನ ರೂಪದಲ್ಲಿ ನಮ್ಮ ಮುಂದಿಡುತ್ತಾರೆ.

  1. ನಮ್ಮನ್ನು ಘನತೆಯಿಂದ ಹೋರಾಟಗಾರರಂತೆ ನಡೆಸಿಕೊಳ್ಳಬೇಕು. ಅಪರಾಧಿಗಳಂತಲ್ಲ.
  2. ನಂಬಿ ಬರುವ ನಮಗೆ ಜೈಲಲ್ಲಿ ಕೊಳೆಯುವಂತೆ ಮಾಡಬಾರದು.
  3. ಜೈಲಿಂದ ಹೊರಬಂದ ಮೇಲೆ ಸಾಮಾಜಿಕ ಚಳವಳಿಗಳಲ್ಲಿ ತೊಡಗಿಸಿಕೊಳ್ಳಲು ನಮಗೆ ಪೂರ್ಣ ಸ್ವಾತಂತ್ರ್ಯ ಇರಬೇಕು.
  4. ಈಗಾಗಲೇ ಮುಖ್ಯವಾಹಿನಿಗೆ ಹೋಗಿರುವವರ ಕಷ್ಟಗಳನ್ನು ಕೂಡಲೇ ಪರಿಹರಿಸಬೇಕು ಮತ್ತು ಜೈಲಿನಲ್ಲಿರುವ ಎಲ್ಲ ಸಂಗಾತಿಗಳ ಕುರಿತು ಮೃದು ನಿಲುವು ತಾಳಬೇಕು.
  5. ನಾವು ಕಣ್ಣಾರೆ ಕಂಡಿರುವ ಜನರ ಗಂಭೀರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಪ್ರಯತ್ನ ಮಾಡುವುದಾಗಿ ಮಾತು ಕೊಡಬೇಕು. (18 ಹಕ್ಕೊತ್ತಾಯಗಳ ಪಟ್ಟಿಯನ್ನೂ ನಮಗೆ ನೀಡುತ್ತಾರೆ.
  6. ವಿಕ್ರಂ ಗೌಡರ ಹತ್ಯೆಯ ಕುರಿತು ನ್ಯಾಯಂಗ ತನಿಖೆ ನಡೆಸಿ, ನಮಗೆ ನ್ಯಾಯ ದೊರಕಿಸಿಕೊಡಬೇಕು.

• ಅಲ್ಲಿಂದ ಇಡೀ ರಾತ್ರಿ ಪ್ರಯಾಣ ಮಾಡಿ ಜನವರಿ 4ರ ಬೆಳಿಗ್ಗೆ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಜೊತೆ ಪಾಯಿಂಟ್ ಬೈ ಪಾಯಿಂಟ್ ಚರ್ಚೆ ನಡೆಯುತ್ತದೆ. ಅಧಿಕಾರಿಗಳು ಬಹುಪಾಲು ಅಂಶಗಳನ್ನು ವಿಶ್ವಾಸದ ಜೊತೆ ಉತ್ತರಿಸಿ “ಮಾಡೋಣ” ಎನ್ನುತ್ತಾರೆ. ಕೆಲವನ್ನು ಮುಖ್ಯಮಂತ್ರಿಗಳ ಜೊತೆ ಮಾತನಾಡಿ ತಿಳಿಸುವುದಾಗಿ ಹೇಳುತ್ತಾರೆ. ಅಂತೂ ಇಂತೂ ಜನವರಿ 6ರ ಸಾಯಂಕಾಲದ ಹೊತ್ತಿಗೆ ಕೆಲವು ವಿಚಾರಗಳಲ್ಲಿ ಅನಿಶ್ಚಿತತೆ ಉಳಿದರೂ ಬಹುಪಾಲು ವಿಚಾರಗಳಲ್ಲಿ ವಿಶ್ವಾಸಾರ್ಹ ಉತ್ತರ ಸಿಗುತ್ತದೆ.

ಜನವರಿ 6ರ ರಾತ್ರಿಯೇ ನಾವುಗಳು ಹೊರಟು ಜನವರಿ 7ರ ಬೆಳಿಗ್ಗೆ ಎರಡನೇ ಸುತ್ತಿನ ಮಾತುಕತೆಗಾಗಿ ಕಾಡನ್ನು ಸೇರಿಕೊಳ್ಳುತ್ತೇವೆ. ಸರ್ಕಾರ ಪಾಯಿಂಟ್ ಬೈ ಪಾಯಿಂಟ್ ಉತ್ತರಿಸಿರುವ ವೈಖರಿಯನ್ನು ಕಂಡು ನಕ್ಸಲ್ ಸಂಗಾತಿಗಳು ದಂಗಾಗುತ್ತಾರೆ. “ನಾವು ಇಂತಹ ಉತ್ತರವನ್ನು ನಿರೀಕ್ಷಿಸಿಯೇ ಇರಲಿಲ್ಲ. ಹೀಗೂ ಸಾಧ್ಯವೇ ಎಂಬುದನ್ನು ನಂಬಲು ಅಗುತ್ತಿಲ್ಲ. ಇಷ್ಟು ಸಾಕು. ಮಿಕ್ಕಂತೆ ನೀವಿದ್ದೀರಿ, ಜನರಿದ್ದಾರೆ, ಕರ್ನಾಟಕದ ಚಳವಳಿಗಾರರಿದ್ದಾರೆ, ಅದೇನೆ ಬರಲಿ, ನಾವು ಸಿದ್ಧ” ಎಂಬ ಖಚಿತ ಅಭಿಪ್ರಾಯ ತಿಳಿಸುತ್ತಾರೆ. ಮಾತುಕತೆ ಎರಡೇ ಗಂಟೆಯಲ್ಲಿ ಮುಕ್ತಾಯವಾಗುತ್ತದೆ. ನಾವು ಮಧ್ಯಾಹ್ನ 12 ಗಂಟೆ ಹೊತ್ತಿಗೆ ನೆಟ್ವರ್ಕ್ ಏರಿಯಾಗೆ ಬಂದು “ನಕ್ಸಲರಿಂದ ಗ್ರೀನ್ ಸಿಗ್ನಲ್” ಎಂಬ ಸಂದೇಶ ಕಳಿಸುತ್ತೇವೆ.

ಜನವರಿ 7ರ ಸಂಜೆ ಬಾಳೆಹೊನ್ನೂರಿಗೆ ವಾಪಾಸ್ ಬಂದು ಅಧಿಕಾರಿಗಳನ್ನು ಭೇಟಿಯಾಗುತ್ತೇವೆ. ಅಷ್ಟು ಹೊತ್ತಿಗೆ ನಕ್ಸಲ್ ಪುನರ್ವಸತಿ ಸಮಿತಿಯ ಇತರೆ ಸದಸ್ಯರೂ ಬಂದು ಸೇರಿಕೊಳ್ಳುತ್ತಾರೆ. ಮರುದಿನವೇ ಅಂದರೆ ಜನವರಿ 8ರ ಮುಂಜಾನೆ ಕಾಡನ್ನು ಬಿಟ್ಟು 11 ಗಂಟೆ ಹೊತ್ತಿಗೆ ಚಿಕ್ಕಮಗಳೂರು ಐಬಿ ತಲುಪುವುದು. ಅಲ್ಲಿ ಸಂಕ್ಷಿಪ್ತ ರೀತಿಯಲ್ಲಿ ನಾಗರಿಕ ಸ್ವಾಗತ ಮುಗಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದು ಮಾಧ್ಯಮಗಳ ಮುಂದೆ ಇದನ್ನು ಸಮಾರೋಪಗೊಳಿಸಿಕೊಳ್ಳಬೇಕು ಎಂದು ತೀರ್ಮಾನವಾಗುತ್ತದೆ.

ಜನವರಿ 8ರ ಬೆಳಿಗ್ಗೆ 5 ಗಂಟೆ ಹೊತ್ತಿಗೆ ಶಾಂತಿಗಾಗಿ ನಾಗರಿಕರ ವೇದಿಕೆ ಮತ್ತು ಪುನರ್ವಸತಿ ಸಮಿತಿಯ ತಂಡ ಅವರನ್ನು ಕರೆದುಕೊಂಡು ಬರಲು ಮತ್ತೆ ಕಾಡೊಳಗೆ ಹೋಗುತ್ತದೆ. ಮನದೊಳಗಿನ ಕೆಲವು ಮಾತುಗಳನ್ನು ಹಂಚಿಕೊಂಡು, ಸ್ಥಳೀಯರು ಸಿದ್ಧಪಡಿಸಿದ್ದ ತಿಂಡಿಯನ್ನು ತಿಂದು, ಒಂದು ಗಂಟೆಗಳ ಕಾಲ ನಡೆದು 9 ಗಂಟೆಯ ಹೊತ್ತಿಗೆ ರಸ್ತೆಯೊಂದಕ್ಕೆ ಬಂದು ತಲುಪುತ್ತೇವೆ. ವೇದಿಕೆಯ ಮತ್ತು ಪೋಲೀಸರ ವಾಹನಗಳು ಕಾದಿರುತ್ತವೆ. ಅಧಿಕಾರಿಗಳು ಪರಿಶೀಲನೆಯ ಪ್ರಕ್ರಿಯೆಯನ್ನು ಮುಗಿಸಿಕೊಳ್ಳುತ್ತಾರೆ. ವಾಹನಗಳ ಕಾರವಾನ್ ಕಾಡಿಂದ ಚಿಕ್ಕಮಗಳೂರು ಕಡೆ ಹೊರಡುತ್ತಾರೆ.

ವಾಹನಗಳು ಬಾಳೆಹೊನ್ನೂರು ಸಮೀಪಿಸುತ್ತಿರುವಾಗ ಮುಖ್ಯಮಂತ್ರಿಗಳು ನೇರವಾಗಿ ಬೆಂಗಳೂರಿಗೆ ಬರಲು ಸೂಚಿಸಿದ್ದಾರೆ ಎಂದು ತಿಳಿಸುತ್ತಾರೆ. ನಾವು ಚಿಕ್ಕಮಗಳೂರಿಗೆ ಹೋಗಿಯೇ ಹೋಗಬೇಕು. ಅಲ್ಲಿ ಜನಪರ ಹೋರಾಟಗಾರರು, ಸಂಬಂಧಿಕರು, ಮಾಧ್ಯಮದವರು ಕಾಯುತ್ತಿದ್ದಾರೆ. ಅವರನ್ನು ಅಲ್ಲಿ ಕಾಯಲು ಬಿಟ್ಟು ನಾವು ಹೀಗೇ ಬೆಂಗಳೂರಿಗೆ ಹೋಗಲು ತಯಾರಿಲ್ಲ ಎಂದು ಹಠ ಹಿಡಿಯುತ್ತೇವೆ. ಇಲ್ಲಿ ಕೆಲವು ಸೂಕ್ಷ್ಮ ವಿಚಾರಳಿವೆ. ದಯವಿಟ್ಟು ಬೇಡ. ಯಾರೆಲ್ಲಾ ಬರಲು ಸಿದ್ಧರಿದ್ದಾರೋ ಅವರೆಲ್ಲರನ್ನೂ ನಾವೇ ಬೆಂಗಳೂರಿಗೆ ಕರೆತರುವ ವ್ಯವಸ್ಥೆ ಮಾಡುತ್ತೇವೆ ಎಂದು ಪೋಲೀಸರು ಹೇಳುತ್ತಾರೆ. ಈ ವಿಚಾರ ಇನ್ನು ಹೆಚ್ಚು ಎಳೆದಾಡುವುದು ಬೇಡ ಎಂದು ನಾವು ಒಪ್ಪುತ್ತೇವೆ. ಇಡೀ ದಿನ ಶರವೇಗದಲ್ಲಿ ಪ್ರಯಾಣ ಮಾಡಿ ಸಂಜೆ ಹೊತ್ತಿಗೆ ಮುಖ್ಯಮಂತ್ರಿಯವರ ಕಚೇರಿಗೆ ಬಂದು ತಲುಪುತ್ತೇವೆ.

ಜನವರಿ 8ರ ಸಂಜೆ ಮಾಧ್ಯಮಗೋಷ್ಟಿಗೂ ಮುನ್ನ ಇಡೀ ಮಂತ್ರಿಮಂಡಲ ಮತ್ತು ಅಧಿಕಾರಿ ವರ್ಗಕ್ಕೆ ನಕ್ಸಲ್ ಕಾರ್ಯಕರ್ತರುಗಳನ್ನು ಅವರ ಹಿನ್ನೆಲೆ ಮತ್ತು ಹೋರಾಟಗಳ ಜೊತೆ ಪರಿಚಯ ಮಾಡಿಕೊಡಲಾಗುತ್ತದೆ. ತಂಡದ ಪರವಾಗಿ ಕಮಾಂಡರ್ ಲತಾ ಸುದೀರ್ಘವಾಗಿ ಮಾತನಾಡುತ್ತಾರೆ. ಅದರಲ್ಲಿ ನಾಲ್ಕು ವಿಚಾರಗಳನ್ನು ಅವರು ಸರ್ಕಾರದ ಗಮನಕ್ಕೆ ತರುತ್ತಾರೆ.

1. ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತಾರೆ. ಅದೇ ಹೊತ್ತಿನಲ್ಲಿ ನಾವು ಹೋರಾಟದ ಮಾರ್ಗ ಮಾತ್ರ ಬದಲಾಯಿಸುತ್ತಿದ್ದೇವೆ. ಜನರ ಹಕ್ಕುಗಳಿಗಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಒತ್ತಿ ಹೇಳುತ್ತಾರೆ.

2. ಸಮಾಜ ಎಷ್ಟೇ ಅಭಿವೃದ್ಧಿಗೊಂಡಿದೆ ಎಂದು ಹೇಳಿದರೂ ಕಾಡಿನ ಜನರ, ಅದರಲ್ಲೂ ಅಲ್ಲಿನ ಆದಿವಾಸಿ, ದಲಿತ, ಕೂಲಿ-ಕಾರ್ಮಿಕ, ಮಹಿಳೆ ಮತ್ತು ರೈತರ ಸಮಸ್ಯೆಗಳು ಬಗೆಹರಿಯುತ್ತಿಲ್ಲ ಎಂಬುದನ್ನು ಮನದಟ್ಟುವ ಉದಾಹರಣೆಗಳ ಮೂಲಕ ವಿವರಿಸುತ್ತಾರೆ.

3. ಕಷ್ಟದಲ್ಲಿರುವ ಮತ್ತು ಜೈಲುಗಳಲ್ಲಿರುವ ನಮ್ಮ ಸಂಗಾತಿಗಳ ಬಗ್ಗೆ ಮೃದುಧೋರಣೆ ತಾಳಬೇಕು ಎಂದು ಮನವಿ ಮಾಡಿಕೊಳ್ಳುತ್ತಾರೆ.

4. ವಿಕ್ರಂ ಗೌಡ ಅವರ ವಿಚಾರದಲ್ಲಿ ತನಿಖೆ ನಡೆಸಿ ನೀವು ಸತ್ಯ ಏನೆಂಬುದನ್ನು ತಿಳಿದುಕೊಳ್ಳಲೇಬೇಕು ಎಂದು ಒತ್ತಾಯಿಸುತ್ತಾರೆ. ಮುಖ್ಯಮಂತ್ರಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸಿ ಮಾತನಾಡುತ್ತಾರೆ, ಭರವಸೆ ನೀಡುತ್ತಾರೆ.

ನಂತರ ಪತ್ರಿಕಾಗೋಷ್ಟಿ ನಡೆಯುತ್ತದೆ. ಮರುದಿನ ಕಾನೂನು ಪ್ರಕ್ರಿಯೆ ನಡೆಯುತ್ತದೆ. ಈಗ ಸಂಗಾತಿಗಳು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...